ಮೋದಿ 3.0 ಬಜೆಟ್: ರಾಜ್ಯದ ಜನತೆಯ ಕೈಗೆ ಚೊಂಬು- ಮೋದಿ ಅಧಿಕಾರ ಉಳಿಸಿಕೊಳ್ಳಲು ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ವಿಶೇಷ ಅನುದಾನ-ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ರಾಜ್ಯದ ಯಾವುದೇ ಬೇಡಿಕೆಗಳಿಗೂ ಮನ್ನಣೆ ನೀಡದೆ ಅತ್ಯಂತ ನಿರಾಶಾದಾಯಕ ಬಜೆಟ್‌ ಮಂಡಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಹಿತವನ್ನು ಸಂಪೂರ್ಣವಾಗಿ ನಿರ್ಲಕ್ಷಿಸುವ ಮೂಲಕ ರಾಜ್ಯದ ಜನತೆಯ ಕೈಗೆ ಚೊಂಬು ಕೊಟ್ಟಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಅಧಿಕಾರ ಉಳಿಸಿಕೊಳ್ಳುವ ಉದ್ದೇಶದಿಂದ ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ವಿಶೇಷ ಅನುದಾನ ಒದಗಿಸಿದ್ದು, ಇತರ ರಾಜ್ಯಗಳನ್ನು ಸಂಪೂರ್ಣ ಕಡೆಗಣಿಸಿದ್ದಾರೆ. ಈ ಬಜೆಟ್ ನಲ್ಲಿ ಏಳು ಕೋಟಿ ಕನ್ನಡಿಗರಿಗೆ ಸಿಕ್ಕಿದ್ದು ಮತ್ತದೇ ಚೊಂಬು ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಬಜೆಟ್ ವಿರುದ್ಧ ಕಿಡಿಕಾರಿದ್ದಾರೆ.

ಬಜೆಟ್‌ ಪೂರ್ವ ಸಭೆಯಲ್ಲಿ ರಾಜ್ಯ ಸರ್ಕಾರ ಹಲವಾರು ಮನವಿಗಳನ್ನು ಕೇಂದ್ರ ಸರ್ಕಾರದ ಮುಂದಿರಿಸಿತ್ತು. ಆದರೆ ಯಾವುದೇ ಬೇಡಿಕೆಗಳಿಗೂ ಕೇಂದ್ರ ಹಣಕಾಸು ಸಚಿವರು ಸ್ಪಂದಿಸಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನ ಒದಗಿಸುವುದಾಗಿ ಹಿಂದಿನ ಬಜೆಟ್‌ನಲ್ಲಿ ಘೋಷಿಸಿದ್ದರು. ಆದರೆ ಈ ಯೋಜನೆಗೆ ನಯಾಪೈಸೆ ಒದಗಿಸಿಲ್ಲ. ಈ ಆಯವ್ಯಯದಲ್ಲಿ ಒದಗಿಸುವಂತೆ ಕೋರಲಾಗಿತ್ತು ಎಂದರು.

ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಈ ವರ್ಷ 5 ಸಾವಿರ ಕೋಟಿ ರೂ. ಅನುದಾನ ಒದಗಿಸುತ್ತಿದೆ. ಆದರೆ ಇದಕ್ಕೆ ಪೂರಕವಾಗಿ ಹಿಂದುಳಿದ ತಾಲ್ಲೂಕುಗಳಿಗೆ ಅನುದಾನ ಒದಗಿಸುವಂತೆ ಮನವಿ ಮಾಡಲಾಗಿತ್ತು. ಇದೇ ರೀತಿ ಮಹಾದಾಯಿ ಯೋಜನೆ, ಮೇಕೆದಾಟು ಯೋಜನೆ, ಕೃಷ್ಣಾ ಮೇಲ್ದಂಡೆ ಯೋಜನೆಗಳ ಕುರಿತು ಬಜೆಟ್‌ನಲ್ಲಿ ಯಾವುದೇ ಪ್ರಸ್ತಾಪ ಮಾಡದೆ ರೈತರಿಗೆ ಮೋಸ ಮಾಡಿದ್ದಾರೆ ಎಂದು ಹೇಳಿದ್ದಾರೆ.

15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಪೆರಿಫೆರಲ್‌ ರಸ್ತೆ ನಿರ್ಮಾಣ, ಕೆರೆಗಳ ಅಭಿವೃದ್ಧಿ, ಬೆಂಗಳೂರು ನಗರಾಭಿವೃದ್ಧಿ ಯೋಜನೆಗಳಿಗೆ ಒಟ್ಟು 11,485 ಕೋಟಿ ರೂ. ಅನುದಾನವನ್ನು ನೀಡುವಂತೆ ಕೋರಲಾಗಿತ್ತು. ಜೊತೆಗೆ ಹಲವಾರು ವರ್ಷಗಳಿಂದ ರಾಯಚೂರಿನಲ್ಲಿ ಏಮ್ಸ್‌ ಸ್ಥಾಪಿಸುವಂತೆ ಬೇಡಿಕೆಯಿದ್ದು, ಬಜೆಟ್‌ ಪೂರ್ವಭಾವಿ ಸಭೆಯಲ್ಲಿಯೂ ಈ ಕುರಿತು ಬೇಡಿಕೆ ಸಲ್ಲಿಸಲಾಗಿತ್ತು. ಈ ಯಾವ ಮನವಿಗಳಿಗೂ ಕೇಂದ್ರ ಸರ್ಕಾರ ಮನ್ನಣೆ ನೀಡಿಲ್ಲ ಎಂದರು.

ಈ ಹಿಂದಿನ ಬಜೆಟ್‌ನಲ್ಲಿ ರಾಜ್ಯಕ್ಕೆ ಘೋಷಿಸಿದ್ದ ಯೋಜನೆಗಳಿಗೇ ಕೇಂದ್ರ ಸರ್ಕಾರ ಇನ್ನೂ ಯಾವುದೇ ಅನುದಾನ ಒದಗಿಸಿಲ್ಲ. ಹೀಗಾಗಿ ಈ ಬಾರಿ ಕೈಗಾರಿಕಾ ಕಾರಿಡಾರ್ ಬಗ್ಗೆ ಪ್ರಸ್ತಾಪಿಸಿರುವುದು ಕೇವಲ ಘೋಷಣೆಯಾಗಿ ಮಾತ್ರ ಉಳಿಯಲಿದೆ ಎಂದು ತಿಳಿಸಿದರು.

ಈ ಬಜೆಟ್‌ ಜನವಿರೋಧಿಯಾಗಿದ್ದು, ವಿಶೇಷವಾಗಿ ಬಡವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಈ ಬಜೆಟ್ ನಲ್ಲಿ ರೈತರಿಗೆ ದೊಡ್ಡ ಅನ್ಯಾಯ ಮಾಡಿದ್ದಾರೆ. ರೈತರು 5 ವರ್ಷಗಳಿಂದ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ರಚಿಸಬೇಕೆಂದು ಒತ್ತಾಯ ಮಾಡುತ್ತಿದ್ದಾರೆ. ಆದರೆ ಈ ಬಗ್ಗೆ ಬಜೆಟ್ ನಲ್ಲಿ ಚಕಾರವನ್ನೇ ಎತ್ತಿಲ್ಲ. ಸ್ವಾಮಿನಾಥನ್‌ ಆಯೋಗದ ಶಿಫಾರಸ್ಸುಗಳ ಜಾರಿ ಬಗ್ಗೆಯೂ ಯಾವುದೇ ಮಾತು ಆಡದೆ ರೈತರಿಗೆ ಪಂಗನಾಮ ಹಾಕಿದ್ದಾರೆ ಎಂದು ಕಿಡಿಕಾರಿದರು.

ಕೇಂದ್ರ ಸಂಪುಟದಲ್ಲಿ ರಾಜ್ಯದ ಐದು ಜನ‌ ಸಚಿವರಾಗಿದ್ದರೂ ರಾಜ್ಯಕ್ಕೆ ಯಾವುದೇ ಪ್ರಯೋಜನವಾಗಿಲ್ಲ. ಈ‌ ಐದೂ ಮಂದಿ ರಾಜ್ಯಕ್ಕೆ ಅನುಕೂಲ ಮಾಡಿಸುವಲ್ಲಿ ವಿಫಲರಾಗಿದ್ದಾರೆ. ಆರೋಗ್ಯ, ರಕ್ಷಣೆ, ಐಟಿ ಮತ್ತು ಸಂವಹನ ಕ್ಷೇತ್ರಗಳಿಗೆ ಕಳೆದ ಫೆಬ್ರವರಿಯಲ್ಲಿ ಮಂಡಿಸಲಾಗಿದ್ದ ಮಧ್ಯಂತರ ಬಜೆಟ್‌ನಲ್ಲಿ ಘೋಷಿಸಿದ್ದ ಅನುದಾನವನ್ನು ಈಗ ಕಡಿತಗೊಳಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತ ಅಭಿವೃದ್ಧಿಗೆ ಅನುದಾನದಲ್ಲೂ ಗಣನೀಯವಾಗಿ ಕಡಿತಗೊಳಿಸಿರುವುದು ಈ ಸಮುದಾಯಗಳಿಗೆ ಎಸಗಿರುವ ದ್ರೋಹವಾಗಿದೆ ಎಂದು ಗುಡುಗಿದರು.

ಕೇಂದ್ರದ 16ನೇ ಹಣಕಾಸು ಆಯೋಗವು ಆಗಸ್ಟ್‌ 28 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಹಿಂದಿನ ಬಾರಿ ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸುವಂತೆ ಮನವಿ ಮಾಡಲಾಗುವುದು. ಈ ಕುರಿತು ಸಮರ್ಥವಾಗಿ ವಿಷಯ ಮಂಡಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

1 hour ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

2 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

3 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

4 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

6 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

12 hours ago