Categories: ಮೈಸೂರು

‘ರಾಜ್ಯಕ್ಕೆ ಅನ್ಯಾಯವಾಗಿಲ್ಲ’ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆ ವಿಚಾರ: ಬಜೆಟ್ ನಲ್ಲಿ ರಾಜ್ಯಕ್ಕೆ ಏನೂ ಕೊಡದೆ ಅನ್ಯಾಯವಾಗಿಲ್ಲ ಎಂದರೆ ಹೇಗೆ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪತ್ರಿಕಾಗೋಷ್ಠಿ ಕರೆದು ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದಿದ್ದಾರೆ. ರಾಜ್ಯಕ್ಕೆ ಏನೂ ಕೊಡದೆ ಅನ್ಯಾಯವಾಗಿಲ್ಲ ಎಂದರೆ ಹೇಗೆ? ಬಜೆಟ್ ಮೀಟಿಂಗ್ ಕರೆದಾಗ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿಗಳನ್ನೂ ನೀಡುವುದಾಗಿ ಘೋಷಣೆ ಮಾಡಿದ್ದು, ಅದನ್ನು ಕೊಡಿ ಎಂದು ಕೋರಿದ್ದೆವು. ಈ ಬಾರಿಯ ಬಜೆಟ್ ನಲ್ಲಿ ಈ ಬಗ್ಗೆ ಪ್ರಸ್ತಾಪವಿಲ್ಲ. 15ನೇ ಹಣಕಾಸು ಆಯೋಗವು ಶಿಫಾರಸ್ಸು ಮಾಡಿದ್ದ 5,495 ಕೋಟಿಗಳ ವಿಶೇಷ ಅನುದಾನವನ್ನೂ ಕೊಟ್ಟಿಲ್ಲ. ಪೇರಿಫೇರಲ್ ರಿಂಗ್ ರೋಡ್ ಗೆ ರೂ.3,000 ಕೋಟಿ ಕೊಡುವುದಾಗಿ ಹೇಳಿದ್ದರು. ಅದೂ ಇಲ್ಲ. 3,000 ಕೋಟಿ ಕೆರೆಗಳ ಅಭಿವೃದ್ಧಿಗೆ ಕೊಡುವುದಾಗಿ ಹೇಳಿದ್ದರು. ಅದೂ ಕೂಡ ಬಜೆಟ್ ನಲ್ಲಿ ಇಲ್ಲ. ಇದು ಅನ್ಯಾಯವಲ್ಲವೇ? ಆಂಧ್ರ ಪ್ರದೇಶ, ಬಿಹಾರ ರಾಜ್ಯಗಳಿಗೆ ಭರಪೂರ ಅನುದಾನ ಕೊಟ್ಟಿದ್ದಾರೆ. ಕರ್ನಾಟಕಕ್ಕೆ ಏನು ಕೊಟ್ಟಿದ್ದಾರೆ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ ಮತ್ತು ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದ ಅನುದಾನವನ್ನು ನಾವು ಕೂಡಿಸುತ್ತೇವೆ ಎಂದು ಪ್ರಸ್ತಾಪ ಮಾಡಬಹುದಿತ್ತು. ಕೇಂದ್ರ ಸಚಿವರ ಕ್ಷೇತ್ರ ರಾಮನಗರಕ್ಕೂ ಏನಾದರೂ ಹೊಸದು ಯೋಜನೆ ಬಂದಿದೆಯೇ? ಕೈಗಾರಿಕಾ ಕಾರಿಡಾರ್ ಬಂದಿದೆಯೇ? ಮೇಕೆದಾಟು, ಕೈಗಾರಿಕೆ ಹಾಗೂ ಕೇಳಿದ ಅನುದಾನ ಯಾವುದೂ ಕೊಟ್ಟಿಲ್ಲ. ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವಂತೆ ಕೋರಿದ್ದೆವು. ಆದರೆ ಈ ಬಾರಿಯ ಬಜೆಟ್‌ನಲ್ಲೂ ಯಾವುದೇ ಪ್ರಸ್ತಾಪವಿಲ್ಲ. ಮೈಸೂರು ಅಥವಾ ಹಾಸನಕ್ಕೆ ಐ ಐ ಟಿ ಮಂಜೂರು ಮಾಡಲು ಮನವಿ ಮಾಡಿದ್ದೆವು, ಅದೂ ಕೂಡ ಆಗಿಲ್ಲ. ಹೀಗಿದ್ದೂ ಅನ್ಯಾಯವಾಗಿಲ್ಲ ಎಂದರೆ ಹೇಗೆ? ನಿರ್ಮಲಾ ಸೀತಾರಾಮನ್ ಅವರು ಹಿಂದೆಯೂ ಸುಳ್ಳು ಹೇಳಿದ್ದರು, ಈಗಲೂ ಸುಳ್ಳು ಹೇಳಿದ್ದಾರೆ ಎಂದು ಕಿಡಿಕಾರಿದ್ದಾರೆ.

15 ನೇ ಹಣಕಾಸು ಆಯೋಗದಿಂದ ಅವಧಿಯಲ್ಲಿ ಅತಿ ಹೆಚ್ಚು ಅನ್ಯಾಯವಾಗಿರುವ ರಾಜ್ಯ ಕರ್ನಾಟಕ. ರಾಜ್ಯದಿಂದ ರಾಜ್ಯ ಸಭಾ  ಸದಸ್ಯರಾಗಿರುವ ಅವರು ಕೈಗಾರಿಕೆಗಳೆಲ್ಲಾ ಬೇರೆ ರಾಜ್ಯಕ್ಕೆ ಹೋಗುತ್ತಿವೆ ಎಂದೂ ಹೇಳಿದ್ದಾರೆ. ಆದರೆ ನಮ್ಮ ಕೇಂದ್ರ ಸರ್ಕಾರದ ಹಣಕಾಸು ಸಚಿವರ ನೀತಿ, ಕಾರ್ಯಕ್ರಮಗಳಿಂದ 31% ನಮ್ಮ ದೇಶಕ್ಕೆ ಬರುತ್ತಿರುವ ಎಫ್.ಡಿ.ಐ ಕಡಿಮೆಯಾಗಿದೆ. ಕೇಂದ್ರಕ್ಕೆ ತೆರಿಗೆ ನೀಡುವಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದು, ಕರ್ನಾಟಕ 2ನೇ ಸ್ಥಾನದಲ್ಲಿದೆ. ಇನ್ನೇನು ಕೊಡುಗೆ ಕೊಡಬೇಕು? ಎಂದು ಪ್ರಶ್ನೆ ಮಾಡಿದರು.

ನಿರ್ಮಲಾ ಸೀತಾರಾಮನ್ ಅವರೇ 2023-24 ನೇ ಸಾಲಿನ ಬಜೆಟ್ ನಲ್ಲಿ ಹೇಳಿದಂತೆ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಣೆ ಮಾಡಿದ್ದ 5,300 ಕೋಟಿಗಳನ್ನು ಕೊಟ್ಟಿಲ್ಲ. ಅವರ ಘೋಷಣೆ ನೋಡಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಬಜೆಟ್ ನಲ್ಲಿ ಪುನರುಚ್ಚರಿಸಿದ್ದರು. ಎಲ್ಲಿದೆ ಈ ಅನುದಾನ? ಎಂದು ಪ್ರಶ್ನಿಸಿದರು.

ಕೇಂದ್ರದ ಮಲತಾಯಿ ಧೋರಣೆ ಖಂಡಿಸಿ ನೀತಿ ಆಯೋಗದ ಸಭೆಯನ್ನು ನಾವು ಬಹಿಷ್ಕರಿಸಿದೆವು. ತಮಿಳುನಾಡು, ತೆಲಂಗಾಣ ಹಾಗೂ ಬಿಜೆಪಿಯೇತರ ಸರ್ಕಾರವಿರುವ ಅನೇಕ ರಾಜ್ಯಗಳು ಹೋಗಿಲ್ಲ. ಮಮತಾ ಬ್ಯಾನರ್ಜಿ ಅವರು ಸಭೆಗೆ ಹಾಜರಾಗಿ ಮಾತನಾಡಲು ಸಮಯ ನೀಡಿಲ್ಲ ಎಂದು ಸಭೆಯಿಂದ ಹೊರನಡೆದರು. ಇವರು ನಮಗೆ ಪಾಠ ಹೇಳಿಕೊಡುತ್ತಾರೆ. ಇವರ ತಪ್ಪುಗಳಿಗೆ ಇಂದು ದೇಶದಲ್ಲಿ ಹೂಡಿಕೆಯಾಗುತ್ತಿಲ್ಲ.  ನಾವು ಸಾಲ ಹೆಚ್ಚು ಮಾಡಿದ್ದೇವೆ ಎನ್ನುತ್ತಾರೆ. ನಾವು ವಿತ್ತೀಯ ಹೊಣೆಗಾರಿಕೆ ಕಾಯ್ದೆಯಡಿ ಜಿಡಿಪಿಯ 25% ರೊಳಗೆ ಇದ್ದೇವೆ. ಅವರು ಸುಮಾರು 15 ಲಕ್ಷ ಕೋಟಿ ಸಾಲ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಕರ್ನಾಟಕದ ಸಂಸದರು ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡಬೇಕು. ಕರ್ನಾಟಕ ಭ್ರಷ್ಟ ರಾಜ್ಯ ಎಂದು ಅವರು ನಾಡಿಗೆ ಮಸಿ ಬಳಿಯುತ್ತಿದ್ದಾರೆ. ಕರ್ನಾಟಕ ಭ್ರಷ್ಟ ರಾಜ್ಯವಲ್ಲ. ನಾವು ಅಧಿಕಾರಕ್ಕೆ ಬಂದು ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದೇವೆ ಎಂದರು.

ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ನಾಯಕರು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಅವರು ಪಾದಯಾತ್ರೆ ಮಾಡಲಿ ನಮ್ಮ ಅಭ್ಯಂತರವಿಲ್ಲ. ನಾವೂ ಕೂಡ ರಾಜಕೀಯವಾಗಿ ಅವರನ್ನು ಎದುರಿಸುತ್ತೇವೆ. ವಾಲ್ಮೀಕಿ ನಿಗಮದಲ್ಲಿ 84.63 ಕೋಟಿ ಹಗರಣವಾಗಿದೆ ಎನ್ನುವುದು ನಿಜ. ಎಸ್.ಐ.ಟಿ ರಚನೆಯಾಗಿದ್ದು ತನಿಖೆಯಾಗುತ್ತಿದೆ. ಸಿಬಿಐ, ಇಡಿ ಯಾವರೂ ತನಿಖೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಬಿಜೆಪಿ ಸರ್ಕಾರದ ಕಾಲದಲ್ಲಿ ಭ್ರಷ್ಟಾಚಾರ ನಡೆದಿಲ್ಲವೇ? ಅದಕ್ಕಾಗಿಯೇ 21 ಹಗರಣಗಳನ್ನು ಪಟ್ಟಿ ಮಾಡಿ ಹೇಳಿದ್ದೇನೆ. ಕೆಲವು ತನಿಖೆಗಳು ನಡೆಯುತ್ತಿವೆ. ರಾಘವೇಂದ್ರ ಸಹಕಾರಿ ಬ್ಯಾಂಕ್ ಪ್ರಕರಣವನ್ನು ಸಿಬಿಐ ಗೆ ವಹಿಸಲಾಗಿದೆ. ಇಂದಿನವರೆಗೂ ಸಿಬಿಐ ತನಿಖೆ ಪೂರ್ಣಗೊಳಿಸಿಲ್ಲ. ಅವರ ಅವಧಿಯಲ್ಲಿ ಒಂದೇ ಒಂದು ಪ್ರಕರಣವನ್ನು ಸಿಬಿಐ ಗೆ ಕೊಟ್ಟಿಲ್ಲ. ನಮ್ಮ ಸರ್ಕಾರದ ಅವಧಿಯಲ್ಲಿ 7-8 ಹಗರಣಗಳನ್ನು ಸಿಬಿಐ ಗೆ ವಹಿಸಲಾಗಿದೆ. ಇದೆ ಬಿಜೆಪಿ ನಾವು ಅಧಿಕಾರದಲ್ಲಿದ್ದಾಗ ಸಿಬಿಐ ಯನ್ನು ಚೋರ್ ಬಚಾವ್ ಸಂಸ್ಥೆ ಎನ್ನುತ್ತಿದ್ದರು. ಈಗ ಸಿಬಿಐ ಗೆ ಮೇಲೆ ಇವರಿಗೇನು ಪ್ರೀತಿ? ಎಂದು ಪ್ರಶ್ನೆ ಮಾಡಿದರು.

ಮುಡಾ ಪ್ರಕರಣದಲ್ಲಿ ನನ್ನ ಮೇಲೆ ಯಾವ ಕಪ್ಪು ಮಸಿಯೂ ಇಲ್ಲ. ಈ ಬಗ್ಗೆ ನ್ಯಾಯಾಂಗ ತನಿಖಾ ಆಯೋಗ ರಚನೆಯಾಗಿದೆ. ಹಿಂದೆ ಬಿಜೆಪಿ ಯಾವುದಾದರೂ ಹಗರಣದ ತನಿಖೆಗೆ ನ್ಯಾಯಾಂಗ ಸಮಿತಿ ರಚಿಸಿತ್ತೆ? ಕೋವಿಡ್-19 ಸಂದರ್ಭದಲ್ಲಿ 3 ರಿಂದ 4 ಸಾವಿರ ಕೋಟಿ ರೂಪಾಯಿ ನುಂಗಿ ಹಾಕಿದ್ದಾರೆ. ನ್ಯಾಯಾಂಗ ತನಿಖೆ ಅಥವಾ ಸಿಬಿಐ ಗೆ ವಹಿಸಲು ಕೊಡಿ ಎಂದು ಒತ್ತಾಯಿಸಿದ್ದೆ. ಆದರೆ ಅವರು ಕೊಡಲಿಲ್ಲ. ಯಾವುದೇ ತಪ್ಪಿಲ್ಲದಿದ್ದರೂ ಕೂಡ ಜನರ ಮನಸ್ಸಿನಲ್ಲಿ ಅನುಮಾನವಿರಬಾರದು ಎಂಬ ಕಾರಣಕ್ಕೆ ನ್ಯಾಯಾಂಗ ಆಯೋಗ ರಚಿಸಲಾಗಿದೆ ಎಂದರು.

ನಾನು ತಪ್ಪು ಮಾಡಿದ್ದರೆ ನನಗೆ ಬೇಸರವಾಗುತ್ತಿತ್ತು. ನಾನು ತಪ್ಪು ಮಾಡಿಲ್ಲ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ, ಬ್ಲಾಕ್ ಮೇಲ್ ಮಾಡುವುದರಲ್ಲಿ ನಿಸ್ಸೀಮರು. ಅವರಿಗೆ ಯಾವ ಸಿದ್ಧಾಂತವಿದೆ? ಸಾಮಾಜಿಕ ನ್ಯಾಯ, ಜಾತ್ಯತೀತತೆ, ಪ್ರಜಾಪ್ರಭುತ್ವ, ಸಂವಿಧಾನದ ವಿರುದ್ಧವಾಗಿದ್ದಾರೆ. ಬಹಳ ಮಾತನಾಡುವ ಕೇಂದ್ರ ಸಚಿವ  ಹೆಚ್.ಡಿ.ಕುಮಾರಸ್ವಾಮಿ ಅವರು 1984 ರಲ್ಲಿ ಕೈಗಾರಿಕಾ ನಿವೇಶನವನ್ನು ಪಡೆದರು. ಸ್ವಾದೀನಕ್ಕೆ ಕೂಡ ಪಡೆದಿದ್ದಾರೆ. ನಂತರ ಬದಲಿ ನಿವೇಶನಕ್ಕೆ ಅರ್ಜಿ ಹಾಕಿಕೊಂಡಿದ್ದಾರೆ. ಕೈಗಾರಿಕೆ ಮಾಡಿದ್ದಾರೆಯೇ?ಪುಟ್ಟಯ್ಯ ಇರುವಾಗ ಎಷ್ಟು ನಿವೇಶನಗಳು ದೇವೇಗೌಡರ ಕುಟುಂಬಕ್ಕೆ ಹೋಗಿದೆ? ಎಂದು ಪ್ರಶ್ನಿಸಿದರು.

ಸರ್ಕಾರ ಹಾಗೂ ಪಕ್ಷದ ಬಗ್ಗೆ ಚರ್ಚೆ ಮಾಡಲು ವರಿಷ್ಠರು ಕರೆದಿದ್ದಾರೆ .ಹಾಗಾಗಿ ನಾನೂ ಮತ್ತು ಉಪಮುಖ್ಯಮಂತ್ರಿಗಳು ದೆಹಲಿಗೆ ಭೇಟಿ ನೀಡುತ್ತಿದ್ದೇವೆ ಎಂದರು.

ಮೆಟ್ಟೂರು ಅಣೆಕಟ್ಟು ತುಂಬಿ ನೀರು ವ್ಯರ್ಥವಾಗುತ್ತಿದ್ದು, ಈ ಬಗ್ಗೆ ತಮಿಳುನಾಡು ಸರ್ಕಾರದೊಂದಿಗೆ ನಾವು ಮಾತನಾಡಲು ತಯಾರಿದ್ದೇವೆ. ಮೇಕೆದಾಟು ಯೋಜನೆಯಿಂದ ಅವರಿಗೆ ತೊಂದರೆಯಾಗದಿದ್ದರೂ ಮಾತನಾಡಲು ಅವರು ಸಿದ್ಧರಿಲ್ಲ. ಕೇಂದ್ರ ಸರ್ಕಾರ ಅನುಮೋದನೆ ಕೊಟ್ಟರೇ ನಾವು ನಿರ್ಮಾಣ ಮಾಡಲು ಸಿದ್ಧ ಎಂದು ತಿಳಿಸಿದರು.

Ramesh Babu

Journalist

Recent Posts

ಕುಡಿಯುವ ನೀರು, ಮೇವಿಗೆ ಮುಂಜಾಗ್ರತೆ ವಹಿಸಿ: ನಿಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಕೆ.ಎಚ್ ಮುನಿಯಪ್ಪ

ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…

27 minutes ago

ಶಿಷ್ಟಾಚಾರದ ಹೆಸರಲ್ಲಿ ವಾಗ್ಯುದ್ಧ: ಹಾಲಿ ಶಾಸಕ ಧೀರಜ್ ಮುನಿರಾಜು–ಮಾಜಿ ಶಾಸಕ ವೆಂಕಟರಮಣಯ್ಯ ನಡುವೆ ಬಹಿರಂಗ ಕಿತ್ತಾಟ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ರಾಜಕೀಯದಲ್ಲಿ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ…

7 hours ago

ನಿಷೇಧದ ನಡುವೆಯೂ ಡಿಜೆ ಬಳಕೆ: ವಾಹನ ವಶ, ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಡಿಜೆ ಬಳಕೆಗೆ ನಿಷೇಧವಿದ್ದರೂ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಸಿದ ಆರೋಪದ ಮೇರೆಗೆ ಡಿಜೆ ವಾಹನವನ್ನು ಜಪ್ತಿ ಮಾಡಿರುವ…

20 hours ago

ಲಾಡ್ಜ್‌ನಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕೊಲೆ ಶಂಕಿತ ಪತಿ ಆನಂದ್ ನೇಣಿಗೆ ಶರಣು

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದಲ್ಲಿ…

22 hours ago

ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಅಗತ್ಯ- ಕೆಪಿಸಿಸಿ ಸದಸ್ಯ ಎಸ್.ಆರ್. ಮುನಿರಾಜ್

ದೊಡ್ಡಬಳ್ಳಾಪುರ: ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಅಗತ್ಯವಾಗಿದ್ದು, ಮುಖಂಡರು ಹಾಗೂ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿದರೆ ಮುಂಬರುವ ಎಲ್ಲ ಚುನಾವಣೆಗಳಲ್ಲೂ ಪಕ್ಷದ ಗೆಲುವು…

1 day ago

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

2 days ago