
ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ, ಕಾನೂನು ಬಾಹಿರ ಚಟುವಟಿಕೆಗಳನ್ನು ಸಂಪೂರ್ಣವಾಗಿ ತ್ಯಜೀಸಿ ಉತ್ತಮ ನಾಗರಿಕರಾಗಿ ಜೀವನ ಮಾಡಬೇಕು ಎಂದು ಡಿವೈಎಸ್ಪಿ ಪಾಂಡುರಂಗ ತಿಳಿಸಿದರು.
ಹೊಸ ವರ್ಷಾಚರಣೆ ಹಿನ್ನೆಲೆ ನಗರ ಪೊಲೀಸ್ ಠಾಣಾ ಆವರಣದಲ್ಲಿ ಹಮ್ಮಿಕೊಂಡಿದ್ದ ದೊಡ್ಡಬಳ್ಳಾಪುರ ಉಪವಿಭಾಗ ಪೊಲೀಸ್ ವ್ಯಾಪ್ತಿಯ ರೌಡಿಶೀಟರ್ ಗಳ ಪರೇಡ್ ನಲ್ಲಿ ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ರೌಡಿಯಿಸಂ ಜೀವನವನ್ನು ಹಾಳು ಮಾಡುವುದಲ್ಲದೆ ಜೀವನ ಪರ್ಯಂತ ರೌಡಿಶೀಟರ್ ಪಟ್ಟ ಕಟ್ಟಿಕೊಂಡು ಬದುಕಬೇಕಾಗುತ್ತದೆ. ನೆಮ್ಮದಿ ಜೀವನಕ್ಕಾಗಿ ಕೂಲಿ ಕೆಲಸ ಮಾಡಿದರೂ ಪರವಾಗಿಲ್ಲ ಕುಟುಂಬದೊಂದಿಗೆ ಖುಷಿಯಿಂದ ಜೀವನ ಸಾಗಿಸಬೇಕು. ರೌಡಿ ಚಟುವಟಿಕೆ, ಕಾನೂನು ಬಾಹಿರ ಕೆಲಸಗಳು ಹೀಗೆ ಮುಂದುವರೆದರೆ ಜಿಲ್ಲೆಯಿಂದಲೇ ಗಡಿಪಾರು ಮಾಡಲಾಗುವುದು. ಹತ್ತು, ಇಪ್ಪತ್ತು ವರ್ಷಗಳಾದರೂ ರೌಡಿಶೀಟರ್ ಪಟ್ಟ ಹೋಗುವುದಿಲ್ಲ. ಕಳ್ಳತನ, ಕೊಲೆ, ದೌರ್ಜನ್ಯ ಮಾಡಿದರೆ ತಪ್ಪಿಸಿಕೊಳ್ಳಲು ಆಗುವುದಿಲ್ಲ. ಕಾನೂನು ಬಿಗಿಯಾಗಿದೆ. ಕುಟುಂಬಸ್ಥರು ಗೌರವ ನೀಡುವಷ್ಟು ರೀತಿಯಲ್ಲಿಯಾದರೂ ಜೀವನ ಮಾಡಿ. ಪೊಲೀಸರಿಗೆ ತಿಳಿಯದಂತೆ ಸ್ಥಳ, ಫೋನ್ ನಂಬರ್ ಬದಲಾವಣೆ ಮಾಡಬಾರದು. ಕಾನೂನಿಗೆ ಬೆಲೆ ಕೊಟ್ಟು ಸಮಾಜದಲ್ಲಿ ಒಳ್ಳೆಯವರಾಗಿ ಬದುಕಿ. ಮಾದರಿ ಜೀವನ ನಡೆಸಿದರೆ ರೌಡಿ ಶೀಟರ್ ಬಂದ್ ಮಾಡಲಾಗುವುದು ಎಂದರು.
ರೌಡಿಶೀಟರ್ ಗಳ ಜೀವನ ಶೈಲಿ ಸರಿ ಹೋದರೆ ಕೇವಲ ಎರಡು ತಿಂಗಳಲ್ಲಿ ರೌಡಿ ಶೀಟರ್ ಪಟ್ಟದಿಂದ ಮುಕ್ತಿಕಾಣಿಸಲಾಗುವುದು. ಮುಂದುವರೆದಿರೆ ಮತ್ತೊಂದು ಕೇಸ್ ಓಪನ್ ಆಗುತ್ತದೆ. ಎರಡ್ಮೂರು ತಿಂಗಳಿಗೆ ಮತ್ತೊಮ್ಮೆ ಪರಾಮರ್ಶೆ ಮಾಡಲಾಗುವುದು ಎಂದರು.
ಈ ವೇಳೆ ಠಾಣೆಗಳ ಇನ್ಸ್ ಪೆಕ್ಟರ್ ಗಳು, ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು…