ರೋಹಿಣಿ ಸಿಂಧೂರಿ ಹಾಗೂ ರೂಪಾ ಮೌದ್ಗಿಲ್ ನಡುವಿನ ಜಟಾಪಟಿ ಪ್ರಕರಣ: ಕೋರ್ಟ್ ಗೆ ಹಾಜರಾಗಿ ಜಾಮೀನು ಪಡೆದ ಡಿ.ರೂಪಾ

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ನಡುವಿನ ಜಟಾಪಟಿ ಪ್ರಕರಣ ಈಗ ಮತ್ತೊಂದು ಟ್ವಿಸ್ಟ್‌ ಪಡೆದುಕೊಂಡಿದೆ. ಐಪಿಎಸ್‌ ಅಧಿಕಾರಿ ಡಿ. ರೂಪಾ ವಿರುದ್ಧ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ಈ ಹಿನ್ನೆಲೆ ಡಿ. ರೂಪಾ ಅವರು ನಗರದ ಕೋರ್ಟ್‌ಗೆ ಹಾಜರಾಗಿದ್ದರು.

ಈ ಮೂಲಕ ಐಎಎಸ್‌ ಹಾಗೂ ಐಪಿಎಸ್‌ ಅಧಿಕಾರಿಗಳಿಬ್ಬರ ಜಟಾಪಟಿ ಮತ್ತೊಂದು ಹಂತಕ್ಕೆ ಹೋಗಿದೆ. ಮಾನನಷ್ಟ ‌ಮೊಕದ್ದಮೆ ಹಿನ್ನೆಲೆ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಐಜಿಪಿ ರೂಪಾ ಮೌದ್ಗಿಲ್‌ಗೆ ಸಮನ್ಸ್‌ ಜಾರಿ ಮಾಡಿತ್ತು. ಸಮನ್ಸ್ ಜಾರಿ ಹಿನ್ನೆಲೆ ಮಂಗಳವಾರ ಡಿ. ರೂಪಾ ಕೋರ್ಟ್‌ಗೆ ಹಾಜರಾಗಿ ಜಾಮೀನು ಪಡೆದಿದ್ದಾರೆ. 25 ಸಾವಿರ ಬಾಂಡ್ ಷರತ್ತಿನೊಂದಿಗೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಐಜಿಪಿ ಡಿ. ರೂಪಾ ಮೌದ್ಗಿಲ್‌ ಅವರಿಗೆ ಜಾಮೀನು ನೀಡಿದೆ ಎಂದು ತಿಳಿದುಬಂದಿದೆ.

ಈ ಇಬ್ಬರು ಅಧಿಕಾರಿಗಳ ಜಟಾಪಟಿಗೆ ಕಾರಣ

ರೂಪಾ ಮೌದ್ಗಿಲ್‌ ಅವರು 2023ರ ಫೆಬ್ರವರಿ 18 ಮತ್ತು 19ರಂದು ತಮ್ಮ ಫೇಸ್‌ಬುಕ್‌ ಅಕೌಂಟ್‌ನಲ್ಲಿ ತಮ್ಮ ವಿರುದ್ಧ ಕೀಳು ಅಭಿರುಚಿಯಿಂದ ಕೂಡಿದ ಆರೋಪ ಮಾಡಿದ್ದಾರೆ. ಹಾಗೆ ಸಾಮಾಜಿಕ ಜಾಲತಾಣದಲ್ಲೂ ಹೇಳಿಕೆ ನೀಡಿದ್ದರು. ಆ ಆರೋಪಗಳು ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆ ಉಂಟು ಮಾಡುವಂತಿವೆ. ತಮ್ಮ ತೇಜೋವಧೆ ಮಾಡುವ ದುರುದ್ದೇಶದಿಂದಲೇ ರೂಪಾ ಅವರು ಈ ಕೃತ್ಯ ಎಸಗಿದ್ದಾರೆ. ಅವರ ಈ ಕೃತ್ಯ ತಮ್ಮ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಮಾನಸಿಕ ಯಾತನೆ ಉಂಟು ಮಾಡಿವೆ ಎಂದು ರೋಹಿಣಿ ಸಿಂಧೂರಿ ಆರೋಪಿಸಿದ್ದಾರೆ.

ಅಲ್ಲದೆ, ಮಾನಹಾನಿ ಮಾಡಿ ಮಾನಸಿಕ ಯಾತನೆ ಉಂಟು ಮಾಡಿರುವುದಕ್ಕಾಗಿ ಡಿ. ರೂಪಾ ಅವರಿಂದ ಒಂದು ಕೋಟಿ ರೂಪಾಯಿಯನ್ನು ಪರಿಹಾರವಾಗಿ ಕೊಡಿಸಿಕೊಡಬೇಕು. ಅವರ ವಿರುದ್ಧ ಸೂಕ್ತ ದಂಡನೀಯ ಕ್ರಮ ಕೈಗೊಳ್ಳಬೇಕು ಎಂದು ರೋಹಿಣಿ ಸಿಂಧೂರಿ ಅವರು ದೂರಿನಲ್ಲಿ ಕೋರಿದ್ದಾರೆ.

Leave a Reply

Your email address will not be published. Required fields are marked *