ಡಾ.ಬಾಬು ಜಗಜೀವನ ರಾಮ್ ಅವರು ತಮ್ಮ ಬದುಕಿನುದ್ದಕ್ಕೂ ಎಲ್ಲಾ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿ, ಕ್ರಾಂತಿಕಾರಿಯ ನಿಲುವು ತೆಗೆದುಕೊಂಡು ಅಭಿವೃದ್ಧಿಗೆ ಶ್ರಮಿಸುತ್ತಿದ್ದ ಮಹಾನ್ ನಾಯಕರಾಗಿದ್ದಾರೆ ಎಂದು ತಹಸೀಲ್ದಾರ್ ಮೋಹನಕುಮಾರಿ ಹೇಳಿದರು.
ತಾಲ್ಲೂಕು ಆಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬುಧವಾರ ನಗರದ ಹಳೆ ಬಸ್ ನಿಲ್ದಾಣದಲ್ಲಿರುವ ಬಾಬು ಜಗಜೀವನ್ ರಾಂ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.
ಸಮಾಜದಲ್ಲಿನ ಅಸ್ಪೃಶ್ಯತೆಯನ್ನು ಹೋಗಲಾಡಿಸುವಲ್ಲಿ ಬಾಬೂಜಿ ಕೊಡುಗೆ ಅಪಾರವಾಗಿದೆ. ಜಾತಿ ವ್ಯವಸ್ಥೆಯನ್ನು ತೊಡೆದುಹಾಕಿ ಎಲ್ಲರಲ್ಲೂ ಸಮಾನತೆ ತರುವುದು ಅವರ ಮುಖ್ಯ ಉದ್ದೇಶವಾಗಿತ್ತು. ದೇಶದಲ್ಲಿ ಸಮರ್ಪಕವಾಗಿ ಎಲ್ಲರಿಗೂ ಆಹಾರ ದೊರೆಯದೇ ಇದ್ದಾಗ ಕೇಂದ್ರದಲ್ಲಿ ಕೃಷಿ ಸಚಿವರಾಗಿ ಕೃಷಿಯಲ್ಲಿ ಗಣನೀಯ ಬದಲಾವಣೆ ತಂದರು. ಹಸಿರು ಕ್ರಾಂತಿ ರೂಪಿಸಿ ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸಿದರು. ಆಹಾರ ಉತ್ಪಾದನೆ ಹೆಚ್ಚಿಸಿದರು ಎಂದು ಬಣ್ಣಿಸಿದರು.
ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಪಟ್ಟಿಗೆ ಭಾರತವನ್ನು ಸೇರಿಸುವಲ್ಲಿ ಜಗಜೀವನ ರಾಮ್ ಅವರ ಪಾತ್ರ ಮಹತ್ವದ್ದಾಗಿದೆ. ಸಾಮಾಜಿಕ ಸುಧಾರಣೆ, ಹಸಿರು ಕ್ರಾಂತಿ ಅಲ್ಲದೇ ಇನ್ನೂ ಹಲವಾರು ಕ್ಷೇತ್ರಗಳ ಅಭಿವೃದ್ಧಿಯಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ ಎಂದು ಹೇಳಿದರು.