“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ, ಕರ್ನಾಟಕ ಪೊಲೀಸ್ ಇಲಾಖೆ ರಾಜ್ಯದ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಖಾಸಗಿ ಫೋಟೋಗಳು ಹಾಗೂ ವಿಡಿಯೋಗಳನ್ನು ಅನುಮತಿಯಿಲ್ಲದೆ ಪ್ರಕಟಿಸುವುದು, ಹಂಚಿಕೊಳ್ಳುವುದು ಅಥವಾ ಪ್ರಸಾರ ಮಾಡುವ ಪ್ರಕರಣಗಳಲ್ಲಿ ಕಠಿಣ ಮತ್ತು ತ್ವರಿತ ಕ್ರಮ ಕೈಗೊಳ್ಳುವಂತೆ ಆದೇಶ ಹೊರಡಿಸಿದೆ ಎಂದರು.

ಈ ಆದೇಶದಲ್ಲಿ, ಯಾವುದೇ ಫೋಟೋ ಅಥವಾ ವಿಡಿಯೋವನ್ನು ಸೆರೆಹಿಡಿಯಲು ಅಥವಾ ದಾಖಲಿಸಲು ನೀಡಿದ ಒಪ್ಪಿಗೆಯು ಅದನ್ನು ಇತರರಿಗೆ ಹಂಚಿಕೊಳ್ಳಲು ಅಥವಾ ಪ್ರಸಾರ ಮಾಡಲು ನೀಡಿದ ಒಪ್ಪಿಗೆಯೆಂದು ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಅಂತಹ ವಿಷಯವನ್ನು ಸಂಬಂಧಿತ ವ್ಯಕ್ತಿಯ ಅನುಮತಿಯಿಲ್ಲದೆ ಹಂಚುವುದು, ಪ್ರಕಟಿಸುವುದು, ಫಾರ್ವರ್ಡ್ ಮಾಡುವುದು ಅಥವಾ ಪ್ರಸಾರ ಮಾಡುವುದು ಸಂಜ್ಞೇಯ (Cognizable) ಅಪರಾಧವಾಗಿದ್ದು, ಮೂಲತಃ ಅದು ಒಪ್ಪಿಗೆಯೊಂದಿಗೆ ದಾಖಲಾಗಿದ್ದರೂ ಸಹ ಅಪರಾಧವೇ ಆಗಿರುತ್ತದೆ ಎಂದು ತಿಳಿಸಿದ್ದಾರೆ.

ಅನುಮತಿಯಿಲ್ಲದೆ ಖಾಸಗಿ ವಿಷಯಗಳನ್ನು ಹಂಚುವ ಪ್ರಕರಣಗಳು, ಸಾಮಾನ್ಯವಾಗಿ ‘ರಿವೆಂಜ್ ಪೋರ್ನೋಗ್ರಫಿ’, ‘ಸೆಕ್ಸ್‌ಟಾರ್ಷನ್’ ಹಾಗೂ ‘ಬ್ಲ್ಯಾಕ್‌ಮೇಲ್ ವಿಡಿಯೋ’ ಎಂದು ಕರೆಯಲ್ಪಡುವ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇಂತಹ ಪ್ರಕರಣಗಳಲ್ಲಿ ಅನ್ವಯವಾಗುವಂತೆ ಭಾರತೀಯ ನ್ಯಾಯ ಸಂಹಿತೆ (BNS), 2023 ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ (IT Act), 2000ರ ಸಂಬಂಧಿತ ವಿಧಿಗಳಡಿ, ಅಗತ್ಯವಿದ್ದಲ್ಲಿ BNSನ ಸೆಕ್ಷನ್ 77 ಹಾಗೂ IT Actನ ಸೆಕ್ಷನ್ 66E, 67 ಮತ್ತು 67A ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ಹೇಳಿದ್ದಾರೆ.

ಈ ಸ್ಥಾಯಿ ಆದೇಶವು, ವಿಡಿಯೋ ಅಥವಾ ಫೋಟೋ ದಾಖಲಿಸಲು ಹಿಂದೆ ಒಪ್ಪಿಗೆ ನೀಡಲಾಗಿತ್ತು ಎಂಬ ಕಾರಣವನ್ನು ಉಲ್ಲೇಖಿಸಿ ದೂರು ದಾಖಲಿಸಲು ನಿರಾಕರಿಸುವುದು ಅಥವಾ ವಿಳಂಬ ಮಾಡುವುದು ಸಂಪೂರ್ಣವಾಗಿ ಅಸಂಗತ ಎಂದು ತಿಳಿಸಿದೆ. ಬೆದರಿಕೆ, ಸುಲಿಗೆ, ಲೈಂಗಿಕ ಅನುಕೂಲತೆಗಳ ಬೇಡಿಕೆ ಅಥವಾ ಇತರೆ ಒತ್ತಡದ ಸಂದರ್ಭಗಳಲ್ಲಿ ಸುಲಿಗೆ ಮತ್ತು ಕ್ರಿಮಿನಲ್ ಬೆದರಿಕೆಗಳಿಗೆ ಸಂಬಂಧಿಸಿದ ಹೆಚ್ಚುವರಿ ವಿಧಿಗಳನ್ನೂ ಅನ್ವಯಿಸಬೇಕು ಎಂದು ಸೂಚಿಸಲಾಗಿದೆ ಎಂದರು.

ಘಟನೆ ನಡೆದ ಪ್ರದೇಶದ ವ್ಯಾಪ್ತಿಗೆ ಸಂಬಂಧಿಸಿದ ಸಮಸ್ಯೆ ಇದ್ದರೆ, ಸಂಬಂಧಿತ ಪೊಲೀಸ್ ಠಾಣೆಗಳು ಮೊದಲು ‘ಜೀರೋ-ಎಫ್‌ಐಆರ್’ ದಾಖಲಿಸಿ, ನಂತರ ವಿಳಂಬವಿಲ್ಲದೆ ಸೂಕ್ತ ಪೊಲೀಸ್ ಠಾಣೆಗೆ ವರ್ಗಾಯಿಸಬೇಕು ಎಂದು ಹೇಳಿದ್ದಾರೆ.

ಅಧಿಕಾರಿಗಳಿಗೆ ಆಕ್ಷೇಪಾರ್ಹ ವಿಷಯವನ್ನು ತಕ್ಷಣ ತೆಗೆದುಹಾಕಲು ಅಥವಾ ನಿರ್ಬಂಧಿಸಲು ಕ್ರಮ ಕೈಗೊಳ್ಳುವುದು, ಎಲೆಕ್ಟ್ರಾನಿಕ್ ಸಾಕ್ಷ್ಯಗಳನ್ನು ಸಂರಕ್ಷಿಸುವುದು ಹಾಗೂ ತಾಂತ್ರಿಕ ತನಿಖೆಗಾಗಿ ಸೈಬರ್ ಕ್ರೈಂ ಪೊಲೀಸ್ ಠಾಣೆಗಳು ಮತ್ತು ಸಿಐಡಿ ಸೈಬರ್ ವಿಭಾಗದೊಂದಿಗೆ ಸಮನ್ವಯ ಸಾಧಿಸುವಂತೆ ಸೂಚಿಸಲಾಗಿದೆ ಎಂದರು.

ಈ ಆದೇಶವು ಸಂತ್ರಸ್ತರನ್ನು ಗೌರವ ಮತ್ತು ಸಂವೇದನಾಶೀಲತೆಯಿಂದ ನಡೆಸಿಕೊಳ್ಳಬೇಕೆಂದು ಒತ್ತಿ ಹೇಳುತ್ತದೆ. ಅವರ ಗುರುತನ್ನು ಗೌಪ್ಯವಾಗಿಡಬೇಕು, ಸಂತ್ರಸ್ತರನ್ನೇ ದೂಷಿಸುವ ವರ್ತನೆ ತಪ್ಪಿಸಬೇಕು ಮತ್ತು ಸಾಧ್ಯವಾದಲ್ಲಿ ಮಹಿಳಾ ಸಂತ್ರಸ್ತರ ದೂರುಗಳನ್ನು ಮಹಿಳಾ ಅಧಿಕಾರಿಗಳೇ ದಾಖಲಿಸಬೇಕು ಎಂದು ತಿಳಿಸಿದೆ ಎಂದು ಹೇಳಿದ್ದಾರೆ.

‘ಹಿಂದೆ ಒಪ್ಪಿಗೆ ನೀಡಲಾಗಿತ್ತು’ ಎಂಬ ತಪ್ಪು ಕಾರಣವನ್ನು ನೀಡಿ ಎಫ್‌ಐಆರ್ ದಾಖಲಿಸಲು ವಿಫಲವಾದರೆ ಅಥವಾ ವಿಳಂಬ ಮಾಡಿದರೆ, ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಹಾಗೂ ಸಂಬಂಧಿತ ಅಧಿಕಾರಿಗಳ ವಿರುದ್ಧ ಇಲಾಖಾ ಕ್ರಮ ಕೈಗೊಳ್ಳಬಹುದು ಎಂದು ಎಚ್ಚರಿಸಲಾಗಿದೆ ಎಂದರು‌.

ಈ ನಿರ್ದೇಶನವು ಸಂವಿಧಾನಬದ್ಧ ಖಾಸಗಿತನದ ಹಕ್ಕನ್ನು ಮತ್ತಷ್ಟು ಬಲಪಡಿಸುವುದರ ಜೊತೆಗೆ, ಕರ್ನಾಟಕದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸಂತ್ರಸ್ತರ ಪರ, ಕಾನೂನುಬದ್ಧ ಹಾಗೂ ಏಕರೂಪದ ಕ್ರಮವನ್ನು ಖಚಿತಪಡಿಸುತ್ತದೆ ಎಂದರು‌.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

14 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

16 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

17 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

21 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

23 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago