ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

 


ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ ಕ್ಷೇತ್ರದಲ್ಲಿ ಯಾವ ವರ್ಗಕ್ಕೆ ಮೀಸಲಾತಿ ದೊರೆತಿದೆ ಎಂಬುದನ್ನು ಆಧರಿಸಿ ಸ್ಥಳೀಯ ಆಕಾಂಕ್ಷಿಗಳು ತಮ್ಮ ಮುಂದಿನ ರಾಜಕೀಯ ನಡೆ ಕುರಿತು ಲೆಕ್ಕಾಚಾರ ಆರಂಭಿಸಿದ್ದಾರೆ. ಇದರೊಂದಿಗೆ ಹಳ್ಳಿಗಳಲ್ಲಿ ಚುನಾವಣೆ ಕಾವು ನಿಧಾನವಾಗಿ ಹೆಚ್ಚುತ್ತಿದೆ.

ಜಿಲ್ಲೆಯ 100ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ಸಿದ್ಧತೆಗಳು ವೇಗ ಪಡೆದುಕೊಳ್ಳುತ್ತಿವೆ. ಹಲವು ಗ್ರಾಮ ಪಂಚಾಯಿತಿಗಳ ಚುನಾಯಿತ ಪ್ರತಿನಿಧಿಗಳ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕೆಲ ಪಂಚಾಯಿತಿಗಳಲ್ಲಿ ಆಡಳಿತಾಧಿಕಾರಿಗಳ ಮೂಲಕ ಆಡಳಿತ ನಡೆಸಲಾಗುತ್ತಿತ್ತು. ಇದೀಗ ಮೀಸಲಾತಿ ಪ್ರಕಟವಾಗಿರುವುದರಿಂದ ಚುನಾವಣಾ ಪ್ರಕ್ರಿಯೆಗೆ ಮತ್ತಷ್ಟು ವೇಗ ಸಿಕ್ಕಂತಾಗಿದೆ.

ಜಿಲ್ಲಾಡಳಿತದ ಚುನಾವಣಾ ಮಾಹಿತಿಯಲ್ಲಿ ಗ್ರಾಮ ಪಂಚಾಯಿತಿ ಕ್ಷೇತ್ರಗಳಿಗೆ ಸಂಬಂಧಿಸಿದ ದಾಖಲೆಗಳು ಪ್ರಕಟವಾಗುತ್ತಿದ್ದು, ನೆಲಮಂಗಲ ತಾಲ್ಲೂಕಿನಲ್ಲಿ ಹೊಸದಾಗಿ ಸೇರ್ಪಡೆಯಾದ ಗ್ರಾಮ ಪಂಚಾಯಿತಿ ಕ್ಷೇತ್ರಗಳಿಗೂ ಮೀಸಲಾತಿ ನಿಗದಿಪಡಿಸಲಾಗಿದೆ. ಹೀಗಾಗಿ ಹಂತ ಹಂತವಾಗಿ ಗ್ರಾಮೀಣ ಪ್ರದೇಶದಲ್ಲಿ ಚುನಾವಣಾ ಚಟುವಟಿಕೆ ಮತ್ತಷ್ಟು ಚುರುಕುಗೊಳ್ಳುವ ನಿರೀಕ್ಷೆ ಇದೆ.

ಮೀಸಲಾತಿಯತ್ತ ಆಕಾಂಕ್ಷಿಗಳ ಚಿತ್ತ

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮೀಸಲಾತಿ ಪ್ರಮುಖ ಪಾತ್ರ ವಹಿಸುವುದರಿಂದ ಆಕಾಂಕ್ಷಿಗಳ ಗಮನ ಇದೀಗ ಮೀಸಲಾತಿ ಪಟ್ಟಿಯತ್ತ ನೆಟ್ಟಿದೆ. ಮಹಿಳೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಸೇರಿದಂತೆ ವಿವಿಧ ವರ್ಗಗಳಿಗೆ ಮೀಸಲಾದ ಸ್ಥಾನಗಳ ಆಧಾರದ ಮೇಲೆ ಅಭ್ಯರ್ಥಿಗಳು ತಮ್ಮ ಸ್ಪರ್ಧೆಯ ಸಾಧ್ಯತೆಗಳನ್ನು ಪರಿಶೀಲಿಸುತ್ತಿದ್ದಾರೆ.

ಮೀಸಲಾತಿಯಿಂದ ಹಲವು ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಅವಕಾಶ ದೊರೆಯುವ ಸಾಧ್ಯತೆ ಇದ್ದು, ಕೆಲವೆಡೆ ಹಾಲಿ ಸದಸ್ಯರ ರಾಜಕೀಯ ಲೆಕ್ಕಾಚಾರವೂ ಬದಲಾಗುವ ಸಾಧ್ಯತೆ ಇದೆ. ಹೀಗಾಗಿ ಸ್ಥಳೀಯ ರಾಜಕೀಯ ಮುಖಂಡರು ತಮ್ಮ ಬೆಂಬಲಿಗರನ್ನು ಸಂಘಟಿಸುವ ಹಾಗೂ ಸೂಕ್ತ ಅಭ್ಯರ್ಥಿಗಳನ್ನು ಗುರುತಿಸುವ ಕಾರ್ಯಕ್ಕೆ ಮುಂದಾಗುತ್ತಿದ್ದಾರೆ.
ಈಗಾಗಲೇ ಹಲವು ಗ್ರಾಮಗಳಲ್ಲಿ ಅಭ್ಯರ್ಥಿಗಳ ಆಯ್ಕೆ, ಬೆಂಬಲಿಗರ ಬಲಾಬಲ, ಸ್ಥಳೀಯ ರಾಜಕೀಯ ಸಮೀಕರಣ ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆಗಳು ಆರಂಭವಾಗಿವೆ. ಮುಂದಿನ ದಿನಗಳಲ್ಲಿ ಈ ಚಟುವಟಿಕೆಗಳು ಇನ್ನಷ್ಟು ವೇಗ ಪಡೆಯುವ ಸಾಧ್ಯತೆ ಇದೆ.

100ಕ್ಕೂ ಹೆಚ್ಚು ಗ್ರಾಪಂ, 848 ಕ್ಷೇತ್ರಗಳು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ಒಟ್ಟು 104 ಗ್ರಾಮ ಪಂಚಾಯಿತಿಗಳು, 848 ಗ್ರಾಮ ಪಂಚಾಯಿತಿ ಕ್ಷೇತ್ರಗಳು ಹಾಗೂ 1,785 ಸ್ಥಾನಗಳು ಇವೆ.

ತಾಲ್ಲೂಕು            ಗ್ರಾಪಂ   ಕ್ಷೇತ್ರಗಳು    ಒಟ್ಟು ಸ್ಥಾನಗಳು
ದೊಡ್ಡಬಳ್ಳಾಪುರ    28        248                503

ನೆಲಮಂಗಲ.        27        199                436

ಹೊಸಕೋಟೆ        27       237                525

ದೇವನಹಳ್ಳಿ           22       164                321
ಒಟ್ಟು                   104.     848        ‌‌‌‌‌      1,785

ಚುನಾವಣೆ ಸಿದ್ಧತೆಗೆ ವೇಗ?

ಮೀಸಲಾತಿ ಪ್ರಕಟವಾಗುವುದನ್ನು ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಹಲವು ದಿನಗಳಿಂದ ನಿರೀಕ್ಷಿಸಲಾಗುತ್ತಿತ್ತು. ಇದೀಗ ಮೀಸಲಾತಿ ಸ್ಪಷ್ಟವಾಗಿರುವುದರಿಂದ ಸ್ಥಳೀಯ ಮುಖಂಡರು ಹಾಗೂ ಚುನಾವಣಾ ಆಕಾಂಕ್ಷಿಗಳು ತಮ್ಮ ಮುಂದಿನ ಹೆಜ್ಜೆ ಕುರಿತು ಚರ್ಚೆ ಆರಂಭಿಸಿದ್ದಾರೆ.
ಮೀಸಲಾತಿ ಅನುಕೂಲವಾಗಿರುವ ಕ್ಷೇತ್ರಗಳಲ್ಲಿ ಹಾಲಿ ಸದಸ್ಯರು ಮತ್ತೊಮ್ಮೆ ಸ್ಪರ್ಧಿಸಲು ಸಿದ್ಧತೆ ನಡೆಸುವ ಸಾಧ್ಯತೆ ಇದ್ದರೆ, ಮೀಸಲಾತಿ ಬದಲಾವಣೆಯಿಂದ ಅವಕಾಶ ಕಳೆದುಕೊಂಡಿರುವ ಹಾಲಿ ಸದಸ್ಯರು ಪರ್ಯಾಯ ಕ್ಷೇತ್ರಗಳತ್ತ ಮುಖ ಮಾಡುವ ಸಾಧ್ಯತೆಯೂ ಇದೆ. ಇದೇ ವೇಳೆ ಹಲವು ವರ್ಷಗಳಿಂದ ಅವಕಾಶಕ್ಕಾಗಿ ಕಾಯುತ್ತಿದ್ದ ಹೊಸ ಮುಖಗಳು ಚುನಾವಣಾ ಕಣಕ್ಕಿಳಿಯಲು ಸಜ್ಜಾಗುತ್ತಿದ್ದಾರೆ.

ವಿಶೇಷವಾಗಿ ಸೋಲೂರು ಹೋಬಳಿ ನೆಲಮಂಗಲ ತಾಲ್ಲೂಕಿಗೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಅಲ್ಲಿನ ಗ್ರಾಮ ಪಂಚಾಯಿತಿಗಳಿಗೂ ಮೀಸಲಾತಿ ಪ್ರಕಟವಾಗಿರುವುದು ಈ ಬಾರಿಯ ಚುನಾವಣಾ ಪ್ರಕ್ರಿಯೆಯ ಪ್ರಮುಖ ಬೆಳವಣಿಗೆಯಾಗಿದೆ.

ತಾಪಂ, ಜಿಪಂ ಚುನಾವಣೆ ನಿರೀಕ್ಷೆ

ಗ್ರಾಮ ಪಂಚಾಯಿತಿ ಚುನಾವಣೆಗಳ ಜತೆಗೆ ಹಲವು ವರ್ಷಗಳಿಂದ ನಡೆಯದೆ ಇರುವ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳ ಬಗ್ಗೆಯೂ ಗ್ರಾಮೀಣ ಭಾಗದಲ್ಲಿ ನಿರೀಕ್ಷೆ ಮೂಡಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಡೆದರೆ ಗ್ರಾಮೀಣ ರಾಜಕೀಯಕ್ಕೆ ಮತ್ತಷ್ಟು ಚೈತನ್ಯ ಬರಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಗ್ರಾಮ ಪಂಚಾಯಿತಿ ಚುನಾವಣೆಯ ಮೀಸಲಾತಿ ಪ್ರಕಟವಾಗಿರುವುದರಿಂದ ಇದೀಗ ಜಿಲ್ಲೆಯ ಹಳ್ಳಿಗಳಲ್ಲಿ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಗರಿಗೆದರಲಿವೆ. ಅಭ್ಯರ್ಥಿಗಳ ಆಯ್ಕೆ, ಬೆಂಬಲಿಗರ ಕ್ರೋಢೀಕರಣ ಹಾಗೂ ಸ್ಥಳೀಯ ರಾಜಕೀಯ ಸಮೀಕರಣಗಳ ಲೆಕ್ಕಾಚಾರ ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

ದೇವನಹಳ್ಳಿ ಪುರಸಭೆ ಮೇಲ್ದರ್ಜೆಗೆ ಪ್ರಸ್ತಾವ

ದೇವನಹಳ್ಳಿ ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸಲು ಪ್ರಸ್ತಾವನೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅಣ್ಣೇಶ್ವರ, ಕನ್ನಮಂಗಲ ಹಾಗೂ ಆವತಿ ಗ್ರಾಮ ಪಂಚಾಯಿತಿಗಳು ನಗರಸಭೆಯ ವ್ಯಾಪ್ತಿಗೆ ಸೇರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈ ಪಂಚಾಯಿತಿಗಳಿಗೆ ಸದ್ಯ ಸಾರ್ವತ್ರಿಕ ಚುನಾವಣೆ ನಡೆಸದಂತೆ ಕೋರಿ ರಾಜ್ಯ ಚುನಾವಣಾ ಆಯೋಗವು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದೆ ಎಂದು ತಿಳಿದುಬಂದಿದೆ.

ಪ್ರಮುಖಾಂಶಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 100ಕ್ಕೂ ಗ್ರಾಪಂಗಳಿಗೆ ಮೀಸಲಾತಿ ಪ್ರಕಟ

ಮೀಸಲಾತಿ ಬೆನ್ನಲ್ಲೇ ಹಳ್ಳಿಗಳಲ್ಲಿ ಚುನಾವಣಾ ಚಟುವಟಿಕೆ ಚುರುಕು

ಆಕಾಂಕ್ಷಿಗಳಿಂದ ಅಭ್ಯರ್ಥಿತನದ ಲೆಕ್ಕಾಚಾರ ಆರಂಭ
ಹೊಸ ಮುಖಗಳಿಗೆ ಅವಕಾಶದ ನಿರೀಕ್ಷೆ

848 ಗ್ರಾಪಂ ಕ್ಷೇತ್ರಗಳಲ್ಲಿ 1,785 ಸ್ಥಾನಗಳು

ತಾಪಂ, ಜಿಪಂ ಚುನಾವಣೆಗಳ ಬಗ್ಗೆಯೂ ನಿರೀಕ್ಷೆ

Ramesh Babu

Journalist

Recent Posts

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

7 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

7 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

7 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

8 hours ago

ಗೌರಿ ಗಣೇಶ ಹಬ್ಬ: ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ-ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…

9 hours ago

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

13 hours ago