ಕೋಲಾರ: ಬಿಇಎಂಎಲ್ ಹೊರಗುತ್ತಿಗೆ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.
ಜಿಲ್ಲೆಯ ಕೆಜಿಎಫ್ ನಲ್ಲಿ ಕಳೆದ 13 ದಿನಗಳಿಂದ ಕಾರ್ಮಿಕರು ಧರಣಿ ನಡೆಸುತ್ತಿರುವ ಸ್ಥಳಕ್ಕೆ ಕೋಲಾರ ಸಂಸದ ಮಲ್ಲೇಶ್ ಬಾಬು, ಶಾಸಕರಾದ ವೆಂಕಟಶಿವಾರೆಡ್ಡಿ, ಸಮೃದ್ಧಿ ಮಂಜುನಾಥ್ ಅವರೊಂದಿಗೆ ಭೇಟಿ ನೀಡಿ ಮಾತುಕತೆ ನಡೆಸಿ ಮಾತನಾಡಿದ ಅವರು ನಿಮ್ಮ ಬೇಡಿಕೆಗಳ ಬಗ್ಗೆ ಈಗಾಗಲೇ ಕಂಪನಿಯ ಸಿಎಂಡಿ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಅವರು ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದಾರೆ. ನಾನು ನಾಳೆ (ಸೋಮವಾರ) ಬೆಳಗ್ಗೆ ದೆಹಲಿಗೆ ತೆರಳುತ್ತಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ರಕ್ಷಣಾ ಸಚಿವಾಲಯದ ಕಾರ್ಯದರ್ಶಿ ಅವರನ್ನು ಭೇಟಿಯಾಗಿ ನಿಮ್ಮ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುತ್ತೇನೆ. ಸಿಂಗ್ ಅವರಿಗೆ ಕರ್ನಾಟಕದ ಬಗ್ಗೆ ವಿಶೇಷ ಕಾಳಜಿ ಇದ್ದು, ನಿಮ್ಮ ಸಮಸ್ಯೆಗಳಿಗೆ ಅವರು ಖಂಡಿತಾ ಸಕಾರಾತ್ಮಕವಾಗಿ ಸ್ಪಂದಿಸುತ್ತಾರೆ ಎನ್ನುವ ಭರವಸೆ ಇದೆ ಎಂದರು.
ಕಾರ್ಮಿಕರ ಉದ್ಯೋಗ ಖಾಯಂ, ವೇತನ ಹೆಚ್ಚಳ ಸೇರಿದಂತೆ ಹಲವಾರು ಬೇಡಿಕೆಗಳನ್ನಿಟ್ಟುಕೊಂಡು ಕಳೆದ 13 ದಿನಗಳಿಂದ ಧರಣಿ ನಡೆಸುತ್ತಿರುವ ನಿಮ್ಮ ನೋವನ್ನು ನಾನು ಅರ್ಥ ಮಾಡಿಕೊಳ್ಳಬಲ್ಲೆ. ನಾನು ಇಲ್ಲಿಗೆ ಬರುವುದಕ್ಕೆ ಮೊದಲೇ ಬಿಇಎಂಎಲ್ ಸಿಎಂಡಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದೆ. ಉದ್ಯೋಗ ಖಾಯಂ ವಿಷಯ ಒಂದು ಮಾತ್ರ ನನ್ನ ಕೈಯ್ಯಲ್ಲಿ ಇಲ್ಲ, ಉಳಿದ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ನಾವು ಪರಿಶೀಲನೆ ಮಾಡಲು ಸಿದ್ಧರಿದ್ದೇವೆ. ಕಾರ್ಮಿಕರು ಧರಣಿ ಅಂತ್ಯಗೊಳಿಸಿ ಕೆಲಸಕ್ಕೆ ಹಾಜರಾದರೆ, ಈ ಬಗ್ಗೆ ಕೂತು ಚರ್ಚೆ ನಡೆಸಲು ನಾವು ತಯಾರಿದ್ದೇವೆ ಎಂದು ಅವರು ನನಗೆ ತಿಳಿಸಿದರು ಎಂಬುದಾಗಿ ಸಚಿವರು ಕಾರ್ಮಿಕರ ಸಭೆಯಲ್ಲಿ ಹೇಳಿದರು.
ಬಿಇಎಂಎಲ್ ಕೇಂದ್ರ ಸರಕಾರಿ ಸ್ವಾಮ್ಯದ ಬೃಹತ್ ಕೈಗಾರಿಕೆ. 13 ದಿನಗಳಿಂದ ಧರಣಿಗೆ ಅವಕಾಶ ಮಾಡಿಕೊಡುವ ಪರಿಸ್ಥಿತಿ ಸೃಷ್ಟಿ ಆಗಿದ್ದೇ ಕಳವಳಕಾರಿ. ಇದು ಕಂಪನಿಗಾಗಲಿ, ದೇಶಕ್ಕಾಗಲಿ ಅಥವಾ ಕಾರ್ಮಿಕರ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಆದ್ದರಿಂದ ನನ್ನ ಮಾತಿನ ಮೇಲೆ ಭರವಸೆ ಇಡಿ. ತಕ್ಷಣ ನಿಮ್ಮ ಧರಣಿ ಅಂತ್ಯಗೊಳಿಸಿ ಕೆಲಸಕ್ಕೆ ಹಾಜರಾಗಿ. ನಾನು ಗುರುವಾರದೊಳಗೆ ರಕ್ಷಣಾ ಸಚಿವರ ಜತೆ ಚರ್ಚೆ ನಡೆಸಿದ ಬಳಿಕ ಶುಕ್ರವಾರ ಬೆಳಗ್ಗೆ ನಿಮ್ಮೆಲ್ಲರಿಗೂ ಒಳ್ಳೆಯ ಸುದ್ದಿ ಕೊಡುತ್ತೇನೆ ಎಂದರು.
ನಿಮ್ಮಗಳ ಕುಟುಂಬಗಳಿಗೆ ಒಳ್ಳೆಯದಾಗುವ ರೀತಿಯಲ್ಲಿ ನಾನು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ, ಇದು ನನ್ನ ಜವಾಬ್ದಾರಿ. ನೀವು ಮೊದಲು ಕೆಲಸಕ್ಕೆ ಹೋಗಿ, ಇಷ್ಟು ದಿನ ಧರಣೆ ಕೂತರೆ ಯಾರಿಗೂ ಶ್ರೇಯಸ್ಕರ ಅಲ್ಲ. ಶನಿವಾರ ಈ ವಿಷಯ ನನ್ನ ಗಮನಕ್ಕೆ ಬಂತು. ಭಾನುವಾರ ನಿಮ್ಮ ಬಳಿಗೆ ಬಂದಿದ್ದೇನೆ ಎಂದರು.
ಇದಕ್ಕೂ ಮೊದಲು ಸಚಿವ ಕುಮಾರಸ್ವಾಮಿ ಕಾರ್ಮಿಕ ಮುಖಂಡರ ಮನವಿಗಳನ್ನು ಆಲಿಸಿದರು. ಬಳಿಕ ಸಚಿವರ ಮಾತಿಗೆ ಸ್ಪಂದಿಸಿದ ಕಾರ್ಮಿಕರು; ಈ ಕೂಡಲೇ ನಾವು ಕೆಲಸಕ್ಕೆ ಹಾಜರಾಗಬೇಕು ಎನ್ನುವ ನಿಮ್ಮ ಒತ್ತಾಸೆಯ ಬಗ್ಗೆ ಚರ್ಚೆ ನಡೆಸುತ್ತೇವೆ. ಇಲ್ಲಿ ಯಾವುದೇ ಕಾರಣಕ್ಕೂ ನಿಮ್ಮ ಕಳಕಳಿಗೆ ವಿರುದ್ಧವಾದ ಯಾವುದೇ ನಿರ್ಧಾರ ಮಾಡುವುದಿಲ್ಲ ಎಂದು ಹೇಳಿದರು.
ಸಭೆಯಲ್ಲಿ ಮಾಜಿ ಸಂಸದ ಎಸ್. ಮುನಿಸ್ವಾಮಿ, ಎಂಎಲ್ಸಿ ಇಂಚರ ಗೋವಿಂದರಾಜು, ಮಾಜಿ ಸದಸ್ಯ ಚೌಡರೆಡ್ಡಿ, ಮಾಜಿ ಶಾಸಕರಾದ ವೈ.ಸಂಪಂಗಿ, ಎಂ.ನಾರಾಯಣಸ್ವಾಮಿ, ಬಿ.ಪಿ ವೆಂಕಟಮುನಿಯಪ್ಪ, ಸೇರಿದಂತೆ ಅನೇಕ ಮುಖಂಡರು, ವಿವಿಧ ಸಂಘಟನೆಗಳ ಕಾರ್ಮಿಕ ಮುಖಂಡರು ಇದ್ದರು.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…