ಬಿಜೆಪಿ ನಾಯಕರು ನಿಜವಾಗಿ ವಿರೋಧಿಸುವುದು ಗ್ಯಾರಂಟಿ ಯೋಜನೆಗಳನ್ನಲ್ಲ, ಫಲಾನುಭವಿಗಳಾದ ಬಡವರ ಮೇಲೆ- ಸಿಎಂ ಸಿದ್ದರಾಮಯ್ಯ ಕಿಡಿ

ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧವಿದ್ದರೆ ಬಿಜೆಪಿ ನಾಯಕರು ಅದನ್ನು ಕಂತುಗಳಲ್ಲಿ ಹೇಳುವುದನ್ನು ಬಿಟ್ಟು ಒಂದೇ ಬಾರಿ ನೇರವಾಗಿ, ಸ್ಪಷ್ಟವಾಗಿ ಹೇಳಿಬಿಡಬೇಕು, ಅದೇ ರೀತಿ ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಜಾರಿಯಲ್ಲಿರುವ ಎಲ್ಲ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಾಗಿ ಆ ರಾಜ್ಯಗಳಲ್ಲಿ ಘೋಷಣೆ ಮಾಡಬೇಕು. ಈ ಮೂಲಕ ತಮ್ಮ ದಮ್ಮು ತಾಖತ್ ತೋರಿಸಬೇಕು. ಆಗಾಗ ಗೊಣಗಾಡಿಕೊಂಡರೆ ಏನು ಫಲ? ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.

ಇದೀಗ ಕರ್ನಾಟಕಕ್ಕೆ ಆಗಮಿಸಿರುವ ಕೇಂದ್ರ ಗೃಹಸಚಿವ ಅಮಿತ್ ಶಹಾ ಅವರು ‘‘ಗ್ಯಾರಂಟಿ ಯೋಜನೆಗಳಿಂದ ಬೊಕ್ಕಸ ಖಾಲಿಯಾಗಿದೆ’’ ಎಂದು ನಮ್ಮ ಸರ್ಕಾರದ ಬಗ್ಗೆ ಇರುವ ಈರ್ಷ್ಯೆಯನ್ನು ಹೊರಹಾಕಿದ್ದಾರೆ. ಇದು ಅಮಿತ್ ಶಾ ಅವರ ಖಚಿತ ಅಭಿಪ್ರಾಯವಾಗಿದ್ದರೆ ಅವರು ನನ್ನ ಜೊತೆ ಬಹಿರಂಗ ಚರ್ಚೆಯಲ್ಲಿ ಪಾಲ್ಗೊಳ್ಳಲಿ, ಗ್ಯಾರಂಟಿ ಯೋಜನೆಗಳಿಂದ ನಮ್ಮ ಖಜಾನೆ ಬರಿದಾಗಿಲ್ಲ, ಬದಲಿಗೆ ತೆರಿಗೆ ಹಂಚಿಕೆ ಮತ್ತು ಅನುದಾನ ವಿತರಣೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎನ್ನುವುದನ್ನು ನಾನು ಸಾಬೀತು ಮಾಡಬಲ್ಲೆ. ಇದು ಅಮಿತ್ ಶಾ ಅವರಿಗೆ ನನ್ನ ಸವಾಲು ಕೂಡಾ ಹೌದು ಎಂದಿದ್ದಾರೆ.

ಕರ್ನಾಟಕದ ಬಗ್ಗೆ ಮಾತನಾಡುವಾಗ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವ ಬಿಜೆಪಿ ನಾಯಕರು ತಮ್ಮ ಆಳ್ವಿಕೆಯ ರಾಜ್ಯಗಳಲ್ಲಿ ಅದೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಭರವಸೆ ನೀಡುತ್ತಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಗ್ಯಾರಂಟಿಯ ಯೋಜನೆಗಳನ್ನು ಮಾತ್ರ ಅಲ್ಲ, ಗ್ಯಾರಂಟಿ ಎಂಬ ಹೆಸರನ್ನೂ ಕದ್ದು ಈಗ ಅದೇ ಹೆಸರಲ್ಲಿ ಜಾಹೀರಾತು ನೀಡಿದ್ದಾರೆ. ಇದು ಆ ಪಕ್ಷದ ಬಡಜನ ವಿರೋಧಿ ನಿಲುವು ಮತ್ತು ಬೌದ್ದಿಕ ದಿವಾಳಿತನವನ್ನು ತೋರಿಸುತ್ತದೆ ಎಂದರು.

ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರು ನಿಜವಾಗಿ ವಿರೋಧಿಸುವುದು ಗ್ಯಾರಂಟಿ ಯೋಜನೆಗಳನ್ನಲ್ಲ, ಅವರ ಕೆಂಗಣ್ಣು ಬಿದ್ದಿರುವುದು ಈ ಯೋಜನೆಗಳ ಫಲಾನುಭವಿಗಳಾದ ಬಡವರ ಮೇಲೆ. ಬಡಜನರಿಗಾಗಿ ಯಾವುದೇ ಕಾರ್ಯಕ್ರಮಗಳನ್ನು ಜಾರಿಗೆ ತಂದರೂ ಅವುಗಳನ್ನು ವಿರೋಧಿಸುತ್ತಲೇ ಬಂದಿರುವ ಇತಿಹಾಸ ಬಿಜೆಪಿ ಮತ್ತು ಸಂಘ ಪರಿವಾರಕ್ಕಿದೆ. ದಿವಂಗತ ಪ್ರಧಾನಿ ಇಂದಿರಾಗಾಂಧಿಯವರು “ಗರೀಬಿ ಹಟಾವೋ” ಎಂದು ಕರೆನೀಡಿದಾಗಲೂ ಇದೇ ಪರಿವಾರದವರು ಅದನ್ನು ವಿರೋಧಿಸಿದ್ದರು. ಭೂ ಸುಧಾರಣೆ, ಮೀಸಲಾತಿ ಸೇರಿದಂತೆ ಸಾಮಾಜಿಕ ನ್ಯಾಯದ ಯಾವುದೇ ಕಾರ್ಯಕ್ರಮಗಳಿದ್ದರೂ ಇವರ ವಿರೋಧ ಇದ್ದೇ ಇದೆ. ಇದಕ್ಕೆ ಬಡವರೇ ತಕ್ಕ ಉತ್ತರವನ್ನು ಕೊಡಬೇಕು ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸ್ಥಾನದ ಮೊದಲ ಅವಧಿಯಲ್ಲಿ ನಾನು ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್ ಮೊದಲಾದ ಬಡವರ ಕಲ್ಯಾಣದ ಕಾರ್ಯಕ್ರಮಗಳ ಬಗ್ಗೆಯೂ ಬಿಜೆಪಿ ನಾಯಕರು ಇದೇ ರೀತಿ ತಮ್ಮ ಅಸಹನೆ ಮತ್ತು ಮತ್ಸರವನ್ನು ಕಾರಿಕೊಂಡಿದ್ದರು. ಬಡವರಿಗೆ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆಗೆ ಬೇಕಾದ ಅಕ್ಕಿಯನ್ನು ಕೊಡಲು ನಿರಾಕರಿಸಿದ್ದ ಕೇಂದ್ರ ಸರ್ಕಾರ ಈಗ ಭಾರತ್ ಬ್ರಾಂಡ್‌ನಲ್ಲಿ ಅದೇ ಅಕ್ಕಿಯನ್ನು ಮಾರಾಟ ಮಾಡುತ್ತಿದೆ. ನಾವು ಕೆ.ಜಿ ಗೆ ರೂ.33 ರಂತೆ ಅಕ್ಕಿ ಕೇಳಿದಾಗ ನಿರಾಕರಿಸಿದ್ದ ಕೇಂದ್ರ ಸರ್ಕಾರ ಈಗ ಕೆ.ಜಿ ಗೆ ರೂ.29ರಂತೆ ಮಾರಾಟ ಮಾಡುತ್ತಿದೆ. ಒಟ್ಟಿನಲ್ಲಿ ಬಿಜೆಪಿಗೆ ಕರ್ನಾಟಕದ ಬಡವರು, ರೈತರು, ಮಹಿಳೆಯರು, ಕಾರ್ಮಿಕರೆಂದರೆ ಅಸಹನೆ ಎಂದು ತಿಳಿಸಿದ್ದಾರೆ.

ನಮ್ಮ ಗ್ಯಾರಂಟಿ ಯೋಜನೆಗಳ ವಿರುದ್ಧ ಮಾತನಾಡುತ್ತಿರುವ ಗೃಹ ಸಚಿವ ಅಮಿತ್ ಶಾ ಅವರಿಗೆ ಕನ್ನಡಿಗರೆಂದರೆ ತಾತ್ಸಾರ. ಕನ್ನಡ ಧ್ವಜಕ್ಕೆ ವಿರೋಧ, ಹಿಂದಿ ಹೇರಿಕೆಗೆ ಪ್ರಯತ್ನ, ನಂದಿನಿ ಮೇಲೆ ಅಮುಲ್ ಹೇರುವ ಹುನ್ನಾರ ಇವೆಲ್ಲವೂ ಅಮಿತ್ ಶಾ ಸಾಧನೆಗಳು. ಕೇಂದ್ರ ಸರ್ಕಾರ ಬರಪರಿಹಾರ ನೀಡಬೇಕೆಂದರೆ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿ ಸಭೆ ನಡೆಸಿ ತೀರ್ಮಾನಿಸಬೇಕು. ಕನ್ನಡಿಗರ ವಿರೋಧಿಯಾಗಿರುವ ಅಮಿತ್ ಶಾ ಅವರು ಆ ಸಭೆಯನ್ನೇ ಕರೆಯುತ್ತಿಲ್ಲ. ಇಂತಹವರು ರಾಜ್ಯಕ್ಕೆ ಬಂದು ನಮಗೆ ಪಾಠ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಬಡವರ ಕಷ್ಟ ಕಡಿಮೆ ಮಾಡುವ, ಕಣ್ಣೀರು ಒರೆಸುವ ಕೆಲಸವೇ ನಿಜವಾದ ದೈವ ಭಕ್ತಿ ಎಂದು ತಿಳಿದುಕೊಂಡವನು ನಾನು. ಬಡವರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡಿ ಎಷ್ಟು ಬಾರಿ ರಾಮನಾಮ ಹೇಳಿದರೂ ಅದು ವ್ಯರ್ಥ. ಬಡವರಿಗೆ ಅನ್ನವನ್ನೂ ನೀಡದೆ ದೇವರಿಗೆ ನೈವೇಧ್ಯ ನೀಡಿ ಏನು ಫಲ? ಬಡವರಿಗೆ ಮನೆ ಕಟ್ಟಿಕೊಡದೆ ದೇವರಿಗೆ ಗುಡಿ ಕಟ್ಟಿ ಏನು ಫಲ? ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವವರಿಗೆ ಯಾವ ರಾಮನ ದಯೆಯೂ ಇರಲಾರದು, ತಾಯಿ ಚಾಮುಂಡೇಶ್ವರಿಯ ಆಶೀರ್ವಾದವೂ ಇರಲಾರದು ಎಂದರು.

Ramesh Babu

Journalist

Recent Posts

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

4 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

5 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

23 hours ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

23 hours ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

24 hours ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

1 day ago