Categories: ರಾಜ್ಯ

ಮಾಜಿ ಸಿಎಂ ಕುಮಾರಸ್ವಾಮಿಯವರೇ ಬಡವರ ಮೇಲೆ ಏಕೆ ಈ ಪರಿಯ ದ್ವೇಷ?- ಬಿಜೆಪಿ ನಡವಳಿಕೆಯನ್ನು ಪ್ರಶ್ನಿಸುವ ದಮ್ಮು ತಾಕತ್ ಕುಮಾರಸ್ವಾಮಿಯವರಿಗೆ ಇಲ್ಲ- ಸಿಎಂ‌ ಸಿದ್ದರಾಮಯ್ಯ ಕಿಡಿ

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರೇ, ನಿಮಗೆ ಏಕೆ ರಾಜ್ಯದ ಬಡವರ ಮೇಲೆ ಈ ಪರಿಯ ದ್ವೇಷ? ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ದಿನದಿಂದ ಅದರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುವುದು ನಿಮ್ಮ ದಿನಚರಿಯಾಗಿ ಬಿಟ್ಟಿದೆ. ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವುದೆಂದರೆ ಕೋಟ್ಯಂತರ ಸಂಖ್ಯೆಯಲ್ಲಿರುವ ಬಡ ಫಲಾನುಭವಿಗಳನ್ನು ವಿರೋಧಿಸುವುದೆಂದೇ ಅರ್ಥ. ಯಾಕೆ ಬಡವರ ಹೊಟ್ಟೆಗೆ ಹೊಡೆಯುವ ಕಿಚ್ಚು? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ರಾಜ್ಯದ ಕೋಟ್ಯಂತರ ಫಲಾನುಭವಿಗಳು ಗ್ಯಾರಂಟಿ ಯೋಜನೆಗಳ ಲಾಭ ಪಡೆದು ಸಂಭ್ರಮಿಸುತ್ತಿದ್ದಾರೆ. ಈ ಸಂಭ್ರಮದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮತದಾರರೂ ಸೇರಿದ್ದಾರೆ. ಗ್ಯಾರಂಟಿ ಯೋಜನೆಗಳ ಫಲಿತಾಂಶವನ್ನು ತಿಳಿದುಕೊಳ‍್ಳಬೇಕಾದ ಪ್ರಾಮಾಣಿಕ ಉದ್ದೇಶ ನಿಮಗಿದ್ದರೆ ಬೆಂಗಳೂರಿನಲ್ಲಿ ಕೂತು ಪತ್ರಿಕಾಗೋಷ್ಠಿ ನಡೆಸುವುದಲ್ಲ, ಹಳ್ಳಿಗಳಿಗೆ ಹೋಗಿ ಅಲ್ಲಿರುವ ಫಲಾನುಭವಿಗಳನ್ನು ಮಾತನಾಡಿಸಿ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳನ್ನು ಬಹಳ ಮುಖ್ಯವಾಗಿ ರಾಜ್ಯದ ಬಡಜನರನ್ನು ಗುರಿಯಾಗಿಸಿಕೊಂಡು ರೂಪಿಸಿರುವಂತಹದ್ದು. ಅದು ಶ್ರೀಮಂತರು ಇಲ್ಲವೇ ಉದ್ಯಮಿಗಳಿಗೆ ನೆರವಾಗುವ ತೆರಿಗೆ ವಿನಾಯಿತಿಯೂ ಅಲ್ಲ, ಅವರ ಸಾಲ ಮನ್ನಾ ಮಾಡುವ ಯೋಜನೆಯೂ ಅಲ್ಲ. ವಂಚಕ ಉದ್ಯಮಿಗಳಿಗೆ ನೆರವಾಗಲು ಜನರ ತೆರಿಗೆ ಹಣವನ್ನು ದುರ್ಬಳಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಸೊಲ್ಲೆತ್ತಲಾಗದ ಕುಮಾರಸ್ವಾಮಿಯವರು ಮೂರು ಹೊತ್ತು ಗ್ಯಾರಂಟಿ ಯೋಜನೆಗಳ ಚುಂಗು ಹಿಡಿದು ಜಗ್ಗಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಸುಳ್ಳು ಆರೋಪಗಳ ಮೂಲಕ  ದಿನನಿತ್ಯ ನನ್ನ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಕುಮಾರಸ್ವಾಮಿ ಅವರೇ, ನನ್ನನ್ನು ಟೀಕಿಸುವುದರಿಂದ ನಿಮ್ಮ ಮನಸಿಗೆ ಶಾಂತಿ ಸಿಗುವುದಿದ್ದರೆ ನಿಮ್ಮ ದ್ವೇಷಾಸೂಯೆ ಮುಂದುವರಿಯಲಿ. ಚುನಾವಣಾ ಸೋಲಿನ ನಿಮ್ಮ ನಿರಾಶೆ, ಅದರಿಂದಾಗಿರುವ ಹತಾಶೆಯನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಆದರೆ ರಾಜ್ಯದ ಬಡವರನ್ನು ಯಾಕೆ ಈ ರೀತಿ ದ್ವೇಷಿಸುತ್ತಿದ್ದೀರಿ. ಬಡವರ ಕಲ್ಯಾಣಕ್ಕಾಗಿಯೇ ರೂಪಿಸಲಾಗಿರುವ ಯೋಜನೆಗಳನ್ನು ಯಾಕೆ ವಿರೋಧಿಸುತ್ತಿದ್ದೀರಿ? ಕಳೆದ ಚುನಾವಣೆಯಲ್ಲಿ ಅವರು ನಿಮ್ಮ ಪಕ್ಷವನ್ನು ತಿರಸ್ಕರಿಸಿದ್ದಕ್ಕಾಗಿ ದ್ವೇಷವೇ? ಎಂದು ಪ್ರಶ್ನಿಸಿದ್ದಾರೆ.

ಭಾರತೀಯ ಜನತಾ ಪಕ್ಷದ ಹಿಪಾಕ್ರಟಿಕ್ ನಡವಳಿಕೆಯನ್ನು ಇಡೀ ದೇಶ ಕಂಡು ಛೀಮಾರಿ ಹಾಕುತ್ತಿದೆ. ಮೊನ್ನೆ ಮೊನ್ನೆ ವರೆಗೆ ಗ್ಯಾರಂಟಿ ಯೋಜನೆಗಳು ಸೇರಿದಂತೆ ಇಂತಹ ಯೋಜನೆಗಳೆಲ್ಲ ಬಿಟ್ಟಿಭಾಗ್ಯ ಎಂದು ಗೇಲಿ ಮಾಡುತ್ತಿದ್ದ ಬಿಜೆಪಿ ಐದು ರಾಜ್ಯಗಳ ಚುನಾವಣಾ ಪ್ರಣಾಳಿಕೆಯಲ್ಲಿ ಇಂತಹ ‘’ಬಿಟ್ಟಿ ಭಾಗ್ಯ’’ಗಳನ್ನೆಲ್ಲ ಸೇರಿಸಿ ಬಿಟ್ಟಿದೆ. ಇವರಿಗೆ ರಾಜ್ಯದ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವ ನೈತಿಕತೆ ಇಲ್ಲ, ಬಿಜೆಪಿ ನಡವಳಿಕೆಯನ್ನು ಪ್ರಶ್ನಿಸುವ ದಮ್ಮು ತಾಕತ್ ಕುಮಾರಸ್ವಾಮಿಯವರಿಗೆ ಇಲ್ಲ ಎಂದು ಕಿಡಿಕಾರಿದ್ದಾರೆ.

ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿನ ಘೋಷಣೆಗಳು. ಅದನ್ನು ಒಪ್ಪಿಕೊಂಡೇ ರಾಜ್ಯದ ಜನ ನಮ್ಮ ಪಕ್ಷವನ್ನು ಗೆಲ್ಲಿಸಿದ್ದಾರೆ. ಈ ಯೋಜನೆಗಳನ್ನು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳೆರಡೂ ವಿರೋಧಿಸಿದ್ದವು, ಈ ಪಕ್ಷಗಳ ಸೋಲಿಗೆ ಗ್ಯಾರಂಟಿ ಯೋಜನೆಗಳ ಬಗೆಗಿನ ನಿಮ್ಮ ವಿರೋಧವೂ ಕಾರಣ ಎನ್ನುವುದು ನಿಮಗೆ ಇನ್ನೂ ಅರ್ಥವಾಗದೆ ಇರುವುದು ದುರಂತ. ಇದೇ ರೀತಿ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಾ ಹೋದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳೆರಡಕ್ಕೂ ರಾಜ್ಯದ ಪ್ರಜ್ಞಾವಂತ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು‌.

Ramesh Babu

Journalist

Recent Posts

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

5 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

6 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

1 day ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

1 day ago