ಹಬ್ಬ ಆಚರಣೆಗಳು ಶಾಂತಿ, ಸಹಬಾಳ್ವೆ, ಸೌಹಾರ್ದತೆಯಿಂದ ಒಳಗೊಂಡಿರಬೇಕು. ಯಾರೂ ಸಹ ಕಾನೂನು ಎಲ್ಲೆ ಮೀರಬಾರದು. ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವಂತೆ ನಡೆದುಕೊಳ್ಳುವವರ ಮೇಲೆ ಪ್ರಕರಣ ದಾಖಲು ಮಾಡಲಾಗುತ್ತದೆ ಎಂದು ಬೆಂ.ಗ್ರಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಎಚ್ಚರಿಸಿದರು.
ಬಕ್ರೀದ್ ಹಬ್ಬ ಪ್ರಯುಕ್ತ ಪೊಲೀಸ್ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲಾ ವತಿಯಿಂದ ನಗರದ ಎಜಿಎಂ ಭವನದಲ್ಲಿ ಆಯೋಜಿಸಿದ್ದ ಶಾಂತಿಸಭೆಯಲ್ಲಿ ಅವರು ಮಾತನಾಡಿದರು.
ಮುಂಬರುವ ಬಕ್ರೀದ್ ಹಬ್ಬವನ್ನು ಶಾಂತಿ, ಸೌಹಾರ್ದತೆಯಿಂದ ಆಚರಿಸಲು ಎಲ್ಲಾ ಸಮುದಾಯದವರ ಸಹಕಾರ ಅಗತ್ಯವಿದೆ. ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದರೆ ಪೊಲೀಸರಿಗೆ ಮಾಹಿತಿ ಕೂಡಲೇ ನೀಡಬೇಕು ಎಂದು ತಿಳಿಸಿದರು.
ಸಮಾಜಘಾತುಕ ಚಟುವಟಿಕೆಗಳಲ್ಲಿ ತೊಡಗಿರುವವರ ಮೇಲೆ ಪೊಲೀಸ್ ಇಲಾಖೆ ಕಣ್ಣಿಟ್ಟಿದೆ. ಜೊತೆಗೆ ಶಾಂತಿ ಭಂಗ ಮಾಡದಂತೆ ಎಚ್ಚರಿಕೆ ಸಹ ನೀಡಲಾಗಿದೆ. ಕಾನೂನು ಉಲ್ಲಂಘಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು. ಸಮಾಜದ ಶಾಂತಿ ಕಾಪಾಡಲು ಪೊಲೀಸ್ ಇಲಾಖೆ ಸನ್ನದ್ಧವಾಗಿದ್ದು, ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಶಾಂತಿ ಸುವ್ಯವಸ್ಥೆ ಕಾಪಾಡಲು ಅಗತ್ಯ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಶಾಂತಿಯುತವಾಗಿ ಹಬ್ಬ ಆಚರಣೆ ಮಾಡಲು ಇಲಾಖೆಯಿಂದ ಸಂಪೂರ್ಣ ಬೆಂಬಲವಿದೆ ಎಂದರು.
112 ವಾಹನ, ರಾತ್ರಿಗಸ್ತುಗೆ ಪೊಲೀಸ್ ಸಿಬ್ಬಂದಿ ನಿಯೋಜನೆ, ಚೆಕ್ ಪೋಸ್ಟ್ ಗಳನ್ನು ಅಹ ಹಾಕಲಾಗಿದೆ. ಅದೇರೀತಿ ಸಾಮಾಜಿಕ ಜಾಲತಾಣಗಳ ಮೇಲೂ ಕಣ್ಣೀಡಲಾಗಿದೆ. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.
ಸಭೆಯಲ್ಲಿ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ(ಅಪರಾಧ ವಿಭಾಗ) ನಾಗರಾಜು, ಡಿವೈಎಸ್ಪಿ ರವಿ, ನಗರ ಠಾಣಾ ಇನ್ಸ್ ಪೆಕ್ಟರ್ ದಯಾನಂದ್, ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ಸೇರಿಂದತೆ ವಿವಿಧ ತಾಲೂಕುಗಳ ಪೊಲೀಸ್ ಇನ್ಸ್ ಪೆಕ್ಟರ್, ಸಬ್ಇನ್ಸ್ಪೆಕ್ಟರ್, ಪೊಲೀಸ್ ಸಿಬ್ಬಂದಿ ಹಾಗೂ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಮುಸ್ಲಿಂ ಹಾಗೂ ಹಿಂದು ಮುಖಂಡರು ಭಾಗವಹಿಸಿದ್ದರು.