ಸಂಸತ್ತಿನ ಸದಸ್ಯತ್ವವನ್ನು ಮರುಸ್ಥಾಪಿಸಿದ ನಂತರ ನಗುನಗುತಾ ರಾಹುಲ್ ಗಾಂಧಿ ಅವರು ಸಂಸತ್ತನ್ನು ತಲುಪಿದರು. ಕಾಂಗ್ರೆಸ್ ಕಚೇರಿಯಲ್ಲಿ ಮುಗಿಲು ಮುಟ್ಟಿದ ಸಂಭ್ರಮ. ಸಿಹಿ ಹಂಚಿಕೆ ಮಾಡಿ ಸಂಭ್ರಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ. ಸಂಸತ್ತಿಗೆ ಆಗಮಿಸಿದ ಕೂಡಲೇ ಕಾಂಗ್ರೆಸ್ ನಾಯಕರೊಂದಿಗೆ ಆವರಣದಲ್ಲಿ ಗಾಂಧಿ ಪ್ರತಿಮೆಗೆ ನಮನ ಸಲ್ಲಿಸಿ ಆಶೀರ್ವಾದ ಪಡೆದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಲೋಕಸಭಾ ಸದಸ್ಯತ್ವದ ಅಮಾನತು ಆಗಸ್ಟ್ 7 ರಂದು ಹಿಂತೆಗೆದುಕೊಳ್ಳಲಾಯಿತು ಮತ್ತು ಮಾನನಷ್ಟ ಮೊಕದ್ದಮೆಯಲ್ಲಿ ಸುಪ್ರೀಂ ಕೋರ್ಟ್ ಅವರ ಶಿಕ್ಷೆಗೆ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ಲೋಕಸಭೆ ಸೆಕ್ರೆಟರಿಯೇಟ್ ಅಧಿಸೂಚನೆಯನ್ನು ಹೊರಡಿಸಿದ ನಂತರ ಕೇರಳದ ವಯನಾಡಿನ ಸಂಸದ ಎಂಬ ಸ್ಥಾನಮಾನವನ್ನು ಪುನಃಸ್ಥಾಪಿಸಲಾಗಿದೆ.
ಮೋದಿ ಉಪನಾಮ ಟೀಕೆ ಪ್ರಕರಣಕ್ಕೆ ಸಂಬಂಧಿಸಿ ಸೂರತ್ ನ್ಯಾಯಾಲಯವು ರಾಹುಲ್ಗಾಂಧಿ ಅವರಿಗೆ ವಿಧಿಸಿದ್ದ 2 ವರ್ಷಗಳ ಜೈಲು ಶಿಕ್ಷೆ ಪ್ರಕರಣಕ್ಕೆ ಸುಪ್ರಿಂಕೋರ್ಟ್ ತಡೆಯಾಜ್ಞೆ ವಿಧಿಸಿದೆ.
ರಾಹುಲ್ ಅವರು 2019ರ ಏಪ್ರಿಲ್ 13 ರಂದು ಕೋಲಾರದಲ್ಲಿ ನಡೆದ ಲೋಕಸಭಾ ಚುಣಾವಣಾ ಪ್ರಚಾರ ಸಭೆಯಲ್ಲಿ ಭಾಷಣ ಮಾಡಿದ್ದರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕಿದೆ ಎಂದು ಪ್ರಶ್ನಿಸಿದ್ದರು.
ಈ ಬಗ್ಗೆ ಗುಜರಾತ್ ಶಾಸಕ ಪೂರ್ಣೇಶ್ ಮೋದಿಯಿಂದ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಈ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರಿಗೆ 2 ವರ್ಷ ಶಿಕ್ಷೆಗೆ ಗುರಿಯಾಗಿ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದರು. ಈಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರಿಂಕೋರ್ಟ್ ತಡೆಯಾಜ್ಞೆ ವಿಧಿಸಿದ ಹಿನ್ನೆಲೆ ಲೋಕಸಭೆ ಸದಸ್ಯತ್ವ ಮರುಸ್ಥಾಪಿಸಲಾಗಿದೆ.