ರಾಜ್ಯದ ಹಿತ ಕಾಪಾಡಲು ಸರ್ಕಾರ ಎಂದಿಗೂ ಬದ್ಧ- ಸಿಎಂ ಸಿದ್ದರಾಮಯ್ಯ

ಐದಾರು ವರ್ಷಗಳಿಗೊಮ್ಮೆ ಮಳೆಯ ಕೊರತೆಯಿಂದಾಗಿ ತಮಿಳು ನಾಡಿಗೆ ಕಾವೇರಿ ನೀರು ಬಿಡಲು ಸಂಕಷ್ಟ ಎದುರಾಗುತ್ತದೆ. ಈ ಕುರಿತು ಸಂಕಷ್ಟ ಹಂಚಿಕೆ ಸೂತ್ರ ನಿರ್ದಿಷ್ಟ ಪಡಿಸಿಲ್ಲ. ಈ ಬಗ್ಗೆ ಸುಪ್ರೀಂ ಕೋರ್ಟಿನಲ್ಲಿ ವಕೀಲರು ಸಮರ್ಥವಾಗಿ ವಾದ ಮಂಡಿಸಬೇಕು. ಇದಕ್ಕೆ ನಮ್ಮ ಸರ್ಕಾರ ಎಲ್ಲ ಅಗತ್ಯ ಬೆಂಬಲ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕಾವೇರಿ, ಮೇಕೆದಾಟು ಮತ್ತು ಮಹದಾಯಿ ಜಲ ವಿವಾದಗಳ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸರ್ವಪಕ್ಷಗಳ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ, ಮೇಕೆದಾಟು, ಕಾವೇರಿ, ಮಹದಾಯಿ, ಕೃಷ್ಣಾ ಸಮಸ್ಯೆಗಳ ಕುರಿತು ಸರ್ವಪಕ್ಷ ನಿಯೋಗದ ಮೂಲಕ ತೆರಳಿ ಪ್ರಧಾನಿಯವರನ್ನು ಭೇಟಿ ಮಾಡೋಣ. ಇದಕ್ಕೆ ಎಲ್ಲ ಪಕ್ಷಗಳು ನಮಗೆ ಸಹಕಾರ ನೀಡಲಿವೆ ಎಂದು ಭಾವಿಸಿದ್ದೇನೆ. ರಾಜ್ಯದ ಹಿತ ಕಾಪಾಡಲು ನಾವು ಎಂದಿಗೂ ಬದ್ಧರಾಗಿರುತ್ತೇವೆ ಎಂದರು.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ಸಂಕಷ್ಟ ಹಂಚಿಕೆ ಸೂತ್ರದ ಕುರಿತು ತೀರ್ಮಾನ ಆಗಲೇಬೇಕು. ಇಂತಹ ಸಂಕಷ್ಟದ ಸಮಯದಲ್ಲಿ 67 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯದ ಮೇಕೆದಾಟು ಸಮತೋಲನಾ ಜಲಾಶಯ ನಿರ್ಮಿಸಿದರೆ, ಅವರಿಗೆ ನೀರು ಬಿಡಲು ಅನುಕೂಲವಾಗುತ್ತದೆ. ಈ ಯೋಜನೆಗೆ ತಮಿಳುನಾಡು ವಿನಾಕಾರಣ ವಿರೋಧಿಸುತ್ತಿದೆ ಎಂದರು.

ಕಾವೇರಿ ವಿವಾದ ಬಹಳ ಹಳೆಯದು. ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ನಂತರ 2018ರಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಾಗಿದೆ. ಕಾವೇರಿ ನೀರು ನಿಯಂತ್ರಣಾ ಸಮಿತಿ ಸ್ಥಾಪನೆಯಾಗಿದೆ. ಕಾವೇರಿ ಪ್ರಾಧಿಕಾರವು 22 ಸಭೆ ಹಾಗೂ ನಿಯಂತ್ರಣ ಸಮಿತಿಯು 84 ಸಭೆ ನಡೆಸಿದೆ. ಈ ಸಮಿತಿಗಳಾದ ಮೇಲೆ, ರಾಜ್ಯದಲ್ಲಿ ಸಂಕಷ್ಟದ ದಿನಗಳು ಎದುರಾಗಿದೆ. ಆಗ ನಾವು ನಿಯಂತ್ರಣ ಸಮಿತಿ, ಪ್ರಾಧಿಕಾರದಲ್ಲಿ ಚರ್ಚಿಸಿ, ಅದರ ತೀರ್ಮಾನದಂತೆ ನಡೆದುಕೊಂಡ ಅನೇಕ ನಿದರ್ಶನಗಳಿವೆ ಎಂದು ತಿಳಿಸಿದರು.

ಕಾವೇರಿ ನಿಯಂತ್ರಣ ಸಮಿತಿ ಮತ್ತು ಪ್ರಾಧಿಕಾರದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಅಧಿಕಾರಿಗಳು ಸಂಕಷ್ಟದ ಬಗ್ಗೆ ಪ್ರತಿಪಾದನೆ ಮಾಡಿದ್ದಾರೆ. ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಈ ವರ್ಷ ಮಳೆ ಕಡಿಮೆ ಆಯಿತು. ಜೂನ್‌ ಹಾಗೂ ಆಗಸ್ಟ್‌ ನಲ್ಲಿ ಮಳೆ ಕೊರತೆಯಾಗಿದೆ. ಇಲ್ಲಿಯವರೆಗೆ ನೀರು ಬಿಡಬೇಕಾಗಿದ್ದಿದ್ದು 86.38 ಟಿಎಂಸಿ. ಆದರೆ 20 ನೇ ತಾರೀಖಿನವರೆಗೆ ನೀರು ಬಿಟ್ಟಿರುವುದು 24 ಟಿಎಂಸಿ. ಅಂದರೆ ನಾವು ವಿರೋಧ ಮಾಡಿದ್ದೇವೆ. ವಾಸ್ತವವನ್ನು ಪ್ರಾಧಿಕಾರದ ಮುಂದೆ ಬಿಡಿಸಿಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಮಳೆ ಕೊರತೆಯಿಂದಾಗಿ ಬೆಳೆಗಳಿಗೆ ನೀರು ಬಿಟ್ಟಿಲ್ಲ. ಕುಡಿಯುವ ನೀರಿಗೆ ನೀರು ಬೇಕಾಗುತ್ತದೆ ಎಂದು ವಿವರಿಸಲಾಗಿದೆ.

ನಾವು ವಾದ ಮಾಡಿದ್ದರಿಂದಲೇ 15,000 ಕ್ಯೂಸೆಕ್ ನೀರಿನಿಂದ 10,000 ಕ್ಯೂಸೆಕ್ ನೀರಿಗೆ ಇಳಿಕೆ ಮಾಡಲಾಯಿತು. ಅದನ್ನೂ ಮರು ಪರಿಶೀಲನೆ ಮಾಡುವಂತೆ ಅರ್ಜಿ ಸಲ್ಲಿಸಿದೆವು. 15,000 ಕ್ಯೂಸೆಕ್ ನೀರು ಕೊಡಲಾಗದು ಎಂದು ರಾಜ್ಯದ ಅಧಿಕಾರಿಗಳು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ವಾದ ಮಂಡಿಸುತ್ತಿರುವಾಗಲೇ ತಮಿಳುನಾಡಿದ ಅಧಿಕಾರಿಗಳು ಸಭಾತ್ಯಾಗ ಮಾಡಿದರು. ನಂತರ ಸುಪ್ರೀಂ ಕೋರ್ಟಿನಲ್ಲಿ ಮನವಿ ಸಲ್ಲಿಸಿದ್ದಾರೆ. 25ರಂದು ಈ ಪ್ರಕರಣ ವಿಚಾರಣೆಗೆ ಬರಲಿದ್ದು, ಈ ವಿಷಯದಲ್ಲಿ ವಕೀಲರು ಸಮರ್ಥವಾಗಿ ವಾದ ಮಾಡುತ್ತಾರೆಂಬ ವಿಶ್ವಾಸವಿದೆ ಎಂದರು.

ಕರ್ನಾಟಕದ ನೆಲ, ಜಲ, ಗಡಿ, ಭಾಷೆಗಳ ಬಗ್ಗೆ ಮೊದಲಿನಿಂದಲೂ ಎಲ್ಲ ರಾಜಕೀಯ ಪಕ್ಷಗಳೂ ಒಕ್ಕೊರಲಿನಿಂದ ಮಾತನಾಡಿವೆ. ಈ ವಿಷಯಗಳಲ್ಲಿ ರಾಜಕೀಯ ಮಾಡುವ ಪ್ರಯತ್ನವನ್ನು ಯಾರೂ ಮಾಡಿಲ್ಲ, ಮಾಡಲೂಬಾರದು. ಯಾಕೆಂದರೆ ನಾವೆಲ್ಲರೂ ರಾಜ್ಯದ ಏಳು ಕೋಟಿ ಜನರ ಹಿತ ಕಾಪಾಡಬೇಕಾಗಿದೆ ಎಂದರು.

ಈ ವೇಳೆ ಜಲ ಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್‌, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ, ಜಗದೀಶ ಶೆಟ್ಟರ್, ಡಿ.ವಿ. ಸದಾನಂದಗೌಡ, ವೀರಪ್ಪ ಮೊಯಿಲಿ, ಸಚಿವರಾದ ಹೆಚ್‌.ಕೆ. ಪಾಟೀಲ, ಚೆಲುವರಾಯಸ್ವಾಮಿ, ಡಾ. ಜಿ. ಪರಮೇಶ್ವರ, ಕೆ.ಜೆ. ಜಾರ್ಜ್‌, ಕೃಷ್ಣ ಬೈರೇಗೌಡ, ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಎಲ್ಲ ಪಕ್ಷಗಳ ಶಾಸಕರು ಸಂಸದರು, ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ, ಹಿರಿಯ ವಕೀಲರಾದ ಮೋಹನ್‌ ಕಾತರಕಿ ಮತ್ತು ಇತರ ಕಾನೂನು ತಜ್ಞರು, ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

8 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

12 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

12 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

15 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago