ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ- ಜನರ ಆಶೀರ್ವಾದವೇ ನನಗೆ ಶ್ರೀರಕ್ಷೆ- ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ-ಸತ್ಯಕ್ಕೆ ಜಯ ಸಿಗಲಿದೆ-ಸಿಎಂ ಸಿದ್ದರಾಮಯ್ಯ

ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ‌ ವಿಸ್ತೃತವಾದ ಪ್ರತಿಕ್ರಿಯೆ ನೀಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ ಎಂದರು.

ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನಿನ ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದು ಹೇಳಿದ್ದಾರೆ.

ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ಎಸ್ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ‌ ನಿರಾಕರಿಸಿದ್ದರು‌ ಎಂದರು.

ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ಎಸ್ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ.
ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ ಎಂದು ತಿಳಿಸಿದರು.

ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ.
ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ ಎಂದರು.

ಇದು ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ಧದ ಹೋರಾಟ. ಬಿಜೆಪಿ, ಜೆಡಿಎಸ್ ನ ಈ ಸೇಡಿನ ರಾಜಕೀಯದ ವಿರುದ್ಧ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ ಎಂದು ಹೇಳಿದರು.

ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದ್ದು, ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ ಎಂದು ತಿಳಿಸಿದರು.

ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ ಎಂದರು.

ನನ್ನ 40 ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯವನ್ನು ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ. ಈ ಹೋರಾಟವನ್ನು ಜನತೆಯ ಆಶೀರ್ವಾದದ ಬಲದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ ಎಂದು ಹೇಳಿದರು.

ಮುಡಾ ಪ್ರಕರಣ ಒಂದು ನೆಪ ಅಷ್ಟೇ. ಬಡವರು ಮತ್ತು ಶೋಷಿತರ ಪರವಾಗಿರುವ ನಮ್ಮ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕೆಂಬುದೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖ್ಯ ಉದ್ದೇಶ ಎಂದರು.

ಮುಡಾ ಪ್ರಕರಣವನ್ನು ಸೃಷ್ಟಿಸಿ, ಅದರ ಮೂಲಕ ಸುಳ್ಳು ಆರೋಪಗಳನ್ನು ಮಾಡುತ್ತಿರುವವರ ಮುಖಗಳನ್ನು ಒಮ್ಮೆ ರಾಜ್ಯದ ಜನತೆ ಸರಿಯಾಗಿ ನೋಡಬೇಕೆಂದು ಮನವಿ ಮಾಡುತ್ತೇನೆ ಎಂದು ಹೇಳಿದರು.

ನನ್ನ ರಾಜೀನಾಮೆ ಕೇಳುತ್ತಿರುವ ಇದೇ ನಾಯಕರು ನಾನು ರಾಜ್ಯದ ಬಡವರು, ಶೋಷಿತರ ಪರವಾಗಿ ಜಾರಿಗೆ ತಂದಿದ್ದ ಯೋಜನೆಗಳನ್ನು ವಿರೋಧಿಸಿದವರೇ ಆಗಿದ್ದಾರೆ ಎಂದರು.

ಇದೇ ಬಿಜೆಪಿ, ಜೆಡಿಎಸ್ ನಾಯಕರು ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರ ಭಾಗ್ಯ, ಕ್ಷೀರ ಧಾರೆ, ವಿದ್ಯಾಸಿರಿ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳನ್ನು ವಿರೋಧಿಸಿದ್ದಾರೆ ಎಂದು ತಿಳಿಸಿದರು.

ಇಂದು ನನ್ನ ವಿರುದ್ಧ ರಾಜಕೀಯ ಸಂಚು ನಡೆಸುತ್ತಿರುವ ಇದೇ ನಾಯಕರು ಎಸ್‌ಸಿಎಸ್‌ಪಿ/ಟಿಎಸ್‌‌ಪಿ ಕಾಯ್ದೆಯನ್ನು ವಿರೋಧಿಸಿದ್ದಾರೆ ಎಂದರು.

ಕರ್ನಾಟಕದ ಜನತೆ ಇಲ್ಲಿಯ ವರೆಗೆ ಭಾರತೀಯ ಜನತಾ ಪಕ್ಷಕ್ಕೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವಷ್ಟು ಬಹುಮತ ನೀಡಿಲ್ಲ. ಇಲ್ಲಿಯ ವರೆಗೆ ಬಿಜೆಪಿ ಅನೈತಿಕವಾಗಿ, ದುಡ್ಡಿನ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದದ್ದು ಎಂದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಆಪರೇಷನ್ ಕಮಲಕ್ಕೆ ಅವಕಾಶವೇ ಇಲ್ಲದಂತೆ ನಮ್ಮ ಪಕ್ಷಕ್ಕೆ 136 ಸದಸ್ಯರ ಬಲ ನೀಡಿ ಗೆಲ್ಲಿಸಿದರು.
ಇದರಿಂದ ಹತಾಶೆಗೀಡಾಗಿರುವ ಬಿಜೆಪಿ, ಜೆಡಿಎಸ್ ನಾಯಕರು, ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಸಿದ್ದಾರೆ ಎಂದು ಹೇಳಿದರು.

ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶಾದ್ಯಂತ ನಡೆಸುತ್ತಿದೆ ಎಂದರು.

ನನ್ನ ಪ್ರಕರಣದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ.
ಸತ್ಯಮೇವ ಜಯತೇ ಎಂದರು.

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

26 minutes ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

8 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

9 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

21 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

22 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

22 hours ago