ರಾಮನಗರ: ಬೆಂಗಳೂರು ದಕ್ಷಿಣ ತಾಲೂಕಿನ ಮಾದಾಪಟ್ಟಣದಲ್ಲಿರುವ ಕಾವೇರಿ ಜಲ್ಲಿ ಕ್ರಷರ್ನ ಕಲ್ಲು ಕ್ವಾರಿಯಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದ ಭೀಕರ ದುರಂತದಲ್ಲಿ ಬಂಡೆ ಕುಸಿದು ಏಳು ಕಾರ್ಮಿಕರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಳಿಗ್ಗೆ ಸುಮಾರು 7.30ರ ವೇಳೆಗೆ ಕಾರ್ಮಿಕರು ಎಂದಿನಂತೆ ಕ್ವಾರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ, ಇಟಾಚಿ ಯಂತ್ರದ ಮೇಲ್ಭಾಗದಿಂದ ಹಠಾತ್ತನೆ ಬೃಹತ್ ಬಂಡೆ ಕುಸಿದು ಬಿದ್ದಿದೆ. ಪರಿಣಾಮ ಸ್ಥಳದಲ್ಲೇ ಹಲವು ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದು, ಏಳು ಮಂದಿ ಮೃತಪಟ್ಟಿದ್ದಾರೆ. ಇನ್ನೂ ಕೆಲವರು ಬಂಡೆಯಡಿ ಸಿಲುಕಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಮಾಹಿತಿ ತಿಳಿಯುತ್ತಿದ್ದಂತೆಯೇ ತಾವರೆಕೆರೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರೆಲ್ಲರೂ ದಿನಗೂಲಿ ಕಾರ್ಮಿಕರಾಗಿದ್ದು, ಕ್ರಷರ್ ಸಮೀಪದಲ್ಲೇ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ. ಮೃತದೇಹಗಳನ್ನು ಹೊರತೆಗೆಯುವ ಕಾರ್ಯಾಚರಣೆ ಮುಂದುವರಿದಿದೆ.
ಪ್ರಾಥಮಿಕ ಮಾಹಿತಿಯಂತೆ, ಈ ಕಾವೇರಿ ಜಲ್ಲಿ ಕ್ರಷರ್ ಆನಂದಸ್ವಾಮಿ ಅವರಿಗೆ ಸೇರಿದ್ದು, ಪ್ರಕರಣ ಸಂಬಂಧ ಮಾಲೀಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದುರಂತದ ಕುರಿತು ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಈ ಘಟನೆ ಅತ್ಯಂತ ಆಘಾತಕಾರಿ ಮತ್ತು ನೋವಿನ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.
ಮೃತ ಕಾರ್ಮಿಕರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಅವರು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಕ್ವಾರಿಗಳಲ್ಲಿ ಸುರಕ್ಷತಾ ನಿಯಮಗಳ ಅನುಷ್ಠಾನ ಹಾಗೂ ಸರ್ಕಾರದ ಮೇಲ್ವಿಚಾರಣೆಯ ವೈಫಲ್ಯ ಈ ದುರಂತದಿಂದ ಪ್ರಶ್ನೆಗೆ ಒಳಗಾಗಿದೆ ಎಂದು ಹೇಳಿರುವ ಅವರು, ಸುರಕ್ಷತಾ ನಿಯಮಗಳ ಉಲ್ಲಂಘನೆ ಅಥವಾ ಅಧಿಕಾರಿಗಳ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದ್ದರೆ ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಅಲ್ಲದೆ, ಮೃತರ ಕುಟುಂಬಗಳಿಗೆ ಸರ್ಕಾರ ತಕ್ಷಣ ಸಮರ್ಪಕ ಪರಿಹಾರ ಘೋಷಿಸಬೇಕು, ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು ಹಾಗೂ ರಾಜ್ಯದ ಎಲ್ಲಾ ಕ್ವಾರಿಗಳಲ್ಲಿ ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ ಇಂತಹ ದುರಂತಗಳು ಮರುಕಳಿಸದಂತೆ ಶಾಶ್ವತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವೈದ್ಯರ ನಿಯಂತ್ರಣ ಮೀರಿ ಹೋಗುತ್ತಿರುವ ಆರೋಗ್ಯ ಕ್ಷೇತ್ರ........ ವೈದ್ಯರ ದಿನದ ಸಂದರ್ಭದಲ್ಲಿ ಅತ್ಯಂತ ಆತಂಕಕಾರಿ ಬೆಳವಣಿಗೆಯ ಬಗ್ಗೆ ನಾವು ಯೋಚಿಸಬೇಕಿದೆ.…
ದೊಡ್ಡಬಳ್ಳಾಪುರ: ಜಲಸಂಪನ್ಮೂಲ ಇಲಾಖೆ ಹಾಗೂ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ವತಿಯಿಂದ ಜಲಸಂಪನ್ಮೂಲ ಸಚಿವರು ಹಾಗೂ ಬೆಂಗಳೂರು ದಕ್ಷಿಣ ಮತ್ತು…
ದೊಡ್ಡಬಳ್ಳಾಪುರ: ಶಾಸಕ ಧೀರಜ್ ಮುನಿರಾಜು ಅವರು ತಮ್ಮ ಮೂರು ವರ್ಷದ ಅವಧಿಯ ಅಭಿವೃದ್ಧಿ ಕಾರ್ಯಗಳ ಕುರಿತು ಪ್ರೋಗ್ರೆಸ್ ಕಾರ್ಡ್ (ರಿಪೋರ್ಟ್…
ದೊಡ್ಡಬಳ್ಳಾಪುರ: ತಾಲೂಕಿನ ಮೀನುಗಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ತಮ್ಮ ಗಮನಕ್ಕೆ ಬಂದಿದ್ದು, ಅವುಗಳನ್ನು ಹಂತಹಂತವಾಗಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು…
ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸ ಪಾವತಿ ಅಡಿ ಮಾವು ಖರೀದಿಗೆ ನೋಂದಣಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಎಂದರೆ ರೇಷ್ಮೆ ಸೀರೆ, ಹತ್ತಿ ಬಟ್ಟೆ ಮತ್ತು ನೇಕಾರಿಕೆಯ ಪರಂಪರೆಗೆ ಹೆಸರಾದ ನಗರ. ಒಂದು…