ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಬಂಧಿಸಿ, ಆತನಿಂದ ಸುಮಾರು ₹20 ಲಕ್ಷ ಮೌಲ್ಯದ 42 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿ ಖಲೀಲ್ ಅಹ್ಮದ್ (46) ವಿಜಯಪುರ ಟೌನ್ನ ಮಂಡಿಬಲೆ ರಸ್ತೆಯ ಇಸ್ಲಾಂನಗರ ನಿವಾಸಿಯಾಗಿದ್ದು, ಕಳೆದ ಒಂದೂವರೆ ವರ್ಷಗಳಿಂದ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದುದಾಗಿ ತನಿಖೆಯಲ್ಲಿ ಒಪ್ಪಿಕೊಂಡಿದ್ದಾನೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ವಿ. ಚಂದ್ರಕಾಂತ್ ತಿಳಿಸಿದ್ದಾರೆ.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ಆಯೋಜಿಸಿದ್ದ ಕಳವಾಗಿದ್ದ ವಾಹನಗಳನ್ನು ಮಾಲೀಕರಿಗೆ ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಖಲೀಲ್ ಹಿಂದೆ ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡುತ್ತಿದ್ದನು. ಜೀವನ ನಿರ್ವಹಣೆಯ ಸಂಕಷ್ಟದಿಂದ ಸುಲಭವಾಗಿ ಹಣ ಸಂಪಾದಿಸುವ ಉದ್ದೇಶದಿಂದ ವಾಹನ ಕಳ್ಳತನದ ದಂಧೆಗೆ ಇಳಿದಿದ್ದ ಎಂದು ಹೇಳಿದರು.
ಒಂದೇ ಮಾದರಿಯ ಬೈಕ್ಗಳೇ ಗುರಿ
ಆರೋಪಿ ಸುಮಾರು 20 ರಿಂದ 25 ವಿವಿಧ ಕೀಗಳನ್ನು ಬಳಸಿಕೊಂಡು ಯಾರಿಗೂ ಅನುಮಾನ ಬಾರದಂತೆ ವಾಹನ ಕಳವು ಮಾಡುತ್ತಿದ್ದ. ಹೆಚ್ಚಾಗಿ ಮೈಲೇಜ್ ನೀಡುವ ಹಿರೋ ಸ್ಪ್ಲೆಂಡರ್ ಪ್ರೋ ಬೈಕ್ಗಳನ್ನೇ ಗುರಿಯಾಗಿಸಿಕೊಂಡು ಕಳವು ಮಾಡುತ್ತಿದ್ದ ಆತ, ಅವುಗಳನ್ನು ಕೇವಲ ₹2,000 ರಿಂದ ₹2,500ಕ್ಕೆ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಕಳವು ಮಾಡಿದ ವಾಹನಗಳನ್ನು ಖರೀದಿಸುತ್ತಿದ್ದ ಕೆಲ ದಲ್ಲಾಳಿಗಳ ಪಾತ್ರವೂ ಬೆಳಕಿಗೆ ಬಂದಿದ್ದು, ಅವರನ್ನು ಶೀಘ್ರವೇ ಪತ್ತೆಹಚ್ಚಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ.
ದೂರು ಆಧರಿಸಿ ಕಾರ್ಯಾಚರಣೆ
ಜೂನ್ 16ರಂದು ಪಿ. ಮುನಿಕೃಷ್ಣ ಎಂಬುವರು ವಿಜಯಪುರ ಬಸ್ ನಿಲ್ದಾಣದ ಸಮೀಪ ತಮ್ಮ ಹಿರೋ ಸ್ಪ್ಲೆಂಡರ್ ಪ್ರೋ ಬೈಕ್ ನಿಲ್ಲಿಸಿ ಯಲಹಂಕಕ್ಕೆ ತೆರಳಿದ್ದರು. ಸಂಜೆ ವಾಪಸ್ಸು ಬಂದಾಗ ಬೈಕ್ ಕಳುವಾಗಿರುವುದು ಕಂಡುಬಂದಿದ್ದು, ಜೂನ್ 18ರಂದು ವಿಜಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣದ ಬೆನ್ನತ್ತಿದ ಪೊಲೀಸರು ವಿಶೇಷ ತಂಡ ರಚಿಸಿ ಜೂನ್ 19ರಂದು ಖಲೀಲ್ ಅಹ್ಮದ್ನನ್ನು ವಶಕ್ಕೆ ಪಡೆದು ನ್ಯಾಯಾಲಯದ ಅನುಮತಿಯೊಂದಿಗೆ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆ ನಡೆಸಿದರು.
ಹಲವು ಠಾಣೆಗಳ ವ್ಯಾಪ್ತಿಯಲ್ಲಿ ಕಳವು
ವಿಚಾರಣೆ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಂದಗುಡಿ, ಹೊಸಕೋಟೆ, ಸೂಲಿಬೆಲೆ, ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ, ಶಿಡ್ಲಘಟ್ಟ, ಎಚ್.ಕ್ರಾಸ್ ಹಾಗೂ ಕೋಲಾರ ಜಿಲ್ಲೆಯ ಮಾಸ್ತಿ ಮತ್ತು ಮಾಲೂರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳವು ಮಾಡಿದ್ದ ಒಟ್ಟು 42 ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮಾಲೀಕರಿಗೆ ವಾಹನ ಹಸ್ತಾಂತರ
ನ್ಯಾಯಾಲಯದ ಅನುಮತಿಯಂತೆ ದಾಖಲೆ ಪರಿಶೀಲನೆ ನಡೆಸಿ ವಾಹನಗಳನ್ನು ಮಾಲೀಕರಿಗೆ ಹಸ್ತಾಂತರಿಸಲಾಗುತ್ತಿದೆ. ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ ವಿಜಯಪುರ ಠಾಣೆಯ ವೃತ್ತ ನಿರೀಕ್ಷಕ ಲಕ್ಷ್ಮಿನಾರಾಯಣ ನೇತೃತ್ವದ ತಂಡಕ್ಕೆ ಪ್ರಶಂಸನೀಯ ಪತ್ರ ಹಾಗೂ ಬಹುಮಾನ ನೀಡಲಾಗುವುದು ಎಂದು ಎಸ್ಪಿ ಚಂದ್ರಕಾಂತ್ ಹೇಳಿದರು.
ವಾಹನ ಸವಾರರಿಗೆ ಎಚ್ಚರಿಕೆ
ವಾಹನ ಸವಾರರು ಸಾರ್ವಜನಿಕ ಸ್ಥಳಗಳಲ್ಲಿ ವಾಹನ ನಿಲ್ಲಿಸುವಾಗ ಹೆಚ್ಚುವರಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಅಪರಿಚಿತ ಸ್ಥಳಗಳಲ್ಲಿ ವಾಹನದ ಚಕ್ರಕ್ಕೆ ಲಾಕ್ ಹಾಕುವುದು, ಅಗತ್ಯ ದಾಖಲೆಗಳನ್ನು ಹೊಂದಿರುವುದು ಹಾಗೂ ಹೆಲ್ಮೆಟ್ ಧರಿಸುವುದು ಕಡ್ಡಾಯ ಎಂದು ಎಸ್ಪಿ ಸಲಹೆ ನೀಡಿದರು.
ವಾಹನ ಮರಳಿ ಸಿಕ್ಕ ಸಂತಸ
ನನ್ನ ದ್ವಿಚಕ್ರ ವಾಹನ ಚಿಂತಾಮಣಿಯಲ್ಲಿ ಕಳುವಾಗಿತ್ತು. ಈಗ ಅದು ಮರಳಿ ಸಿಕ್ಕಿರುವುದು ತುಂಬಾ ಸಂತೋಷ ತಂದಿದೆ. ಆರೋಪಿಯನ್ನು ಪತ್ತೆಹಚ್ಚಿ ವಾಹನಗಳನ್ನು ಮಾಲೀಕರಿಗೆ ಹಸ್ತಾಂತರಿಸುತ್ತಿರುವ ಪೊಲೀಸರ ಕಾರ್ಯ ಶ್ಲಾಘನೀಯ ಎಂದು ವಾಹನ ಮಾಲೀಕ ವೆಂಕಟನರಸಿಂಹಪ್ಪ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…