ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ ನೌಕರರ ಸಂಘ ಒತ್ತಾಯಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಸ್ಕೀಮ್ ನೌಕರರ ಕರಾಳ ದಿನಾಚರಣೆ ಅಂಗವಾಗಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷೆ ನಳಿನಾಕ್ಷಿ, ಜಿಲ್ಲೆಯ 600ಕ್ಕೂ ಹೆಚ್ಚು ಅಂಗನವಾಡಿ ನೌಕರರನ್ನು ಬಿಎಲ್‌ಒ ಕೆಲಸಕ್ಕೆ ನಿಯೋಜಿಸಿರುವುದರಿಂದ ಅಂಗನವಾಡಿ ಸೇವೆಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದರು.

ಅಂಗನವಾಡಿ ನೌಕರರಲ್ಲಿ ಹಲವರಿಗೆ ಆರೋಗ್ಯ ಸಮಸ್ಯೆಗಳಿದ್ದು, ಕೆಲವರಿಗೆ ಗರ್ಭಕೋಶ ಶಸ್ತ್ರಚಿಕಿತ್ಸೆ ನಡೆದಿದ್ದು, ಕೆಲವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಇನ್ನೂ ಕೆಲವರಿಗೆ ಕಾಲು ನೋವು ಹಾಗೂ ಮೊಬೈಲ್‌ನಲ್ಲಿ ಕೆಲಸ ಮಾಡಲು ಕಣ್ಣಿನ ಸಮಸ್ಯೆಗಳಿವೆ. ಇಂತಹ ಪರಿಸ್ಥಿತಿಯಲ್ಲಿ ಬಿಎಲ್‌ಒ ಜವಾಬ್ದಾರಿ ನಿರ್ವಹಿಸುವುದು ಕಷ್ಟಕರವಾಗಿದೆ ಎಂದು ಹೇಳಿದರು.

ಅಂಗನವಾಡಿಗಳು ಈಗಾಗಲೇ ಆರಂಭವಾಗಿದ್ದು, ಮಕ್ಕಳು ಕೇಂದ್ರಗಳಿಗೆ ಬರುತ್ತಿದ್ದಾರೆ. ಈ ವೇಳೆ ನೌಕರರನ್ನು ಬಿಎಲ್‌ಒ ಕೆಲಸಕ್ಕೆ ನಿಯೋಜಿಸಿದರೆ ಮಕ್ಕಳ ಆರೈಕೆ ಮತ್ತು ಶಿಕ್ಷಣದ ಮೇಲೆ ಪರಿಣಾಮ ಬೀಳಲಿದೆ. ಮಕ್ಕಳಿಗೆ ಯಾವುದೇ ಸಮಸ್ಯೆಯಾದರೆ ಅದರ ಹೊಣೆ ಯಾರು ಎಂಬ ಪ್ರಶ್ನೆಯನ್ನು ಅವರು ಎತ್ತಿದರು.

ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಒತ್ತಾಯ

ರಾಷ್ಟ್ರೀಯ ಶಿಕ್ಷಣ ನೀತಿ–2020 ಜಾರಿಯಿಂದ 3 ರಿಂದ 6 ವರ್ಷದ ಮಕ್ಕಳನ್ನು ಅಂಗನವಾಡಿಗಳಿಂದ ದೂರವಿಟ್ಟು ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ–ಯುಕೆಜಿ ಆರಂಭಿಸಲಾಗುತ್ತಿದೆ. ಇದರಿಂದ ಅಂಗನವಾಡಿಗಳ ಫಲಾನುಭವಿಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ನಳಿನಾಕ್ಷಿ ತಿಳಿಸಿದರು.

ರಾಜ್ಯದ 10 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ–ಯುಕೆಜಿ ಆರಂಭಿಸುವುದಾಗಿ ಸರ್ಕಾರ ಘೋಷಿಸಿದ್ದರೂ, ಅದಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಿಲ್ಲ ಎಂದು ದೂರಿದರು. ಜೊತೆಗೆ, ಫಲಾನುಭವಿಗಳಿಗೆ ಸ್ಥಳೀಯ ತಾಜಾ ಆಹಾರದ ಬದಲಿಗೆ ಸಂಸ್ಕರಿಸಿದ ಪ್ಯಾಕೆಟ್ ಆಹಾರ, ನಗದು ವರ್ಗಾವಣೆ ಹಾಗೂ ಕೇಂದ್ರಿಕೃತ ಅಡಿಗೆ ವ್ಯವಸ್ಥೆಗಳ ಮೂಲಕ ಐಸಿಡಿಎಸ್ ಯೋಜನೆಯನ್ನು ಖಾಸಗೀಕರಣ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

ಕನಿಷ್ಠ ವೇತನ ಮತ್ತು ಮೂಲ ಸೌಲಭ್ಯಗಳ ಬೇಡಿಕೆ

ಅಂಗನವಾಡಿ ಕಾರ್ಯಕರ್ತೆಯರಿಗೆ ತಿಂಗಳಿಗೆ ₹41,000 ಹಾಗೂ ಸಹಾಯಕಿಯರಿಗೆ ₹35,000 ಕನಿಷ್ಠ ವೇತನ ನೀಡಬೇಕು ಎಂದು ಸಂಘ ಒತ್ತಾಯಿಸಿತು. ಜೊತೆಗೆ, ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಶುದ್ಧ ಕುಡಿಯುವ ನೀರು, ಗ್ಯಾಸ್ ಸಂಪರ್ಕ, ಅಡುಗೆ ಸಲಕರಣೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು. ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರಗಳಿಗೆ ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಬಾಡಿಗೆ ನೀಡಬೇಕೆಂದು ಆಗ್ರಹಿಸಲಾಯಿತು.

ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಎ. ವೆಂಕಟೇಶ್, ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಖಜಾಂಜಿ ಪುಷ್ಪಾವತ್ತಮ್ಮ, ಪ್ರಧಾನ ಕಾರ್ಯದರ್ಶಿ ಕಲಾವತಿ ಹಾಗೂ ಜಿಲ್ಲೆಯ ವಿವಿಧ ತಾಲೂಕಿನ ಸಿಐಟಿಯು ಮುಖಂಡರು ಮತ್ತು ಅಂಗನವಾಡಿ ನೌಕರರು ಭಾಗವಹಿಸಿದ್ದರು.

Ramesh Babu

Journalist

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

7 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

8 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

21 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

21 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

21 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

22 hours ago