ವರ್ಷಾಂತ್ಯದೊಳಗೆ ಪಂಚಾಯಿತಿ ಚುನಾವಣೆ- ಸಚಿವ ಈಶ್ವರ ಖಂಡ್ರೆ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಗೆ ಸೇರಿದ ಮತ್ತು ಪಂಚಾಯ್ತಿ ಸೃಜಿಸಿರುವ ಎಲ್ಲ ಸರ್ಕಾರಿ ಆಸ್ತಿಗಳನ್ನು ಜಿಯೋಟ್ಯಾಗ್ ಮಾಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ದೇವನಹಳ್ಳಿಯ ಜಿಲ್ಲಾ ಪಂಚಾಯ್ತಿ ಕಾರ್ಯಾಲಯದಲ್ಲಿಂದು ನಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿಗಳ ಪ್ರಗತಿ ಪರಿಶೀಲನಾ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಭೂಮಿಗೆ ಬಂಗಾರದ ಬೆಲೆ ಇದ್ದು, ಪಂಚಾಯ್ತಿಯ ಯಾವುದೇ ಆಸ್ತಿ ಕಬಳಿಕೆ ಆಗದಂತೆ ಮತ್ತು ಗುಣಮಟ್ಟದ ಖಾತ್ರಿಗೆ ಜಿಯೋ ಟ್ಯಾಗ್ ಮಾಡಲು ಸೂಚಿಸಿರುವುದಾಗಿ ಹೇಳಿದರು.

ರಾಜ್ಯದಲ್ಲಿ ಇಂದಿಗೂ 7483 ಶೌಚಗುಂಡಿ ಕಾರ್ಮಿಕರು (ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್) ಇದ್ದಾರೆ ಎಂದು ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ನೀಡಿರುವ ಹೇಳಿಕೆ ಉಲ್ಲೇಖಿಸಿದ ಸಚಿವರು, ಯಾವುದೇ ಮಲಗುಂಡಿಯ ಸ್ವಚ್ಛತೆಯನ್ನು ಯಾವುದೇ ಕರ್ಮಚಾರಿಯ ಕೈಯಿಂದ ಮಾಡಿಸಿದರೆ ನಿಯಮಾನುಸಾರ ಶಿಸ್ತುಕ್ರಮ ಜರುಗಿಸಲಾಗುವುದು, ಯಂತ್ರಗಳ ಮೂಲಕವೇ ಸ್ವಚ್ಛತೆ ಮಾಡಬೇಕೆಂದು ಸೂಚಿಸಲಾಗಿದ್ದು ಇದಕ್ಕಾಗಿ ಅಗತ್ಯವಿರುವ ಜೆಟ್ಟಿಂಗ್, ಸಕ್ಕಿಂಗ್ ಯಂತ್ರ ಖರೀದಿಸಲಾಗುವುದು ಎಂದರು. ತಾವು ಈ ಹಿಂದೆ ಪೌರಾಡಳಿತ ಸಚಿವರಾಗಿದ್ದಾಗ ಮಲತ್ಯಾಜ್ಯ ಸಂಸ್ಕರಣಾ ಘಟಕ (ಎಫ್.ಎಸ್.ಟಿ.ಪಿ.) ನಿರ್ಮಿಸಲು ಯೋಜನೆ ರೂಪಿಸಿ, ದೇವನಹಳ್ಳಿಯಲ್ಲಿ ಕೂಡ ಒಂದು ಎಫ್.ಎಸ್.ಟಿ.ಪಿ. ಮಾಡಿದ್ದನ್ನು ಸ್ಮರಿಸಿದ ಈಶ್ವರ ಖಂಡ್ರೆ, ಈಗ ಪಂಚಾಯ್ತಿ ಮಟ್ಟದಲ್ಲೂ ಎಫ್.ಎಸ್.ಟಿ.ಪಿ. ನಿರ್ಮಿಸುವುದಾಗಿ ತಿಳಿಸಿದರು.

ಯುಪಿಎ ಕಾರ್ಯಕಾಲದಲ್ಲಿ ಜಾರಿಗೆ ತಂದ ನರೇಗಾದ ಬದಲಾದ ರೂಪವಾದ ವಿಬಿ ಜೀ ರಾಮ್ ಜೀಯನ್ನು ಜುಲೈ 1ರಿಂದ ಜಾರಿ ಮಾಡಬೇಕಾಗಿದ್ದು, ಕೇಂದ್ರ ಸರ್ಕಾರ ಯೋಜನೆಯ ವೇತನಕ್ಕಾಗಿ ನೀಡುವ ಅನುದಾನವನ್ನು ಮನ್ರೇಗಾದಲ್ಲಿದ್ದ 90:10 ಅನುಪಾತದಲ್ಲಿಯೇ ನೀಡಬೇಕು, ಇಲ್ಲವೇ ಕನಿಷ್ಠ 80:20 ಅನುಪಾತಕ್ಕಾದರೂ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿರುವುದಾಗಿ ತಿಳಿಸಿದರು.

ಇದೇ ತಿಂಗಳ 28 ಮತ್ತು 29ರಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರು ಕರೆದಿರುವ ಸಭೆಯಲ್ಲಿ ಭಾಗಿಯಾಗಿ ಯೋಜನೆಯಡಿ ಯಾವ ಕಾಮಗಾರಿ ನಡೆಸಬೇಕು ಎನ್ನುವ ಸ್ವಾತಂತ್ರ್ಯರಾಜ್ಯಗಳಿಗೆ ಇರಬೇಕು, 60 ದಿನಗಳ ಕೆಲಸಕ್ಕೆ ನೀಡಿರುವ ಬಿಡುವು ಕೈ ಬಿಡಬೇಕು ಹಾಗೂ ಕರ್ನಾಟಕ ಈಗಾಗಲೇ ಕನಿಷ್ಠ ವೇತನ ಹೆಚ್ಚಳಕ್ಕೆ ನಿರ್ಣಯ ಕೈಗೊಂಡಿರುವ ಹಿನ್ನೆಲೆಯಲ್ಲಿ ವಿಬಿಜೀ ರಾಮ್ ಜೀಯ ವೇತನವನ್ನು ಅದಕ್ಕೆ ಸರಿದೂಗಿಸುವ ರೀತಿಯಲ್ಲಿ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಲಾಗುವುದು ಎಂದರು.

ಇಸ್ವತ್ತು ಪಡೆಯುವಲ್ಲಿ ಇರುವ ಸರ್ವರ್ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇದರ ಜೊತೆಗೆ ಪೂರ್ವಜರಿಂದ ಬಂದ ಆಸ್ತಿಗೆ ಸಂಬಂಧಿಸಿದಂತೆ ಕೆಲವು ಗ್ರಾಮೀಣರ ಬಳಿ ಯಾವುದೇ ದಾಖಲೆ ಇಲ್ಲದ ಕಾರಣ ಅವರೆಲ್ಲರಿಗೂ ದಾಖಲೆಯ ವಿನಾಯಿತಿ ನೀಡಿ, ಸ್ವಾಧೀನಾನುಭವದ ಖಾತ್ರಿ ಪಡಿಸಿಕೊಂಡು ಆಸ್ತಿ ಹಕ್ಕು ನೀಡುವ ಕುರಿತಂತೆ ಪರಿಶೀಲಿಸಲಾಗುವುದು ಎಂದರು.

*ವರ್ಷಾಂತ್ಯದೊಳಗೆ ಪಂಚಾಯಿತಿ ಚುನಾವಣೆ*

ಅವಧಿ ಮುಗಿದಿರುವ ಎಲ್ಲ ಪಂಚಾಯ್ತಿಗಳಿಗೆ ಚುನಾವಣೆ ನಡೆಸಲು ಇಲಾಖೆ ಈಗಾಗಲೇ ಕ್ರಮ ವಹಿಸಿದ್ದು, ಈ ವರ್ಷಾಂತ್ಯದೊಳಗೆ ಜಿಲ್ಲಾ, ತಾಲ್ಲೂಕು, ಗ್ರಾಮ ಪಂಚಾಯಿತಿ ಚುನಾವಣೆ ನಡೆದೇ ನಡೆಯುತ್ತದೆ, ಅಧಿಕಾರ ವಿಕೇಂದ್ರೀಕರಣದ ಉದ್ದೇಶವನ್ನು ಸರ್ಕಾರ ಈಡೇರಿಸುತ್ತದೆ ಎಂದರು.

ಜಲಜೀವನ ಅಭಿಯಾನದ ಅಡಿಯಲ್ಲಿ ಪೈಪ್ಲೈನ್ ಅಳವಡಿಸಲು ಅಗೆದಿರುವ ರಸ್ತೆಯನ್ನು ಮರು ಅಭಿವೃದ್ಧಿ ಪಡಿಸದೇ ಇರುವ ಕಾರಣ ಸಂಚಾರಕ್ಕೆ ಅಡ್ಡಿಯಾಗುತ್ತಿದೆ ಏನು ಕ್ರಮ ವಹಿಸುತ್ತೀರಿ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಬಗ್ಗೆ ಅಧಿಕಾರಿಗಳಿಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸ್ಪಷ್ಟ ಸೂಚನೆ ನೀಡುವುದಾಗಿ ತಿಳಿಸಿದರು.
ನಂತರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗಿಯಾದ ಈಶ್ವರ ಖಂಡ್ರೆ, ನೀರಿನ ಕೊಳವೆ ಅಳವಡಿಸಲು ಅಗೆದಿರುವ ರಸ್ತೆಗಳ ಪರಿಶೀಲನೆ ನಡೆಸಿ ಸಂಚಾರಕ್ಕೆ ಅಡ್ಡಿ ಆಗದ ರೀತಿಯಲ್ಲಿ ತುರ್ತು ಕ್ರಮ ವಹಿಸಲು ಮತ್ತು ಎಷ್ಟು ಗ್ರಾಮಗಳಲ್ಲಿ ಹರ್ ಘರ್ ಜಲ್ ವರದಿ ಮಾಡಲಾಗಿದೆ. ಎಷ್ಟು ಪ್ರಮಾಣಪತ್ರ ಆಗಿದೆ ಎಂಬ ಸ್ಪಷ್ಟ ಮಾಹಿತಿ ಒದಗಿಸಲು ಸೂಚಿಸಿದರು.
ಜಲ ಜೀವನ್ ಮಿಷನ್ ಮತ್ತು ರಸ್ತೆ ಅಭಿವೃದ್ಧಿ ಸೇರಿದಂತೆ ಯಾವುದೇ ಕಾಮಗಾರಿಯಲ್ಲಿ ಯಾರೇ ಗುತ್ತಿಗೆದಾರರು ವಿಳಂಬ ಮಾಡಿದ್ದರೆ, ನೋಟಿಸ್ ಜಾರಿ ಮಾಡಿ, ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸುವಂತೆ ತಿಳಿಸಿದರು.

ಎಲ್ಲ ನಾಗರಿಕತೆಗಳೂ ಹುಟ್ಟಿರುವುದು ನದಿ ಮತ್ತು ಜಲ ಮೂಲಗಳ ತಟದಲ್ಲಿ. ಮನುಷ್ಯ ನೀರಿಲ್ಲದೆ ಬದುಕಲು ಸಾಧ್ಯವಿಲ್ಲ. ಹೀಗಾಗಿ ಕುಡಿಯುವ ನೀರಿನ ಪೂರೈಗೆಕೆ ಒತ್ತು ನೀಡುವಂತೆ ಹಾಗೂ ಯಾವುದೇ ಜಲ ಮೂಲದಲ್ಲಾಗಲೀ, ಕೊಳವೆ ಮಾರ್ಗದಲ್ಲಾಗಲಿ ಕಲುಷಿತ ನೀರು ಸೋರಿಕೆ ಆಗದಂತೆ ಕಟ್ಟೆಚ್ಚರ ವಹಿಸಲು, ಸೋರಿಕೆ ಇದ್ದರೆ ಪರಿಶೀಲಿಸಿ ಎನ್ ಕೇಸಿಂಗ್ ಮಾಡುವಂತೆ ಸೂಚಿಸಿದರು.

ಕೊಳವೆ ಬಾವಿಯಿಂದ ಪೂರೈಸುವ ನೀರಿನ ಗುಣಮಟ್ಟದ ಪರೀಕ್ಷೆ ನಡೆಸಿ ಪ್ಲೊರೈಡ್ ಸೇರಿದಂತೆ ಯಾವುದೇ ಅಪಾಯಕಾರಿ ಅಂಶಗಳಿದ್ದರೆ ಕೂಡಲೇ ಸೂಕ್ತ ಕ್ರಮ ವಹಿಸುವಂತೆ ಸೂಚನೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಇಲಾಖೆಯ ಕಾರ್ಯದರ್ಶಿಗಳಾದ ಸಮೀರ್ ಶುಕ್ಲ, ರಂದೀಪ್, ಜಿಲ್ಲಾಧಿಕಾರಿ ಡಾ.ಕೆ.ಎನ್. ಅನರಾಧಾ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವಾಸಂತಿ ಅಮರ್, ಮತ್ತಿತರರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

2 hours ago

ಬಸ್ ಏರಿದ್ರೆ ಗಮ್ಯಸ್ಥಾನ ಸೇರುತ್ತೇವೆ ಅನ್ನೋ ಗ್ಯಾರಂಟಿ ಇಲ್ಲ!: ಗುಂಡಮ್ಮಗೆರೆ–ಹೊಸಹಳ್ಳಿ ಮಾರ್ಗದಲ್ಲಿ ಪದೇ ಪದೇ ಕೆಟ್ಟು ನಿಲ್ಲುವ ಸಾರಿಗೆ ಬಸ್‌ಗಳು

ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್‌ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…

2 hours ago

ಕೃಷ್ಣ ಜನ್ಮಾಷ್ಟಮಿಯ ನೆಪದಲ್ಲಿ ಒಂದಷ್ಟು ಚಿಂತನೆ……

ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…

4 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ ರಾಜಶೇಖರ್ ಆಚಾರ್

  ಚಿಕ್ಕನಾಯಕನಹಳ್ಳಿ: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

14 hours ago

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ : ಕಾರ್ಯದರ್ಶಿ ಹೇಮಂತ್

  ಚಿಕ್ಕನಾಯಕನಹಳ್ಳಿ: ರೈತರ ವಿಕಸನಕ್ಕೆಂದೇ ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

14 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಕೇರ್ ಬೈ ಬಿಎಲ್‌ಆರ್’ ವೈಯಕ್ತಿಕ ಪ್ರಯಾಣಿಕ ಸೇವೆ ಆರಂಭ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನಲ್ಲಿ ಪ್ರಯಾಣಿಕರ ಅನುಭವವನ್ನು ಇನ್ನಷ್ಟು ಸುಗಮ, ಅನುಕೂಲಕರ ಮತ್ತು ವೈಯಕ್ತಿಕ ಅಗತ್ಯಗಳಿಗೆ ಹೊಂದುವಂತೆ…

18 hours ago