Categories: ಕೋಲಾರ

ರಾಜ್ಯದ ಬರಗಾಲವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಪ್ರಾಂತ ರೈತ ಸಂಘ ಒತ್ತಾಯ

ಕೋಲಾರ: ರಾಜ್ಯದ ಭೀಕರ ಬರಗಾಲವನ್ನು ರಾಷ್ಟ್ರೀಯ ವಿಪತ್ತು ಎಂದು ಕೇಂದ್ರ ಸರಕಾರ ಕೂಡಲೇ ಘೋಷಣೆ ಮಾಡಿ ಅನುದಾನವನ್ನು ಬಿಡುಗಡೆ ಮಾಡುವಂತೆ ಕರ್ನಾಟಕ ಪ್ರಾಂತ ರೈತ ಸಂಘದಿಂದ ಶುಕ್ರವಾರ ನಗರದ ತಹಶಿಲ್ದಾರ್ ಕಚೇರಿ ಮುಂದೆ ಧರಣಿ ನಡೆಸಿದರು.

ಈ ಸಂದರ್ಭದಲ್ಲಿ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ, ಶತಮಾನಗಳಲ್ಲೇ ಕಂಡರಿಯದ ಬರಗಾಲಕ್ಕೆ ರಾಜ್ಯ ಸಿಲುಕಿ ಒದ್ದಾಡುತ್ತಿದೆ. ರಾಜ್ಯ ಸರ್ಕಾರವೇ 236 ತಾಲ್ಲೂಕುಗಳ ಪೈಕಿ 223 ತಾಲ್ಲೂಕುಗಳು ತೀವ್ರ ಬರಪೀಡಿತ ಎಂದು ಘೋಷಿಸಿದೆ. ಕೃಷಿ ಇಲಾಖೆ ವರದಿ ಪ್ರಕಾರ ಸುಮಾರು 50 ಲಕ್ಷ ಹೆಕ್ಟೇ‌ರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಕಳೆದ ಜೂನ್ ನ ಮುಂಗಾರು ವೈಫಲ್ಯದಿಂದ ಉಂಟಾದ ಬರಗಾಲ, ನಂತರದ ಯಾವ ಮಳೆಯೂ ಕಾಣದೇ ರೈತಾಪಿ ಸಮುದಾಯದ ಸಂಕಟ ದಿನೇ ದಿನೇ ಹೆಚ್ಚು ಉಲ್ಬಣಗೊಳ್ಳುವಂತೆ ಮಾಡುತ್ತಿದೆ ಎಂದು ಹೇಳಿದರು.

ಬರಪೀಡಿತ ಜನರ ಅಗತ್ಯಗಳನ್ನು ಪೂರೈಸಬೇಕಾಗಿದ್ದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅತೀವ ನಿರ್ಲಕ್ಷ್ಯವನ್ನು ವಹಿಸಿವೆ. ಬರಗಾಲದ ಪರಿಹಾರಕ್ಕಾಗಿ ಕೇಂದ್ರದಿಂದ 18177 ಕೋಟಿ ರೂಗಳನ್ನು ಒದಗಿಸಬೇಕೆಂದು ರಾಜ್ಯ ಸರ್ಕಾರ ಕೋರಿಕೆ ಸಲ್ಲಿಸಿ ಹಲವಾರು ನಿಯೋಗಗಳ ಮೂಲಕ ಒತ್ತಾಯಿಸಿದ್ದರೂ, ಒಂದು ನಯಾ ಪೈಸೆ ಕೊಟ್ಟಿಲ್ಲ ಬೇಸಿಗೆಯಲ್ಲಿ ನೀರು, ಮೇವು, ಆಹಾರ, ಉದ್ಯೋಗಕ್ಕೆ ಹಾಹಾಕಾರ ಇರುವಾಗ, ಇಡೀ ವರ್ಷ ಶತಮಾನದಲ್ಲೇ ಕಂಡರಿಯದ ಭೀಕರ ಬರಗಾಲ ಉಂಟು ಮಾಡಬಹುದಾದ ಪರಿಣಾಮಗಳನ್ನು ಊಹಿಸಬಹುದಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಪ್ರಧಾನ ಕಾರ್ಯದರ್ಶಿ ವಿ.ನಾರಾಯಣರೆಡ್ಡಿ ಮಾತನಾಡಿ, ಬರಗಾಲ ಇದ್ದರೂ ರಾಷ್ಟ್ರೀಕೃತ ಬ್ಯಾಂಕುಗಳು ಸಾಲ ವಸೂಲಾತಿಗಾಗಿ ರೈತರಿಗೆ ನೋಟಿಸ್ ಗಳನ್ನು ನೀಡುತ್ತಿರುವುದು ರಾಜ್ಯದ ಎಲ್ಲಾ ಕಡೆ ವರದಿಯಾಗುತ್ತಿದೆ. ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಷ್ಟ್ರೀಕೃತ ಬ್ಯಾಂಕುಗಳು, ಮೈಕ್ರೋ ಫೈನಾನ್ಸ್ ಕಂಪನಿಗಳು, ಖಾಸಗಿ ಲೇವಾದೇವಿ ಸಾಲಗಳ ವಸೂಲಾತಿ ಗಾಯದ ಮೇಲೆ ಬರೆರಾಷ್ಟ್ರೀಕೃತ ಬ್ಯಾಂಕುಗಳು ಎಳೆದಂತಾಗಿದೆ. ದುಬಾರಿ ಮೀಟರ್ ಬಡ್ಡಿ ಸಾಲದ ಜಾಲ ಬಹಳ ವ್ಯಾಪಕವಾಗಿ ಬೆಳೆಯುತ್ತಿದೆ. ಬರಗಾಲದಿಂದ ಉಂಟಾದ ಸಾಲದ ಬೇಡಿಕೆ, ಬಡ್ಡಿದರದ ಹೆಚ್ಚಳಕ್ಕೆ ಕಾರಣವಾಗಿದ್ದು ರೈತರ ಹಾಗೂ ಗ್ರಾಮೀಣ ಜನತೆಯ ಪರಿಸ್ಥಿತಿಯನ್ನು ಹದಗೆಡಿಸುತ್ತಿದೆ ಎಂದು ಆರೋಪಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬರ ಪರಿಹಾರವನ್ನು ಒದಗಿಸಬೇಕು. ಒಂದು ಹೆಕ್ಟರ್ ಗೆ ಬೆಳೆ ನಷ್ಟ ಪರಿಹಾರವಾಗಿ 50 ಸಾವಿರ ರೂ. ನೀಡಬೇಕು ಇಡೀ ರಾಜ್ಯವನ್ನು ಸಂಪೂರ್ಣ ಬರಗಾಲ ಪಿಡೀತ ಪ್ರದೇಶ ಎಂದು ಘೋಷಿಸಬೇಕು. ಬರಗಾಲ ಘೋಷಣೆಗೆ ಸಂಬಂಧಿಸಿ, ಕೇಂದ್ರ ಸರ್ಕಾರವು ತನ್ನ ವಸಾಹತುಶಾಹಿ ಕಾಲಘಟ್ಟದ ಮಾನದಂಡಗಳಿಗೆ ಬದಲಿಯಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯ ಮಾನದಂಡಗಳನ್ನು ರೂಪಿಸಬೇಕು ರಾಜ್ಯದಾದ್ಯಂತ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ವಹಿಸಬೇಕು. ಟ್ಯಾಂಕರ್ ನೀರಿನ ಮಾರಾಟದ ಮೇಲೆ ನಿಯಂತ್ರಣ ಸಾಧಿಸಬೇಕು ಎಂದರು.

ಸರಕಾರ ಕೂಡಲೇ ಬಿಪಿಎಲ್, ಎಪಿಎಲ್ ತಾರತಮ್ಯ ಇಲ್ಲದೇ ಬರಗಾಲ ಪರಿಹಾರ ಪಡಿತರ ವಿತರಣೆಯಲ್ಲಿ ಹೆಚ್ಚುವರಿ ಆಹಾರ ಧಾನ್ಯ ಒದಗಿಸಬೇಕು. ಆಹಾರ ಧಾನ್ಯಗಳ ಬೆಲೆ ಏರಿಕೆ ಮೇಲೆ ಕಡಿವಾಣ ವಿಧಿಸಬೇಕು. ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಕ್ರಮ ವಹಿಸಬೇಕು. ಮೇವು ಕುಂದು ಕೊರತೆ ಪರಿಹರಿಸಲು ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು. ಕೂಡಲೇ ಕೇಂದ್ರ ಸರ್ಕಾರವು, ಎಲ್ಲಾ ರೈತರ, ಕೃಷಿ ಕೂಲಿಕಾರರ, ಗ್ರಾಮೀಣ ಮಹಿಳೆಯರ ಸಾಲ ಮನ್ನಾ ಹಾಗೂ ಬಡ್ಡಿ ಮನ್ನಾ ಮಾಡಬೇಕು. ಎಲ್ಲಾ ರೀತಿಯ ಸಾಲ ವಸೂಲಾತಿಯನ್ನು ನಿಷೇಧಿಸಿ ಆದೇಶ ಹೊರಡಿಸಬೇಕು. ರೈತರ ಕೃಷಿ ಕೂಲಿಕಾರರ, ಗೇಣಿ ರೈತರ ಆತ್ಮಹತ್ಯೆ ತಡೆಗಟ್ಟಲು ಕೂಡಲೇ ಕ್ರಮ ವಹಿಸಬೇಕು. ಗ್ರಾಪಂ ಮಟ್ಟದಲ್ಲಿ ಬರಗಾಲ ಪರಿಹಾರ ಕ್ರಮಗಳನ್ನು ಯೋಜಿಸಲು ವಿಶೇಷ ಗ್ರಾಮ ಸಭೆ ನಡೆಸಬೇಕು ಎಂದು ಒತ್ತಾಯಿಸಿದರು

ಈ ಧರಣಿಯ ನೇತೃತ್ವವನ್ನು ಸಂಘಟನೆಯ ತಾಲೂಕು ಅಧ್ಯಕ್ಷ ಆಲಹಳ್ಳಿ ವೆಂಕಟೇಶ್, ಉಪಾಧ್ಯಕ್ಷರಾದ ಎನ್.ಎನ್ ಶ್ರೀರಾಮ್, ಗಂಗಮ್ಮ, ಅಪ್ಪಯ್ಯಣ್ಣ, ಮುಖಂಡರಾದ ಯಲ್ಲಪ್ಪ, ಮುನಿರತ್ನಮ್ಮ, ಚಿನ್ನಮ್ಮ, ಶ್ರೀನಿವಾಸ್, ವೆಂಕಟರಾವ್, ರಾಜೇಂದ್ರ ಚಪ್ರಾಸ್, ನಾರಾಯಣಸ್ವಾಮಿ ಮುಂತಾದವರು ಇದ್ದರು.

Ramesh Babu

Journalist

Recent Posts

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

8 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

9 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

11 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

12 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

12 hours ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

13 hours ago