
ಇಸ್ಪೀಟ್ ಆಡುತ್ತಿದ್ದಾರೆಂದು ವಶಕ್ಕೆ ಪಡೆದಿದ್ದ ವ್ಯಕ್ತಿಯೊಬ್ಬರು ಪೊಲೀಸ್ ವಶದಲ್ಲಿದ್ದಾಗಲೇ ಸಾವನ್ನಪ್ಪಿದ ಹಿನ್ನೆಲೆ ಗ್ರಾಮಸ್ಥರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರು ಪೊಲೀಸ್ ಠಾಣೆಯಲ್ಲಿ ನಡೆದಿದೆ. ಠಾಣೆಯಲ್ಲಿ ತೀವ್ರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.
ಯಳನಾಡು ಗ್ರಾಮದಲ್ಲಿ ಇಸ್ಪೀಟ್ ಆಟ ಆಡುತ್ತಿದ್ದಾರೆಂಬ ಖಚಿತ ಮಾಹಿತಿಯ ಮೇರೆಗೆ ಹುಳಿಯಾರು ಪೊಲೀಸರು ದಾಳಿ ನಡೆಸಿದ್ದರು.

ದಾಳಿ ವೇಳೆ ಕಾಂತರಾಜು (50) ಸೇರಿದಂತೆ ಆರು ಜನರನ್ನು ವಶಕ್ಕೆ ಪಡೆದ ಪೊಲೀಸರು ಠಾಣೆಗೆ ಕರೆತಂದಿದ್ದರು. ಆದರೆ, ಠಾಣೆಗೆ ಬಂದ ಕೆಲವೇ ಸಮಯದಲ್ಲಿ ಕಾಂತರಾಜು ಸಾವನ್ನಪ್ಪಿದ್ದಾರೆ. ಇದು ಗ್ರಾಮಸ್ಥರ ಮತ್ತು ಕುಟುಂಬಸ್ಥರ ಆಕ್ರೋಶಕ್ಕೆ ಕಾರಣವಾಯಿತು.
ಕಾಂತರಾಜು ಅವರ ಸಾವು ಪೊಲೀಸ್ ದೌರ್ಜನ್ಯದಿಂದಲೇ ನಡೆದಿದೆ ಎಂದು ಆರೋಪಿಸಿದ ನೂರಾರು ಗ್ರಾಮಸ್ಥರು, ಹುಳಿಯಾರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಬೀಗ ಜಡಿದರು. ಮೃತದೇಹವನ್ನು ಠಾಣೆಯ ಒಳಗೇ ಇಟ್ಟುಕೊಂಡು, ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಟ್ಟು ಹಿಡಿದರು. ಠಾಣೆಯ ಆವರಣದಲ್ಲಿ ಪರಿಸ್ಥಿತಿ ಕೈಮೀರುತ್ತಿದ್ದಂತೆ ಹೆಚ್ಚಿನ ಪೊಲೀಸ್ ಭದ್ರತೆ ನಿಯೋಜಿಸಲಾಯಿತು.
ಪ್ರಾಥಮಿಕ ಮಾಹಿತಿಯ ಪ್ರಕಾರ, ಠಾಣೆಗೆ ಕರೆತಂದ ಬಳಿಕ ಕಾಂತರಾಜು ಅವರಿಗೆ ಪೊಲೀಸರ ಭಯದಿಂದಾಗಿ ತೀವ್ರ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆದರೆ, ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವಷ್ಟೇ ಸಾವಿಗೆ ನಿಖರ ಕಾರಣ ತಿಳಿಯಲಿದೆ.
ವಿಷಯ ತಿಳಿಯುತ್ತಿದ್ದಂತೆಯೇ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ ಹುಳಿಯಾರು ಠಾಣೆಗೆ ಭೇಟಿ ನೀಡಿದರು. ಆಕ್ರೋಶಗೊಂಡಿದ್ದ ಗ್ರಾಮಸ್ಥರು ಮತ್ತು ಮೃತನ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದ ಎಸ್ಪಿ, ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು. ಒಂದು ವೇಳೆ ಪೊಲೀಸರ ತಪ್ಪು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಎಸ್ಪಿ ಅವರ ಭರವಸೆಯ ನಂತರ ಗ್ರಾಮಸ್ಥರು ಪ್ರತಿಭಟನೆಯನ್ನು ಕೈಬಿಟ್ಟರು. ಬಳಿಕ ಮೃತದೇಹವನ್ನು ಠಾಣೆಯಿಂದ ಹೊರತೆಗೆದು ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಪರೀಕ್ಷೆಯ ನಂತರ ಮೃತದೇಹವನ್ನು ವಾರಸುದಾರರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.