Categories: ರಾಜ್ಯ

ಬಿಜೆಪಿಗೆ ಸಂಸದೀಯ, ಪ್ರಜಾಪ್ರಭುತ್ವ ಹಾಗೂ ಸಂವಿಧಾನಾತ್ಮಕ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ- ಸಿಎಂ ಸಿದ್ದರಾಮಯ್ಯ ಕಿಡಿ

2024-25ನೇ ಸಾಲಿಗೆ 3,71,383 ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಲಾಗಿದೆ. ಕಳೆದ ವರ್ಷದ ಬಜೆಟ್ ಗಾತ್ರ 3,27,747 ಕೋಟಿ ರೂ.ಇತ್ತು. ಕಳೆದ ಬಜೆಟ್ ಗಿಂತ 46,636 ಕೋಟಿ ರೂ. ಗಾತ್ರ ಹೆಚ್ಚಾಗಿದೆ. ಜುಲೈನಲ್ಲಿ ಮಂಡಿಸಿದ ಬಜೆಟ್ ಗಾತ್ರಕ್ಕಿಂತ ಬೆಳವಣಿಗೆಯಲ್ಲಿ ಶೇ.13 ರಷ್ಟು ಬೆಳವಣಿಗೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

2024-25 ನೇ ಸಾಲಿನ ಆಯವ್ಯಯವನ್ನು ಮಂಡಿಸಿದ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯದ ಬಡವರು, ಮಹಿಳೆಯರು, ಯುವಕರು, ಪರಿಶಿಷ್ಟ ಜಾತಿ, ವರ್ಗದವರು, ಅಲ್ಪಸಂಖ್ಯಾತರಿಗೆ ಕೊಂಡುಕೊಳ್ಳುವ ಶಕ್ತಿ ಹೆಚ್ಚು ಮಾಡುವ ಪ್ರಯತ್ನ ಹಾಗೂ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡುವ ಪ್ರಯತ್ನವೂ ಬಜೆಟ್ ನಲ್ಲಿ ಆಗಿದೆ ಎಂದು ಹೇಳಿದರು.

ದೇಶದಲ್ಲಿ ನಿರುದ್ಯೋಗ, ಹಣದುಬ್ಬರ ಸಮಸ್ಯೆಗಳಿಂದ ಬಡವರು ಜೀವನ ಸಾಗಿಸುವುದು ಕಷ್ಟವಾಗಿದೆ. ಬಡವರ ಕೊಳ್ಳುವ ಶಕ್ತಿಯನ್ನು ಹೆಚ್ಚು ಮಾಡಲು ಗ್ಯಾರಂಟಿ ಯೋಜನೆಗಳನ್ನು ರೂಪಿಸಲಾಗಿದೆ.  ಈ ಆರ್ಥಿಕ ವರ್ಷದಲ್ಲಿ ನಾವು ಅಧಿಕಾರಕ್ಕೆ ಬಂದು 9 ತಿಂಗಳಾಗುವ ಮೊದಲೇ ಜನತೆಗೆ ಕೊಟ್ಟಿದ್ದ ಭರವಸೆಗಳನ್ನು ಈಡೇರಿಸಲಾಗಿದೆ. ಇದರೊಂದಿಗೆ ಕೃಷಿ, ನೀರಾವರಿ, ಲೋಕೋಪಯೋಗಿ, ಇಂಧನ, ಗ್ರಾಮೀಣಾಭಿವೃದ್ಧಿ, ಬರಗಾಲ ಎಲ್ಲವನ್ನೂ ಸಮರ್ಥವಾಗಿ ನಿಭಾಯಿಸುವ ದೃಷ್ಟಿಯಿಂದ  ಹಾಗೂ ಅಭಿವೃದ್ಧಿಗೆ ಹಣ ಕೊಡುವ ಕೆಲಸವನ್ನೂ ಮಾಡಲಾಗಿದೆ ಎಂದರು.

ಈ ವರ್ಷ 36,000 ಕೋಟಿ ರೂ. ಗ್ಯಾರಂಟಿಗಳಿಗೆ ಕೊಟ್ಟಿದ್ದರೂ ಕೂಡ ಅಭಿವೃದ್ಧಿಗೂ ಅನುದಾನವನ್ನು  ಮೀಸಲಿರಿಸಿದ್ದೇವೆ. 240 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಸುಮಾರು 35,000 ಕೋಟಿ ರೂ. ಕೃಷಿ ಉತ್ಪಾದನೆಯಲ್ಲಿ ನಷ್ಟವಾಗಿದೆ. 18,171 ಕೋಟಿ ರೂ.ಗಳನ್ನು ಎನ್‌ಡಿಆರ್‌ಎಫ್ ಮಾರ್ಗಸೂಚಿಗಳ ಪ್ರಕಾರ ಬರಪರಿಹಾರವನ್ನು ಕೇಂದ್ರ ಸರ್ಕಾರದಿಂದ  ಕೋರಲಾಗಿದೆ. ಎನ್.ಡಿ.ಆರ್ ಎಫ್ ಅನುದಾನ ನಿಗದಿ ಮಾಡುವುದು ಹಣಕಾಸು ಆಯೋಗದವರು. ಅದು ರಾಜ್ಯದಿಂದ ಸಂಗ್ರಹಿಸಿರುವ ಹಣ. ಕೇಂದ್ರ ಸರ್ಕಾರದ ಅನುದಾನವಲ್ಲ. ಐದು ತಿಂಗಳಾದರೂ ಒಂದು ರೂಪಾಯಿಯನ್ನೂ ಬಿಡುಗಡೆ ಮಾಡಿಲ್ಲ, ಸಭೆಯನ್ನೂ ಕರೆದಿಲ್ಲ ಎಂದು ತಿಳಿಸಿದರು.

ಬಿಜೆಪಿಯವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ವಿಧಾನಸಭೆಯಲ್ಲಿ ಬಜೆಟ್ ಮಂಡಿಸುವಾಗ ವಾಕ್ ಔಟ್ ಮಾಡಿದ ನಿದರ್ಶನ ಇಲ್ಲ. ಬಜೆಟ್ ಓದಲು ಪ್ರಾರಂಭ ಮಾಡಿದ ಕೂಡಲೇ ಸುನೀಲ್ ಕುಮಾರ್ ಅವರು ಏನಿಲ್ಲ ಏನಿಲ್ಲ ಎಂದು ಘೋಷಣೆ ಕೂಗುತ್ತಿದ್ದರು. ಬಿಜೆಪಿಗೆ ಸಂಸದೀಯ, ಪ್ರಜಾಪ್ರಭುತ್ವ ಹಾಗೂ ಸಂವಿಧಾನಾತ್ಮಕ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ. ಅವರ ತಲೆ ತುಂಬ ರಾಜಕೀಯ ಮಂಜು ತುಂಬಿದೆ. ಕಾಮಾಲೆ ರೋಗಿಗಳಿಗೆ ಕಂಡಿದ್ದೆಲ್ಲಾ ಹಳದಿಯಂತೆ ಆಗಿದೆ. ರಾಜಕೀಯ ಹೇಳಿಕೆ ಬೇಡ ಎನ್ನುವುದಿಲ್ಲ. ಆದರೆ ಟೀಕೆಗಳು ಆರೋಗ್ಯಕರವಾಗಿರಬೇಕು. ಪ್ರಟೀಕೆ ಮಾಡುವ ಸಲುವಾಗಿಯೇ ಟೀಕೆ ಮಾಡುತ್ತಾರೆ. ಪ್ಲಕಾರ್ಡ್ ಹಿಡಿದಿದ್ದರು. ಬಜೆಟ್ ಕೇಳಬಾರದು ಎಂದು ಯೋಚಿಸಿಕೊಂಡೇ ಬಂದಿದ್ದರು. ನಾನು ವಸ್ತುಸ್ಥಿತಿಯನ್ನು ಹೇಳಿದರೆ ಅವರಿಗೆ ಅದು ನುಂಗಲಾರದ ತುತ್ತು. ಸತ್ಯ ಹೇಳಿದರೆ ತಡೆದುಕೊಳ್ಳಲು ಆಗುವುದಿಲ್ಲ ಎಂದು ಹೇಳಿದರು.

ಕೇಂದ್ರದಿಂದ ರಾಜ್ಯಕ್ಕಾದ ಅನ್ಯಾಯವನ್ನು  ಜನರಿಗೆ ಹೇಳುವುದು ನನ್ನ ಕರ್ತವ್ಯ ಹಾಗೂ ಜವಾಬ್ದಾರಿ. ಅವರು ಕೂಡ ಕೋಲೆಬಸವನ ಹಾಗೆ ತಲೆ ಅಲ್ಲಾಡಿಸದೇ ಕೇಂದ್ರದವರನ್ನು ಕೇಳಬೇಕಿತ್ತು. ಕೋಲಾರ ಸಂಸದರಾದ ಮುನಿಸ್ವಾಮಿಯವರು ಸಂಸತ್ತಿನಲ್ಲಿ ಒಂದು ದಿನವೂ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಬಾಯಿ ಬಿಡಲಿಲ್ಲ. ಐದು ವರ್ಷದಲ್ಲಿ ಒಂದು ಬಾರಿಯಾದರೂ ಮಾತನಾಡಿದ್ದಾರಾ? ಅವರು ಸಂಸದರಾಗಲು ಲಾಯಕ್ಕೇ? ಎಂದು ಪ್ರಶ್ನೆ ಮಾಡಿದರು.

ಕೇಂದ್ರ ಸರ್ಕಾರದಿಂದ ನ್ಯಾಯಯುತವಾದದ್ದು ಕೇಳಲು ಇವರಿಗೆ ಸಾಧ್ಯವಿಲ್ಲ ಎಂದರೇ ಏನು ಸೂಚಿಸುತ್ತದೆ.  ನಾನು ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ, ಕೇಂದ್ರದ ಅನುದಾನವನ್ನು ಪಡೆಯಿರಿ ಎಂದು ಒತ್ತಾಯಿಸಿದ್ದೆ. 15ನೇ ಹಣಕಾಸು ಆಯೋಗದವರು ಶಿಫಾರಸು ಮಾಡಿದ್ದ 5,495 ಕೋಟಿ ರೂ. ವಿಶೇಷ ಅನುದಾನ ಪಡೆಯಲು ಹೇಳಿದ್ದೆ. ಬೆಂಗಳೂರು ಅಭಿವೃದ್ಧಿಗೆ 6,000 ಕೋಟಿ ಕೊಟ್ಟಿದ್ದಾರೆ. ಅದನ್ನು ಪಡೆಯಿರಿ ಎಂದು ಹೇಳಿದ್ದೆ. ಒಟ್ಟು  11,495 ಕೋಟಿ ರೂ. ಶಿಫಾರಸ್ಸು ಮಾಡಿರುವುದನ್ನು ಒತ್ತಾಯ ಮಾಡಿ ಎಂದು ಅವರಿಗೆ ಆಗ್ರಹಿಸಿದ್ದೆ ಎಂದರು.

ಕನ್ನಡಿಗರಿಗೆ ಅನ್ಯಾಯವಾದರೂ ಸುಮ್ಮನಿರಬೇಕೇ? ಭದ್ರಾ ಮೇಲ್ದಂಡೆಗೆ 2023-24 ಕೇಂದ್ರ ಬಜೆಟ್ ನಲ್ಲಿ ರೂ.5,300 ಕೋಟಿ ಕೊಡುತ್ತೇವೆ ಎಂದಿದ್ದರು. ಅದನ್ನೇ ಇಲ್ಲಿನ ಬಜೆಟ್ ನಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿ ನರೇಂದ್ರ ಮೋದಿಗೆ ಧನ್ಯವಾದಗಳನ್ನು ಅರ್ಪಿಸಿದ್ದರು. ರಾಷ್ಟ್ರೀಯ ಯೋಜನೆಯಾಗಲಿದೆ ಎಂದು ಹೇಳಿದವರು ಇವರೇ ಆದರೆ ಇನ್ನೂ ಆಗಿಲ್ಲವೆಂದರೆ ಅವರಿಗೆ ಕೋಪ ಏಕೆ? ಇದು ಕನ್ನಡ ಜನರಿಗೆ ಮಾಡುತ್ತಿರುವ ದ್ರೋಹ. ಇದು ಪ್ರಜಾಪ್ರಭುತ್ವದ ವಿರೋಧವಲ್ಲವೇ? ಎಂದು ಪ್ರಶ್ನಿಸಿದರು.

ನಾನು ಈ ವರ್ಷ ಗ್ಯಾರಂಟಿಗಳಿಗೆ ರೂ.36,000 ಕೋಟಿ ಕೊಟ್ಟಿಲ್ಲ ಎಂದು ಸಾಬೀತು ಪಡಿಸಲಿ. ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡಿಲ್ಲ ಎಂದು ಸಾಬೀತು ಮಾಡಲಿ. ಚರ್ಚೆ ಮಾಡಬಹುದಿತ್ತು. ಅದಕ್ಕೆ ಇವರ ತಲೆಯಲ್ಲಿ ಏನೂ ಇಲ್ಲ, ರಾಜಕೀಯ ಮಂಜು ಕವಿದಿದೆ. ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ ಎಂದರು.

ಸಾಲ ಮಾಡಿರುವುದಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳುತ್ತಾರೆ. ನಾನು ಸ್ವಾತಂತ್ರ್ಯ ಬಂದಾಗಿನಿಂದ ಹಣಕಾಸಿನ ಮಂತ್ರಿಯಾಗಿರುವವರೆಗೆ ಈ ರಾಜ್ಯದ  ಮೇಲೆ 2,46,000 ಕೋಟಿ ಸಾಲವಿದ್ದು , ನಾನು ಮಾಡಿರುವುದು 1.12 ಲಕ್ಷ  ಕೋಟಿ ರೂ.ಗಳು ಮಾತ್ರ. ಇವರ ಬಜೆಟ್ ನಲ್ಲಿ ಕಳೆದ ವರ್ಷ 80 ಸಾವಿರ ಕೋಟಿ ರೂ.ಗಳ ಸಾಲ ಮಾಡಿದ್ದಾರೆ ಎಂದು ಹೇಳಿದರು.

Ramesh Babu

Journalist

Recent Posts

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

1 hour ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

9 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

20 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago