ರಾಜ್ಯ ಕಾಂಗ್ರೆಸ್ ದೆಹಲಿ ಚಲೋ: ದೇಶದ ಏಕತೆ ಮತ್ತು ಭದ್ರತೆಗೆ ಬೆದರಿಕೆ ಎಂಬ ಮೋದಿ ಹೇಳಿಕೆ ವಿಚಾರ: ಪಿಎಂ ಮೋದಿ ಅವರ ಹೇಳಿಕೆ ಅಚ್ಚರಿ ಉಂಟು ಮಾಡಿದೆ- ಸಿಎಂ ಸಿದ್ದರಾಮಯ್ಯ ಕಿಡಿ

ತೆರಿಗೆ ಹಂಚಿಕೆಯೂ ಸೇರಿದಂತೆ ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯವನ್ನು ಪ್ರತಿಭಟಿಸಿ ನಮ್ಮ ಸರ್ಕಾರ ನಡೆಸಿದ್ದ ‘’ದೆಹಲಿ ಚಲೋ’’ ಹೋರಾಟ ದೇಶದ ಏಕತೆ ಮತ್ತು ಭದ್ರತೆಗೆ ಬೆದರಿಕೆ ಒಡ್ಡಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಅಚ್ಚರಿ ಉಂಟು ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದೇ ಮೋದಿಯವರು ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಯುಪಿಎ ಸರ್ಕಾರದ ವಿರುದ್ಧ ಪುಂಖಾನುಪುಂಖವಾಗಿ ನೀಡಿರುವ ಹೇಳಿಕೆಗಳನ್ನು ಅವರ ಗಮನಕ್ಕೆ ತರಬಯಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರೇ, ನಿಮ್ಮ ಹೇಳಿಕೆಗಳು ದೇಶದ ಏಕತೆ ಮತ್ತು ಭದ್ರತೆಗೆ ಬೆದರಿಕೆ ಒಡ್ಡಿರಲಿಲ್ಲವೇ? ದಯವಿಟ್ಟು ಉತ್ತರ ಕೊಡಿ ಎಂದು ಒತ್ತಾಯಿಸಿದ್ದಾರೆ.

ಕೇಂದ್ರ ಹಣಕಾಸು ಆಯೋಗದ ವಿರುದ್ದ ಮೊದಲು ಮಾತನಾಡಿದ್ದೇ ನರೇಂದ್ರ ಮೋದಿ ಅವರು. ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ 2012ರ ಡಿಸೆಂಬರ್ ಆರರಂದು ಹೇಳಿಕೆಯೊಂದನ್ನು ನೀಡಿ ‘’ಗುಜರಾತ್ ರಾಜ್ಯ ಕೇಂದ್ರ ಸರ್ಕಾರಕ್ಕೆ ರೂ.60,000 ಕೋಟಿ ನೀಡುತ್ತಿದೆ, ಇದರಲ್ಲಿ ನಮಗೆ ವಾಪಸ್ ಬಂದದ್ದು ಎಷ್ಟು? ಗುಜರಾತ್ ಭಿಕ್ಷುಕ ರಾಜ್ಯವೇ? ಎಂದು ಪ್ರಶ್ನಿಸಿದ್ದರು ಎಂದು ತಿಳಿದ್ದಾರೆ.

2008ರಲ್ಲಿ ವಡೋದರಾದ ಸಮಾರಂಭದಲ್ಲಿ ಮಾತನಾಡುತ್ತಾ ‘ಗುಜರಾತ್ ರಾಜ್ಯ ಪ್ರತಿವರ್ಷ ರೂ.40,000 ಕೋಟಿ ರೂ.ಗಳನ್ನು ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಪಾವತಿಸುತ್ತಿದೆ. ಅದರಲ್ಲಿ ಕೇವಲ ಶೇಕಡಾ 2.5ರಷ್ಟು ಮಾತ್ರ ರಾಜ್ಯಕ್ಕೆ ವಾಪಸು ನೀಡಲಾಗುತ್ತದೆ. ಇಷ್ಟು ಜುಜುಬಿ ಮೊತ್ತವನ್ನು ವಾಪಸು ನೀಡುವ ಬದಲಿಗೆ ಒಂದು ವರ್ಷದ ಅವಧಿಗೆ ನಮ್ಮ ತೆರಿಗೆಯನ್ನು ನಾವೇ ಬಳಸಿಕೊಳ್ಳಲು ಅವಕಾಶ ನೀಡಬಾರದೇಕೆ? ಎಂದು ಕೇಂದ್ರ ಸರ್ಕಾರದ ಅಸ್ತಿತ್ವನ್ನೇ ಪ್ರಶ್ನಿಸಿದ್ದರು ಎಂದು ಹೇಳಿದ್ದಾರೆ.

ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ 2012ರ ಜನವರಿ ಒಂಭತ್ತರಂದು ನಡೆದಿದ್ದ ಹತ್ತನೇ ಪ್ರವಾಸಿ ಭಾರತೀಯ ಸಮ್ಮೇಳನದಲ್ಲಿ ಮಾತನಾಡುತ್ತಾ ‘ಕೇಂದ್ರ ಸರ್ಕಾರ ಇಲ್ಲವೆ ಪ್ರಧಾನಮಂತ್ರಿಯವರಿಂದ ನಮಗೆ ಚಿಕ್ಕಾಸಿನ ನೆರವು ಸಿಗುತ್ತಿಲ್ಲ. ನಾವು ನಮ್ಮ ಸಂಪನ್ಮೂಲವನ್ನೇ ನೆಚ್ಚಿಕೊಂಡಿದ್ದೇವೆ’ ಎಂದು ವಿದೇಶಿ ಗಣ್ಯರಿದ್ದ ವೇದಿಕೆಯಲ್ಲಿಯೇ ದೂರಿದ್ದರು ಎಂದು ತಿಳಿಸಿದ್ದಾರೆ.

ಹದಿನಾಲ್ಕನೇ ಹಣಕಾಸು ಆಯೋಗದ ಜೊತೆಗಿನ ಮಾತುಕತೆಯಲ್ಲಿ ಇದೇ ನರೇಂದ್ರ ಮೋದಿಯವರು ‘ಕೇಂದ್ರ ಸರ್ಕಾರ ರಾಜ್ಯದಿಂದ ಸಂಗ್ರಹಿಸುವ ತೆರಿಗೆಯಲ್ಲಿ ಕನಿಷ್ಠ ಶೇಕಡಾ 32 ರಿಂದ 50ರ ವರೆಗೆ ರಾಜ್ಯಕ್ಕೆ ಪಾಲು ನೀಡಬೇಕು’ ಎಂದು ವಾದಿಸಿದ್ದರು ಎಂದು ಹೇಳಿದ್ದಾರೆ.

‘’ತೆರಿಗೆ ಹಂಚಿಕೆಗೆ ಅನುಸರಿಸಲಾಗುತ್ತಿರುವ ಮಾನದಂಡವನ್ನು ಹಣಕಾಸು ಆಯೋಗ ಬದಲಾವಣೆ ಮಾಡಬೇಕು, ಉತ್ತಮ ರೀತಿಯಲ್ಲಿ ಹಣಕಾಸು ನಿರ್ವಹಣೆ ಮತ್ತು ಅಭಿವೃದ್ದಿ ಕಾರ್ಯಗಳನ್ನು ನಡೆಸುವ ರಾಜ್ಯಗಳಿಗೆ ಹೆಚ್ಚಿನ ಪ್ರೊತ್ಸಾಹ ನೀಡಬೇಕು. ಹಣಕಾಸು ನಿರ್ವಹಣೆಯಲ್ಲಿ ಸೋತಿರುವ ರಾಜ್ಯಗಳಿಗೆ ಹೆಚ್ಚಿನ ಉತ್ತೇಜನ ನೀಡಿ ಉತ್ತಮ ರೀತಿಯಲ್ಲಿ ಹಣಕಾಸು ನಿರ್ವಹಣೆ ಮಾಡುತ್ತಿರುವ ರಾಜ್ಯಗಳನ್ನು ನಿರ್ಲಕ್ಷಿಸುವ ಈಗಿನ ತೆರಿಗೆ ಹಂಚಿಕೆ ವಿಧಾನವನ್ನು ಬದಲಿಸಬೇಕಾಗಿದೆ. ಮೂಲಸೌಕರ್ಯಗಳ ಸುಧಾರಣೆ ಮತ್ತು ದೇಶದ ಅಭಿವೃದ್ದಿಗೆ ಗಣನೀಯ ಕೊಡುಗೆಗಳನ್ನು ನೀಡುವ ರಾಜ್ಯಗಳಿಗೆ ಹೆಚ್ಚಿನ ಉತ್ತೇಜನ ನೀಡಬೇಕು’’ ಎಂದು ಹಣಕಾಸು ಆಯೋಗದ ಮುಂದೆ ವಾದ ಮಾಡಿದ್ದರು. ಇದು ಕೇಂದ್ರ ಸರ್ಕಾರದ ವಿರುದ್ಧದ ನಿಲುವಲ್ಲವೇ? ಎಂದು ಪ್ರಶ್ನೆ ಮಾಡಿದ್ದಾರೆ.

ಇದೇ ರೀತಿ ಕೇಂದ್ರ ಸರ್ಕಾರ ತನ್ನನ್ನು ರಕ್ಷಿಸಿಕೊಳ್ಳಲು ಮತ್ತು ವಿರೋಧಿಗಳನ್ನು ಹಣಿಯಲು ಸಿಬಿಐ ಸಂಸ್ಥೆಯನ್ನು ದುರುಪಯೋಗ ಮಾಡುತ್ತಿದೆ ಎಂದು ಗುಜರಾತ್ ಮುಖ್ಯಮಂತ್ರಿಯಾಗಿ ಆರೋಪಿಸುತ್ತಿದ್ದ ನರೇಂದ್ರ ಮೋದಿಯವರು ಈಗ ಸಿಬಿಐ, ಇಡಿ ಮತ್ತು ಆದಾಯ ತೆರಿಗೆ ಇಲಾಖೆಯ ಪ್ರಾಮಾಣಿಕತೆಯನ್ನು ಪ್ರಶ್ನಿಸಿದವರನ್ನು ದೇಶದ್ರೊಹಿಗಳೆಂದು ದೂರುತ್ತಿದ್ದಾರೆ ಎಂದರು.

ಯುಪಿಎ ಸರ್ಕಾರ ವಿದೇಶಿ ನೇರ ಬಂಡವಾಳ ಹೂಡಿಕೆಯ ಕಾನೂನನ್ನು ಜಾರಿಗೆ ತಂದಾಗ ಅದನ್ನು ವಿರೋಧಿಸಿದ್ದ ನರೇಂದ್ರ ಮೋದಿಯವರು ‘ಇನ್ನು ಮುಂದೆ ನಿತ್ಯ ಬಳಕೆಯ ಉಪ್ಪು, ಸಾಂಬಾರ ಪದಾರ್ಥಗಳನ್ನೂ ವಿದೇಶಿಯರೇ ಮಾರುತ್ತಾರೆ’ ಎಂದು ವ್ಯಂಗ್ಯವಾಡಿದ್ದರು. ಎಫ್ ಡಿ ಐ ನಿಂದಾಗಿ ದೇಶದ ಸಣ್ಣ ಸಣ್ಣ ಅಂಗಡಿ ಮಾಲೀಕರು ಮತ್ತು ಉತ್ಪಾದನಾ ಕ್ಷೇತ್ರದಲ್ಲಿರುವವರು ನಿರುದ್ಯೋಗಿಗಳಾಗುತ್ತಾರೆ ಎಂದು ಆತಂಕ ವ್ಯಕ್ತಪಡಿಸಿದ್ದರು ಎಂದು ತಿಳಿಸಿದ್ದಾರೆ.

ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯತ್ತಿದ್ದಾಗ ನರೇಂದ್ರ ಮೋದಿಯವರು ‘ಯುಪಿಎ ಸರ್ಕಾರ ಮತ್ತು ರೂಪಾಯಿ ಉರುಳಿ ಕೆಳಗೆ ಬೀಳುವುದರದಲ್ಲಿ ಪೈಪೋಟಿ ನಡೆಸುವಂತಿದೆ’ ಎಂದು ವ್ಯಂಗ್ಯವಾಡಿದ್ದರು. ಪೆಟ್ರೋಲ್ ಬೆಲೆ ಏರಿಕೆಯಿಂದಾಗಿ ಗುಜರಾತ್ ಜನ ಬವಣೆ ಪಡುವಂತಾಗಿದೆ ಎಂದು ಗೋಳಿಟ್ಟಿದ್ದ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾದ ನಂತರದ ದಿನಗಳಲ್ಲಿ ಕಚ್ಚಾ ತೈಲದ ಬೆಲೆ ಇಳಿಯುತ್ತಿದ್ದರೂ ಪೆಟ್ರೋಲ್ ಬೆಲೆ ಏರಿಸುತ್ತಲೇ ಹೋದರು. ಇದರಿಂದ ಗುಜರಾತಿಗಳು ಮಾತ್ರವಲ್ಲ ಇಡೀ ದೇಶದ ಜನತೆ ಗೋಳಾಡಬೇಕಾಯಿತು ಎಂದರು.

ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಆಧಾರ್ ಗುರುತಿನ ಚೀಟಿಯ ಪ್ರಬಲ ವಿರೋಧಿಯಾಗಿದ್ದ ನರೇಂದ್ರ ಮೋದಿಯವರು ‘ಆಧಾರ್ ಕಾರ್ಡ್ ಗೆ ಭವಿಷ್ಯದ ಮುನ್ನೋಟವೇ ಇಲ್ಲ, ಇದು ಕೇವಲ ರಾಜಕೀಯ ಗಿಮಿಕ್ ಎಂದು ಟೀಕಿಸಿದ್ದರು. ಅದೇ ಮೋದಿಯವರು ಪ್ರಧಾನಿಯಾದ ನಂತರ ತಮ್ಮ ನಿಲುವು ಬದಲಿಸಿ ಆಧಾರ್ ಗುರುತಿನ ಚೀಟಿಯ ಪ್ರಬಲ ಪ್ರತಿಪಾದಕರಾಗಿದ್ದಾರೆ ಎಂದಿದ್ದಾರೆ.

ಇಂತಹ ಹತ್ತಾರು ಯೂ ಟರ್ನ್ ಗಳನ್ನು ನಾನು ಪಟ್ಟಿ ಮಾಡಿಕೊಡಬಹುದು. ಆ ದಿನಗಳಲ್ಲಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದ, ಟೀಕಿಸಿದ್ದ ನರೇಂದ್ರ ಮೋದಿ ಅವರ ಹೇಳಿಕೆಗಳಿಂದ ದೇಶದ ಏಕತೆ ಮತ್ತು ಭದ್ರತೆಗೆ ಎದುರಾಗದ ಬೆದರಿಕೆ ಈಗ ನಮ್ಮ ಪ್ರತಿಭಟನೆಯಿಂದ ಹೇಗೆ ಎದುರಾಯಿತು ಎನ್ನುವುದನ್ನು ಪ್ರಧಾನಿ ನರೇಂದ್ರ ಮೋದಿಯವರೇ ವಿವರಿಸಬೇಕು. ಈ ಆತ್ಮವಂಚನೆಯ ನಡವಳಿಕೆಯನ್ನು ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಹೆಚ್.ಡಿ. ಕುಮಾರಸ್ವಾಮಿ ಅವರೂ ಮುಂದುವರಿಸಿದ್ದಾರೆ ಎಂದರು.

2022ರ ಡಿಸೆಂಬರ್ ತಿಂಗಳಲ್ಲಿ ವಿಧಾನಸಭೆಯಲ್ಲಿಯೇ ನಾನು ಮಾತನಾಡುತ್ತಾ “15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದಾಗ ಆಗ ಮುಖ್ಯಮಂತ್ರಿಗಳಾಗಿದ್ದ ಬೊಮ್ಮಾಯಿಯವರು ಅನ್ಯಾಯವಾಗಿರುವುದು ನಿಜ ಎಂದು ಒಪ್ಪಿಕೊಂಡಿರುವುದು ಸದನದ ದಾಖಲೆಯಲ್ಲಿದೆ, ಪತ್ರಿಕೆಗಳಲ್ಲಿಯೂ ಪ್ರಕಟವಾಗಿದೆ. ಇದೇ ಬೊಮ್ಮಾಯಿಯವರು ಹಣಕಾಸು ಆಯೋಗದಿಂದ ಅನ್ಯಾಯವೇ ಆಗಿಲ್ಲ ಎಂದು ಕೂಗಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಇನ್ನೊಬ್ಬರು ಹೆಚ್ ಡಿ.ಕುಮಾರಸ್ವಾಮಿ ಅವರಿಗೆ ಸತ್ಯ ಮಾತನಾಡಿಯೇ ಗೊತ್ತಿಲ್ಲ. ಕೇಂದ್ರ ಸರ್ಕಾರ ತೆರಿಗೆ ಹಂಚಿಕೆ ಮಾಡುವಾಗ ಗುಜರಾತ್ ರಾಜ್ಯಕ್ಕೆ ಹೆಚ್ಚಿನ ಪಾಲು ನೀಡಿ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದ್ದರು. ಈಗ ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದು ಹೇಳುತ್ತಿರುವ ಕುಮಾರಸ್ವಾಮಿ ಗುಜರಾತ್ ರಾಜ್ಯದ ಹೆಸರೇ ಎತ್ತುತ್ತಿಲ್ಲ. ಸುಳ್ಳಿನಲ್ಲಿ ಇವರು ಮೋದಿಯವರ ಜೊತೆಯಲ್ಲಿ ಪೈಪೋಟಿಗಿಳಿದಂತಿದೆ ಎಂದರು.

Ramesh Babu

Journalist

Recent Posts

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

2 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

2 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

10 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

23 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

1 day ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

1 day ago