ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿ‌ ಕೆಲ ಜಿಲ್ಲೆಗಳಿಗೆ ಡಿಫೆನ್ಸ್‌ ಕಾರಿಡಾರ್‌ ಮಂಜೂರು ಮಾಡಲು ಮನವಿ

ಬೆಂಗಳೂರು ಗ್ರಾಮಾಂತರ -ಕೋಲಾರ – ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿ – ಧಾರವಾಡ- ಬೆಳಗಾವಿ-ವಿಜಯಪುರ ಜಿಲ್ಲೆಗಳಿಗೆ ಕೇಂದ್ರ ಸರಕಾರವು ಎರಡು ಪ್ರತ್ಯೇಕ ಡಿಫೆನ್ಸ್‌ ಕಾರಿಡಾರ್‌ ಮಂಜೂರು ಮಾಡಬೇಕೆಂದು ಕೋರಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರದ ನಿಯೋಗವು ರಕ್ಷಣಾ ಸಚಿವರಾದ ರಾಜನಾಥ್‌ ಸಿಂಗ್‌ ಅವರಿಗೆ ಮನವಿ ಸಲ್ಲಿಸಲಾಯಿತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಉತ್ತರಪ್ರದೇಶ ಹಾಗೂ ತಮಿಳುನಾಡು ಮಾದರಿಯಲ್ಲಿ ಕರ್ನಾಟಕದಲ್ಲಿಯೂ ರಕ್ಷಣಾ ಕಾರಿಡಾರ್ ಸ್ಥಾಪನೆ ಹಾಗೂ ಟನಲ್ ಯೋಜನೆ, ಬಳ್ಳಾರಿ ರಸ್ತೆಯಲ್ಲಿ ಲಿಂಕ್ ರೋಡ್ ಯೋಜನೆ, ಡಬಲ್ ಡೆಕ್ಕರ್ ಫ್ಲೈಓವರ್ ಯೋಜನೆಯ ನಿರ್ಮಾಣಕ್ಕೆ ಅವಶ್ಯವಿರುವ ಕೇಂದ್ರ ರಕ್ಷಣಾ ಇಲಾಖೆಗೆ ಸೇರಿದ ಜಾಗವನ್ನು ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ನೀಡುವಂತೆ ಕೋರಿ ಮನವಿ ಸಲ್ಲಿಸಿದ್ದೇವೆ ಎಂದರು.

ಕೇಂದ್ರ ಸರಕಾರವು 2018ರಲ್ಲಿ ಉತ್ತರಪ್ರದೇಶ ಮತ್ತು ತಮಿಳುನಾಡಿಗೆ ಡಿಫೆನ್ಸ್‌ ಕಾರಿಡಾರ್‌ ಮಂಜೂರು ಮಾಡಿದೆ. ಆದರೆ, ದೇಶದ ರಕ್ಷಣಾ ಮತ್ತು ವೈಮಾಂತರಿಕ್ಷ ವಲಯದಲ್ಲಿ ಕರ್ನಾಟಕವು ಶೇ.75ರಷ್ಟು ಪಾಲು ಹೊಂದಿದ್ದು, ಜಾಗತಿಕವಾಗಿ ಮೂರನೇ ಅತ್ಯುತ್ತಮ ಕಾರ್ಯಪರಿಸರ ಹೊಂದಿರುವ ಹೆಗ್ಗಳಿಕೆ ಸಂಪಾದಿಸಿದೆ. ಹೀಗಾಗಿ, ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕಗಳಿಗೆ ಒಂದೊಂದು ಡಿಫೆನ್ಸ್‌ ಕಾರಿಡಾರ್‌ ಮಂಜೂರು ಮಾಡಿದರೆ, ಇದು ಮೇಕ್‌ ಇನ್‌ ಇಂಡಿಯಾ ಉಪಕ್ರಮಕ್ಕೂ ಬಲ ತುಂಬುತ್ತದೆ ಎಂಬುದನ್ನು ರಕ್ಷಣಾ ಸಚಿವರಿಗೆ ನಿಯೋಗವು ಮನದಟ್ಟು ಮಾಡಿಕೊಟ್ಟಿದೆ ಎಂದರು.

ಉತ್ತರ ಕರ್ನಾಟಕದ ಮೇಲ್ಕಂಡ ಮೂರು ಜಿಲ್ಲೆಗಳಲ್ಲಿ ರಕ್ಷಣಾ ವಲಯದ ಉತ್ಪಾದನಾ ಕಂಪನಿಗಳಾದ ಬಾಲೂ ಫೋರ್ಜ್‌, ಏಕಸ್‌, ಬಿಕಾರ್‌ ಏರೋಸ್ಪೇಸ್‌, ವಾಲ್‌ಚಂದ್‌ ನಗರ್‌ ಇಂಡಸ್ಟ್ರೀಸ್‌ ಮುಂತಾದವು ನೆಲೆಯೂರಿವೆ. ಜತೆಗೆ ಬೆಳಗಾವಿಯಲ್ಲಿ 250 ಎಕರೆಯಲ್ಲಿ ದೇಶದ ಪ್ರಪ್ರಥಮ ಪ್ರಿಸಿಶನ್‌ ಉತ್ಪಾದನೆಯ ವಿಶೇಷ ಆರ್ಥಿಕ ವಲಯವು ಸಕ್ರಿಯವಾಗಿದೆ. ಇಲ್ಲಿ 31 ಘಟಕಗಳಿದ್ದು, 5 ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿವೆ ಎಂದು ಈ ಸಂದರ್ಭದಲ್ಲಿ ಅವರ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದರು.

ದಕ್ಷಿಣ ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ರಕ್ಷಣಾ ಸಾಮಗ್ರಿ ಮತ್ತು ವೈಮಾಂತರಿಕ್ಷ ಕಂಪನಿಗಳಾದ ಸಾರ್ವಜನಿಕ ವಲಯದ ಎಚ್‌ಎಎಲ್‌, ಕಾಲಿನ್ಸ್‌ ಏರೋಸ್ಪೇಸ್‌, ಡೈನಮ್ಯಾಟಿಕ್‌ ಟೆಕ್ನಾಲಜೀಸ್‌, ಸೆಂಟಮ್, ಸಾಸ್ಮೋಸ್‌, ಬೆಲ್ಲಾಟ್ರಿಕ್ಸ್‌ ಮುಂತಾದವು ಇವೆ. ಇವುಗಳೊಂದಿಗೆ ಟಿಎಎಸ್‌ಎಲ್‌ ತನ್ನ ಅಂತಿಮ ಜೋಡಣಾ ಘಟಕವನ್ನು ಆರಂಭಿಸುತ್ತಿದೆ. ಏರ್‌ ಇಂಡಿಯಾ ಮತ್ತು ಇಂಡಿಗೋ ಸಾವಿರಾರು ಕೋಟಿ ರೂ. ಬಂಡವಾಳ ಹೂಡಿಕೆಯೊಂದಿಗೆ ತಮ್ಮ ಎಂಆರ್‌ಒ ಘಟಕಗಳನ್ನು ಬೆಂಗಳೂರಿನ ಸಮೀಪದಲ್ಲಿ ಸ್ಥಾಪಿಸುತ್ತಿವೆ. ದೇವನಹಳ್ಳಿಯಲ್ಲಿ 2 ಸಾವಿರ ಎಕರೆ ವಿಸ್ತಾರದ ಹೈಟೆಕ್‌ ರಕ್ಷಣಾ ಮತ್ತು ವೈಮಾಂತರಿಕ್ಷ ಪಾರ್ಕ್‌ ಇದೆ. ಈ ಭಾಗದಲ್ಲಿ ದೇಶದ ಏರ್‌ಕ್ರಾಫ್ಟ್‌ ಮತ್ತು ಸ್ಪೇಸ್‌ಕ್ರಾಫ್ಟ್‌ ವಲಯದ ಶೇಕಡ 25ರಷ್ಟು ತಯಾರಿಕೆ ನಡೆಯುತ್ತಿದೆ. ವಿಮಾನ ಮತ್ತು ಹೆಲಿಕಾಪ್ಟರ್‌ ತಯಾರಿಕೆಯಲ್ಲಿ ರಾಜ್ಯದ ಕೊಡುಗೆ ಶೇ.67ರಷ್ಟಿದೆ. ಇವೆಲ್ಲವನ್ನೂ ಪರಿಗಣಿಸಿ, ಎರಡು ಡಿಫೆನ್ಸ್‌ ಕಾರಿಡಾರ್‌ಗಳನ್ನು ಮಂಜೂರು ಮಾಡಬೇಕೆಂದು ನಿಯೋಗವು ಒತ್ತಾಯಿಸಿದೆ ಎಂದರು.

ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ‌ ಪ್ರದರ್ಶನ ಹಾಗೂ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಸರ್ಕಾರದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

ನಾಳೆ ರಾಹುಲ್ ಗಾಂಧಿಯವರು ಸಮಯ ನೀಡಿದರೆ ಭೇಟಿಯಾಗುತ್ತೇನೆ. ರಣದೀಪ್ ಸಿಂಗ್ ಸುರ್ಜೆವಾಲಾ ಅವರು ನಾಳೆ ನವದೆಹಲಿಗೆ ಆಗಮಿಸಲಿದ್ದು, ಅವರೊಂದಿಗೆ ವಿಧಾನಪರಿಷತ್ ಸದಸ್ಯರು ಹಾಗೂ ನಿಗಮ – ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಬಗ್ಗೆ ಚರ್ಚಿಸಲಾಗುವುದು. ಅಂತೆಯೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭೇಟಿಗೆ ಸಮಯವನ್ನು ಕೋರಲಾಗಿದ್ದು, ನಾಳೆ ಭೇಟಿಯಾಗುವ ಸಾಧ್ಯತೆಯಿದೆ ಎಂದು ಹೇಳಿದರು.

ನಿಯೋಗದಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌, ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಇಂಧನ ಸಚಿವ ಕೆ ಜೆ ಜಾರ್ಜ್‌, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಇದ್ದರು.

Ramesh Babu

Journalist

Recent Posts

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

3 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

3 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

14 hours ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

14 hours ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

17 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

20 hours ago