ಪ್ರತಿಯೊಬ್ಬ ವ್ಯಕ್ತಿಗೂ ನೈಸರ್ಗಿಕವಾಗಿ ಮಾನವ ಹಕ್ಕುಗಳು ಬಂದಿರುತ್ತವೆ, ಆ ಹಕ್ಕುಗಳನ್ನು ಉಲ್ಲಂಘನೆ ಮಾಡದೇ, ರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರೀಕನ ಜವಾಬ್ದಾರಿ ಆಗಿರುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್ ಹೇಳಿದರು.
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ *75 ನೇ ಮಾನವ ಹಕ್ಕುಗಳ ದಿನಾಚರಣೆ* ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭಾರತದ ಸಂವಿಧಾನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೆ ರಕ್ಷಣೆ ನೀಡುವ ಹಕ್ಕುಗಳನ್ನು ವಿವರಿಸಲಾಗಿದೆ. ಜೀವನದ ಸ್ವಾತಂತ್ರ್ಯ ಸಮಾನತೆ ಮತ್ತು ವ್ಯಕ್ತಿಯ ಘನತೆಯ ಹಕ್ಕುಗಳೇ ಮಾನವ ಹಕ್ಕುಗಳು, ಎಲ್ಲಾ ಮಾನವರು ಹುಟ್ಟಿನಿಂದ ಘನತೆ ಮತ್ತು ಹಕ್ಕುಗಳಲ್ಲಿ ಸಮಾನರು ಮತ್ತು ಪ್ರತಿಯೊಬ್ಬರೂ ಯಾವುದೇ ತರಹದ ತಾರತಮ್ಯ ಇಲ್ಲದೆ ಹಕ್ಕುಗಳನ್ನು ಮತ್ತು ಸ್ವಾತಂತ್ರ್ಯವನ್ನು ಹೊಂದುವ ಕಾನೂನುಬದ್ಧ ಹಕ್ಕು ಹೊಂದಿರುತ್ತಾರೆ. ಪ್ರತಿನಿತ್ಯ ಮಾನವ ಹಕ್ಕುಗಳು ಉಲ್ಲಂಘನೆ ಆಗುತ್ತಿವೆ. ಸಂವಿಧಾನ ಅಡಿಯಲ್ಲಿ ಮಾನವ ಹಕ್ಕುಗಳ ರಕ್ಷಣೆ ಮಾಡುವ ಮೂಲಕ ಉಲ್ಲಂಘನೆಯಾಗದ ಹಾಗೇ ನೋಡಿಕೊಳ್ಳಬೇಕು ಎಂದು ಹೇಳಿದರು.
*ಮಾನವ ಹಕ್ಕುಗಳ ಉಲ್ಲಂಘನೆಯಾದಲ್ಲಿ ದೂರು ಸಲ್ಲಿಸಿ*
ಪ್ರತಿಯೊಬ್ಬ ಪ್ರಜೆಯ ಮಾನವ ಹಕ್ಕುಗಳನ್ನು ರಕ್ಷಿಸುವುದು ರಾಜ್ಯದ ಮತ್ತು ಎಲ್ಲಾ ಸಾರ್ವಜನಿಕ ಸಂಸ್ಥೆಗಳ ಆದ್ಯ ಕರ್ತವ್ಯ. ರಾಜ್ಯದ ಯಾವುದೇ ಸಾರ್ವಜನಿಕ ಕಚೇರಿಯಿಂದಾಗಲಿ ಅಥವಾ ಸಂಸ್ಥೆಯಿಂದಾಗಲಿ ಯಾವುದೇ ರೀತಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾದ ಪಕ್ಷದಲ್ಲಿ ಅಥವಾ ಮಾನವ ಹಕ್ಕುಗಳನ್ನು ರಕ್ಷಣೆ ಮಾಡಲು ವಿಫಲವಾಗಿರುವ ಸಂದರ್ಭದಲ್ಲಿ, ತೊಂದರೆಗೆ ಒಳಗಾದವರಾಗಲೀ ಅಥವಾ ಆತನ/ಆಕೆಯ ಪರವಾಗಿ ಬೇರೆ ಯಾರಾದರೂ ಸಮಸ್ಯೆ ಪರಿಹರಿಸಲು, ನ್ಯಾಯ ದೊರಕಿಸಿಕೊಳ್ಳಲು ಮಾನವ ಹಕ್ಕುಗಳ ಆಯೋಗಕ್ಕೆ ಯಾವುದೇ ಖರ್ಚಿಲ್ಲದೆ ಉಚಿತವಾಗಿ ದೂರು ನೀಡಬಹುದು. ದೂರು ಸಲ್ಲಿಸಲು ನಿಮ್ಮ ಮೊಬೈಲ್ ನ ಗೂಗಲ್ ಪ್ಲೇ ಸ್ಟೋರ್ ಮುಖಾಂತರ”ಮಾನವ ಹಕ್ಕು ರಕ್ಷಣೆ” ಎಂಬ ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಂಡು ಸಲ್ಲಿಸಬಹುದು. ಅಥವಾ https://kshrc.karnataka.gov.in ಮಾನವ ಹಕ್ಕುಗಳ ಆಯೋಗದ ವೆಬ್ಸೈಟ್ ಮೂಲಕ ದೂರು ಸಲ್ಲಿಸಬಹುದು ಅಥವಾ ದೂರು ನಿರ್ವಹಣಾ ವ್ಯವಸ್ಥೆಯ ವೆಬ್ಸೈಟ್ www.hrcnet.nic.inಆನ್ ಲೈನ್ ಮೂಲಕ ಸಲ್ಲಿಸಬಹುದು ಅಥವಾ ಸ್ಪಷ್ಟವಾಗಿ ಸರಳವಾಗಿ ಸಂಪೂರ್ಣ ವಿವರನ್ನೊಳಗೊಂಡ ಒಂದು ಪತ್ರದ ಮುಖಾಂತರ ಅಥವಾ ಆಯೋಗದ ಸರಳ ನಮೂನೆ ಮುಖಾಂತರ ” ಕರ್ನಾಟಕ ಮಾನವ ಹಕ್ಕುಗಳ ಆಯೋಗ ಗೇಟ್-05, ಎಂ.ಎಸ್ ಬಿಲ್ಡಿಂಗ್, ಡಾ.ಬಿ.ಆರ್ ಅಂಬೇಡ್ಕರ್ ವೀಧಿ, ಬೆಂಗಳೂರು-560001 ಇಲ್ಲಿಗೆ ಖುದ್ದಾಗಿ ಭೇಟಿ ನೀಡಿ ದೂರು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಶುಲ್ಕ ರಹಿತ ಸಹಾಯವಾಣಿ ಸಂಖ್ಯೆ 180042523333, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ದೂರವಾಣಿ ಸಂಖ್ಯೆ 080-22392201 ಗಳನ್ನು ಸಂಪರ್ಕಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಅಮರೇಶ್. ಹೆಚ್ ಅವರು ಹೇಳಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ವಕೀಲರಾದ ಚಂದ್ರರೆಡ್ಡಿ ಮಾತನಾಡಿ, ಮೂಲಭೂತ ಹಕ್ಕುಗಳು ಹಾಗೂ ಮಾನವ ಹಕ್ಕುಗಳು ಒಂದಕ್ಕೊಂದು ಸಾಮ್ಯತೆ ಇದೆ, ಮಾನವ ಹಕ್ಕುಗಳ ಸಂರಕ್ಷಣೆ ಕಾಯ್ದೆ-1993ರ ಅಡಿಯಲ್ಲಿ ಮಾನವ ಹಕ್ಕುಗಳ ರಕ್ಷಣೆಯನ್ನು ಮಾಡಲಾಗುತ್ತಿದೆ. ಜೀವಿಸುವ ಹಕ್ಕು, ಆರೋಗ್ಯ ಹಕ್ಕು, ಶಿಕ್ಷಣ ಹಕ್ಕು, ವೈಯಕ್ತಿಕ ಸ್ವಾತಂತ್ರ್ಯ ಹಕ್ಕು, ಶೋಷಣೆ ವಿರುದ್ಧ ಹಕ್ಕು ಸೇರಿದಂತೆ ಎಲ್ಲಾ ಮಾನವ ಹಕ್ಕುಗಳ ಬಗ್ಗೆ ವಿವರಿಸಿ, ಮಾನವ ಹಕ್ಕುಗಳು ಉಲ್ಲಂಘನೆಯಾದಾಗ, ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸರಿನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಅನಿತಾ ಲಕ್ಷ್ಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣ, ಜಿಲ್ಲಾ ಮಟ್ಟದ ಅಧಿಕಾರಿಗಳು, ಪೋಲಿಸ್ ಇಲಾಖೆ ಸಿಬ್ಬಂದಿ, ಶಾಲಾ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…