
ಬೆಂಗಳೂರಿನಲ್ಲಿ ಇಂದು ಡೈರಿ ಸರ್ಕಲ್ ಫೈವರ್ನಂಥ ಪ್ರಮುಖ ಪ್ರದೇಶದಲ್ಲಿ ಹಾಡಹಗಲೇ ಬರೋಬ್ಬರಿ 7.11 ಕೋಟಿ ರೂಪಾಯಿ ಹಣವನ್ನು ಖದೀಮರು ದರೋಡೆ ಮಾಡಿದ್ದಾರೆ.
ಮಟ ಮಟ ಮಧ್ಯಾಹ್ನವೇ ನಡೆದ ಕಳ್ಳತನ ಕೇಸ್ನಲ್ಲಿ ಆರೋಪಿಗಳನ್ನು ಬಂಧಿಸಲು ಪೊಲೀಸರು ನಡೆಸುತ್ತಿರುವ ಕಾರ್ಯಾಚರಣೆಗೆ ಯಾವುದೇ ಫಲ ಸಿಕ್ಕಿಲ್ಲ.
ಬೆಂಗಳೂರಿನಲ್ಲಿ ಇಷ್ಟು ದೊಡ್ಡ ಪ್ರಮಾಣದ ದರೋಡೆ ನಡೆದಿರುವುದು ಬಹುತೇಕ ಇದೇ ಮೊದಲು. ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ನಡೆದ ಪ್ರಮುಖ ದರೋಡೆ ಪ್ರಕರಣಗಳ ಸಾಲಿಗೆ ಇದೂ ಕೂಡ ಸೇರಿದೆ. ಬೀದರ್, ಮಂಗಳೂರು, ಕಲಬುರಗಿ ಬಳಿಕ ಬೆಂಗಳೂರಿನ ಹೆಸರು ಕೂಡ ದರೋಡೆ ಕೇಸ್ ಲಿಸ್ಟ್ನಲ್ಲಿ ಸೇರಿದೆ. ಹಿಂದೆಲ್ಲಾ ಸಾಮಾನ್ಯವಾಗಿ ಬಿಹಾರದಲ್ಲಿ ಮಾತ್ರವೇ ಕಾಣುತ್ತಿದ್ದ ಇಂಥ ಕೇಸ್ಗಳು ಈಗ ಕರ್ನಾಟಕದಲ್ಲೂ ಶುರುವಾಗಿದೆ.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದುಷ್ಕರ್ಮಿಗಳಿಗೆ ಕಾನೂನಿನ ಭಯ ಇಲ್ಲ- ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿ
ಕಾಂಗ್ರೆಸ್ ಸರ್ಕಾರದ ದುರಾಡಳಿತ, ವೈಫಲ್ಯ, ಭ್ರಷ್ಟಾಚಾರಗಳಿಗೆ ದಿನ ನಿತ್ಯ ನಡೆಯುತ್ತಿರುವ ಕರ್ಮಕಾಂಡಗಳೇ ಸಾಕ್ಷಿ ಹೇಳುತ್ತಿವೆ. ಅತ್ತ ಹಾವೇರಿಯಲ್ಲಿ ನವಜಾತ ಶಿಶುವಿನ ದುರಂತ ಅರೋಗ್ಯ ಇಲಾಖೆಯ ಅವ್ಯವಸ್ಥೆಗೆ ಕನ್ನಡಿ ಹಿಡಿದಿದ್ದರೆ, ಈಗ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ನಡೆದಿರುವ ದರೋಡೆ ಪ್ರಕರಣ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎನ್ನುವುದು ಎಷ್ಟರ ಮಟ್ಟಿಗೆ ಮರೀಚಿಕೆಯಂತಾಗಿದೆ ಎನ್ನುವುದಕ್ಕೆ ನಿದರ್ಶನವಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ.
ಜನರಿಗೆ ಕಾಂಗ್ರೆಸ್ ಸರ್ಕಾರದ ಮೇಲೆ ನಂಬಿಕೆ ಎಂದೋ ಕಳೆದುಹೋಗಿದೆ. ಗೃಹ ಇಲಾಖೆ ರಾಜ್ಯದಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಿಕೊಳ್ಳಲಾದರೂ ಕೂಡಲೇ ದರೋಡೆಕೋರರನ್ನು ಬಂಧಿಸಬೇಕಾಗಿದೆ ಎಂದು ಗುಡುಗಿದ್ದಾರೆ.
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ATM ಕ್ಯಾಶ್ ವ್ಯಾನ್ ಅಡ್ಡಗಟ್ಟಿ ದರೋಡೆಕೋರರು 7 ಕೋಟಿ ರೂ. ಹಣದೊಂದಿಗೆ ಪರಾರಿಯಾಗಿದ್ದಾರೆ. ನಗರದ ಮಧ್ಯಭಾಗದಲ್ಲಿ, ಹಾಡುಹಗಲೇ ನಡೆದಿರುವ ದರೋಡೆ ಸಹಜವಾಗಿ ಜನರಲ್ಲಿ ಭೀತಿಯನ್ನು ಉಂಟುಮಾಡಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದುಷ್ಕರ್ಮಿಗಳಿಗೆ ಕಾನೂನಿನ ಭಯ ಇಲ್ಲದಂತಾಗಿರುವುದು ಮೇಲಿಂದ ಮೇಲೆ ಸಾಬೀತಾಗುತ್ತಲೇ ಇದೆ. ಸರ್ಕಾರ ಕೂಡಲೇ ದುಷ್ಕರ್ಮಿಗಳನ್ನು ಪತ್ತೆ ಮಾಡಿ, ಬಂಧಿಸಬೇಕು ಎಂದು ಆಗ್ರಹಪೂರ್ವಕವಾಗಿ ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.