ಬಿಜೆಪಿ ಕೊಟ್ಟ ಮಾತಿನಂತೆ ನಡೆದುಕೊಂಡಿದೆಯಾ?- ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ಓಟಿಗೆ ಗೌರವ ತಂದುಕೊಟ್ಟವರು ನಾವು. ಬಿಜೆಪಿ ಕೊಟ್ಟ ಮಾತಿನಂತೆ ನಡೆದುಕೊಂಡಿದೆಯಾ ? ನಿಮ್ಮ ಖಾತೆಗಳಿಗೆ ನೇರವಾಗಿ ಹಣ ಜಮೆ ಮಾಡುತ್ತಿರುವವರು ನಾವಾ? ಬಿಜೆಪಿಯಾ? ಇದನ್ನು ನಿಮ್ಮ ಹೃದಯಕ್ಕೆ ಕೇಳಿಕೊಂಡು ತೀರ್ಮಾನಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಆಯೋಜಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.

ಅನ್ನಭಾಗ್ಯ, ಕೃಷಿಭಾಗ್ಯ, ಕ್ಷೀರಧಾರೆ ಸೇರಿ ಹತ್ತಾರು ಭಾಗ್ಯಗಳು, ಐದು ಗ್ಯಾರಂಟಿಗಳನ್ನು ಜಾರಿ ಮಾಡಿ ಪ್ರತೀ ತಿಂಗಳು ನಾವು ಕೊಟ್ಟ ಮಾತಿನಂತೆ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡುತ್ತಿರುವವರು ನಾವು. ಉಚಿತ ಬಸ್, ಉಚಿತ ವಿದ್ಯುತ್ ಕೊಡುತ್ತಿರುವವರು ನಾವು‌ . ತಿಂಗಳಿಗೆ 2 ಸಾವಿರ ಪ್ರತೀ ಮಹಿಳೆಯ ಖಾತೆಗೆ ಹಾಕುತ್ತಿರುವವರು ನಾವು ಎನ್ನುತ್ತಾ, ನಾವು ಮಾಡಿದ ಕೆಲಸಕ್ಕೆ ಕೂಲಿ ಕೊಡಿ ಎಂದು ಕೈ ಮುಗಿದು ಕೇಳಿದರು.

ಆದರೆ ಮೋದಿಯವರು ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬ ಭಾರತೀಯರ ಖಾತೆಗೆ 15 ಲಕ್ಷ ಹಣ ಹಾಕ್ತೀವಿ ಅಂದರು. ಮೋದಿಯವರು ಈ ಹಣ ಹಾಕಿದ್ರಾ ನಿಮ್ಮ ಖಾತೆಗೆ? ವಿದೇಶದಿಂದ ಕಪ್ಪು ಹಣ ತಂದರಾ ಎಂದು ನೆರೆದಿದ್ದ ಜನರನ್ನು ಪ್ರಶ್ನಿಸಿದರು.

ಅಚ್ಚೆದಿನ್ ಆಯೆಗಾ ಎಂದು ಡೈಲಾಗ್ ಹೊಡೆದದ್ದು ಮೋದಿಯವರು. ಆದರೆ ಪೆಟ್ರೋಲ್, ಡೀಸೆಲ್ ಬೆಲೆ, ಗ್ಯಾಸ್ ಬೆಲೆ, ರಸಗೊಬ್ಬರದ ಬೆಲೆ ಎಲ್ಲಾ ಏರಿಸಿ ಏರಿಸಿ ಬಡವರ, ಮಧ್ಯಮ ವರ್ಗದವರು ಬದುಕುವುದೇ ದುಸ್ತರ ಮಾಡಿಬಿಟ್ಟರು ಎಂದು ಒಂದೊಂದಾಗಿ ವಿವರಿಸಿದರು.

BJP ಸಮಾಜದಲ್ಲಿರುವ ಅಸಮಾನತೆಯ ಮಹಾನ್ ಪೋಷಕರು. ಬಡವರು ಇನ್ನಷ್ಟು ಬಡವರಾಗುತ್ತಲೇ ಹೋಗಬೇಕು, ಮಧ್ಯಮ ವರ್ಗದವರು ಬಡತನಕ್ಕೆ ಜಾರಬೇಕು ಎನ್ನುವುದು ಬಿಜೆಪಿಯ ಅಜೆಂಡಾ. ಹೀಗಾಗಿ ಮಧ್ಯಮ ವರ್ಗದವರು, ಬಡವರಿಗೆ ಕಾಂಗ್ರೆಸ್ ಸರ್ಕಾರ ಕೊಡುವ ಎಲ್ಲಾ ಕಾರ್ಯಕ್ರಮಗಳನ್ನೂ ವಿರೋಧಿಸುತ್ತಾರೆ, ಫಲಾನುಭವಿಗಳನ್ನು ಅವಮಾನಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಸರ್ಕಾರ ಸಂವಿಧಾನದ ಆಶಯಗಳಂತೆ ಸರ್ವರ ಕಲ್ಯಾಣದ ಕಾರ್ಯಕ್ರಮ ರೂಪಿಸುತ್ತಿದೆ. ನಮ್ಮ ಸಂವಿಧಾನ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಮಹಿಳೆಯರು, ಯುವ ಸಮೂಹ ಸೇರಿ ಸರ್ವರಿಗೂ ಅವಕಾಶಗಳನ್ನು ಕೊಡುತ್ತದೆ. ಈ ಅವಕಾಶಗಳನ್ನು ನಾಶ ಮಾಡಬೇಕು ಎನ್ನುವ ಕಾರಣಕ್ಕೆ ಬಿಜೆಪಿ ನಮ್ಮ ಸಂವಿಧಾನವನ್ನು ಬದಲಾಯಿಸಿ ಅವರ ಮನುಸ್ಮೃತಿ ಪರವಾಗಿ ಮಾತನಾಡುತ್ತಿದೆ.

ಬಿಜೆಪಿಯ ಹಾಲಿ ಸಂಸದ, ಮಾಜಿ ಕೇಂದ್ರ ಸಚಿವ ಅನಂತ ಕುಮಾರ ಹೆಗ್ಡೆ ಅವರು ಪದೇ ಪದೇ ಸಂವಿಧಾನ ಬದಲಾಯಿಸುವ ಮಾತಾಡುತ್ತಿದ್ದಾರೆ. ಇವರು ಬಹಿರಂಗವಾಗಿ ಸಂವಿಧಾನ ಬದಲಾಯಿಸುವ ಮಾತಾಡಿದರೂ ಪ್ರಧಾನಿ ಮೋದಿಯವರಾಗಲೀ, ಬಿಜೆಪಿ ಹೈ ಕಮಾಂಡ್ ಆಗಲಿ ಇದನ್ನು ವಿರೋಧಿಸಿಲ್ಲ. ಹೀಗಾಗಿ ಬಿಜೆಪಿಯ ಅಜೆಂಡಾವನ್ನು ನಾಡಿನ ಜನತೆ ಅರ್ಥಮಾಡಿಕೊಳ್ಳಬೇಕು. ನಮ್ಮ ಸಂವಿಧಾನ ಹೋದರೆ ನಾಡಿನ ಜನರ ಮಕ್ಕಳ ಭವಿಷ್ಯಕ್ಕೆ, ಅವರ ಬದುಕುವ-ದುಡಿಯುವ ಅವಕಾಶಗಳಿಗೆ ಕಂಟಕ ಬರುತ್ತದೆ ಎಂದು ಎಚ್ಚರಿಸಿದರು.

ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಜನಿಸುತ್ತೇನೆ ಎಂದಿದ್ದ ಮಾಜಿ ಪ್ರಧಾನಿ ದೇವೇಗೌಡರು ಈಗ ಬಿಜೆಪಿ ಜತೆ ಸೇರಿಕೊಂಡು ಬಿಜೆಪಿ ಮತ್ತು ಮೋದಿಯನ್ನು ಹೊಗಳುತ್ತಿದ್ದಾರೆ. ಇವರನ್ನು ಹೇಗೆ ನಂಬುತ್ತೀರಿ ಎಂದು ಪ್ರಶ್ನಿಸಿದರು.

ಮೊನ್ನೆ ನಡೆದ ವಿಧಾನ‌ಪರಿಷತ್ ಚುನಾವಣೆ ನಾಳೆ ಬರಲಿರುವ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದು ಹೆಚ್.ಡಿ.ಕುಮಾರಸ್ವಾಮಿಯವರು ಹೇಳಿದ್ದರು. ಆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ದೋಸ್ತಿಯನ್ನು ಸೋಲಿಸಿ ಕಾಂಗ್ರೆಸ್ ಪಕ್ಷದಿಂದ ಪುಟ್ಟಣ್ಣ ಜಯಭೇರಿ ಭಾರಿಸಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಅವರ ಮಾತಿನಂತೆ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಸೋಲುತ್ತದೆ. ಕಾಂಗ್ರೆಸ್ ಗೆಲ್ಲುತ್ತದೆ ಎಂದು ಖಚಿತವಾಗಿ ನುಡಿದರು.

ಸಚಿವ ಕೆ.ಹೆಚ್.ಮುನಿಯಪ್ಪ ಅವರು ಹಿಡಿದ ಕೆಲಸ ಬಿಡುವವರಲ್ಲ. ದೇವನಹಳ್ಳಿ ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಮಾಡಲು ಪಣತೊಟ್ಟು ಕೆಲಸ ಮಾಡುತ್ತಿದ್ದಾರೆ. ಅವರು ದೇವನಹಳ್ಳಿ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ರೆಡಿ ಮಾಡಿಕೊಂಡು ಬಂದಿದ್ದಾರೆ. ಅದೆಲ್ಲಕ್ಕೂ ಹಣ ಬಿಡುಗಡೆ ಮಾಡಲಾಗುವುದು, ಅನುದಾನ ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.

ನೇಕಾರರ ಬಹುವರ್ಷಗಳ ಬೇಡಿಕೆಗಳನ್ನು ಈಡೇರಿಸಿದ್ದು ಕಾಂಗ್ರೆಸ್ ಸರ್ಕಾರ. ಹೀಗಾಗಿ ಯಾರು ನಿಮ್ಮ ಬದುಕಿನ ಪರವಾಗಿ ಇದ್ದಾರೋ ಅವರನ್ನು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಿ ಎಂದು ಕರೆ ನೀಡಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ಸೇರಿ ಪಕ್ಷದ ಶಾಸಕರು ಮತ್ತು ಇಲಾಖೆಗಳ ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

6 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

7 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

11 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

12 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

17 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

19 hours ago