ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ ಶೇ.66ರಷ್ಟು ಮಳೆ ಕೊರತೆ ದಾಖಲಾಗಿರುವುದರಿಂದ ರೈತರು ಬಿತ್ತನೆ ಕಾರ್ಯ ಆರಂಭಿಸಲು ಸಾಧ್ಯವಾಗದೆ ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ.

ಹೊಲಗಳನ್ನು ನಾಲ್ಕೈದು ಬಾರಿ ಉಳಿಮೆ ಮಾಡಿ ಹದಗೊಳಿಸಿ, ಬೀಜ ಹಾಗೂ ರಸಗೊಬ್ಬರಗಳನ್ನು ಮುಂಚಿತವಾಗಿಯೇ ಖರೀದಿಸಿ ಸಿದ್ಧತೆ ಮಾಡಿಕೊಂಡಿದ್ದರೂ ಮಳೆಯಿಲ್ಲದೆ ಎಲ್ಲ ಸಿದ್ಧತೆಗಳು ಸ್ಥಗಿತಗೊಂಡಿವೆ.

ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಸುಮಾರು 74 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಸುವ ಗುರಿ ಹೊಂದಲಾಗಿದೆ. ಆದರೆ ಇದುವರೆಗೆ ಕೇವಲ 2,255 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆ ಪೂರ್ಣಗೊಂಡಿದ್ದು, ಇದು ಒಟ್ಟು ಗುರಿಯ ಶೇ.3ರಷ್ಟು ಮಾತ್ರವಾಗಿದೆ. ಉಳಿದ ಬಹುತೇಕ ಕೃಷಿಭೂಮಿಗಳು ಮಳೆಯ ನಿರೀಕ್ಷೆಯಲ್ಲೇ ಇವೆ.

ಜಿಲ್ಲೆಯಲ್ಲಿ ರಾಗಿ, ತೊಗರಿ, ಮೆಕ್ಕೆಜೋಳ, ಜೋಳ, ನವಣೆ ಸೇರಿದಂತೆ ಪ್ರಮುಖ ಮಳೆ ಆಶ್ರಿತ ಬೆಳೆಗಳನ್ನು ಬೆಳೆಯಲಾಗುತ್ತದೆ. ಈ ಬೆಳೆಗಳಿಗೆ ಸಮರ್ಪಕ ಮಳೆ ಅಗತ್ಯವಾಗಿದ್ದು, ಮಳೆಯ ಕೊರತೆಯಿಂದ ರೈತರು ಬಿತ್ತನೆ ಮುಂದೂಡುತ್ತಿದ್ದಾರೆ. ಕೆಲವೆಡೆ ಈಗಾಗಲೇ ಬಿತ್ತನೆ ಮಾಡಿದ ರೈತರು ಕೂಡ ಮಳೆ ಸುರಿಯದ ಕಾರಣ ಬೀಜ ಮೊಳಕೆಯೊಡೆಯುವ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಈಗಾಗಲೇ ಕೃಷಿ ಕಾರ್ಯಗಳಿಗಾಗಿ ಸಾವಿರಾರು ರೂಪಾಯಿ ವೆಚ್ಚ ಮಾಡಿರುವ ರೈತರು, ಸಾಲ ಮಾಡಿ ಕೃಷಿ ಆರಂಭಿಸಿರುವವರೂ ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಮಳೆ ಇನ್ನಷ್ಟು ವಿಳಂಬವಾದರೆ ಹೊಲವನ್ನು ಮತ್ತೊಮ್ಮೆ ಉಳಿಮೆ ಮಾಡಬೇಕಾಗುವ ಸಾಧ್ಯತೆ ಇದೆ. ಇದರಿಂದ ಹೆಚ್ಚುವರಿ ವೆಚ್ಚದ ಹೊರೆ ರೈತರ ಮೇಲೆ ಬೀಳಲಿದ್ದು, ಆರ್ಥಿಕ ಸಂಕಷ್ಟ ಮತ್ತಷ್ಟು ಗಂಭೀರವಾಗುವ ಭೀತಿ ಎದುರಾಗಿದೆ.

ಮಳೆ ಕೊರತೆಯಿಂದ ಕೃಷಿ ಕಾರ್ಮಿಕರಿಗೂ ಉದ್ಯೋಗದ ಅಭಾವ ಉಂಟಾಗಿದೆ. ಬಿತ್ತನೆ ಕಾರ್ಯ ಆರಂಭವಾಗದ ಕಾರಣ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಆಧಾರಿತ ಆರ್ಥಿಕ ಚಟುವಟಿಕೆಗಳು ಕುಂಠಿತಗೊಂಡಿವೆ. ದಿನಗೂಲಿ ಕಾರ್ಮಿಕರು ಕೆಲಸವಿಲ್ಲದೆ ಸಂಕಷ್ಟ ಅನುಭವಿಸುತ್ತಿದ್ದು, ಹಳ್ಳಿಗಳಲ್ಲಿ ಆರ್ಥಿಕ ಚಟುವಟಿಕೆಗಳು ಮಂದಗತಿಯಲ್ಲಿ ಸಾಗುತ್ತಿವೆ.

ಕೃಷಿ ಇಲಾಖೆಯ ಮಾಹಿತಿಯಂತೆ, ಮುಂಗಾರು ಅವಲಂಬಿತ ಬೆಳೆಗಳ ಬಿತ್ತನೆಗೆ ಆಗಸ್ಟ್ 20ರವರೆಗೆ ಅವಕಾಶವಿದೆ. ಆ ಅವಧಿಯೊಳಗೆ ಉತ್ತಮ ಮಳೆಯಾದರೆ ಬಿತ್ತನೆ ಪ್ರಮಾಣ ಗಣನೀಯವಾಗಿ ಹೆಚ್ಚುವ ನಿರೀಕ್ಷೆ ಇದೆ. ಆದರೆ ಮಳೆ ಮತ್ತಷ್ಟು ವಿಳಂಬವಾದರೆ ಈ ಹಂಗಾಮಿನ ಉತ್ಪಾದನೆಯ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ.

ಕೃಷಿ ತಜ್ಞರು ಹವಾಮಾನ ಪರಿಸ್ಥಿತಿಯನ್ನು ಗಮನಿಸಿ ಸ್ಥಳೀಯ ಪರಿಸ್ಥಿತಿಗೆ ಹೊಂದುವ ಬೆಳೆಗಳನ್ನು ಆಯ್ಕೆ ಮಾಡಿಕೊಳ್ಳುವಂತೆ ಹಾಗೂ ಕೃಷಿ ಇಲಾಖೆಯ ಸಲಹೆ ಪಡೆದು ಬಿತ್ತನೆ ಕೈಗೊಳ್ಳುವಂತೆ ರೈತರಿಗೆ ಸೂಚಿಸಿದ್ದಾರೆ. ಮಳೆ ಆರಂಭವಾದ ಕೂಡಲೇ ಬಿತ್ತನೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿರುವ ರೈತರು ವಿಳಂಬ ಮಾಡದೇ ಕೃಷಿ ಕಾರ್ಯ ಆರಂಭಿಸಬೇಕು ಎಂದು ಸಲಹೆ ನೀಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈವರೆಗೆ ಸಾಮಾನ್ಯಕ್ಕಿಂತ ಶೇ.66ರಷ್ಟು ಮಳೆ ಕೊರತೆ ದಾಖಲಾಗಿದೆ. ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಸುಮಾರು 74 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಿದ್ದರೂ, ಇದುವರೆಗೆ ಕೇವಲ 2,255 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದ್ದು, ಇದು ಗುರಿಯ ಶೇ.3ರಷ್ಟು ಮಾತ್ರ. ಇದೇ ಪರಿಸ್ಥಿತಿ ಮುಂದುವರಿದರೆ ರೈತರು ಸ್ಥಳೀಯ ಹವಾಮಾನಕ್ಕೆ ಅನುಗುಣವಾದ ಪರ್ಯಾಯ ಬೆಳೆಗಳನ್ನು ಬೆಳೆಯುವ ಕುರಿತು ಚಿಂತನೆ ನಡೆಸಬೇಕಾಗುತ್ತದೆ. ಮಳೆ ಆರಂಭವಾದ ಕೂಡಲೇ ಕೃಷಿ ಇಲಾಖೆಯ ಮಾರ್ಗದರ್ಶನದಂತೆ ಬಿತ್ತನೆ ಕೈಗೊಳ್ಳಬೇಕು ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಕಲಾವತಿ ತಿಳಿಸಿದರು.

ಸಾಲ ಮಾಡಿ ರಸಗೊಬ್ಬರ ಖರೀದಿಸಿದ್ದೇವೆ. ಮಳೆ ಬರುತ್ತದೆ ಎಂಬ ನಿರೀಕ್ಷೆಯಲ್ಲಿ ಹೊಲವನ್ನು ಮೂರ್ನಾಲ್ಕು ಬಾರಿ ಉಳಿಮೆ ಮಾಡಿ ಬಿತ್ತನೆಗೆ ಸಿದ್ಧಗೊಳಿಸಿದ್ದೇವೆ. ನಾವು ಕೃಷಿಯನ್ನೇ ನಂಬಿ ಬದುಕುತ್ತಿರುವವರು. ಆದರೆ ಈ ಬಾರಿ ಮಳೆ ಕೈಕೊಟ್ಟಿರುವುದರಿಂದ ಭಾರೀ ನಷ್ಟವಾಗಿದೆ. ನೀರಾವರಿ ಬೆಳೆ ಬೆಳೆಯಲು ಕೊಳವೆ ಬಾವಿಗಳಲ್ಲೂ ನೀರಿಲ್ಲ. ಮಳೆ ಬರದಿದ್ದರೆ ನಮ್ಮ ಬದುಕು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಲಿದೆ ಎಂದು ಕೃಷಿಕ ನಾಗರಾಜು ಹೇಳಿದರು.

Ramesh Babu

Journalist

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

6 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

7 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

20 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

20 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

20 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

21 hours ago