Categories: ಲೇಖನ

ಬಾಹ್ಯಾಕಾಶದಲ್ಲಿ ಸಾವಿನ ಗುಹೆಯೊಳಗೆ ತನ್ನ ಸಹಯಾತ್ರಿಯೊಂದಿಗೆ ಧೈರ್ಯದಿಂದ ಸೆಣೆಸುತ್ತಿರುವ ಸುನಿತಾ ವಿಲಿಯಮ್ಸ್….

ಭಾಹ್ಯಾಕಾಶ ಯಾತ್ರೆಯೇ ಒಂದು ರೀತಿಯಲ್ಲಿ ಬದುಕಿನ ಅಂತಿಮ ಯಾತ್ರೆಯಂತೆ ನನಗನಿಸುತ್ತದೆ. ಈಗಲೂ ಸಹ ನಮ್ಮಂತ ಸಾಮಾನ್ಯ ಜನ ಬಸ್ಸಿನಲ್ಲೋ, ರೈಲಿನಲ್ಲೂ, ವಿಮಾನದಲ್ಲೋ ಸಂಚರಿಸುವಾಗ ಬಹುತೇಕ ನಮ್ಮ ಮನಸ್ಸಿನಲ್ಲಿ ಸುಳಿಯುವ ಭಾವನೆ ಎಂದರೆ, ಏನಾದರೂ ಅಪಘಾತವಾಗಿ ನಾವು ಸಾಯಬಹುದೇನೋ ಎನ್ನುವ ಒಂದು ರೀತಿಯ ಮಾನಸಿಕ ಸ್ಥಿತಿಯಲ್ಲಿಯೇ ಪ್ರಯಾಣಿಸುತ್ತಿರುತ್ತೇವೆ. ಅದು ನಿರಂತರವಾಗಿ ನಮ್ಮೊಳಗೆ ಹುಟ್ಟಿನಿಂದ ಸಾಯುವವರೆಗೂ ಪ್ರತಿ ಪ್ರಯಾಣದಲ್ಲೂ ಕಾಡುತ್ತಲೇ ಇರುತ್ತದೆ……..

ಇದರ ಜೊತೆಗೆ ಯಾವಾಗಲಾದರೂ, ಏನಾದರೂ ಕೆಲಸ ಕಾರ್ಯಗಳ ನಿಮಿತ್ತ ಕೆಲವು ವಾರಗಳು ಅಥವಾ ಕೆಲವು ತಿಂಗಳುಗಳು ಮನೆಯಿಂದ ಹೊರಗೆ ಇರಬೇಕಾದ ಸಂದರ್ಭದಲ್ಲಿ ಸಹ ಒಂದಷ್ಟು ಅಧೀರರಾಗುತ್ತೇವೆ ಅಥವಾ ಭಾವನಾತ್ಮಕ ನೋವು ಕಾಡುತ್ತದೆ. ಕೆಲವು ದಿನ ಎಲ್ಲರನ್ನೂ ಬಿಟ್ಟಿರಬೇಕಾಗುತ್ತದೆ ಎಂಬ ಭಾವ, ಅದರಲ್ಲೂ 24 ಗಂಟೆ ಸಂಪರ್ಕದಲ್ಲಿರಬಹುದಾದ ಮೊಬೈಲ್, ವಿಡಿಯೋ ಕಾಲ್ ಎಲ್ಲವೂ ಇದ್ದ ನಂತರವೂ ಸಹ, ಹಾಗೆಯೇ ಮನಸ್ಸು ಮಾಡಿದರೆ ಕೆಲವೇ ಗಂಟೆಗಳ ಅವಧಿಯಲ್ಲಿ ಮತ್ತೆ ನಮ್ಮ ಮನೆ ತಲುಪಬಹುದು ಎಂಬ ಅವಕಾಶ ಮತ್ತು ವ್ಯವಸ್ಥೆ ಇದ್ದರೂ, ನಮಗೆ ಆ ಹತಾಶೆ, ನೋವು, ವಿರಹ ಕಾಡುತ್ತಲೇ ಇರುತ್ತದೆ…..

ಕೆಲವರು ಅತಿ ಹೆಚ್ಚು ಎಂದರೆ ನೂರು ದಿನಗಳ ಕಾಲ ಮನೆ ಬಿಟ್ಟು ಬೆಂಗಳೂರಿನ ಮುಖ್ಯ ಪ್ರದೇಶದಲ್ಲಿಯೇ ಇರುವ ಒಂದು ಸುಸಜ್ಜಿತ ಬಿಗ್ ಬಾಸ್ ಬಂಗಲೆಯಲ್ಲಿ ವಾಸಿಸಲು ಸ್ಪರ್ಧೆಯ ಕಾರಣಕ್ಕಾಗಿ ಹೋಗುವಾಗಲೂ ಅವರು ಪಡುವ ಆತಂಕ, 40 – 50 ದಿನಗಳ ನಂತರ ಅವರ ಮನೆಯವರನ್ನು ನೋಡಿದಾಗ ಗೊಳೋ ಎಂದು ಅಳುವುದು ನೋಡಿದರೆ ಸುನಿತಾ ವಿಲಿಯಮ್ಸ್ ಸಾಹಸ ಎಷ್ಟು ಮಹತ್ವದ್ದು ಎಂಬುದು ಅರ್ಥವಾಗುತ್ತದೆ…..

ನೂರಾರು ಕಿಲೋಮೀಟರ್ ಗಳು ಕೇವಲ ಒಬ್ಬ ಸಹವರ್ತಿಯೊಂದಿಗೆ ಏನೂ ಗ್ಯಾರಂಟಿ ಇಲ್ಲದ, ಆಕಸ್ಮಿಕ ಅಪಘಾತವಾಗುವ ಸಾಧ್ಯತೆಯೇ ಹೆಚ್ಚಿರುವ ವಾಹನದಲ್ಲಿ, ಅಷ್ಟು ದೂರ ಹೋಗಿ ಸಂಶೋಧನೆ ಮಾಡಿ, ಅಲ್ಲಿ ಕೆಲವು ದಿನಗಳಿದ್ದು ವಾಪಸ್ಸು ಬರುವ, ಬಹುದೊಡ್ಡ ಸಾವಿನ ಗುಹೆಯೊಳಗೇ ಹೋಗಿದ್ದಾರೆ. ಈಗ ನಿಜವಾಗಿಯೂ ವಾಪಸ್ ಬರುವ ತೊಂದರೆಯಿಂದಾಗಿ ಅಂದರೆ, ಅವರ ವಾಹನದ ಹೀಲಿಯಂ ಸೋರಿಕೆಯ ಕಾರಣದಿಂದ ಇನ್ನೂ ವಾಪಸ್ ಬರುವುದು ನಿಶ್ಚಿತವಾಗದೇ ಇರುವ ಸಮಯದಲ್ಲಿ, ಆಕೆ ಎದುರಿಸುತ್ತಿರುವ ಮಾನಸಿಕ ಪರಿಸ್ಥಿತಿಯ ಬಗ್ಗೆ ಒಂದಷ್ಟು ಕುತೂಹಲ. ಅದನ್ನು ವಿವರಿಸುವುದು ತುಂಬಾ ಕಷ್ಟ. ಬಹುಶಃ ಸಾಮಾನ್ಯರಾದ ನಮ್ಮ ಊಹೆಗೂ ಮೀರಿದ್ದು……

ಅವರು ಸಾಕಷ್ಟು ತರಬೇತಿಯನ್ನು ಪಡೆದಿರುತ್ತಾರೆ ಮತ್ತು ಅದಕ್ಕಾಗಿ ಮಾನಸಿಕವಾಗಿ ಸದೃಢವಾಗಿರುತ್ತಾರೆ ಎಂಬುದು ನಿಜ, ಅಲ್ಲದೆ ಅವರಿಗೆ ಇದು ಎರಡನೆಯ ಬಾರಿಯಾದ್ದರಿಂದ ಸ್ವಲ್ಪ ಅನುಭವವೂ ಇರುತ್ತದೆ ಎನ್ನಬಹುದು. ಆದರೆ ಎಷ್ಟೇ ತರಬೇತಿ, ಅನುಭವ ಇದ್ದರು ಆ ಪ್ರಯಾಣ ತುಂಬಾ ಕಠಿಣ ಮತ್ತು ಅತ್ಯಂತ ಅಪಾಯಕಾರಿ ಎಂದು ಎಲ್ಲರಿಗೂ ತಿಳಿದಿರುವುದೇ. ಇಲ್ಲಿ ತಾಂತ್ರಿಕ ದೋಷಗಳು, ಸಾಹಸ ಪ್ರವೃತ್ತಿ ಇತ್ಯಾದಿಗಳನ್ನೆಲ್ಲ ಹೊರತುಪಡಿಸಿ, ಕೇವಲ ಸುನಿತಾ ವಿಲಿಯಮ್ಸ್ ಅವರ ಮನ:ಸ್ಥಿತಿಯನ್ನು ಮಾತ್ರ ಗಣನೆಗೆ ತೆಗೆದುಕೊಂಡಾಗ ನಾವೆಲ್ಲ ಖಂಡಿತ ಅದರಿಂದ ಬಹಳ ದೂರ ಇದ್ದೇವೆ ಅನಿಸುತ್ತದೆ……

ಅಂದರೆ ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ ವಿಷಯಗಳಲ್ಲಿ ನಾವು ಮತ್ತು ನಮ್ಮ ಪ್ರತಿಕ್ರಿಯೆ ಎಷ್ಟೊಂದು ದುರ್ಬಲವಾಗಿರುತ್ತದೆ ಎಂದರೆ, ಒಮ್ಮೊಮ್ಮೆ ನಮಗೇ ನಮ್ಮ ಬಗ್ಗೆ ಜಿಗುಪ್ಸೆ ಹುಟ್ಟುತ್ತದೆ. ಸುನಿತಾ ವಿಲಿಯಮ್ಸ್ ಅಂತ ಅಪಾರ ಧೈರ್ಯಶಾಲಿ, ದೃಢ ವಿಶ್ವಾಸಿ ನಿಜಕ್ಕೂ ನಮಗೆ ಸ್ಪೂರ್ತಿಯಾಗಬೇಕು, ಮಾದರಿಯಾಗಬೇಕು. ನಮ್ಮ ಎಲ್ಲಾ ಕಷ್ಟಗಳನ್ನು ಎದುರಿಸುವ ಸಮಯದಲ್ಲಿ ಆಕೆಯ ನೆನಪು ನಮ್ಮಲ್ಲಿ ಆತ್ಮವಿಶ್ವಾಸ ಜೀವನೋತ್ಸಾಹ ಮೂಡಿಸಬೇಕು……

ತನ್ನ ಭಾಹ್ಯಾಕಾಶ ಜೊತೆಗಾರನೊಂದಿಗೆ ಆಕೆ ಏನೆಲ್ಲ ಮಾತನಾಡುತ್ತಿರಬಹುದು, ಆಕೆಯ ಮನದಲ್ಲಿ ಏನೆಲ್ಲಾ ಭಾವನೆ ಮೂಡಿರಬಹುದು, ತನ್ನನ್ನು ಕರೆತರುವ ಜವಾಬ್ದಾರಿ ವಹಿಸಿರುವ ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾದೊಂದಿಗೆ ಆಕೆ ಏನೆಲ್ಲಾ ವಿಚಾರ ವಿನಿಮಯ ಮಾಡಿಕೊಳ್ಳುತ್ತಿರಬಹುದು, ತನ್ನ ಜೀವ ಮತ್ತು ಜೀವನದ ಬಗ್ಗೆ ಯಾವ ರೀತಿ ಪ್ರತಿಕ್ರಿಯೆ ಮನಸ್ಸಿನಲ್ಲಿ ಮೂಡುತ್ತಿರಬಹುದು, ಈ ಎಲ್ಲವೂ ತುಂಬಾ ಕುತೂಹಲ ಮತ್ತು ಸಂಕೀರ್ಣವೆನಿಸುತ್ತದೆ…..

ಅದರಲ್ಲೂ ಇಲ್ಲಿಂದ ನಾವು ಅದನ್ನು ಊಹಿಸಿಕೊಂಡರೆ ಅದು ಮತ್ತಷ್ಟು ಕಠಿಣವಾಗಿ ಕಾಣುತ್ತದೆ. ಸಣ್ಣಪುಟ್ಟ ಕಷ್ಟಗಳಿಗೆ ತೀರಾ ಕುಸಿದು ಹೋಗುವ ನಾವು ನಿಜಕ್ಕೂ ಸುನೀತಾ ವಿಲಿಯಮ್ಸ್ ಅವರ ಪರಿಸ್ಥಿತಿಯನ್ನು ನೆನಪಿಸಿಕೊಂಡು ನಮ್ಮ ಕೆಲಸಗಳಲ್ಲಿ ಧೈರ್ಯವಾಗಿ ಮುನ್ನುಗ್ಗಬಹುದು. ಸಾವಿನ ಆತಂಕವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳಬಹುದು……

ಪ್ರಕೃತಿಯ ಶಿಶುವಾದ ನಾವು ಸಾವಿಗೆ ಅಂಜುತ್ತಲೇ ಪ್ರತಿನಿತ್ಯ ಅದರ ಛಾಯೆಯಲ್ಲಿಯೇ ಇಡೀ ಜೀವನ ಸಾಗಿಸುತ್ತೇವೆ. ಆದರೆ ಸುನಿತಾ ವಿಲಿಯಮ್ಸ್ ನಂತವರು ಸಾವಿಗೇ ಸವಾಲಾಗಿ ಬದುಕುತ್ತಿರುತ್ತಾರೆ. ನಾವುಗಳು ಜೀವನದಲ್ಲಿ ಅನೇಕ ಕೊರತೆಗಳ ಬಗ್ಗೆಯೇ ಮಾತನಾಡುತ್ತಾ ಬದುಕಿನ ಸ್ವಾರಸ್ಯವನ್ನೇ ಕಳೆದುಕೊಂಡಿರುತ್ತೇವೆ. ಇಂತಹ ಸಂದರ್ಭದಲ್ಲಿ ಅವರ ಬಾಹ್ಯಾಕಾಶಯಾನ ನಮ್ಮಲ್ಲಿ ಜೀವನೋತ್ಸಾಹ ತುಂಬಿಸಲಿ ಎಂಬ ಕಾರಣದಿಂದ ಲೇಖನ……

ಏನಾದರಾಗಲಿ, ಸುನೀತಾ ವಿಲಿಯಮ್ಸ್ ಮತ್ತು ಅವರ ಸಹಯಾತ್ರಿ ಇನ್ನು ಕೆಲವೇ ದಿನಗಳಲ್ಲಿ ಯಶಸ್ವಿಯಾಗಿ ಭೂಮಿಗೆ ಮರಳಲಿ, ಇನ್ನಷ್ಟು ದಿನ ಆಕೆ ತನ್ನ ಕುಟುಂಬದೊಂದಿಗೆ ಜೀವನ ಕಳೆಯಲಿ, ಆಕೆಯ ಅನುಭವ ನಮ್ಮೊಡನೆ ಹಂಚಿಕೊಳ್ಳಲಿ ಎಂದು ಆಶಿಸುತ್ತಾ……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

15 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

21 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago