ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ತಮ್ಮ ಸೇವಾ ಮನೋಭಾವದಿಂದ ಸರ್ವಜನ ಮಾನ್ಯರಾಗಿದ್ದರು ಎಂದು ಕನ್ನಡ ಜಾಗೃತ ಪರಿಷತ್ತು ಪ್ರಧಾನ ಕಾರ್ಯದರ್ಶಿ ಡಿ.ಪಿ.ಆಂಜನೇಯ ತಿಳಿಸಿದರು.
ದೊಡ್ಡಬಳ್ಳಾಪುರ ನಗರದ ಎಂ.ಎ.ಬಿ.ಎಲ್ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಜಾಗೃತ ಪರಿಷತ್ತು ಮತ್ತು ವಿಕಾಸ ಪ್ರಶಿಕ್ಷಣ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಲೋಕಸೇವಾನಿರತ ಡಿ. ಕೊಂಗಾಡಿಯಪ್ಪ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಶಿಕ್ಷಣ, ಸಮಾಜ ಸೇವೆ, ಪರಿಸರ ಮೊದಲಾಗಿ ಹಲವಾರು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಕೊಂಗಾಡಿಯಪ್ಪನವರು ದೊಡ್ಡಬಳ್ಳಾಪುರ ನಗರದ ಸಮಗ್ರ ಅಭಿವೃದ್ಧಿಯ ಹರಿಕಾರಗಿದ್ದರು. ದೊಡ್ಡಬಳ್ಳಾಪುರಕ್ಕೆ ವಿದ್ಯುತ್, ಕೊಳವೆ ಬಾವಿ, ಪ್ರೌಢಶಾಲೆ, ಆಸ್ಪತ್ರೆ, ಪಶು ವೈದ್ಯಶಾಲೆ, ಕೈಮಗ್ಗ ಮತ್ತು ಗೃಹ ಕೈಗಾರಿಕಾ ತರಬೇತಿ ಶಾಲೆ ಮುಂತಾದವುಗಳನ್ನು ಮೈಸೂರು ಮಹಾರಾಜರಿಂದ ಮಂಜೂರು ಮಾಡಿ ಮಾಡಿಸಿದರು. ದೊಡ್ಡಬಳ್ಳಾಪುರ ನಗರದ ಸಮಗ್ರ ಅಭಿವೃದ್ಧಿಗೆ ಬುನಾದಿಯನ್ನು ಹಾಕಿದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರನ್ನು ದೊಡ್ಡಬಳ್ಳಾಪುರ ಜನರು ಎಂದಿಗೂ ಮರೆಯುವುದಿಲ್ಲ ಎಂದರು.
ದೊಡ್ಡಬಳ್ಳಾಪುರ ಕಸಬಾ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಕೋಶಾಧ್ಯಕ್ಷ ಜಿ.ಸುರೇಶ್ ಮಾತನಾಡಿ, ದೊಡ್ಡಬಳ್ಳಾಪುರ ಅಭಿವೃದ್ಧಿಯನ್ನು ಪ್ರಧಾನವಾಗಿ ಚಿಂತಿಸುತ್ತಿದ್ದ, ಮೈಸೂರು ಮಹಾರಾಜರಿಂದ ಅಭಿವೃದ್ಧಿ ಕಾರ್ಯಗಳನ್ನು ಸಕಾರಗೊಳಿಸಿದರು. ಸೇವಾ ಮನೋಭಾವದಿಂದ ಜನಮನ್ನಣೆ ಪಡೆದಿದ್ದ ಕೊಂಗಾಡಿಯಪ್ಪ ಅವರು ಮೈಸೂರು ಮಹಾರಾಜರಿಂದ ಲೋಕಸೇವಾ ನಿರತ ಎಂಬ ಬಿರುದಿಗೆ ಪುರಸ್ಕೃತರಾದರು. ಪ್ರತಿಯೊಬ್ಬರಿಗೂ ಶಿಕ್ಷಣ ದೊರೆಯಬೇಕೆಂದು ಅರಿತಿದ್ದ ಮತ್ತು ಶಿಕ್ಷಕರೂ ಆಗಿದ್ದ ಕೊಂಗಾಡಿಯಪ್ಪ ಅವರು ಎಲ್ಲಾ ವರ್ಗದ ಮಕ್ಕಳನ್ನು ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುತ್ತಿದ್ದರು ಎಂದರು.
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಮಾತನಾಡಿ, ಕೊಂಗಾಡಿಯಪ್ಪ ಅವರ ಮನೆ ವಿದ್ಯಾರ್ಥಿನಿಲಯದಂತೆ. ಬಡ ವಿದ್ಯಾರ್ಥಿಗಳು ಅವರ ಮನೆಯಲ್ಲಿದ್ದು ವಿದ್ಯಾಭ್ಯಾಸ ಮಾಡುತ್ತಿದ್ದರು. ವಯಸ್ಕರ ಶಿಕ್ಷಣ ಶಾಲೆಯನ್ನು ಸಹ ನಡೆಸುತ್ತಿದ್ದರು. ಕೊಂಗಾಡಿಯಪ್ಪ ತಮ್ಮ ವಿದ್ಯಾರ್ಥಿಗಳೊಂದಿಗೆ ಸೇರಿ ರಸ್ತೆಯ ಬದಿಯಲ್ಲಿ ಮರಗಳನ್ನು ಬೆಳೆಸುವ ಮೂಲಕ ಪರಿಸರ ಜಾಗೃತಿಯನ್ನು ಜನರಲ್ಲಿ ಮೂಡಿಸುತ್ತಿದ್ದರು.. ದೊಡ್ಡಬಳ್ಳಾಪುರದಲ್ಲಿ ಮೈಸೂರು ಸಂಸ್ಥಾನಕ್ಕೆ ಮಾದರಿಯಾದ ಸ್ಕೌಟ್ ಗ್ರೂಪ್ ಸ್ಥಾಪಿಸಿದ್ದರು. ಕೊಂಗಾಡಿಯಪ್ಪನವರ ಈ ಜನೋಪಯೋಗಿ ಮತ್ತು ಸೇವಾ ಕಾರ್ಯಗಳನ್ನು ಪರಿಗಣಿಸಿದ ಮೈಸೂರು ಮಹಾರಾಜರು 1918ರಲ್ಲಿ ಸಾರ್ವಜನಿಕ ಸೇವಾ ಪದಕ ಮತ್ತು 1931ರಲ್ಲಿ ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಲೋಕಸೇವಾನಿರತ ಎಂಬ ಬಿರುದು ನೀಡಿ ಗೌರವಿಸಿದರು ಎಂದರು.
ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ ಆಯುಕ್ತ ವೆಂಕಟರಾಜು, ಉಪನ್ಯಾಸಕಿ ಪುಪ್ಪಾವತಿ, ಶಿಕ್ಷಕರುಗಳಾದ ಕೋದಂಡರಾಮ್, ಎಚ್.ಎನ್.ಪ್ರಕಾಶ್, ರಮೇಶ್ ಪೂಜಾರಿ, ವಿದ್ಯಾರ್ಥಿನಿಲಯಪಾಲಕ ಅಣ್ಣಯ್ಯ, ಕಲಾವಿದ ದರ್ಗಾಜೋಗಿಹಳ್ಳಿ ಮಲ್ಲೇಶ್, ಬಾಶೆಟ್ಟಿಹಳ್ಳಿ ಮಂಜುನಾಥ್, ಎಂ.ಎ.ಬಿ.ಎಲ್ ಪ್ರೌಢಶಾಲೆಯ ಶಿಕ್ಷಕರು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…
ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…
ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…