“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ, ಕರ್ನಾಟಕ ಪೊಲೀಸ್ ಇಲಾಖೆ ರಾಜ್ಯದ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಖಾಸಗಿ ಫೋಟೋಗಳು ಹಾಗೂ ವಿಡಿಯೋಗಳನ್ನು ಅನುಮತಿಯಿಲ್ಲದೆ ಪ್ರಕಟಿಸುವುದು, ಹಂಚಿಕೊಳ್ಳುವುದು ಅಥವಾ ಪ್ರಸಾರ ಮಾಡುವ ಪ್ರಕರಣಗಳಲ್ಲಿ ಕಠಿಣ ಮತ್ತು ತ್ವರಿತ ಕ್ರಮ ಕೈಗೊಳ್ಳುವಂತೆ ಆದೇಶ ಹೊರಡಿಸಿದೆ ಎಂದರು.

ಈ ಆದೇಶದಲ್ಲಿ, ಯಾವುದೇ ಫೋಟೋ ಅಥವಾ ವಿಡಿಯೋವನ್ನು ಸೆರೆಹಿಡಿಯಲು ಅಥವಾ ದಾಖಲಿಸಲು ನೀಡಿದ ಒಪ್ಪಿಗೆಯು ಅದನ್ನು ಇತರರಿಗೆ ಹಂಚಿಕೊಳ್ಳಲು ಅಥವಾ ಪ್ರಸಾರ ಮಾಡಲು ನೀಡಿದ ಒಪ್ಪಿಗೆಯೆಂದು ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಅಂತಹ ವಿಷಯವನ್ನು ಸಂಬಂಧಿತ ವ್ಯಕ್ತಿಯ ಅನುಮತಿಯಿಲ್ಲದೆ ಹಂಚುವುದು, ಪ್ರಕಟಿಸುವುದು, ಫಾರ್ವರ್ಡ್ ಮಾಡುವುದು ಅಥವಾ ಪ್ರಸಾರ ಮಾಡುವುದು ಸಂಜ್ಞೇಯ (Cognizable) ಅಪರಾಧವಾಗಿದ್ದು, ಮೂಲತಃ ಅದು ಒಪ್ಪಿಗೆಯೊಂದಿಗೆ ದಾಖಲಾಗಿದ್ದರೂ ಸಹ ಅಪರಾಧವೇ ಆಗಿರುತ್ತದೆ ಎಂದು ತಿಳಿಸಿದ್ದಾರೆ.

ಅನುಮತಿಯಿಲ್ಲದೆ ಖಾಸಗಿ ವಿಷಯಗಳನ್ನು ಹಂಚುವ ಪ್ರಕರಣಗಳು, ಸಾಮಾನ್ಯವಾಗಿ ‘ರಿವೆಂಜ್ ಪೋರ್ನೋಗ್ರಫಿ’, ‘ಸೆಕ್ಸ್‌ಟಾರ್ಷನ್’ ಹಾಗೂ ‘ಬ್ಲ್ಯಾಕ್‌ಮೇಲ್ ವಿಡಿಯೋ’ ಎಂದು ಕರೆಯಲ್ಪಡುವ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇಂತಹ ಪ್ರಕರಣಗಳಲ್ಲಿ ಅನ್ವಯವಾಗುವಂತೆ ಭಾರತೀಯ ನ್ಯಾಯ ಸಂಹಿತೆ (BNS), 2023 ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ (IT Act), 2000ರ ಸಂಬಂಧಿತ ವಿಧಿಗಳಡಿ, ಅಗತ್ಯವಿದ್ದಲ್ಲಿ BNSನ ಸೆಕ್ಷನ್ 77 ಹಾಗೂ IT Actನ ಸೆಕ್ಷನ್ 66E, 67 ಮತ್ತು 67A ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ಹೇಳಿದ್ದಾರೆ.

ಈ ಸ್ಥಾಯಿ ಆದೇಶವು, ವಿಡಿಯೋ ಅಥವಾ ಫೋಟೋ ದಾಖಲಿಸಲು ಹಿಂದೆ ಒಪ್ಪಿಗೆ ನೀಡಲಾಗಿತ್ತು ಎಂಬ ಕಾರಣವನ್ನು ಉಲ್ಲೇಖಿಸಿ ದೂರು ದಾಖಲಿಸಲು ನಿರಾಕರಿಸುವುದು ಅಥವಾ ವಿಳಂಬ ಮಾಡುವುದು ಸಂಪೂರ್ಣವಾಗಿ ಅಸಂಗತ ಎಂದು ತಿಳಿಸಿದೆ. ಬೆದರಿಕೆ, ಸುಲಿಗೆ, ಲೈಂಗಿಕ ಅನುಕೂಲತೆಗಳ ಬೇಡಿಕೆ ಅಥವಾ ಇತರೆ ಒತ್ತಡದ ಸಂದರ್ಭಗಳಲ್ಲಿ ಸುಲಿಗೆ ಮತ್ತು ಕ್ರಿಮಿನಲ್ ಬೆದರಿಕೆಗಳಿಗೆ ಸಂಬಂಧಿಸಿದ ಹೆಚ್ಚುವರಿ ವಿಧಿಗಳನ್ನೂ ಅನ್ವಯಿಸಬೇಕು ಎಂದು ಸೂಚಿಸಲಾಗಿದೆ ಎಂದರು.

ಘಟನೆ ನಡೆದ ಪ್ರದೇಶದ ವ್ಯಾಪ್ತಿಗೆ ಸಂಬಂಧಿಸಿದ ಸಮಸ್ಯೆ ಇದ್ದರೆ, ಸಂಬಂಧಿತ ಪೊಲೀಸ್ ಠಾಣೆಗಳು ಮೊದಲು ‘ಜೀರೋ-ಎಫ್‌ಐಆರ್’ ದಾಖಲಿಸಿ, ನಂತರ ವಿಳಂಬವಿಲ್ಲದೆ ಸೂಕ್ತ ಪೊಲೀಸ್ ಠಾಣೆಗೆ ವರ್ಗಾಯಿಸಬೇಕು ಎಂದು ಹೇಳಿದ್ದಾರೆ.

ಅಧಿಕಾರಿಗಳಿಗೆ ಆಕ್ಷೇಪಾರ್ಹ ವಿಷಯವನ್ನು ತಕ್ಷಣ ತೆಗೆದುಹಾಕಲು ಅಥವಾ ನಿರ್ಬಂಧಿಸಲು ಕ್ರಮ ಕೈಗೊಳ್ಳುವುದು, ಎಲೆಕ್ಟ್ರಾನಿಕ್ ಸಾಕ್ಷ್ಯಗಳನ್ನು ಸಂರಕ್ಷಿಸುವುದು ಹಾಗೂ ತಾಂತ್ರಿಕ ತನಿಖೆಗಾಗಿ ಸೈಬರ್ ಕ್ರೈಂ ಪೊಲೀಸ್ ಠಾಣೆಗಳು ಮತ್ತು ಸಿಐಡಿ ಸೈಬರ್ ವಿಭಾಗದೊಂದಿಗೆ ಸಮನ್ವಯ ಸಾಧಿಸುವಂತೆ ಸೂಚಿಸಲಾಗಿದೆ ಎಂದರು.

ಈ ಆದೇಶವು ಸಂತ್ರಸ್ತರನ್ನು ಗೌರವ ಮತ್ತು ಸಂವೇದನಾಶೀಲತೆಯಿಂದ ನಡೆಸಿಕೊಳ್ಳಬೇಕೆಂದು ಒತ್ತಿ ಹೇಳುತ್ತದೆ. ಅವರ ಗುರುತನ್ನು ಗೌಪ್ಯವಾಗಿಡಬೇಕು, ಸಂತ್ರಸ್ತರನ್ನೇ ದೂಷಿಸುವ ವರ್ತನೆ ತಪ್ಪಿಸಬೇಕು ಮತ್ತು ಸಾಧ್ಯವಾದಲ್ಲಿ ಮಹಿಳಾ ಸಂತ್ರಸ್ತರ ದೂರುಗಳನ್ನು ಮಹಿಳಾ ಅಧಿಕಾರಿಗಳೇ ದಾಖಲಿಸಬೇಕು ಎಂದು ತಿಳಿಸಿದೆ ಎಂದು ಹೇಳಿದ್ದಾರೆ.

‘ಹಿಂದೆ ಒಪ್ಪಿಗೆ ನೀಡಲಾಗಿತ್ತು’ ಎಂಬ ತಪ್ಪು ಕಾರಣವನ್ನು ನೀಡಿ ಎಫ್‌ಐಆರ್ ದಾಖಲಿಸಲು ವಿಫಲವಾದರೆ ಅಥವಾ ವಿಳಂಬ ಮಾಡಿದರೆ, ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಹಾಗೂ ಸಂಬಂಧಿತ ಅಧಿಕಾರಿಗಳ ವಿರುದ್ಧ ಇಲಾಖಾ ಕ್ರಮ ಕೈಗೊಳ್ಳಬಹುದು ಎಂದು ಎಚ್ಚರಿಸಲಾಗಿದೆ ಎಂದರು‌.

ಈ ನಿರ್ದೇಶನವು ಸಂವಿಧಾನಬದ್ಧ ಖಾಸಗಿತನದ ಹಕ್ಕನ್ನು ಮತ್ತಷ್ಟು ಬಲಪಡಿಸುವುದರ ಜೊತೆಗೆ, ಕರ್ನಾಟಕದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸಂತ್ರಸ್ತರ ಪರ, ಕಾನೂನುಬದ್ಧ ಹಾಗೂ ಏಕರೂಪದ ಕ್ರಮವನ್ನು ಖಚಿತಪಡಿಸುತ್ತದೆ ಎಂದರು‌.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

5 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

5 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

14 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago