ಲೋಕಸಭಾ ಚುನಾವಣೆ ಹಿನ್ನೆಲೆ ತಾಲೂಕಿನ ಜನತೆ ಮುಕ್ತವಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿ ಎಂಬ ಸಂದೇಶವನ್ನು ರೂಟ್ ಮಾರ್ಚ್ ಮಾಡುವ ಮೂಲಕ ರವಾನಿಸಲಾಯಿತು.
ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ನಗರದ ಸೂಕ್ಷ್ಮ ಪ್ರದೇಶಗಳಾದ ಕೊಂಗಾಡಿಯಪ್ಪ ಕಾಲೇಜು ರಸ್ತೆಯಿಂದ ಪ್ರಾರಂಭವಾಗಿ ಇಸ್ಲಾಂಪುರ, ಕಾಳಮ್ಮ ದೇವಸ್ಥಾನ, ಹಳೇಬಸ್ ನಿಲ್ದಾಣ, ನೆಲದಾಂಜನೇಯಸ್ವಾಮಿ ದೇವಸ್ಥಾನ, ಅಯ್ಯಪ್ಪ ದೇವಸ್ಥಾನ, ಡಿಕ್ರಾಸ್, ನಗರ ಠಾಣಾ ವರೆಗೆ ರೂಟ್ ಮಾರ್ಚ್ ನಡೆಸಲಾಯಿತು.
ತಾಲೂಕಿನ ಮತದಾರರಲ್ಲಿ ಆತ್ಮವಿಶ್ವಾಸವನ್ನು ಮೂಡಿಸುವುದು, ವಿಶೇಷವಾಗಿ ಸೂಕ್ಷ್ಮ ಪ್ರದೇಶಗಳಲ್ಲಿ ಮತದಾನದ ದಿನದಂದು ಯಾವುದೇ ಭಯ ಅಥವಾ ಹಿಂಜರಿಕೆಯಿಲ್ಲದೆ ಮತದಾನ ಕೇಂದ್ರಗಳಿಗೆ ಹೋಗಿ ತಮ್ಮ ಹಕ್ಕು ಚಲಾಯಿಸಲೆಂದು ರೂಟ್ ಮಾರ್ಚ್ ನಡೆಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಹೇಳಿದರು.
ಜಿಲ್ಲಾದ್ಯಂತ ಮತದಾನ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಈಗಾಗಲೇ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಾಗಿದೆ. ಜಿಲ್ಲೆಯಲ್ಲಿ ಒಟ್ಟು 31 ಮಂದಿ ರೌಡಿಶೀಟರ್ ಗಳನ್ನು ಗಡಿಪಾರು ಮಾಡಲಾಗಿದೆ ಎಂದು ತಿಳಿಸಿದರು.
ಈ ವೇಳೆ ಎಎಸ್ ಪಿ (ಅಪರಾಧ ವಿಭಾಗ) ನಾಗರಾಜು, ಡಿವೈಎಸ್ ಪಿ, ಪಿ.ರವಿ, ನಗರ ಠಾಣಾ ಇನ್ಸ್ ಪೆಕ್ಟರ್ ದಯಾನಂದ್, ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ, ಮಹಿಳಾ ಠಾಣಾ ಇನ್ಸ್ ಪೆಕ್ಟರ್ ವಿಜಯಲಕ್ಷ್ಮಿ, ಬೆಳವಂಗಲ ಠಾಣಾ ಇನ್ಸ್ ಪೆಕ್ಟರ್ ನವೀನ್ ಕುಮಾರ್, ಹೊಸಹಳ್ಳಿ ಠಾಣಾ ಇನ್ಸ್ ಪೆಕ್ಟರ್ ರಾವ್ ಗಣೇಶ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.