
ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ.

ರಾತ್ರಿ ಸುಮಾರು 1 ಗಂಟೆಯ ಸಮಯದಲ್ಲಿ ಈ ಕೃತ್ಯ ನಡೆದಿದ್ದು, ರಸ್ತೆ ಪಕ್ಕದಲ್ಲೇ ಇರುವ ಕೃಷ್ಣಪ್ಪ ಎಂಬುವವರ ಮನೆಯ ಮುಂದೆ ನಿಲ್ಲಿಸಿದ್ದ ಮೂರು ಬೈಕ್ ಹಾಗೂ ಒಂದು ಟ್ರಾಕ್ಟರ್ ಸಂಪೂರ್ಣ ಬೆಂಕಿಗಾಹುತಿಯಾಗಿವೆ. ಅಷ್ಟೇ ಅಲ್ಲದೆ, ಕಿಡಿಗೇಡಿಗಳು ಅಲ್ಲಿಯೇ ಇದ್ದ ಇನೋವಾ ಕಾರಿನ ಮೇಲೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದಾರೆ. ಅದೃಷ್ಟವಶಾತ್ ಕಾರು ಹೆಚ್ಚಿನ ಅಪಾಯದಿಂದ ಪಾರಾಗಿದೆ.

ಈ ಘಟನೆಯಿಂದ ಮದುವೆ ಮನೆಯವರಲ್ಲಿ ಆತಂಕ ಮೂಡಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ನಂದಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪೊಲೀಸರು ಕಿಡಿಗೇಡಿಗಳ ಪತ್ತೆಗಾಗಿ ತನಿಖೆ ಚುರುಕುಗೊಳಿಸಿದ್ದಾರೆ.