ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು, ನಮ್ಮ ಮೆಟ್ರೋಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಬೆಂಗಳೂರಿಗರ ಸಂಚಾರ ಜೀವನಾಡಿ ನಮ್ಮ ಮೆಟ್ರೋ ಯೋಜನೆಯ ಹಳದಿ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಜೊತೆಗೂಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಲೋಕಾರ್ಪಣೆಗೊಳಿಸಿದರು.

7,610 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಆರ್.ವಿ ರಸ್ತೆ – ಬೊಮ್ಮಸಂದ್ರ ನಡುವಿನ 19.15 ಕಿ.ಮೀ ಉದ್ದದ ಈ ಮಾರ್ಗದಲ್ಲಿ ಒಟ್ಟು 16 ನಿಲ್ದಾಣಗಳು ಕಾರ್ಯಾಚರಣೆ ಮಾಡಲಿವೆ.

ಬೆಂಗಳೂರಿನ ಉದ್ದಗಲಕ್ಕೂ ಮೆಟ್ರೋ ಮಾರ್ಗವನ್ನು ವಿಸ್ತರಣೆ ಮಾಡುವ ಮೂಲಕ ಸಂಚಾರ ದಟ್ಟಣೆ ತಗ್ಗಿಸುವುದು ರಾಜ್ಯ ಸರ್ಕಾರದ ಉದ್ದೇಶವಾಗಿದೆ.

ಅದೇರೀತಿ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಬೆಂಗಳೂರಿನಿಂದ ಬೆಳಗಾವಿಗೆ ಸಂಚರಿಸಲಿರುವ ವಂದೇ ಭಾರತ್‌ ರೈಲಿಗೆ ಕೂಡ ಚಾಲನೆ ನೀಡಿದರು.

ಇದೇ ವೇಳೆ ಅಮೃತ್‍ಸರದಿಂದ ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಹಾಗೂ ನಾಗ್‍ಪುರ್ (ಅಜ್ನಿ) ಯಿಂದ ಪುಣೆಯ ವರೆಗೆ ಚಲಿಸಲಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೂ ಸಹ ವರ್ಚುವಲ್ ಆಗಿ ಚಾಲನೆ ನೀಡಲಾಯಿತು.

ರಾಜ್ಯ ರಾಜಧಾನಿಯ ಬಹುನಿರೀಕ್ಷಿತ ನಮ್ಮ ಮೆಟ್ರೋ ಆರ್‌.ವಿ.ರಸ್ತೆ- ಬೊಮ್ಮಸಂದ್ರ ಮಾರ್ಗದಲ್ಲಿ (ಹಳದಿ ರಸ್ತೆ) ರೈಲು ಸಂಚಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಹಸಿರು ನಿಶಾನೆ ತೋರಿದ್ದು, ಈ ಮಾರ್ಗದಲ್ಲಿ ಸೋಮವಾರದಿಂದ ವಾಣಿಜ್ಯ ಸಂಚಾರ ಶುರುವಾಗಲಿದೆ.

ಹಳದಿ ಮಾರ್ಗಕ್ಕೆ ಚಾಲನೆ ನೀಡಿದ ಬಳಿಕ ಮೋದಿಯವರು, ಇದೇ ಮೆಟ್ರೋ ರೈಲಿನಲ್ಲಿ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ಸ್ಟೇಷನ್​ವರೆಗೆ ಸಂಚಾರ ಆರಂಭಿಸಿದ್ದಾರೆ.

ಈ ಮೆಟ್ರೋ ರೈಲನ್ನು ಮಹಿಳಾ ಲೋಕೋ ಪೈಲಟ್ ವಿನುತಾ ಅವರು ಚಾಲನೆ ಮಾಡುತ್ತಿದ್ದು, ಮೋದಿಯವರೊಂದಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಸೇರಿ 117 ಜನರು ಪ್ರಯಾಣ ನಡೆಸಿದ್ದಾರೆ.

ಮೋದಿಯವರೊಂದಿಗೆ ಎಂಟು ಜನ ಮಕ್ಕಳು, ಎಂಟು ಮಂದಿ ಮೆಟ್ರೋ ಉದ್ಯೋಗಿಗಳು, ಸರ್ಕಾರಿ ಪ್ರೌಢಶಾಲೆಯ ​16 ವಿದ್ಯಾರ್ಥಿಗಳು, ಆರ್.ವಿ ರೋಡ್ ಟು ಬೊಮ್ಮಸಂದ್ರ ಯೆಲ್ಲೋ ಲೈನ್ ಮಾರ್ಗದಲ್ಲಿ ಮಾರ್ಗದಲ್ಲಿ ಕೆಲಸ ಮಾಡಿದ ಎಂಟು ಕಾರ್ಮಿಕರು ಮತ್ತು 8 ಜನಸಾಮಾನ್ಯರು ಸಂಚಾರ ನಡೆಸಿದ್ದಾರೆ.

ರಾಗಿಗುಡ್ಡದಿಂದ ಮೆಟ್ರೋ ರೈಲು ಸಂಚಾರ ಆರಂಭಗೊಂಡು ಜಯದೇವ ಮೆಟ್ರೋ ಸ್ಟೇಷನ್​ನಲ್ಲಿ ಐದು ನಿಮಿಷ ನಿಲ್ಲಿತು. ನಂತರ ಸಿಲ್ಕ್ ಬೋರ್ಡ್, ಹೊಂಗಸಂದ್ರ, ಸಿಂಗಸಂದ್ರ, ಎಲೆಕ್ಟ್ರಾನಿಕ್ ಸಿಟಿ, ಕೊನಪ್ಪನ ಅಗ್ರಹಾರ ಮೆಟ್ರೋ ಸ್ಟೇಷನ್​ನಲ್ಲಿ ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ಗಣ್ಯರು ರೈಲಿನಿಂದ ಇಳಿದರು.

ಹಳದಿ ಮೆಟ್ರೋ ಮಾರ್ಗಕ್ಕೆ ಇಂದು ಚಾಲನೆ ಸಿಕ್ಕರೂ ಪ್ರಯಾಣಿಕರಿಗೆ ಸಂಚಾರಕ್ಕೆ ಅವಕಾಶವಿಲ್ಲ. ನಾಳೆ ಬೆಳಿಗ್ಗೆ ಐದು ಗಂಟೆಯಿಂದ ಪ್ರಯಾಣಿಕರು ಸಂಚಾರ ಮಾಡಬಹುದಾಗಿದೆ. ಸದ್ಯ ರೈಲುಗಳ ಕೊರತೆ ಇರುವುದರಿಂದ ಆರಂಭದ ಕೆಲ ತಿಂಗಳು 20-25 ನಿಮಿಷಗಳ ಅಂತರದಲ್ಲಿ ರೈಲುಗಳು ಸಂಚರಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

2026ರ ಮಾರ್ಚ್ ವೇಳೆಗೆ 12 ರೈಲು ಸೇರ್ಪಡೆ ಆಗಲಿದ್ದು, ಒಟ್ಟು 15 ರೈಲುಗಳು ಈ ಮಾರ್ಗದಲ್ಲಿ ಕಾರ್ಯಾಚರಣೆ ಮಾಡಲಿವೆ. ಮುಂದಿನ ದಿನಗಳಲ್ಲಿ ಟ್ರಿಪ್‌ಗಳ ಸಂಖ್ಯೆ ಕೂಡ ಹೆಚ್ಚಾಗಲಿದ್ದು, ನಿತ್ಯ 3.5 ಲಕ್ಷ ಮಂದಿ ಪ್ರಯಾಣಿಸಬಹುದು ಎಂದು ಬಿಎಂಆರ್ಸಿಎಲ್‌ ಅಂದಾಜಿಸಲಾಗಿದೆ.

ಸದ್ಯಕ್ಕೆ ಹೊಸ ಹಳದಿ ಮಾರ್ಗದ ಟಿಕೆಟ್ ದರ, ರೈಲುಗಳ ಸಂಚಾರದ ಅವಧಿಯನ್ನು ಬೆಂಗಳೂರು ಮೆಟ್ರೋ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಅಧಿಕೃತವಾಗಿ ಒದಗಿಸಿಲ್ಲ.

ರಾಗಿಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್‌ವರೆಗೆ (ಸಿಎಸ್‌ಬಿ) ಡಬ್ಬಲ್ ಡೆಕ್ಕರ್ (3.3) ನಿರ್ಮಿಸಲಾಗಿದೆ. ಡಬ್ಬಲ್ ಡೆಕ್ಕರ್ ಪ್ರೈಓವರ್‌ನ ಮೇಲ್ಬಾಗದಲ್ಲಿ ನಮ್ಮ ಮೆಟ್ರೋ ರೈಲು ಓಡಾಡಲಿದೆ. ಕೆಳಭಾಗ ವಾಹನಗಳ ಓಡಾಟಕ್ಕೆ ಮೀಸಲಾಗಿದೆ. ಜೊತೆಗೆ ಈ ಮಾರ್ಗದ ಜಯದೇವ ಇಂಟರ್ ಚೇಂಜ್ ಮೆಟ್ರೋ ನಿಲ್ದಾಣ ಅತೀ ಎತ್ತರದ ಮೆಟ್ರೋ ನಿಲ್ದಾಣ ಎನ್ನಿಸಿದ್ದು 5 ಹಂತದ ಸಾರಿಗೆ ವ್ಯವಸ್ಥೆ ನಿರ್ಮಾಣವಾಗಿದೆ. 2026ರ ಡಿಸೆಂಬರ್‌ಗೆ ಈ ಮಾರ್ಗ ಉದ್ಘಾಟನೆ ಆಗಲಿದ್ದು, ಬಳಿಕವಷ್ಟೆ ಇದರ ಪೂರ್ಣ ಬಳಕೆ ಆಗಲಿದೆ.

ಹಳದಿ ಮಾರ್ಗ ಸದ್ಯ ಕೇವಲ ಮೂರು ರೈಲುಗಳಿಂದ ಕಾರ್ಯಾಚರಣೆ ಆಗಲಿದೆ. ಚಾಲಕ ರಹಿತ ರೈಲಿಗಾಗಿ ಸಿಬಿಟಿಸಿ (ಕಮ್ಯುನಿಕೇಶನ್ ಬೇಸ್ ಟ್ರೈನ್ ಕಂಟ್ರೋಲ್) ತಂತ್ರಜ್ಞಾನ ಬಳಸಲಾಗಿದೆ. 2026ರ ವೇಳೆಗೆ ಈ ಮಾರ್ಗಕ್ಕೆ 14 ರೈಲು ಸೇರ್ಪಡೆ ಆಗಲಿದ್ದು, ಆಗ 90 ಸೆಕೆಂಡ್‌ಗೆ ಒಮ್ಮೆ ರೈಲುಗಳು ಸಂಚರಿಸಲಿವೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ಆರಂಭದಲ್ಲಿ ಚಾಲಕ ಸಹಿತವಾಗಿ ಸಂಚರಿಸಿ ಬಳಿಕ ಚಾಲಕರಹಿತವಾಗಿ ರೈಲನ್ನು ಓಡಿಸಲಾಗುವುದು ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

Ramesh Babu

Journalist

Recent Posts

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

7 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago