ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಜಮೀನು ನೀಡಲು ಇಚ್ಛಿಸದ ರೈತರು ತಮ್ಮ ಕೃಷಿ ಚಟುವಟಿಕೆಗಳನ್ನು ಎಂದಿನಂತೆ ಮುಂದುವರಿಸಬಹುದು ಎಂದು ಅವರು ಭರವಸೆ ನೀಡಿದ್ದಾರೆ.
ವಿಧಾನಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಯೋಜನೆಯ ಇತಿಹಾಸ ಹಾಗೂ ಅಧಿಕೃತ ದಾಖಲೆಗಳನ್ನು ಪ್ರಸ್ತುತಪಡಿಸಿ ಸರ್ಕಾರದ ನಿಲುವನ್ನು ವಿವರಿಸಿದರು.
“ಯಾರಿಗೆ ಜಮೀನು ನೀಡಲು ಇಷ್ಟವಿಲ್ಲವೋ ಅವರು ತಮ್ಮ ಜಮೀನಿನಲ್ಲಿ ಕೃಷಿ ಮಾಡಿಕೊಂಡೇ ಇರಬಹುದು. ಯಾರು ಸ್ವಇಚ್ಛೆಯಿಂದ ಭೂಮಿ ನೀಡಲು ಸಿದ್ಧರಿದ್ದಾರೋ ಅವರು ಸರ್ಕಾರಕ್ಕೆ ಒಪ್ಪಿಸಿ ಪರಿಹಾರ ಪಡೆಯಬಹುದು. ಆದರೆ ಒಂದು ಗುಂಟೆ ಜಮೀನನ್ನೂ ಬಲವಂತವಾಗಿ ಕಿತ್ತುಕೊಳ್ಳುವುದಿಲ್ಲ,” ಎಂದು ಸ್ಪಷ್ಟಪಡಿಸಿದರು.
ಯೋಜನೆಯ ಸಾಧಕ-ಬಾಧಕಗಳು, ರೈತರ ಅಭಿಪ್ರಾಯಗಳು ಹಾಗೂ ಆತಂಕಗಳನ್ನು ಪರಿಶೀಲಿಸಲು ವಿಶೇಷ ಸಮಿತಿಯನ್ನು ರಚಿಸಲಾಗುವುದು ಎಂದು ತಿಳಿಸಿದರು. ಸಮಿತಿಯ ವರದಿ ಬಂದ ಬಳಿಕ ಮುಂದಿನ ನಿರ್ಧಾರವನ್ನು ಸಚಿವ ಸಂಪುಟದ ಮುಂದೆ ಮಂಡಿಸಲಾಗುವುದು ಎಂದರು. ಜಮೀನು ನೀಡದ ರೈತರ ಭೂಮಿಯ ಯಥಾಸ್ಥಿತಿಯನ್ನು ಯಾವುದೇ ಕಾರಣಕ್ಕೂ ಬದಲಾಯಿಸುವುದಿಲ್ಲ ಎಂದು ಭರವಸೆ ನೀಡಿದರು.
ಬಿಡದಿಯಲ್ಲಿ ಜಮೀನು ಸರ್ವೆ ವೇಳೆ ನಡೆದ ಹಿಂಸಾಚಾರದ ಬಗ್ಗೆ ಬೇಸರ ವ್ಯಕ್ತಪಡಿಸಿದ ಮುಖ್ಯಮಂತ್ರಿ, ಕೆಲವರು ರಾಜಕೀಯ ಪ್ರೇರಣೆಯಿಂದ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದು, ರೈತರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಬಿಡದಿ ಟೌನ್ಶಿಪ್ ಯೋಜನೆ ತಮ್ಮ ಕನಸಿನ ಯೋಜನೆಯಲ್ಲ ಎಂದು ಸ್ಪಷ್ಟಪಡಿಸಿದ ಅವರು, “ಈ ಯೋಜನೆಯನ್ನು ನಾನು ಆರಂಭಿಸಿಲ್ಲ. ಹಿಂದಿನ ಸರ್ಕಾರಗಳು ರೂಪಿಸಿದ್ದ ಯೋಜನೆಯನ್ನು ಮಾತ್ರ ಮುಂದುವರಿಸುತ್ತಿದ್ದೇನೆ. ನಾನು ಕೂಡ ಒಬ್ಬ ರೈತನ ಮಗ. ರೈತರ ಕಷ್ಟ ನನಗೆ ಗೊತ್ತು. ರೈತರ ಹಿತಾಸಕ್ತಿಗೆ ಧಕ್ಕೆ ತರುವ ಯಾವುದೇ ಕೆಲಸ ಮಾಡುವುದಿಲ್ಲ,” ಎಂದು ಹೇಳಿದರು.
ಯೋಜನೆಯ ಹಿನ್ನೆಲೆಯನ್ನು ವಿವರಿಸಿದ ಅವರು, ಯೋಜನಾ ಪ್ರದೇಶವನ್ನು ಈ ಹಿಂದೆ ‘ರೆಡ್ ಝೋನ್’ ಎಂದು ಘೋಷಿಸಿ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿತ್ತು. ಬಿಡಿಎ ಅನುಮೋದನೆ ಇಲ್ಲದೆ ಯಾವುದೇ ಅಭಿವೃದ್ಧಿ ಕಾರ್ಯಕ್ಕೆ ಅವಕಾಶ ಇರಲಿಲ್ಲ. 2007ರಲ್ಲಿ ಮಾರಂಡಹಳ್ಳಿ, ಒಡೆಯರಹಳ್ಳಿ ಸೇರಿದಂತೆ ಹಲವು ಗ್ರಾಮಗಳನ್ನು ಯೋಜನಾ ವ್ಯಾಪ್ತಿಗೆ ಸೇರಿಸಲಾಗಿತ್ತು ಎಂದು ತಿಳಿಸಿದರು.
ಹಿಂದಿನ ಸರ್ಕಾರದ ಅವಧಿಯಲ್ಲಿ ಗ್ರಾಮಠಾಣ ಸೇರಿದಂತೆ ಆಸ್ತಿಗಳಿಗೆ ಪರಿಹಾರ ನಿಗದಿಪಡಿಸಿ, ಖಾಸಗಿ ಡೆವಲಪರ್ ಡಿಎಲ್ಎಫ್ ಕಂಪನಿಯಿಂದ 400 ಕೋಟಿ ರೂ. ಭದ್ರತಾ ಠೇವಣಿ ಪಡೆದು ಯೋಜನೆಗೆ ಅನುಮತಿ ನೀಡಲಾಗಿತ್ತು. 2010ರಲ್ಲಿಯೂ ಇದೇ ಯೋಜನೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಮುಂದುವರಿಸಿ ಜಾಗತಿಕ ಟೆಂಡರ್ ಆಹ್ವಾನಿಸಲಾಗಿತ್ತು ಎಂದು ವಿವರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಶಾಸಕ ಬಾಲಕೃಷ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಜಿ.ಸಿ. ಚಂದ್ರಶೇಖರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…