ಕೋಲಾರ: ಜಿಲ್ಲೆಯ ಸಮಸ್ಯೆಗಳ ಬಗ್ಗೆ ಅರಿವು ಇಲ್ಲದ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿ, ಮುಂಗಾರು ಮಳೆ ಇಲ್ಲದೆ ನಷ್ಟವಾಗಿರುವ ಪ್ರತಿ ಎಕರೆ ರಾಗಿ ಬೆಳೆಗೆ 50 ಸಾವಿರ ಪರಿಹಾರ ನೀಡುವಂತೆ ಆಗ್ರಹಿಸಿ ರೈತಸಂಘದಿಂದ ನಗರದ ಬಸ್ ನಿಲ್ದಾಣ ವೃತ್ತದಲ್ಲಿ ಎತ್ತಿನ ಬಂಡಿಗಳೊಂದಿಗೆ ಪ್ರತಿಭಟನೆ ನಡೆಸಲಾಯಿತು.
ರೈತಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಮಾತನಾಡಿ, ಮುಂಗಾರು ಮಳೆ ಇಲ್ಲದೆ ಬಿತ್ತನೆ ಆಗಿರುವ ರಾಗಿ ಬೆಳೆ ಒಣಗಿರುವ ಹಿನ್ನೆಲೆಯಲ್ಲಿ ರೈತರು ಸರಕಾರ ನೀಡುವ ಪರಿಹಾರಕ್ಕಾಗಿ ಕಾಯುತ್ತಿದ್ದರೆ, ರೈತರ ಸಮಸ್ಯೆಗೆ ಸ್ಪಂದಿಸಬೇಕಾದ ಶಾಸಕರು ಆರೋಪ ಪ್ರತ್ಯಾರೋಪದಲ್ಲಿ ತೊಡಗಿರುವುದು ಸರಿಯಲ್ಲ ಎಂದು ಕಿಡಿಕಾರಿದರು.
ಜಿಲ್ಲೆಯಲ್ಲಿ ಲಕ್ಷಾಂತರ ರೈತ ಕುಟುಂಬಗಳ ಹಾಗೂ ಸ್ತ್ರೀ ಶಕ್ತಿ ಸಂಘಗಳಿಗೆ ಜೀವನಾಡಿಯಾಗಿದ್ದ ಡಿಸಿಸಿ ಬ್ಯಾಂಕಿನಲ್ಲಿ ನಡೆದಿರುವ ಅಕ್ರಮ ಹಾಗೂ ಅವ್ಯವಹಾರದ ಕುರಿತು ತನಿಖೆ ನಡೆಸಬೇಕು. ಗ್ರಾಮೀಣ ಭಾಗಗಳಲ್ಲಿ ಮಹಿಳೆಯರು ತಮ್ಮ ಸ್ವಾಬಲಂಬಿ ಜೀವನ ನಡೆಸಲು ಹೆಚ್ಚಿನ ಬಡ್ಡಿಗೆ ಸಾಲ ಪಡೆದು ಸಂಕಷ್ಟಕ್ಕೆ ಸಿಲುಕುತ್ತಿದ್ದರೂ ಸಮಸ್ಯೆಯನ್ನು ಯಾಕೆ ಪರಿಗಣಿಸುತ್ತಿಲ್ಲ ಗ್ರಾಮೀಣ ಪ್ರದೇಶದ ಮಹಿಳೆಯರು ಪೊರಕೆ ಹಿಡಿದು ಬೀದಿಗೆ ಬರಬೆಕೇ ಎಂದು ಪ್ರಶ್ನೆ ಮಾಡಿದರು.
ಇನ್ನು ನಾಪತ್ತೆ ಆಗಿರುವ ಉಸ್ತುವಾರಿ ಸಚಿವರನ್ನು ಹುಡುಕಿಕೊಟ್ಟವರಿಗೆ ಜಿಲ್ಲೆಗೆ ಹರಿಯುತ್ತಿರುವ ಕೆ.ಸಿ ವ್ಯಾಲಿ ನೀರನ್ನು ಹಾಗೂ ದುಬಾರಿ ಆಗಿರುವ ಟೊಮೋಟೊವನ್ನು ವಿಧಾನಸೌಧದ 224 ಶಾಸಕರಿಗೆ ಉಚಿತವಾಗಿ ನೀಡುವ ಘೋಷಣೆ ಮಾಡಿದರು.
ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಜಿಲ್ಲೆ ಎಂದರೆ ಅತ್ತೆ ಮನೆಯಲ್ಲಿ ಮೂರು ದಿನ ಸ್ವಂತ ಮನೆಯಲ್ಲಿ ಮೂರು ದಿನ ಎಂಬ ಗಾದೆಯಂತಾಗಿದೆ. ಜಿಲ್ಲೆಯ ಮೇಲೆ ಕಾಳಜಿ ಇಲ್ಲದಿದ್ದರೆ ಬೇರೆಯವರನ್ನು ನೇಮಕ ಮಾಡಿ ಇಲ್ಲವೇ ಜಿಲ್ಲೆಯನ್ನು ಪಕ್ಕದ ಆಂಧ್ರಕ್ಕೆ ಸೇರಿಸಿ ಪುಣ್ಯ ಕಟ್ಟಿಕೊಳ್ಳಿ ಎಂದು ಮನವಿ ಮಾಡಿದರು.
ಜಿಪಂ ಸಿಇಒ, ಎಸ್ಸೆನ್ನಾರ್ ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕರ ಹುದ್ದೆ ಸೇರಿದಂತೆ ಶೇ.50 ರಷ್ಟು ಹುದ್ದೆಗಳು ಖಾಲಿ ಇವೆ. ಇದರ ಕಡೆ ಗಮನ ಹರಿಸದೆ ಹಗರಣಗಳ ಬಗ್ಗೆ ಪ್ರತಿದಿನ ಆರೋಪ ಪ್ರತ್ಯಾರೋಪ ಮಾಡಿಕೊಳ್ಳುವ ಮುಖಾಂತರ ಕಾಲಹರಣ ಮಾಡುತ್ತಿದ್ದು, ಜನಪ್ರತಿನಿದಿಗಳಿಗೆ ಮುಂದಿನ ದಿನಗಳಲ್ಲಿ ಜನರೇ ಉತ್ತರಿಸಲಿದ್ದಾರೆಂದು ಎಚ್ಚರಿಸಿದರು.
ವಾರದೊಳಗೆ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿ ನಷ್ಟವಾಗಿರುವ ರಾಗಿ ಬೆಳೆಗೆ 50 ಸಾವಿರ ಟೊಮೇಟೊ ಬೆಳೆಗೆ 2 ಲಕ್ಷ ಪರಿಹಾರ ವಿತರಣೆ ಮಾಡಬೇಕು ಇಲ್ಲವಾದರೆ ರೈತರ ಎಲ್ಲಾ ಬೆಳೆಗಳು ಜಾನುವಾರುಗಳ ಸಮೇತ ಮುಖ್ಯಮಂತ್ರಿ ಮನೆ ಮುಂದೆ ಆಹೋರಾತ್ರಿ ಧರಣಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕಂದಾಯ ನಿರೀಕ್ಷಕ ರಾಜೇಂದ್ರ ಮನವಿ ಸ್ವೀಕರಿಸಿ, ಹಿರಿಯ ಅಧಿಕಾರಿಗಳ ಮೂಲಕ ತಮ್ಮ ಮನವಿಯನ್ನು ಸರಕಾರಕ್ಕೆ ಕಳುಹಿಸುವ ಭರವಸೆಯನ್ನು ನೀಡಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್, ಶಿವಾರೆಡ್ಡಿ, ಪಾರುಖ್ಪಾಷ, ರಾಜೇಶ್, ಚಂದ್ರಪ್ಪ, ಯಲ್ಲಪ್ಪ, ಆಂಜಿನಪ್ಪ, ಹರೀಶ್, ಸುಪ್ರೀಂ ಚಲ, ಶಶಿ, ಮುನಿರಾಜು, ಮಂಗಸಂದ್ರ ತಿಮ್ಮಣ್ಣ, ಶೈಲಜ, ನಾಗರತ್ನ, ಮುನಿಯಮ್ಮ, ಶೋಭ, ರಾಧ, ಚೌಡಮ್ಮ ಮುಂತಾದವರಿದ್ದರು.
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…