ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ ಇಲಾಖೆಯಲ್ಲಿ ಕರ್ತವ್ಯಕ್ಕೆ ಗೈರಾಗಿರುವ ಸಿಬ್ಬಂದಿಯನ್ನು ಪತ್ತೆಹಚ್ಚಿ, ಟಿಸಿ ಬದಲಾವಣೆಗೆ ಲಂಚ ಪಡೆಯುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರೈತ ಸಂಘದ ವತಿಯಿಂದ ನಗರದ ಬೆಸ್ಕಾಂ ಕಚೇರಿ ಎದುರು ನಷ್ಟ ಬೆಳೆಯೊಂದಿಗೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಬರದ ಹೊಡೆತ ಹಾಗೂ ಸಾಲದ ಸಂಕಷ್ಟದಿಂದ ರೈತರು ತತ್ತರಿಸಿದ್ದಾರೆ. ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ 526 ರೈತರು ಆತ್ಮಹತ್ಯೆಗೆ ಶರಣಾಗಿರುವುದು ಸರ್ಕಾರಗಳ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತನ ಮಗನಾಗಿ ಹುಟ್ಟಿ, ಭೂಮಿಯನ್ನು ನಂಬಿ ಸಾಲ ಮಾಡಿ ಕೃಷಿ ಮಾಡುತ್ತಿರುವ ಅನ್ನದಾತನಿಗೆ ಸಮರ್ಪಕ ವಿದ್ಯುತ್ ನೀಡದೆ ಸಂಕಷ್ಟಕ್ಕೆ ತಳ್ಳಲಾಗುತ್ತಿದೆ. ಬೆಸ್ಕಾಂ ಇಲಾಖೆಯ ನಿರ್ಲಕ್ಷ್ಯ ರೈತರಿಗೆ ಆರನೇ ಉಚಿತ ಆತ್ಮಹತ್ಯೆ ಗ್ಯಾರಂಟಿಯಂತಾಗಿದೆ” ಎಂದು ಅವರು ಕಿಡಿಕಾರಿದರು.

ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿಗಾಗಿ ಗ್ರಾಮೀಣ ಪ್ರದೇಶದ ಜನರು ಪರದಾಡುವಂತಾಗಿದೆ. ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೆಳೆದಿರುವ ಬೆಳೆಗಳನ್ನು ಉಳಿಸಿಕೊಳ್ಳಲು ರೈತರು ಕೃಷಿ ಪಂಪ್‌ಸೆಟ್‌ಗಳ ವಿದ್ಯುತ್‌ಗಾಗಿ ಕಾಯುವಂತಾಗಿದೆ. ಆದರೆ ಜನಪ್ರತಿನಿಧಿಗಳು ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ವ್ಯಂಗ್ಯವಾಡಿದರು.

ಮಹಿಳಾ ಜಿಲ್ಲಾಧ್ಯಕ್ಷೆ ಎ. ನಳಿನಿಗೌಡ ಮಾತನಾಡಿ, ಭೂಮಿ ತಾಯಿಗೆ ಬೆವರು ಸುರಿಸಿ ಬೆಳೆದ ಬೆಳೆಗಳನ್ನು ರಕ್ಷಿಸಿಕೊಳ್ಳಲು ರೈತರು ಕುಟುಂಬವನ್ನು ಬಿಟ್ಟು ಕೃಷಿ ಪಂಪ್‌ಸೆಟ್‌ಗಳ ಬಳಿ ಹಾವು, ಚೇಳು ಸೇರಿದಂತೆ ವಿಷಕಾರಿ ಪ್ರಾಣಿಗಳ ಭೀತಿಯಲ್ಲಿ ಕಾಲ ಕಳೆಯುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಚಿವರು ನೀಡಿದ್ದ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಕೆ ಭರವಸೆಯನ್ನು ನಂಬಿ ರೈತರು ಖಾಸಗಿ ಸಾಲ ಮಾಡಿ ಬೆಳೆ ಬೆಳೆದಿದ್ದಾರೆ. ಉತ್ತಮ ಫಸಲು ಬಂದಿದ್ದರೂ ಸಮರ್ಪಕ ವಿದ್ಯುತ್ ಇಲ್ಲದೆ ಕಣ್ಣೆದುರೇ ಬೆಳೆ ಒಣಗುತ್ತಿದೆ. ಸಮಸ್ಯೆ ಕುರಿತು ಅಧಿಕಾರಿಗಳನ್ನು ಕೇಳಿದರೆ “ಮಳೆರಾಯನನ್ನು ಕೇಳಿಕೊಳ್ಳಿ” ಎಂಬ ಬೇಜವಾಬ್ದಾರಿ ಉತ್ತರ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ವಿದ್ಯುತ್ ಏರಿಳಿತದಿಂದ ಪಂಪ್‌ಸೆಟ್‌ಗಳು ಪದೇ ಪದೇ ಸುಟ್ಟುಹೋಗುತ್ತಿದ್ದು, ಅವುಗಳ ದುರಸ್ತಿಗೆ ರೈತರು ಸಾವಿರಾರು ರೂಪಾಯಿ ಖರ್ಚು ಮಾಡಬೇಕಾಗಿದೆ. ತೋಟದ ಮನೆಗಳ ಸುತ್ತಮುತ್ತ ಕಾಡುಪ್ರಾಣಿಗಳ ಹಾವಳಿ ಹೆಚ್ಚಿರುವ ಸಂದರ್ಭದಲ್ಲಿ ವಿದ್ಯುತ್ ಇಲ್ಲದೆ ರೈತರು ಹಾಗೂ ಕುಟುಂಬಸ್ಥರಿಗೆ ಭದ್ರತೆಯ ಆತಂಕ ಎದುರಾಗಿದೆ ಎಂದು ಹೇಳಿದರು.

24 ಗಂಟೆಯೊಳಗೆ ಸಮಸ್ಯೆ ಬಗೆಹರಿಸಿ ಗುಣಮಟ್ಟದ ವಿದ್ಯುತ್ ಪೂರೈಸದಿದ್ದರೆ, ಜಾನುವಾರುಗಳ ಸಮೇತ ಜಿಲ್ಲೆಯ ಎಲ್ಲಾ ಬೆಸ್ಕಾಂ ಕಚೇರಿಗಳಿಗೆ ಮುತ್ತಿಗೆ ಹಾಕಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ರೈತ ಮುಖಂಡರು ಎಚ್ಚರಿಕೆ ನೀಡಿದರು.

ಮನವಿ ಸ್ವೀಕರಿಸಿದ ಕಾರ್ಯಪಾಲಕ ಅಭಿಯಂತರರು, ಮುಂಗಾರು ಮಳೆ ಕೊರತೆಯಿಂದಾಗಿ ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆ ಉಂಟಾಗಿದೆ ಎಂದು ತಿಳಿಸಿದರು. ರೈತರಿಂದ ಯಾವುದೇ ಅಧಿಕಾರಿ ಲಂಚ ಪಡೆದಿರುವ ಬಗ್ಗೆ ಲಿಖಿತ ದೂರು ನೀಡಿದರೆ, ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಹೋರಾಟದಲ್ಲಿ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ವಕ್ಕಲೇರಿ ಹನುಮಯ್ಯ, ಪಾರುಕ್‌ಪಾಷ ಮಂಗಸಂದ್ರ ತಿಮ್ಮಣ್ಣ, ಚಂದ್ರಪ್ಪ, , ಹೆಬ್ಬಣಿ ಆನಂದರೆಡ್ಡಿ, ಹನುಮನಹಳ್ಳಿ ನಾಗರಾಜ, ಮುನಿರಾಜು ತೆರ್ನಹಳ್ಳಿ ಅಂಜಿನಪ್ಪ ಪುತ್ತೇರಿ ರಾಜು, ಗಿರೀಶ್, ಸುಪ್ರಿಂ ಚಲ, ಅಮರನಾಥ ಸುನೀಲ. , ಶೈಲಜ, ರತ್ನಮ್ಮ, ಸುನಿತಾ, ಚೌಡಮ್ಮ ಸೇರಿದಂತೆ ರೈತ ಮುಖಂಡರು ಹಾಗೂ ರೈತರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!