ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ‍್ಯಾಂಕ್ ಪಡೆದ ಹಿನ್ನೆಲೆಯಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಎಸ್.ಎಂ. ಹರೀಶ್ ಗೌಡ ಅವರು ವಿದ್ಯಾರ್ಥಿಗಳನ್ನು ಅಭಿನಂದಿಸಿ ಪ್ರೋತ್ಸಾಹಧನ ನೀಡಿ ಪ್ರೋತ್ಸಾಹಿಸಿದರು.

ಎಂ.ಎ. ಇತಿಹಾಸ ವಿಭಾಗದಲ್ಲಿ ಮೂರನೇ ರ‍್ಯಾಂಕ್ ಪಡೆದ ಅರುಣ್ ಕುಮಾರ್ ಕೆ.ಎಂ., ನಾಲ್ಕನೇ ರ‍್ಯಾಂಕ್ ಪಡೆದ ಸೌಮ್ಯ ಬಿ., ಐದನೇ ರ‍್ಯಾಂಕ್ ಪಡೆದ ಲಕ್ಷ್ಮಿ ಆರ್.ಜಿ. ಹಾಗೂ ಎಂ.ಎ. ರಾಜ್ಯಶಾಸ್ತ್ರ ವಿಭಾಗದಲ್ಲಿ ನಾಲ್ಕನೇ ರ‍್ಯಾಂಕ್ ಪಡೆದ ನಾಗಭೂಷಣ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಎಸ್.ಎಂ. ಹರೀಶ್ ಗೌಡ, ಸರ್ಕಾರಿ ಶಾಲೆ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳೂ ಉನ್ನತ ಹುದ್ದೆಗಳನ್ನು ಅಲಂಕರಿಸಿ ಸಮಾಜದಲ್ಲಿ ಹೆಸರು ಮಾಡಬಹುದು ಎಂಬುದಕ್ಕೆ ಈ ವಿದ್ಯಾರ್ಥಿಗಳ ಸಾಧನೆಯೇ ಸಾಕ್ಷಿಯಾಗಿದೆ ಎಂದು ಹೇಳಿದರು. ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಹುದ್ದೆಗಳನ್ನು ಪಡೆದು ಕಾಲೇಜು ಹಾಗೂ ತಾಲೂಕಿಗೆ ಕೀರ್ತಿ ತರಲಿ ಎಂದು ಹಾರೈಸಿದರು.

ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ವಿ. ಮಾತನಾಡಿ, ಸಂಘವು ಹಲವು ವರ್ಷಗಳಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಇತರೆ ಚಟುವಟಿಕೆಗಳಿಗೆ ಬೆಂಬಲ ನೀಡುತ್ತಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯವನ್ನು ನಿರಂತರವಾಗಿ ನಡೆಸುತ್ತಿದೆ ಎಂದರು.

ವಿದ್ಯಾರ್ಥಿಗಳು ಈ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸಮಾಜಕ್ಕೆ ಹಾಗೂ ತಾವು ವ್ಯಾಸಂಗ ಮಾಡಿದ ಕಾಲೇಜಿಗೆ ಉತ್ತಮ ಹೆಸರು ತರಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲೆ ಡೊರೀನ್ ಸ್ನೇಹಲತಾ ಕೊಟಿಯನ್, ಉಪನ್ಯಾಸಕ ಶ್ರೀನಿವಾಸ್, ಹಳೆ ವಿದ್ಯಾರ್ಥಿಗಳ ಸಂಘದ ಖಜಾಂಚಿ ಮಹೇಶ್, ಸಂಘಟನಾ ಕಾರ್ಯದರ್ಶಿ ಮಂಜುನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!