ರಾಮನಗರ: ಬೆಂಗಳೂರು ದಕ್ಷಿಣ ತಾಲೂಕಿನ ಮಾದಾಪಟ್ಟಣದಲ್ಲಿರುವ ಕಾವೇರಿ ಜಲ್ಲಿ ಕ್ರಷರ್ನ ಕಲ್ಲು ಕ್ವಾರಿಯಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದ ಭೀಕರ ದುರಂತದಲ್ಲಿ ಬಂಡೆ ಕುಸಿದು ಏಳು ಕಾರ್ಮಿಕರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಳಿಗ್ಗೆ ಸುಮಾರು 7.30ರ ವೇಳೆಗೆ ಕಾರ್ಮಿಕರು ಎಂದಿನಂತೆ ಕ್ವಾರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ, ಇಟಾಚಿ ಯಂತ್ರದ ಮೇಲ್ಭಾಗದಿಂದ ಹಠಾತ್ತನೆ ಬೃಹತ್ ಬಂಡೆ ಕುಸಿದು ಬಿದ್ದಿದೆ. ಪರಿಣಾಮ ಸ್ಥಳದಲ್ಲೇ ಹಲವು ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದು, ಏಳು ಮಂದಿ ಮೃತಪಟ್ಟಿದ್ದಾರೆ. ಇನ್ನೂ ಕೆಲವರು ಬಂಡೆಯಡಿ ಸಿಲುಕಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಮಾಹಿತಿ ತಿಳಿಯುತ್ತಿದ್ದಂತೆಯೇ ತಾವರೆಕೆರೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರೆಲ್ಲರೂ ದಿನಗೂಲಿ ಕಾರ್ಮಿಕರಾಗಿದ್ದು, ಕ್ರಷರ್ ಸಮೀಪದಲ್ಲೇ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ. ಮೃತದೇಹಗಳನ್ನು ಹೊರತೆಗೆಯುವ ಕಾರ್ಯಾಚರಣೆ ಮುಂದುವರಿದಿದೆ.
ಪ್ರಾಥಮಿಕ ಮಾಹಿತಿಯಂತೆ, ಈ ಕಾವೇರಿ ಜಲ್ಲಿ ಕ್ರಷರ್ ಆನಂದಸ್ವಾಮಿ ಅವರಿಗೆ ಸೇರಿದ್ದು, ಪ್ರಕರಣ ಸಂಬಂಧ ಮಾಲೀಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದುರಂತದ ಕುರಿತು ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಈ ಘಟನೆ ಅತ್ಯಂತ ಆಘಾತಕಾರಿ ಮತ್ತು ನೋವಿನ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.
ಮೃತ ಕಾರ್ಮಿಕರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಅವರು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಕ್ವಾರಿಗಳಲ್ಲಿ ಸುರಕ್ಷತಾ ನಿಯಮಗಳ ಅನುಷ್ಠಾನ ಹಾಗೂ ಸರ್ಕಾರದ ಮೇಲ್ವಿಚಾರಣೆಯ ವೈಫಲ್ಯ ಈ ದುರಂತದಿಂದ ಪ್ರಶ್ನೆಗೆ ಒಳಗಾಗಿದೆ ಎಂದು ಹೇಳಿರುವ ಅವರು, ಸುರಕ್ಷತಾ ನಿಯಮಗಳ ಉಲ್ಲಂಘನೆ ಅಥವಾ ಅಧಿಕಾರಿಗಳ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದ್ದರೆ ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಅಲ್ಲದೆ, ಮೃತರ ಕುಟುಂಬಗಳಿಗೆ ಸರ್ಕಾರ ತಕ್ಷಣ ಸಮರ್ಪಕ ಪರಿಹಾರ ಘೋಷಿಸಬೇಕು, ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು ಹಾಗೂ ರಾಜ್ಯದ ಎಲ್ಲಾ ಕ್ವಾರಿಗಳಲ್ಲಿ ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ ಇಂತಹ ದುರಂತಗಳು ಮರುಕಳಿಸದಂತೆ ಶಾಶ್ವತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…
ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…
ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…
ಚಿಕ್ಕನಾಯಕನಹಳ್ಳಿ: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…
ಚಿಕ್ಕನಾಯಕನಹಳ್ಳಿ: ರೈತರ ವಿಕಸನಕ್ಕೆಂದೇ ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನಲ್ಲಿ ಪ್ರಯಾಣಿಕರ ಅನುಭವವನ್ನು ಇನ್ನಷ್ಟು ಸುಗಮ, ಅನುಕೂಲಕರ ಮತ್ತು ವೈಯಕ್ತಿಕ ಅಗತ್ಯಗಳಿಗೆ ಹೊಂದುವಂತೆ…