ರಾಜ್ಯದ ಹಿತ ಕಾಪಾಡಲು ಸರ್ಕಾರ ಎಂದಿಗೂ ಬದ್ಧ- ಸಿಎಂ ಸಿದ್ದರಾಮಯ್ಯ

ಐದಾರು ವರ್ಷಗಳಿಗೊಮ್ಮೆ ಮಳೆಯ ಕೊರತೆಯಿಂದಾಗಿ ತಮಿಳು ನಾಡಿಗೆ ಕಾವೇರಿ ನೀರು ಬಿಡಲು ಸಂಕಷ್ಟ ಎದುರಾಗುತ್ತದೆ. ಈ ಕುರಿತು ಸಂಕಷ್ಟ ಹಂಚಿಕೆ ಸೂತ್ರ ನಿರ್ದಿಷ್ಟ ಪಡಿಸಿಲ್ಲ. ಈ ಬಗ್ಗೆ ಸುಪ್ರೀಂ ಕೋರ್ಟಿನಲ್ಲಿ ವಕೀಲರು ಸಮರ್ಥವಾಗಿ ವಾದ ಮಂಡಿಸಬೇಕು. ಇದಕ್ಕೆ ನಮ್ಮ ಸರ್ಕಾರ ಎಲ್ಲ ಅಗತ್ಯ ಬೆಂಬಲ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕಾವೇರಿ, ಮೇಕೆದಾಟು ಮತ್ತು ಮಹದಾಯಿ ಜಲ ವಿವಾದಗಳ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸರ್ವಪಕ್ಷಗಳ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ, ಮೇಕೆದಾಟು, ಕಾವೇರಿ, ಮಹದಾಯಿ, ಕೃಷ್ಣಾ ಸಮಸ್ಯೆಗಳ ಕುರಿತು ಸರ್ವಪಕ್ಷ ನಿಯೋಗದ ಮೂಲಕ ತೆರಳಿ ಪ್ರಧಾನಿಯವರನ್ನು ಭೇಟಿ ಮಾಡೋಣ. ಇದಕ್ಕೆ ಎಲ್ಲ ಪಕ್ಷಗಳು ನಮಗೆ ಸಹಕಾರ ನೀಡಲಿವೆ ಎಂದು ಭಾವಿಸಿದ್ದೇನೆ. ರಾಜ್ಯದ ಹಿತ ಕಾಪಾಡಲು ನಾವು ಎಂದಿಗೂ ಬದ್ಧರಾಗಿರುತ್ತೇವೆ ಎಂದರು.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ಸಂಕಷ್ಟ ಹಂಚಿಕೆ ಸೂತ್ರದ ಕುರಿತು ತೀರ್ಮಾನ ಆಗಲೇಬೇಕು. ಇಂತಹ ಸಂಕಷ್ಟದ ಸಮಯದಲ್ಲಿ 67 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯದ ಮೇಕೆದಾಟು ಸಮತೋಲನಾ ಜಲಾಶಯ ನಿರ್ಮಿಸಿದರೆ, ಅವರಿಗೆ ನೀರು ಬಿಡಲು ಅನುಕೂಲವಾಗುತ್ತದೆ. ಈ ಯೋಜನೆಗೆ ತಮಿಳುನಾಡು ವಿನಾಕಾರಣ ವಿರೋಧಿಸುತ್ತಿದೆ ಎಂದರು.

ಕಾವೇರಿ ವಿವಾದ ಬಹಳ ಹಳೆಯದು. ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ನಂತರ 2018ರಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಾಗಿದೆ. ಕಾವೇರಿ ನೀರು ನಿಯಂತ್ರಣಾ ಸಮಿತಿ ಸ್ಥಾಪನೆಯಾಗಿದೆ. ಕಾವೇರಿ ಪ್ರಾಧಿಕಾರವು 22 ಸಭೆ ಹಾಗೂ ನಿಯಂತ್ರಣ ಸಮಿತಿಯು 84 ಸಭೆ ನಡೆಸಿದೆ. ಈ ಸಮಿತಿಗಳಾದ ಮೇಲೆ, ರಾಜ್ಯದಲ್ಲಿ ಸಂಕಷ್ಟದ ದಿನಗಳು ಎದುರಾಗಿದೆ. ಆಗ ನಾವು ನಿಯಂತ್ರಣ ಸಮಿತಿ, ಪ್ರಾಧಿಕಾರದಲ್ಲಿ ಚರ್ಚಿಸಿ, ಅದರ ತೀರ್ಮಾನದಂತೆ ನಡೆದುಕೊಂಡ ಅನೇಕ ನಿದರ್ಶನಗಳಿವೆ ಎಂದು ತಿಳಿಸಿದರು.

ಕಾವೇರಿ ನಿಯಂತ್ರಣ ಸಮಿತಿ ಮತ್ತು ಪ್ರಾಧಿಕಾರದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಅಧಿಕಾರಿಗಳು ಸಂಕಷ್ಟದ ಬಗ್ಗೆ ಪ್ರತಿಪಾದನೆ ಮಾಡಿದ್ದಾರೆ. ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಈ ವರ್ಷ ಮಳೆ ಕಡಿಮೆ ಆಯಿತು. ಜೂನ್‌ ಹಾಗೂ ಆಗಸ್ಟ್‌ ನಲ್ಲಿ ಮಳೆ ಕೊರತೆಯಾಗಿದೆ. ಇಲ್ಲಿಯವರೆಗೆ ನೀರು ಬಿಡಬೇಕಾಗಿದ್ದಿದ್ದು 86.38 ಟಿಎಂಸಿ. ಆದರೆ 20 ನೇ ತಾರೀಖಿನವರೆಗೆ ನೀರು ಬಿಟ್ಟಿರುವುದು 24 ಟಿಎಂಸಿ. ಅಂದರೆ ನಾವು ವಿರೋಧ ಮಾಡಿದ್ದೇವೆ. ವಾಸ್ತವವನ್ನು ಪ್ರಾಧಿಕಾರದ ಮುಂದೆ ಬಿಡಿಸಿಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಮಳೆ ಕೊರತೆಯಿಂದಾಗಿ ಬೆಳೆಗಳಿಗೆ ನೀರು ಬಿಟ್ಟಿಲ್ಲ. ಕುಡಿಯುವ ನೀರಿಗೆ ನೀರು ಬೇಕಾಗುತ್ತದೆ ಎಂದು ವಿವರಿಸಲಾಗಿದೆ.

ನಾವು ವಾದ ಮಾಡಿದ್ದರಿಂದಲೇ 15,000 ಕ್ಯೂಸೆಕ್ ನೀರಿನಿಂದ 10,000 ಕ್ಯೂಸೆಕ್ ನೀರಿಗೆ ಇಳಿಕೆ ಮಾಡಲಾಯಿತು. ಅದನ್ನೂ ಮರು ಪರಿಶೀಲನೆ ಮಾಡುವಂತೆ ಅರ್ಜಿ ಸಲ್ಲಿಸಿದೆವು. 15,000 ಕ್ಯೂಸೆಕ್ ನೀರು ಕೊಡಲಾಗದು ಎಂದು ರಾಜ್ಯದ ಅಧಿಕಾರಿಗಳು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ವಾದ ಮಂಡಿಸುತ್ತಿರುವಾಗಲೇ ತಮಿಳುನಾಡಿದ ಅಧಿಕಾರಿಗಳು ಸಭಾತ್ಯಾಗ ಮಾಡಿದರು. ನಂತರ ಸುಪ್ರೀಂ ಕೋರ್ಟಿನಲ್ಲಿ ಮನವಿ ಸಲ್ಲಿಸಿದ್ದಾರೆ. 25ರಂದು ಈ ಪ್ರಕರಣ ವಿಚಾರಣೆಗೆ ಬರಲಿದ್ದು, ಈ ವಿಷಯದಲ್ಲಿ ವಕೀಲರು ಸಮರ್ಥವಾಗಿ ವಾದ ಮಾಡುತ್ತಾರೆಂಬ ವಿಶ್ವಾಸವಿದೆ ಎಂದರು.

ಕರ್ನಾಟಕದ ನೆಲ, ಜಲ, ಗಡಿ, ಭಾಷೆಗಳ ಬಗ್ಗೆ ಮೊದಲಿನಿಂದಲೂ ಎಲ್ಲ ರಾಜಕೀಯ ಪಕ್ಷಗಳೂ ಒಕ್ಕೊರಲಿನಿಂದ ಮಾತನಾಡಿವೆ. ಈ ವಿಷಯಗಳಲ್ಲಿ ರಾಜಕೀಯ ಮಾಡುವ ಪ್ರಯತ್ನವನ್ನು ಯಾರೂ ಮಾಡಿಲ್ಲ, ಮಾಡಲೂಬಾರದು. ಯಾಕೆಂದರೆ ನಾವೆಲ್ಲರೂ ರಾಜ್ಯದ ಏಳು ಕೋಟಿ ಜನರ ಹಿತ ಕಾಪಾಡಬೇಕಾಗಿದೆ ಎಂದರು.

ಈ ವೇಳೆ ಜಲ ಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್‌, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ, ಜಗದೀಶ ಶೆಟ್ಟರ್, ಡಿ.ವಿ. ಸದಾನಂದಗೌಡ, ವೀರಪ್ಪ ಮೊಯಿಲಿ, ಸಚಿವರಾದ ಹೆಚ್‌.ಕೆ. ಪಾಟೀಲ, ಚೆಲುವರಾಯಸ್ವಾಮಿ, ಡಾ. ಜಿ. ಪರಮೇಶ್ವರ, ಕೆ.ಜೆ. ಜಾರ್ಜ್‌, ಕೃಷ್ಣ ಬೈರೇಗೌಡ, ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಎಲ್ಲ ಪಕ್ಷಗಳ ಶಾಸಕರು ಸಂಸದರು, ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ, ಹಿರಿಯ ವಕೀಲರಾದ ಮೋಹನ್‌ ಕಾತರಕಿ ಮತ್ತು ಇತರ ಕಾನೂನು ತಜ್ಞರು, ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

7 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

18 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

19 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

19 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

21 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

1 day ago