
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರ ಪಟ್ಟಿಯನ್ನು ಪ್ರಕಟಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇಬ್ಬರು ಶಿಕ್ಷಕರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪ್ರಾಥಮಿಕ ಶಾಲಾ ವಿಭಾಗದಲ್ಲಿ ದೇವನಹಳ್ಳಿ ತಾಲೂಕಿನ ಕೆಂಪತಿಮ್ಮನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸಿ. ಉಮಾ ಅವರು ಆಯ್ಕೆಯಾಗಿದ್ದಾರೆ. ಇನ್ನು ಪ್ರೌಢಶಾಲಾ ವಿಭಾಗದಲ್ಲಿ ದೇವನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ (ಪ್ರೌಢಶಾಲಾ ವಿಭಾಗ) ಶಿಕ್ಷಕ ನೀಲಕಂತ ಗಾವಂಕರ್ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ರಾಜ್ಯಾದ್ಯಂತ ಪ್ರಾಥಮಿಕ ವಿಭಾಗದಿಂದ 20 ಹಾಗೂ ಪ್ರೌಢಶಾಲಾ ವಿಭಾಗದಿಂದ 11 ಸೇರಿದಂತೆ ಒಟ್ಟು 31 ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಪ್ರೌಢಶಾಲಾ ವಿಭಾಗದಲ್ಲಿ ಓರ್ವ ವಿಶೇಷ ಶಿಕ್ಷಕರೂ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಮಹಿಳಾ ಶಿಕ್ಷಕರಿಗೆ ವಿಶೇಷ ಗೌರವ ನೀಡುವ ಉದ್ದೇಶದಿಂದ ಅಕ್ಷರ ಮಾತೆ ಸಾವಿತ್ರಿಬಾಯಿ ಫುಲೆ ಅವರ ಹೆಸರಿನಲ್ಲಿ ಸೆಪ್ಟೆಂಬರ್ 5ರಂದು ನಡೆಯುವ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ.
ಪ್ರಶಸ್ತಿ ಪುರಸ್ಕೃತರಿಗೆ ಸರ್ಕಾರದ ಆದೇಶದಂತೆ ತಲಾ 25,000 ನಗದು ಪುರಸ್ಕಾರ ನೀಡಲಾಗುತ್ತದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಇಬ್ಬರು ಶಿಕ್ಷಕರು ರಾಜ್ಯಮಟ್ಟದ ಗೌರವಕ್ಕೆ ಪಾತ್ರರಾಗಿರುವುದು ಜಿಲ್ಲೆಯ ಶಿಕ್ಷಣ ಕ್ಷೇತ್ರಕ್ಕೆ ಹೆಮ್ಮೆಯ ಸಂಗತಿಯಾಗಿದೆ.