ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಬಿಜೆಪಿ ನಾಯಕರು ರೈತರ ಕಲ್ಯಾಣಕ್ಕಾಗಿ ಏನು ಮಾಡಿದ್ದಾರೆ?- ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಅನ್ನದಾತರಾದ ರೈತರ ಬಗ್ಗೆ ನಾವು ಎಚ್ಚರಿಕೆಯಿಂದ ಮಾತ್ರವಲ್ಲ ಗೌರವದಿಂದ ಮಾತನಾಡಬೇಕು. ಹಗುರ ಮಾತುಗಳ ಮೂಲಕ ರೈತರಿಗೆ ಅವಮಾನವಾಗುವಂತೆ ಮಾಡಬಾರದು. ಇದು ಪ್ರತಿಯೊಬ್ಬರು ಕಡ್ಡಾಯವಾಗಿ ಅನುಸರಿಸಿಕೊಂಡು ಬರಬೇಕಾದ ನೀತಿ ಸಂಹಿತೆ. ರೈತ ಕುಟುಂಬದಿಂದ ಬಂದಿರುವ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರಿಗೆ ರೈತರನ್ನು ಅವಮಾನಿಸಬೇಕೆಂಬ ದುರುದ್ದೇಶ ಖಂಡಿತ ಇರಲಾರದು. ತನ್ನ ಜೊತೆಗಿದ್ದ ರೈತರೊಂದಿಗಿನ ಸಲುಗೆಯಿಂದ ಕೆಲವು ಮಾತುಗಳನ್ನು ಆಡಿದ್ದಾರೆ. ಆದರೆ ಇದು ಸಮಸ್ತ ರೈತ ಸಮುದಾಯಕ್ಕೆ ಅನ್ವಯಮಾಡುವಾಗ ವಿಪರೀತ ಅರ್ಥಕ್ಕೆ ಕಾರಣವಾಗುತ್ತದೆ. ಇದು ಸಲ್ಲದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ರೈತರ ಕಲ್ಯಾಣಕ್ಕಾಗಿ ಕಿಂಚಿತ್ತೂ ಕೆಲಸ ಮಾಡದೆ ಇರುವ, ಮೂಲತಹ ರೈತ ವಿರೋಧಿಯಾಗಿರುವ ಬಿಜೆಪಿಯ ನಾಯಕರು ಇಂತಹದ್ದೇ ಅವಕಾಶಕ್ಕಾಗಿ ಕಾದು ಕೂತವರಂತೆ ಶಿವಾನಂದ ಪಾಟೀಲರ ಮಾತುಗಳನ್ನು ವಿವಾದವನ್ನಾಗಿ ಮಾಡಿದ್ದಾರೆ. ಬೀಜ-ಗೊಬ್ಬರ ಕೊಡಿ ಎಂದು ಕೇಳಿದ ರೈತರನ್ನು ಗುಂಡಿಕ್ಕಿ ಸಾಯಿಸಿದ ಮತ್ತು ರೈತರ ಸಾಲಮನ್ನಾ ಮಾಡಿ ಎಂದು ಕೇಳಿದರೆ ನೋಟ್ ಪ್ರಿಂಟಿಂಗ್ ಮೆಷಿನ್ ಇದೆಯೇ ಎಂದು ಕೇಳಿದ ಭಾರತೀಯ ಜನತಾ ಪಕ್ಷದ ನಾಯಕರಿಗೆ ಕಾಂಗ್ರೆಸ್ ಪಕ್ಷದ ವಿರುದ್ಧ ಮಾತನಾಡುವ ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದ್ದಾರೆ.

ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಬಿಜೆಪಿ ನಾಯಕರು ರೈತರ ಕಲ್ಯಾಣಕ್ಕಾಗಿ ಏನು ಮಾಡಿದ್ದಾರೆ? ನಾವು ನಿಜವಾದ ರೈತ ಮಿತ್ರರು, ಬಿಜೆಪಿಯವರಂತೆ ನಕಲಿ ಮಿತ್ರರಲ್ಲ. ರೈತರ ಬಗೆಗಿನ ನಮ್ಮ ಪ್ರೀತಿ-ಅಭಿಮಾನಕ್ಕೆ ನಮ್ಮ ಸರ್ಕಾರದ  ಕಳೆದ ಆರು ತಿಂಗಳುಗಳ ಅವಧಿಯಲ್ಲಿ ಜಾರಿಗೆ ತಂದಿರುವ ರೈತ ಪರ ಕಾರ್ಯಕ್ರಮಗಳೇ ಸಾಕ್ಷಿ. ರಾಜ್ಯದಲ್ಲಿನ ಬರಗಾಲದಿಂದ ನೊಂದಿರುವ ರೈತರಿಗೆ ಕೇಂದ್ರ ಸರ್ಕಾರ ಚಿಕ್ಕಾಸಿನ ಪರಿಹಾರ ನೀಡದೆ ಇದ್ದರೂ ನಾವು ಪ್ರತಿ ರೈತ ಕುಟುಂಬಗಳಿಗೆ ಎರಡು ಸಾವಿರ ರೂಪಾಯಿಗಳನ್ನು ನೀಡಿದ್ದೇವೆ. ಸಹಕಾರಿ ಬ್ಯಾಂಕುಗಳಿಂದ ಪಡೆದಿರುವ ಮಧ್ಯಮಾವಾಧಿ ಮತ್ತು ದೀರ್ಘಾವಧಿ ಸಾಲಗಳ ಬಡ್ಡಿ ಮನ್ನಾ ಮಾಡಲು ನಿರ್ಧರಿಸಿದ್ದೇವೆ. ರಾಜ್ಯದ 24 ಜಿಲ್ಲೆಗಳ 106 ತಾಲ್ಲೂಕುಗಳಲ್ಲಿ 100 ಕೋಟಿ ರೂ.ವೆಚ್ಚದಲ್ಲಿ ಕೃಷಿ ಭಾಗ್ಯ ಯೋಜನೆಗೆ ಚಾಲನೆ ನೀಡಿದ್ದೇವೆ ಎಂದರು.

ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆಗಳ ಕಾಲ ಮೂರು ಫೇಸ್ ವಿದ್ಯುತ್ ನೀಡುತ್ತಿದ್ದೇವೆ. ಹದಿನೈದು ವರ್ಷ ಸಾಗುವಳಿ ಮಾಡಿದ ಬಗರ್ ಹುಕುಂ ಭೂಮಿಗಳ ಸಕ್ರಮ ಗೊಳಿಸಲು ತೀರ್ಮಾನಿಸಿದ್ದೇವೆ.  ಅಕ್ರಮ ವಿದ್ಯುತ್ ಸಂಪರ್ಕ ಹೊಂದಿರುವ 4 ಲಕ್ಷ ಕೃಷಿ ಪಂಪ್ ಸೆಟ್ ಗಳ ಸಕ್ರಮ ಮಾಡುವ ದಿಟ್ಟ ನಿರ್ಧಾರ ಕೈಗೊಂಡಿದ್ದೇವೆ. ಕೃಷಿಯಂತ್ರಧಾರೆ ಕೇಂದ್ರಗಳನ್ನು ಬಲಪಡಿಸಲು 100 ಕೋಟಿ ರೂ.ವೆಚ್ಚದಲ್ಲಿ ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ರೈತರ ಸಾಲ ಮನ್ನಾ ಮಾಡುವಂತೆ ದೇಶಾದ್ಯಂತ ರೈತರು ಒತ್ತಾಯಿಸುತ್ತಿದ್ದರೆ, ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರ ಸರ್ಕಾರ ರೈತರ ಕತ್ತು ಹಿಸುಕಿ ಸಾಯಿಸುವ ಕರಾಳ ಕೃಷಿ ಕಾಯ್ದೆಗಳನ್ನು ಜಾರಿಗೆ ತರಲು ಏನೆಲ್ಲ ಕಸರತ್ತು ನಡೆಸಿತ್ತು ಎನ್ನುವುದನ್ನು ಇಡೀ ದೇಶ ಕಂಡಿದೆ. ಕೃಷಿ ಕ್ಷೇತ್ರವನ್ನು ಕಾರ್ಪೋರೇಟ್ ಧಣಿಗಳಿಗೆ ಒತ್ತೆ ಇಡುವ ಬಿಜೆಪಿಯ ಹುನ್ನಾರವನ್ನು ದೇಶದ ರೈತರು ಅರ್ಥಮಾಡಿಕೊಂಡಿದ್ದಾರೆ. ತಮ್ಮ ರೈತ ವಿರೋಧಿ ಕೃತ್ಯಗಳನ್ನು ಮುಚ್ಚಿಹಾಕಲು ಬಿಜೆಪಿ ನಾಯಕರು ಆಗಾಗ ತಿರುಚಿದ ಹೇಳಿಕೆಗಳನ್ನು ಹಿಡ್ಕೊಂಡು ಎದೆ ಬಡಿದುಕೊಳ್ಳುತ್ತಾ ಇರುತ್ತಾರೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

2 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

10 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

11 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago