ಮಳೆಗೆ ಕೆರೆಯಂತಾದ ತೂಬಗೆರೆ ಕಲ್ಲುಕೋಟೆ ಸಂಪರ್ಕ ರಸ್ತೆ: ರಾಗಿನಾಟಿ ಮಾಡಿ ಗ್ರಾಮಸ್ಥರ ವಿಶಿಷ್ಟ ಪ್ರತಿಭಟನೆ

ದೊಡ್ಡಬಳ್ಳಾಪುರ (ಆ.11) : ತಾಲ್ಲೂಕಿನ ತೂಬಗೆರೆ–ಕಲ್ಲುಕೋಟೆ ರಸ್ತೆ ನಿರಂತರ ಮಳೆಗೆ ಸಂಪೂರ್ಣ ಕೆರೆಯಾಗಿ, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ವರ್ಷಗಳಿಂದ ಡಾಂಬರು ಹಾಕಿಸದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಬೇಸತ್ತ ಸುತ್ತಮುತ್ತಲಿನ ಗ್ರಾಮಸ್ಥರು, ರಸ್ತೆಯ ಮಧ್ಯೆ ಇದ್ದ ದೊಡ್ಡ ಗುಂಡಿಗಳಲ್ಲಿ ರಾಗಿ ನಾಟಿ ಮಾಡಿ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ಸುಮಾರು ಹದಿನೈದು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ಸಂಪೂರ್ಣ ಗುಂಡಿಮಯವಾಗಿ ಮಾರ್ಪಟ್ಟಿದ್ದು, ಪ್ರತಿದಿನ ಶಾಲೆ, ಕಾಲೇಜು ಹಾಗೂ ಉದ್ಯೋಗ ಸ್ಥಳಗಳಿಗೆ ತೆರಳುವ ಸಾರ್ವಜನಿಕರು ಪರದಾಡುವ ಸ್ಥಿತಿ ಎದುರಿಸುತ್ತಿದ್ದಾರೆ. ಮಳೆ ಬಂದಾಗ ಗುಂಡಿಗಳಲ್ಲಿ ನೀರು ತುಂಬಿ, ವಾಹನಗಳು ಕೆಸರುಗದ್ದೆಯಲ್ಲಿ ಸಿಲುಕುವಂತಾಗುತ್ತಿದೆ. ಬಸ್ ಹಾಗೂ ಇತರೆ ವಾಹನಗಳು ಸಂಚರಿಸಲು ಕಷ್ಟವಾಗಿರುವ ಕಾರಣ, ಕೆಲ ಹಳ್ಳಿಗಳು ಬಹುತೇಕ ಪ್ರತ್ಯೇಕಗೊಂಡಂತ ಸ್ಥಿತಿಯಲ್ಲಿವೆ.

ಸ್ಥಳೀಯರು ಹೇಳುವಂತೆ, ಈ ರಸ್ತೆಯ ದುಸ್ಥಿತಿಯಿಂದ ಆರೋಗ್ಯ ಸಮಸ್ಯೆಗಳೂ ಗಂಭೀರ ರೂಪ ಪಡೆದುಕೊಂಡಿವೆ. ತುರ್ತು ಸಂದರ್ಭದಲ್ಲಿ ಆಸ್ಪತ್ರೆಗೆ ತಲುಪಲು ಸಮಯ ಕಳೆದು ಅಪಾಯವಾಗುವ ಘಟನೆಗಳೂ ನಡೆದಿವೆ. ವಿಶೇಷವಾಗಿ, ಗರ್ಭಿಣಿಯರನ್ನು ಆಸ್ಪತ್ರೆಗೆ ಸಾಗಿಸಲು ವಿಳಂಬವಾದ ಪರಿಣಾಮ, ಗರ್ಭಪಾತದಂತಹ ದುರ್ಘಟನೆಗಳೂ ನಡೆದಿವೆ ಎಂದು ಆರೋಪಿಸಲಾಗಿದೆ.

ಈ ಕುರಿತು ಆಶಾ ಕಾರ್ಯಕರ್ತೆ ಒಬ್ಬರು ಹೇಳುವಾಗ, “ರಸ್ತೆಯ ಗುಂಡಿಗಳಿಂದ ಆಂಬ್ಯುಲೆನ್ಸ್ ಅಥವಾ ವಾಹನಗಳು ಬೇಗ ಸಾಗಲು ಸಾಧ್ಯವಾಗುತ್ತಿಲ್ಲ. ಕೆಲವೊಮ್ಮೆ ತಾಯಂದಿರು ಮತ್ತು ಶಿಶುಗಳ ಜೀವ ಹಾನಿಯಾಗುವ ಸ್ಥಿತಿ ಉಂಟಾಗಿದೆ. ಹಲವು ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ, ಆದರೆ ಪರಿಹಾರ ಕಾಣಲಿಲ್ಲ,” ಎಂದು ವಿಷಾದಿಸಿದರು.

ನಮ್ಮ ಹಳ್ಳಿಗಳ ಜನರ ಸಮಸ್ಯೆಗಳನ್ನು ಅಧಿಕಾರಿಗಳು ಕೇಳುವ ಸ್ಥಿತಿಯಲ್ಲೇ ಇಲ್ಲ. ಚುನಾವಣೆ ವೇಳೆ ದೊಡ್ಡ ಮಾತುಗಳನ್ನಾಡಿ, ನಂತರ ಜನರ ನೋವುಗಳನ್ನು ಕಡೆಗಣಿಸುವುದು ಅವರ ಅಹಂಕಾರದ ನೈಜ ಮುಖ. ಜನರನ್ನು ಮರೆತರೆ, ಜನರು ಅವರನ್ನು ಮರೆತೇ ಬಿಡುತ್ತಾರೆ ಎಂದು ಹೇಳಿದರು.

ಈ ರಸ್ತೆ ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಸ್ಪರ್ಧಿಸುವ ಕ್ಷೇತ್ರದ ಭಾಗವಾಗಿರುವುದರಿಂದ, ಸಮಸ್ಯೆ ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಸ್ಥಳೀಯರು, ಚುನಾವಣೆ ವೇಳೆ ನೀಡಿದ ಭರವಸೆಗಳು ನೆಲೆಯೂರದಿರುವುದನ್ನು ಟೀಕಿಸಿದ್ದಾರೆ.

ಗ್ರಾಮಸ್ಥರು ಜಿಲ್ಲಾ ಹಾಗೂ ಸಾರ್ವಜನಿಕ ಕಾರ್ಯ ಇಲಾಖೆಗೆ ತಕ್ಷಣ ರಸ್ತೆ ಸುಧಾರಣೆ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟವನ್ನು ಮುಂದುವರಿಸಿ, ತಾಲೂಕು ಕೇಂದ್ರದಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Ramesh Babu

Journalist

Recent Posts

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

21 minutes ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

46 minutes ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

8 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago