
ಇಂದು ಭಾರತದ 100 ಲೋಕಸಭಾ ಕ್ಷೇತ್ರಗಳಲ್ಲಿ ಮತ ಚೋರಿಯಾಗಿರುವುದನ್ನು ಗುರುತಿಸಲಾಗಿದೆ. ಅಲ್ಲದೇ ನಮ್ಮ ರಾಜ್ಯದ ಮಹದೇವಪುರ ಲೋಕಸಭಾ ಕ್ಷೇತ್ರದಲ್ಲಿ ಮಾತಾಚೋರಿಯಾಗಿರುವುದು ಸಾಭೀತಾಗಿದೆ. ಈ ಮತಚೋರಿ ಕುರಿತು ದೇಶದ ಜನರಿಗೆ ತಿಳಿಸುವ ಅವಶ್ಯಕತೆ ಇದೆ ಈ ನಿಟ್ಟಿನಲ್ಲಿ ಈ ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನ ಪ್ರಾರಂಭಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಹಾಗೂ ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಹೇಳಿದರು.
ಕೇಂದ್ರ ಬಿಜೆಪಿ ಸತತವಾಗಿ 3 ಬಾರಿ ಮತಗಳ್ಳತನ ಮಾಡುವ ಮೂಲಕ ದೇಶದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿದೆ. ಈ ಹಿನ್ನೆಲೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮುಂದಿನ ಪೀಳಿಗೆಯನ್ನು ಉಳಿಸುವ ನಿಟ್ಟಿನಲ್ಲಿ ಹೋರಾಟ ಮಾಡುತ್ತಿದ್ದಾರೆ. ಅನೇಕ ರಾಜ್ಯಗಳಲ್ಲಿ ಬಿಜೆಪಿ ವೋಟ್ ಚೋರಿ ಮಾಡುವ ಮೂಲಕ ಅಧಿಕಾರಕ್ಕೆ ಬಂದಿದೆ. ಇದು ದೇಶದ ಜನತೆಗೆ ಮಾಡುತ್ತಿರುವ ಮಹಾಮೋಸ ಎಂದು ಆರೋಪಿಸಿದರು.

ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲಿ ನಡೆದ ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮತಗಳ್ಳತನ ಕುರಿತು ಚುನಾವಣಾ ಅಧಿಕಾರಿಗಳಿಗೆ ಮನಮುಟ್ಟುವಂತೆ ನಮ್ಮ ನಾಯಕರಾದ ರಾಹುಲ್ ಗಾಂಧಿಯವರು ತಿಳಿಸುವ ಪ್ರಯತ್ನ ಮಾಡಿದರು. ಆದರೆ ಯಾವುದೇ ಪ್ರಯೋಜನವಾಗಿಲ್ಲ, ಕಾರಣ ಎಲ್ಲಾ ಇಲಾಖೆಗಳು ಬಿಜೆಪಿ ಪಕ್ಷದ ಅಧೀನದಲ್ಲಿ ಇರುವಂತೆ ಕಾಣುತ್ತದೆ ಹಾಗಾಗಿ ಭಾರತೀಯ ಚುನಾವಣಾ ಆಯೋಗ ಆಧಿಕಾರಿಗಳಿಗೆ ಸತ್ಯಂಶ ತಿಳಿಸುವ ನಿಟ್ಟಿನಲ್ಲಿ ಮತದಾರರಿಂದ ಸಹಿ ಸಂಗ್ರಹ ಅಭಿಯಾನ ಆಯೋಜಿಸಲಾಗಿದೆ ಎಂದರು.
ಕೆಪಿಸಿಸಿ ಉಪಾಧ್ಯಕ್ಷ ವೆಂಕಟೇಶ್ ಮಾತನಾಡಿ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಹಿ ಮಾಡುವ ಮೂಲಕ ಮತಗಳ್ಳತನ ನಿಲ್ಲಿಸಲು ಸಹಕರಿಸಬೇಕೆಂದು ಮನವಿ ಮಾಡಿದರು.
ಒಬ್ಬನೆ ಮತದಾರ ದೇಶದ 4-5 ಕಡೆ ಮತದಾನ ಮಾಡುವುದಾಗಿದೆ. ದೇಶದ ಪ್ರಜಾತಂತ್ರ ವ್ಯವಸ್ಥೆಯನ್ನು ಬುಡಮೇಲು ಮಾಡುವ ಕಾರ್ಯಕ್ಕೆ ಬಿಜೆಪಿ ಮುಂದಾಗಿದ್ದು, ದೇಶದ ಜನತೆಗೆ ಮೋಸ ಮಾಡುತ್ತಿದ್ದಾರೆ. ಕೆಲ ಅಧಿಕಾರಿಗಳೇ ಈ ಕೃತ್ಯದಲ್ಲಿ ಪಾಲುದಾರರಾಗಿದ್ದಾರೆ ಎಂಬುದು ವಿಪರ್ಯಾಸ ಎಂದು ವಾಗ್ದಾಳಿ ನಡೆಸಿದರು.
ಈ ವೇಳೆ ಸಿ.ಆರ್ ಗೌಡ, ಜಿಲ್ಲಾ ಕಾಂಗ್ರೆಸ್ ಗ್ಯಾರಂಟಿ ಸಮಿತಿ ಅಧ್ಯಕ್ಷ ರಾಜಣ್ಣ, ಶ್ರೀ ಘಾಟಿ ಸುಬ್ರಮಣ್ಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ರಂಗಪ್ಪ, ಆರ್ ವಿ ಮಹೇಶ್, ಕೆಪಿಸಿಸಿ ಸದಸ್ಯ ಎಸ್. ಆರ್. ಮುನಿರಾಜು ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ, ಮುಖಂಡರಾದ ಶಿವಕುಮಾರ್ ಸೇರಿದಂತೆ ಹಲವರು ಹಾಜರಿದ್ದರು.