ಕೃಷಿ, ತೋಟಗಾರಿಕೆ, ರೇಷ್ಮೆ ಚಟುವಟಿಕೆಗಳಲ್ಲಿ ಜಿಲ್ಲೆಯ ಸಾಕಷ್ಟು ರೈತರು ತೊಡಗಿಸಿಕೊಂಡಿದ್ದು ಅಂತಹ ರೈತರಿಗೆ ಕೃಷಿ ಚಟುವಟಿಕೆ ಜೊತೆಗೆ ಜಾನುವಾರು ಸಾಕಾಣಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಿ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮುನಿಯಪ್ಪ ಅವರು ಹೇಳಿದರು.
ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಆಯೋಜಿಸಲಾದ 2024-25 ನೇ ಸಾಲಿನ ವಿಸ್ತರಣಾ ಚಟುವಟಿಕೆಗಳ ಹಾಗೂ ಪಶುವೈದ್ಯಕೀಯ ಸಿಬ್ಬಂದಿಯವರ ತಾಂತ್ರಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
21 ನೇ ಜಾನುವಾರು ಗಣತಿ ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ, ಈ ಕಾರ್ಯಕ್ಕೆ ಕಾರಣರಾದ ಪಶು ವೈದ್ಯಾಧಿಕಾರಿಗಳಿಗೆ ಧನ್ಯವಾದ ತಿಳಿಸುತ್ತಾ ಜಾನುವಾರು ಸಾಕಾಣಿಕೆಯಲ್ಲಿ ರಾಜ್ಯದಲ್ಲಿ, ರಾಷ್ಟ್ರದಲ್ಲಿ ಜಿಲ್ಲೆ ಉತ್ತಮ ಹೆಸರು ಪಡೆಯಬೇಕು. ಹಾಗಾಗಿ ಪಶು ವೈದ್ಯಾಧಿಕಾರಿಗಳ ಸೇವೆ ಕೂಡ ಮುಖ್ಯ.
ರೈತರಿಗೆ ಜಾನುವಾರು ಸಾಕಾಣಿಕೆ ಕುರಿತಂತೆ ಮಾಹಿತಿ, ತರಬೇತಿ, ಕಾರ್ಯಾಗಾರಗಳನ್ನು ಏರ್ಪಡಿಸಿ ಸರ್ಕಾರದಿಂದ ಸಿಗುವಂತಹ ಸಾಲ ಸೌಲಭ್ಯ, ಪ್ರೊತ್ಸಾಹಧನ ಬಗ್ಗೆ ಮಾಹಿತಿ ನೀಡಿ, ಜಾನುವಾರುಗಳಿಗೆ ತಗುಲುವ ರೋಗಗಳನ್ನು ನಿಯಂತ್ರಿಸಲು ಕಾಲಕಾಲಕ್ಕೆ ಲಸಿಕೆ ಹಾಕಿ ಎಂದರು.
ಹಾಲು ಉತ್ಪಾದನೆಯನ್ನು ಹೆಚ್ಚಿಸಬೇಕು, ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಂಡು ಕೊಟ್ಟಿಗೆ ಗೊಬ್ಬರ ಬಳಸಿ ಪೌಷ್ಟಿಕ ಆಹಾರ ಉತ್ಪನ್ನ, ಗುಣಮಟ್ಟದ ತರಕಾರಿ ಬೆಳೆಗಳನ್ನು ಬೆಳೆದು ಮಾದರಿ ಜಿಲ್ಲೆಯನ್ನಾಗಿ ಮಾಡಬೇಕು ಎಂಬ ಗುರಿ ಇದೆ ಈ ನಿಟ್ಟಿನಲ್ಲಿ ಅಧಿಕಾರಿಗಳು ಸಹಕಾರ ಕೂಡ ಮುಖ್ಯ ಎಂದರು.
ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಗ್ರಾಮ ಪಂಚಾಯಿತಿ ಆವರಣಗಳಲ್ಲಿರುವ ಜಾನುವಾರುಗಳ ಕುಡಿಯುವ ನೀರು ತೊಟ್ಟಿಗಳನ್ನ ಸ್ವಚ್ಚಗೊಳಿಸಿ ನೀರು ಹಾಯಿಸಿ. ಜಿಲ್ಲೆಯ ಯಾವುದೇ ಭಾಗದಿಂದ ಕೂಡ ಕುಡಿಯುವ ನೀರು ಸಮಸ್ಯೆ ಇದೆ ಎಂದು ಸಾರ್ವಜನಿಕರು ನನ್ನ ಬಳಿ ಮನವಿ ಮಾಡಬಾರದು. ತಕ್ಷಣವೇ ಅಧಿಕಾರಿಗಳ ಸಭೆ ಕರೆದು ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ ಆಗದಂತೆ ಸೂಕ್ತ ಕ್ರಮ ವಹಿಸಿ ಅಧಿಕಾರಿಗಳಿಗೆ ಸೂಚಿಸಿದರು.
ಪಶು ಸಂಗೋಪನೆ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರಾದ ಜಗದೀಶ್ ಅವರು ಮಾತನಾಡಿ ಜಿಲ್ಲೆಯಲ್ಲಿ ಸುಮಾರು 2,90,551 ರೈತರು ಪಶುಸಂಗೋಪನೆಯಲ್ಲಿ ತೊಡಗಿಕೊಂಡಿದ್ದಾರೆ. ಪಶು ಇಲಾಖೆಯಲ್ಲಿ ಒಟ್ಟು 105 ಪಶು ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, 21ನೇ ಜಾನುವಾರು ಗಣತಿ ಪ್ರಕಾರ 1,70,720 ದನಗಳು, 14,924 ಎಮ್ಮೆಗಳು, 1,17,715 ಕುರಿಗಳು, 95 ಸಾವಿರ ಮೇಕೆಗಳು ಜಿಲ್ಲೆಯಲ್ಲಿದೆ. 2,93,876 ಜಾನುವಾರುಗಳಿಗೆ ಕಾಲು ಬಾಯಿ ಲಸಿಕೆಯನ್ನು ನೀಡಿದ್ದೇವೆ. ಜಿಲ್ಲೆಯಲ್ಲಿ 5.5 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಜಾನುವಾರು ವಿಮೆ ಸೌಲಭ್ಯ ವನ್ನು ಎ ಪಿ ಎಲ್ ಪಡಿತರ ಚೀಟಿಗೆ 50% , ಬಿ ಪಿ ಎಲ್ ಪಡಿತರ ಚೀಟಿಗೆ 75% ನೀಡಲಾಗುತ್ತಿದೆ ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧಾ, ಉಪಕಾರ್ಯದರ್ಶಿ ಟಿ.ಕೆ ರಮೇಶ್, ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ, ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರಾದ ಡಾ.ಜಗದೀಶ್ ಕುಮಾರ್, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ, ಇಒ ಶ್ರಿನಾಥ್ ಗೌಡ ಸೇರಿದಂತೆ ಜಿಲ್ಲೆಯ ಪಶುವೈದ್ಯಾಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…
ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…
ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೇಕಡ 87.44% ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ ಎಂದು…
ದೇವನಹಳ್ಳಿ: ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ…
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…