ವಲಸೆ ಕಾರ್ಮಿಕರಿಗೆ ‘ಶ್ರಮಿಕ್ ನಿವಾಸ್’ ಯೋಜನೆ ಜಾರಿ, ಶ್ರಮಿಕರ ಗೌರವಯುತ ಬದುಕಿನತ್ತ ಮಹತ್ವದ ಹೆಜ್ಜೆ: ಸಚಿವ ಶಿವರಾಂ ಹೆಬ್ಬಾರ್

ಇತರೆ ಜಿಲ್ಲೆ, ರಾಜ್ಯಗಳಿಂದ ವಲಸೆ ಬರುವ ಕಾರ್ಮಿಕರ ವಸತಿ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರ ‘ಶ್ರಮಿಕ್ ನಿವಾಸ್’ ಯೋಜನೆ ಜಾರಿ ಮಾಡಿದ್ದು, ಈ ಯೋಜನೆಯಿಂದಾಗಿ ಶ್ರಮಿಕ ವರ್ಗವೂ ಸಹ ಗೌರವದ ಬದುಕು ಕಂಡುಕೊಳ್ಳಲು ಸಹಾಯವಾಗಲಿದೆ ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಪ್ರತಿಪಾದಿಸಿದರು.

ದೊಡ್ಡಬಳ್ಳಾಪುರದ ಓಬದೇನಹಳ್ಳಿಯಲ್ಲಿ ರಾಜ್ಯ ಕಾರ್ಮಿಕ ಇಲಾಖೆಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಮಹತ್ವಾಕಾಂಕ್ಷೆಯ “ಶ್ರಮಿಕ್ ನಿವಾಸ್” ಯೋಜನೆಯಡಿ ನಿರ್ಮಿಸಲಾಗಿರುವ ಬೃಹತ್ ಕಟ್ಟಡದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾರ್ಗದರ್ಶನದಲ್ಲಿ ದೇಶದಲ್ಲೇ ಮೊಟ್ಟ ಮೊದಲು ಎನ್ನಬಹುದಾದ ಶ್ರಮಿಕ್ ನಿವಾಸ್ ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ ಎಂದ ಸಚಿವರು, ಈ ಯೋಜನೆ ಜಾರಿಯಿಂದ ರಾಜ್ಯ ಮತ್ತು ದೇಶದ ಘನತೆ ಹೆಚ್ಚಲಿದೆ ಅಂತೆಯೇ ವಲಸೆ ಕಾರ್ಮಿಕರಲ್ಲೂ ಭರವಸೆ ಮೂಡಲಿದ್ದು, ಇದರಿಂದ ಆ ವರ್ಗವೂ ಸಹ ಗೌರವದ ಬದುಕು ಕಾಣಲು ಸಾಧ್ಯವಾಗಲಿದೆ ಎಂದರು.

“ದೇಶವನ್ನು ರಕ್ಷಿಸುವ ಸೈನಿಕರು, ಹಸಿವು ನೀಗಿಸುವ ರೈತರು ಮತ್ತು ದೇಶ ಕಟ್ಟುವುದರಲ್ಲಿ ಮಹತ್ವದ ಪಾತ್ರವಹಿಸಿರುವ ಶ್ರಮಿಕ ವರ್ಗ ಸುಖಃ ನೆಮ್ಮದಿ ಶಾಂತಿಯಿಂದ ಇದ್ದರೆ ದೇಶದ ಅಭಿವೃದ್ಧಿಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ, ಹೀಗಾಗಿ ರಾಜ್ಯ ಸರ್ಕಾರ ಶ್ರಮಿಕ ವರ್ಗಕ್ಕಾಗಿ ಹತ್ತು ಹಲವು ಯೋಜನೆಗಳನ್ನು ರೂಪಿಸಲಾಗಿದೆ” ಎಂದರು.

2006ರಲ್ಲಿ ಜಾರಿಗೆ ಬಂದಿರುವ ಕಾನೂನಿನಂತೆ ರಸ್ತೆ, ಮನೆ, ಬೃಹತ್ ವಸತಿ ಗೃಹ ಸೇರಿದಂತೆ ಯಾವುದೇ ನಿರ್ಮಾಣ ಆಗಬೇಕಿದ್ದರೆ ನಿರ್ಮಾಣಕ್ಕೂ ಮುನ್ನ ಶೇ.1ರಷ್ಟನ್ನು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಗೆ ಪಾವತಿಸಬೇಕು. ತಪ್ಪಿದಲ್ಲಿ ಕ್ರಿಮಿನಲ್ ಮೊಕದ್ದಮೆ ಹೂಡಲು ಅವಕಾಶ ಇರುತ್ತದೆ ಎಂದ ಸಚಿವ ಹೆಬ್ಬಾರ್, ಈ ಹಣದಲ್ಲಿ ರಾಜ್ಯ ಸರ್ಕಾರವು ಕಟ್ಟಡ ಕಾರ್ಮಿಕರಿಗೆ ಹಲವಾರು ಯೋಜನೆಗಳ ಮೂಲಕ ಸವಲತ್ತುಗಳನ್ನು ನೀಡುತ್ತಿದೆ ಎಂದರು.

ಕೈಗಾರಿಕಾ ಪ್ರದೇಶಗಳು ಸೇರಿದಂತೆ ಬೃಹತ್ ನಿರ್ಮಾಣ ವಲಯಗಳ ಆಸುಪಾಸಿನಲ್ಲಿ ‘ಶ್ರಮಿಕ್ ನಿವಾಸ್’ ಯೋಜನೆಯಡಿ ಶ್ರಮಿಕ ವರ್ಗಕ್ಕೆ ವಸತಿ ನೀಡುವ ಸಲುವಾಗಿ ವಸತಿ ಸಮುಚ್ಚಯ ಮತ್ತು ಬಿಡಿ ಮನೆಗಳ ನಿರ್ಮಾಣಕ್ಕೆ ಮುಂದಾಗಿದ್ದು, 138.71 ಕೋಟಿ ವೆಚ್ಚದಲ್ಲಿ ಶಿವಮೊಗ್ಗ, ಕಲ್ಬುರ್ಗಿ, ದಾವಣಗೆರೆ, ಬೆಳಗಾವಿ, ಬೆಂಗಳೂರು ಗ್ರಾಮಾಂತರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಯೋಜನೆಯು ಪ್ರಗತಿಯ ಹಂತದಲ್ಲಿವೆ.

ಅದರಲ್ಲಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಓಬದೇವನಹಳ್ಳಿಯಲ್ಲಿ 40 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಈ ವಸತಿ ಸಮುಚ್ಛಯ ಯೋಜನೆಯಲ್ಲಿ 10 ಕೋಟಿ ವೆಚ್ಛದಲ್ಲಿ ನಿರ್ಮಿಸಲಾದ ಮೊದಲ ಹಂತದ ಸಮುಚ್ಚಯ ಕಾಮಗಾರಿಯು ಪೂರ್ಣಗೊಂಡಿದ್ದು ಲೋಕಾರ್ಪಣೆಗೊಳಿಸಲಾಗಿದೆ ಮತ್ತು ಉಳಿಕೆ 30 ಕೋಟಿ ವೆಚ್ಛದ ಕಾಮಗಾರಿಯು ಪ್ರಗತಿಯಲ್ಲಿದೆ ಎಂದು ಸಚಿವ ಹೆಬ್ಬಾರ್ ಮಾಹಿತಿ ನೀಡಿದರು.

ಶ್ರಮಿಕ್ ನಿವಾಸ್ ಯೋಜನೆಯಡಿ ಏಕ ವಸತಿ ಮತ್ತು ಕುಟುಂಬ ವಸತಿಯ ಸಮುಚ್ಚಯಗಳು ನಿರ್ಮಾಣವಾಗುತ್ತಿದೆ. ಏಕ ವಸತಿ ಸಮುಚ್ಚಯದಲ್ಲಿ ಸಾಮೂಹಿಕ ವಸತಿಗೆ ಅವಕಾಶವಿದ್ದು, ಏಕ ಹಾಸಿಗೆ ವ್ಯವಸ್ಥೆ ಮತ್ತು ದ್ವಿ-ಹಾಸಿಗೆ ವ್ಯವಸ್ಥೆ ಲಭಿಸಲಿದೆ. ಕುಟುಂಬದೊಂದಿಗೆ ಉಳಿದುಕೊಳ್ಳ ಬಯಸುವ ಕಾರ್ಮಿಕರಿಗೆ ಪ್ರತ್ಯೇಕ ಮನೆಗಳನ್ನು ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ವೆಂಕಟರಮರಯ್ಯ, ತಮ್ಮ ಕ್ಷೇತ್ರದ ಓಬದೇನಹಳ್ಳಿಯಲ್ಲಿ ಕಾರ್ಮಿಕ ಇಲಾಖೆ ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಶ್ರಮಿಕ್ ನಿವಾಸ್ ಯೋಜನೆಯಡಿ ಕಟ್ಟಡ ನಿರ್ಮಿಸಿ ಲೋಕಾರ್ಪಣೆ ಗೊಳಿಸಿರುವುದು ತಮಗೆ ಸಂತಸ ತಂದಿದೆ ಎಂದರು.

ಈ ಪ್ರದೇಶದಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪಿಸುವ ಮಹಾದಾಸೆ ತಮ್ಮದಾಗಿತ್ತು, ಆದರೀಗ ಶ್ರಮಿಕ್ ನಿವಾಸ್ ಇಲ್ಲಿ ನಿರ್ಮಾಣವಾಗಿರುವುದರಿಂದ ವಲಸೆ ಕಾರ್ಮಿಕರಿಗೆ ಸಹಾಯವಾಗಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆ ಆಯುಕ್ತ ಅಕ್ರಂ ಪಾಷ, ಮಂಡಳಿ ಕಾರ್ಯದರ್ಶಿ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗುರು ಪ್ರಸಾದ್ ಎಂ.ಪಿ, ಮಂಡಳಿ ಜಂಟಿ ಕಾರ್ಯದರ್ಶಿ ಡಾ. ಶಿವಪುತ್ರ ಬಾಬುರಾವ್, ಕಲ್ಯಾಣ ಆಯುಕ್ತರಾದ ಟಿ. ಆಂಜನೇಯ, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ತೇಜಸ್ ಕುಮಾರ್, ಮಂಡಳಿ ಸದಸ್ಯರಾದ ವೆಂಕಟೇಶ್, ಶಿವಾನಿ ಶಾಂತರಾಮ್ ಸೇರಿದಂತೆ ಕಾರ್ಮಿಕ ಅಧಿಕಾರಿಗಳು, ಕಾರ್ಮಿಕ ಮುಖಂಡರು ಮತ್ತು ಕಾರ್ಮಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

6 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

9 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

21 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

22 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

1 day ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago