
ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಮಕ್ಕಳ ರಕ್ಷಣಾ ನೀತಿಯನ್ನು ಅನುಷ್ಠಾನ ಮಾಡುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಸೂಚಿಸಿದರು.
ದೊಡ್ಡಬಳ್ಳಾಪುರ ತಾಲೂಕಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಹಾಸ್ಟೆಲ್, ಚನ್ನದೇವಿ ಅಗ್ರಹಾರ ಗ್ರಾಪಂ ಸೇರಿದಂತೆ ವಿವಿಧ ಕಡೆಗಳಿಗೆ ಭೇಟಿ ಪರಿಶೀಲಿಸಿ ಅವರು ಮಾತನಾಡಿದರು.
ದೊಡ್ಡಬಳ್ಳಾಪುರದ ಕೊಡಿಗೇಹಳ್ಳಿಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಕ್ಕೆ ಭೇಟಿ ಪರಿಶೀಲಿಸಲಾಯಿತು. ಈ ವೇಳೆ ವಸತಿ ನಿಲಯಗಳಲ್ಲಿ ಉತ್ತಮ ಸೌಲಭ್ಯವಿದ್ದರೂ ಕೂಡ ಮಕ್ಕಳ ರಕ್ಷಣಾ ನೀತಿ ಅನುಷ್ಠಾನವಾಗದಿರುವುದು ಗಮನಕ್ಕೆ ಬಂದಿದ್ದು, ಆದಷ್ಟು ಬೇಗ ಮಕ್ಕಳ ರಕ್ಷಣಾ ನೀತಿಯನ್ನು ಅನುಷ್ಠನ ಮಾಡಲು ಸೂಚನೆ ನೀಡಿದರು.

ಇನ್ನೂ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಾಲ್ ಫ್ಯಾನ್ ಅಳವಡಿಸಲು ಸೂಚನೆ ನೀಡಿದ್ದು, ಮಕ್ಕಳ ಸಹಾಯವಾಣಿಯ ಬಗ್ಗೆ ಜಾಗೃತಿ ಮೂಡಿಸಲು ಸೂಚನೆ ನೀಡಿದರು.
ದೊಡ್ಡಬಳ್ಳಾಪುರ ತಾಲೂಕಿನ ಚನ್ನದೇವಿ ಅಗ್ರಹಾರ ಗ್ರಾಪಂ ವ್ಯಾಪ್ತಿಯ ಕೋಡಿಪಾಳ್ಯದಲ್ಲಿ 50 ವರ್ಷಕ್ಕೂ ಹೆಚ್ಚಿನ ಸಮಯದಿಂದ ಗುಡಿಸಲಲ್ಲಿ ಮೂಲಸೌಕರ್ಯ ಇಲ್ಲದೇ ಸಮಸ್ಯೆ ಅನುಭವಿಸುತ್ತಿರುವ ಬಗ್ಗೆ ಹಾಗೂ ಮಕ್ಕಳ ಗ್ರಾಮ ಸಭೆ ಸಮಯದಲ್ಲಿ ಇಲ್ಲಿನ ಮಕ್ಕಳು ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬೆಡ್ಶೀಟ್ ಸೇರಿದಂತೆ ವಿವಿಧ ಸಮಸ್ಯೆಗಳು ಇರುವ ಬಗ್ಗೆ ಗ್ರಾಪಂಗೆ ಮನವಿ ಮಾಡಿರುವ ಬಗ್ಗೆ ಯುವಸಂಚಲನ ಟ್ರಸ್ಟ್ ಮಕ್ಕಳ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಈ ಬಗ್ಗೆ ಗಮನಿಸಿದ ಆಯೋಗದ ಅಧ್ಯಕ್ಷರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಜನರ ಸಮಸ್ಯೆಗಳನ್ನು ಕೂಡ ಅಲಿಸಿದ ಅವರು ಗ್ರಾಪಂನಲ್ಲಿ ಸಭೆ ನಡೆಸಿ ಶೀಘ್ರವಾಗಿ ಗ್ರಾಮಸಭೆ ನಡೆಸಿ ಅಲ್ಲಿನ ಜನರ ಸಮಸ್ಯೆ, ಮಕ್ಕಳ ಸಮಸ್ಯೆಗಳನ್ನು ಬಗೆಹರಿಸುವಂತೆ ಸೂಚನೆಯನ್ನು ನೀಡಿದರು.

ಅಲ್ಲಿನ ಆಧಾರ್ ಕಾರ್ಡ್, ಯುಡಿಐಡಿ ಕಾರ್ಡ್ ಇಲ್ಲದ ಮಕ್ಕಳ ಮಾಹಿತಿ ಪಡೆದು ಅವರಿಗೆ ಸಮರ್ಪಕ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ದೊಡ್ಡಬಳ್ಳಾಪುರ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿರುವ ಸಖಿ ಒನ್ ಸ್ಟಾಪ್ ಸೆಂಟರ್ನಲ್ಲಿ ಎನ್ಜಿಒ ವತಿಯಿಂದ ತೆರೆಯಲಾಗಿರುವ ಅಂಗನವಾಡಿ ಕೇಂದ್ರವನ್ನು ಶೀಘ್ರವಾಗಿ ಸ್ಥಳಾಂತರಿಸಬೇಕು ಎಂದು ಸೂಚನೆ ನೀಡಿದರು.
ಜತೆಗೆ ಜಿಲ್ಲೆಯಲ್ಲಿನ ಅಪೌಷ್ಟಿಕ, ತೀವ್ರ ಅಪೌಷ್ಟಿಕ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಅವರಿಗೆ ಸೂಕ್ತವಾದ ಚಿಕಿತ್ಸೆಯನ್ನು ನೀಡಬೇಕು ಎಂದು ಸೂಚನೆ ನೀಡಿದರು. ಜತೆಗೆ ಮಕ್ಕಳ ಚಿಕಿತ್ಸಾ ವಿವರಗಳನ್ನು ಪರಿಶೀಲಿಸಿದರು.
ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಿದ ರಾಜ್ಯಮಕ್ಕಳ ಆಯೋಗದ ಅಧ್ಯಕ್ಷರಾದ ಶಶಿಧರ್ ಕೋಸಂಬೆ ಅವರು ತಾಲೂಕಿನ ಚನ್ನದೇವಿ ಅಗ್ರಹಾರ ಅಂಗನವಾಡಿ, ಆಸ್ಪತ್ರೆ ಆವರಣದಲ್ಲಿರುವ ಅಂಗನವಾಡಿ, ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ವಾರ್ಡ್ ನಲ್ಲಿರುವ ಮಕ್ಕಳನ್ನು ಭೇಟಿ ಮಾಡಿ ಆರೋಗ್ಯ, ನೀಡಲಾಗುತ್ತಿರುವ ಊಟ, ಆರೈಕೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಾಹಿತಿ ಪಡೆದರು. ಪೋಷಕರೊಂದಿಗೂ ಕೂಡ ಚರ್ಚೆ ನಡೆಸಿದರು.
ಈ ವೇಳೆಯಲ್ಲಿ ದೊಡ್ಡಬಳ್ಳಾಪುರ ತಹಶೀಲ್ದಾರ್ ಮಲ್ಲಪ್ಪ, ಇಒ ಮುನಿರಾಜು, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಅನಿತಾಲಕ್ಷ್ಮಿ, ತಾಲೂಕು ಆರೋಗ್ಯಾಧಿಕಾರಿ ಡಾ. ಶಾರದಾ, ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಮೇಶ್,
ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಪಂ ಅಧಿಕಾರಿಗಳು, ವಿವಿಧ ಇಲಾಖೆಯ ಸಿಬ್ಬಂದಿ ಹಾಜರಿದ್ದರು.