ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ಸ್ಮಶಾನ ಒದಗಿಸಲು, ಸ್ಮಶಾನಕ್ಕಾಗಿ ಜಮೀನು ಅಗತ್ಯವಿರುವ ಮಾಹಿತಿಯನ್ನು ಸಾರ್ವಜನಿಕರು ನೀಡುವಂತೆ ಜಿಲ್ಲಾಧಿಕಾರಿ ಆರ್.ಲತಾ ಅವರು ಮನವಿ ಮಾಡಿದ್ದಾರೆ.
ಸಾರ್ವಜನಿಕ ಸ್ಮಶಾನಕ್ಕಾಗಿ ಜಮೀನು ಅಗತ್ಯವಿರುವ ಮಾಹಿತಿಯನ್ನು ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು, ಸಂಬಂಧಪಟ್ಟ ತಹಶೀಲ್ದಾರ್, ಉಪ ತಹಶೀಲ್ದಾರ್ ಹಾಗೂ ರಾಜಸ್ವ ನಿರೀಕ್ಷಕರಿಗೆ, ಅರ್ಜಿದಾರರು ಹೆಸರು, ವಿಳಾಸ, ಸ್ಮಶಾನಕ್ಕಾಗಿ ಜಮೀನು ಅಗತ್ಯವಿರುವ ಗ್ರಾಮ/ ಹೋಬಳಿ/ತಾಲ್ಲೂಕುಗಳ ವಿವರಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ರಾಜ್ಯದಲ್ಲಿನ ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ಸಾರ್ವಜನಿಕರ ಸ್ಮಶಾನ ಭೂಮಿ ಕಲ್ಪಿಸುವುದರ ಸಂಬಂಧ ಕರ್ನಾಟಕ ಉಚ್ಛ ನ್ಯಾಯಾಲಯದ ಆದೇಶದಂತೆ, ಪ್ರತಿಯೊಂದು ಗ್ರಾಮಕ್ಕೆ ಸಾರ್ವಜನಿಕ ಸ್ಮಶಾನಕ್ಕಾಗಿ ಸರ್ಕಾರಿ ಜಮೀನನ್ನು ಕಲ್ಪಿಸುವ ಉದ್ದೇಶಕ್ಕಾಗಿ ಯಾವ ಯಾವ ಗ್ರಾಮಗಳಲ್ಲಿ ಸ್ಮಶಾನಕ್ಕಾಗಿ ಜಮೀನು ಅವಶ್ಯಕತೆ ಇರುತ್ತದೆ ಎಂಬುದರ ಬಗ್ಗೆ ಇಲಾಖೆಗೆ ಮಾಹಿತಿಯನ್ನು ನೀಡಲು ಸಾರ್ವಜನಿಕರಿಗೆ ವಿನಂತಿಸಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.