ಮೈಕ್ರೋ ಫೈನಾನ್ಸ್ ಗಳು ಸಾಲಗಾರರಿಗೆ ಕಿರುಕುಳ ನೀಡುವಂತಿಲ್ಲ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಮೈಕ್ರೋ ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದು, ಮರು ಪಾವತಿಸಲು ವಿಳಂಬ ಮಾಡುವ ಸಾಲಗಾರರ ಮೇಲೆ ದೌರ್ಜನ್ಯ, ದಬ್ಬಾಳಿಕೆ, ಕಿರುಕುಳ ನೀಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಮೈಕ್ರೋ ಫೈನಾನ್ಸ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮೈಕ್ರೋ ಫೈನಾನ್ಸ್, ಲೇವಾದೇವಿ, ಗಿರವಿ ಹಣಕಾಸು ಸಂಸ್ಥೆಗಳು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇತ್ತೀಚೆಗೆ ರಾಜ್ಯದಲ್ಲಿ ಸುದ್ದಿ ಮಾಡುತ್ತಿರುವ ಮೈಕ್ರೋ ಫೈನಾನ್ಸ್ ಹಾವಳಿಗೆ ಸಂಬಂಧಿಸಿದಂತೆ ಸುಖಾಸುಮ್ಮನೆ ಸಾಲಗಾರರ ಮೇಲೆ ಆಪಾದನೆ, ಕಿರುಕುಳ, ದೌರ್ಜನ್ಯ, ಬೈಗುಳ, ಬೆದರಿಕೆ, ಮನೆ ಸೀಜ್ ಮಾಡುವುದು, ಬಲವಂತವಾಗಿ ವಸೂಲಿ ಮಾಡುವುದುನ್ನು ನಿಲ್ಲಿಸಬೇಕು. ಕಾನೂನು ಚೌಕಟ್ಟಿನಲ್ಲಿ ಮೈಕ್ರೋ ಫೈನಾನ್ಸ್ಗಳು ಕೆಲಸ ಮಾಡಬೇಕು.

ಸಾಮಾನ್ಯವಾಗಿ ಮಧ್ಯಮ ಹಾಗೂ ಕೆಳ ವರ್ಗದವರು ವೈದ್ಯಕೀಯ ಚಿಕಿತ್ಸೆ, ಮದುವೆ ಇನ್ನಿತರ ಕೆಲಸಗಳಿಗೆ ಸಾಲ ಪಡೆದಿರುತ್ತಾರೆ. ಬಹುತೇಕರು ಪಡೆದ ಸಾಲವನ್ನು ವಾಪಸ್ಸು ನೀಡುತ್ತಾರೆ. ಕೆಲವೆಡೆ ಇದು ಕಿರುಕುಳವಾಗಿ ಬೆಳೆಯುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ನಮ್ಮ ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಆಗದಿರಲಿ ಎಂದರು.

*ಜಿಲ್ಲೆಯಲ್ಲಿ 348 ಲೇವಾದೇವಿ, ಗಿರವಿ ಸಂಸ್ಥೆಗಳು*

2025 ರ ಜನವರಿ ಅಂತ್ಯಕ್ಕೆ 348 ಸಂಸ್ಥೆಗಳು ನೋಂದಣಿಯಾಗಿದ್ದು. ಅದರಲ್ಲಿ 105 ಲೇವಾದೇವಿದಾರರು, 243 ಗಿರವೀದಾರರು ವ್ಯವಹಾರ ನಡೆಸುತ್ತಿದ್ದಾರೆ. ನೆಲಮಂಗಲ ತಾಲ್ಲೂಕಿನಲ್ಲಿ 27 ಲೇವಾದೇವಿ, 45 ಗಿರವಿ ಸಂಸ್ಥೆಗಳು, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 45 ಲೇವಾದೇವಿ, 47 ಗಿರವಿ ಸಂಸ್ಥೆಗಳು, ದೇವನಹಳ್ಳಿ ತಾಲ್ಲೂಕಿನಲ್ಲಿ 16 ಲೇವಾದೇವಿ, 75 ಗಿರವಿ ಸಂಸ್ಥೆಗಳು, ಹೊಸಕೋಟೆಯಲ್ಲಿ 17 ಲೇವಾದೇವಿ ಹಾಗೂ 76 ಗಿರವಿ ಸಂಸ್ಥೆಗಳು ವ್ಯವಹಾರ ನಡೆಸುತ್ತಿವೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 184 ಮೈಕ್ರೋ ಫೈನಾನ್ಸ್ ಸಂಸ್ಥೆಗಳು, ಅದರ ಶಾಖೆಗಳು ಕಾರ್ಯನಿರ್ವಹಿಸುತ್ತಿವೆ.

*ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆ ನಿಷೇಧ ಕಾಯಿದೆ- 2004* ಪ್ರಕಾರ ಭದ್ರತಾ ಸಾಲಗಳಿಗೆ ವರ್ಷಕ್ಕೆ ಶೇ.14 ಹಾಗೂ ಭದ್ರತೆ ಇಲ್ಲದ ಸಾಲಗಳಿಗೆ ವರ್ಷಕ್ಕೆ ಗರಿಷ್ಠ ಶೇ.16 ಗರಿಷ್ಠ ಬಡ್ಡಿ ದರವನ್ನು ಲೇವಾದೇವಿದಾರರಿಗೆ ನಿಗದಿಪಡಿಸಲಾಗಿದೆ.

ಸಾಲಗಾರರು ಇವುಗಳನ್ನು ಸೂಕ್ಷ್ಮವಾಗಿ ಗಮನಿಸಿ ಸಾಲ ಪಡೆಯುವ ಮುನ್ನ ಲೇವಾದೇವಿ ಸಂಸ್ಥೆಗಳ ಅಧಿಕೃತ ನೋಂದಣಿ ಪತ್ರ, ಬಡ್ಡಿದರ, ವಸೂಲಿ ಪ್ರಕ್ರಿಯೆ ಇತ್ಯಾದಿಗಳ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಈ ಪ್ರಕ್ರಿಯೆಗಳಿಂದ ಸಾಲ ಮರುಪಾವತಿ ಸಂದರ್ಭದಲ್ಲಿನ ಕಿರುಕುಳ ತಪ್ಪಿಸಲು ಸಾಧ್ಯವಾಗುತ್ತದೆ.

*ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅನುಸರಿಸಬೇಕಾದ ಕ್ರಮಗಳು*

* ಸಾಲ ಪಡೆಯಲು ಅರ್ಜಿ ಸಲ್ಲಿಸುವವರ ಆದಾಯದ ಸಾಮರ್ಥ್ಯ ಪರಿಶೀಲಿಸಬೇಕು. ಅವರ ಪ್ರತಿ ತಿಂಗಳು ಹಣ ಕಟ್ಟುವ ಸಾಮರ್ಥ್ಯ ಮೀರಿ ಸಾಲ ವಿತರಣೆ ಮಾಡಬಾರದು.
* ಸಾಲ ಕೊಡುವಾಗ ಅವರ ಮಾಸಿಕ ವೇತನ ಹಾಗೂ ಆದಾಯದ ಮೂಲ ಆಧರಿಸಿ ನೀಡಬೇಕು. ಅತಿ ಹೆಚ್ಚು ಇ.ಎಂ.ಐ ಪಾವತಿಸಲು ಸೂಚಿಸಬಾರದು.
* ಮಾಸಿಕ ಆದಾಯ ಅಥವಾ ವೇತನದ ಶೇಕಡ 50ಕ್ಕಿಂತ ಹೆಚ್ಚು ಇರಬಾರದು. ಸಂಜೆ 06 ರಿಂದ ಬೆಳಗ್ಗೆ 09 ರವರೆಗೆ ಸಾಲ ಹಿಂಪಡೆಯುವ ಯಾವುದೇ ಪ್ರಕ್ರಿಯೆಗಳನ್ನು ಮಾಡಬಾರದು.
* ಬೆಳಗ್ಗೆ 9:00 ರಿಂದ ಸಂಜೆ 06 ರೆವರೆಗೆ ಮಾತ್ರ ಕರೆ ಮಾಡಬೇಕು. ಕರೆ ಮಾಡುವಾಗ ಬೆದರಿಕೆ ಹಾಕಬಾರದು. ಕೆಟ್ಟ ಪದಗಳನ್ನು ಬಳಸಿ ನಿಂದಿಸಬಾರದು.
* ಸಾಲ ವಸೂಲಾತಿ ಸಂದರ್ಭದಲ್ಲಿ ಸಾಲ ಪಡೆದವರ ಸಂಬಂಧಿಕರು, ಸ್ನೇಹಿತರು, ಸಹೋದ್ಯೋಗಿಗಳ ಮೂಲಕ ಸಾಲ ವಾಪಸ್ ಗೆ ಕಿರುಕುಳ ಕೊಡುವಂತಿಲ್ಲ. ಸಾಲ ಪಡೆದ ವಿವರವನ್ನು ಗೌಪ್ಯವಾಗಿಡಬೇಕು.
* ಸಾರ್ವಜನಿಕ ಸ್ಥಳಗಳಲ್ಲಿ ನಿಂತು ಬಹಿರಂಗವಾಗಿ ಪ್ರಚಾರ ಆಗುವಂತೆ ಸಾಲ ತೀರಿಸಲು ಕೇಳಬಾರದು ಅವರ ಕುಟುಂಬಕ್ಕೆ ಆಸ್ತಿಗೆ ಹಾನಿ ಮಾಡಬಾರದು ರೌಡಿಗಳನ್ನು ಗೂಂಡಗಳನ್ನು ಸಾಲ ವಸೂಲಾತಿಗೆ ಕಳುಹಿಸಬಾರದು.

ಮೈಕ್ರೋ ಫೈನಾನ್ಸ್ ಗಳು ಮೇಲಿನ ಸರ್ಕಾರದ ಮಾರ್ಗಸೂಚಿಯನ್ವಯ ಕಾರ್ಯನಿರ್ವಹಿಸಬೇಕು. ವ್ಯಕ್ತಿಯ ಗೌರವ, ಘನತೆಗೆ ಧಕ್ಕೆಯಾಗದಂತೆ ನಡೆದುಕೊಳ್ಳಬೇಕು. ಮೈಕ್ರೋ ಫೈನಾನ್ಸ್ ಹಾವಳಿಯಿಂದ ಜಿಲ್ಲೆಯಲ್ಲಿ ಯಾವುದೇ ರೀತಿಯ ಅನಾಹುತಗಳು ಸಂಭವಿಸದಿರಲಿ ಎಂದು ಜಿಲ್ಲಾಧಿಕಾರಿ ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಉಪವಿಭಾಗಾಧಿಕಾರಿ ದುರ್ಗಾಶ್ರೀ, ಡಿವೈಎಸ್ಪಿ ರವಿ, ಸಹಕಾರ ಸಂಘಗಳ ಡೆಪ್ಯುಟಿ ರಿಜಿಸ್ಟ್ರಾರ್ ಚಂದ್ರಶೇಖರ್, ಸಹಾಯಕ ಡೆಪ್ಯುಟಿ ರಿಜಿಸ್ಟ್ರಾರ್ ರಾಮಾಂಜನೇಯ, ಲೀಡ್ ಬ್ಯಾಂಕ್ ಮ್ಯಾನೇಜರ್ ಮಧುಕರ್ ಸೇರಿದಂತೆ ಜಿಲ್ಲೆಯ ಲೇವಾದೇವಿ, ಗಿರವಿ ಸಂಸ್ಥೆಗಳ ಮುಖ್ಯಸ್ಥರು, ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

2 hours ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

1 day ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

3 days ago