ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ಸೂಲಿಬೆಲೆ ಪಟ್ಟಣದಲ್ಲಿ ಶನಿವಾರ 1 ವರ್ಷದ ಗಂಡು ಮಗುವೊಂದನ್ನು ವಾಮಾಚಾರಕ್ಕೆ ಬಲಿಕೊಡಲು ಸಿದ್ಧತೆ ನಡೆಯುತ್ತಿತ್ತು ಎಂಬ ಅನುಮಾನದಡಿ ಜಿಲ್ಲಾ ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮನೆಯ ಮೇಲೆ ದಾಳಿ ಮಾಡಿ ರಕ್ಷಣೆ ಮಾಡಿದ್ದಾರೆ.
ರಕ್ಷಣೆ ಮಾಡಿದ ಮಗುವನ್ನು ಶಿಶುಮಂದಿರದ ಆಸರೆಗೆ ಒಪ್ಪಿಸಲಾಗಿದ್ದು, ಸೋಮವಾರ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಗುತ್ತದೆ. ಅಲ್ಲಿ ಬರುವ ಆದೇಶದ ಬಳಿಕ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯಲಿದೆ. ಶನಿವಾರ ಮುಂಜಾನೆ ಮಕ್ಕಳ ಸಹಾಯವಾಣಿಗೆ ಸಾರ್ವಜನಿಕ ರೊಬ್ಬರು ಕರೆ ಮಾಡಿ ವಾಮಾಚಾರ ನಡೆಯುತ್ತಿರುವ ಬಗ್ಗೆ ಮಾಹಿತಿ ನೀಡಿದ್ದರು. ಕರೆ ಆಧರಿಸಿ ತಕ್ಷಣ ಕಾರ್ಯಪ್ರವೃತ್ತರಾದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಶಿವಮ್ಮ, ಮಕ್ಕಳ ರಕ್ಷಣಾಧಿಕಾರಿ ಶ್ರೀಧರ್ ಹಾಗೂ ಸಿಬ್ಬಂದಿ, ಮಕ್ಕಳ ಸಹಾಯವಾಣಿ ಸಿಬ್ಬಂದಿ ಶ್ರೀನಿವಾಸ್ ಅವರು ಪೊಲೀಸರ ಸಹಕಾರದೊಂದಿಗೆ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ಮೂರಂತಸ್ತಿನ ಕಟ್ಟಡದಲ್ಲಿನ ತಳ ಮಹಡಿಯಲ್ಲಿ ಅಗೆದು ಗುಂಡಿ ತೋಡಿರುವ ದೃಶ್ಯ ಕಂಡು
ಬಂದಿದೆ. ಜತೆಗೆ ಅಲ್ಲಿ 1 ವರ್ಷದ ಗಂಡುಮಗುಪತ್ತೆಯಾಗಿದೆ. ನಿಧಿ ಆಸೆಗಾಗಿ ಮಗು ಬಲಿಯ ಯತ್ನ?:ಪೌರ್ಣಿಮೆ ದಿನವಾದ ಶನಿವಾರ ನಿಧಿ ಆಸೆಗಾಗಿ ಮಗು ಬಲಿಕೊಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮನೆಯೊಂದರಲ್ಲಿ ಹುತ್ತವನ್ನು ಅಗೆದು ಪೂಜಾ ಸಾಮಗ್ರಿಗಳನ್ನು ಅಣಿಗೊಳಿಸಿರುವ ದೃಶ್ಯ ಕಂಡುಬಂದಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಗಳ ತನಿಖೆ ವೇಳೆ ಇಮ್ರಾನ್ ಹಾಗೂ ನಚ್ಚಾ ದಂಪತಿಗೆ ಇಬ್ಬರು ಹೆಣ್ಣುಮಕ್ಕಳಿದ್ದು, ಈ ಮಗುವನ್ನು ಕೋಲಾರದ ದಂಪತಿಯಿಂದ ಖರೀದಿಸಿ ತಂದಿರುವುದಾಗಿ ತಿಳಿಸಿದ್ದಾರೆ.
ಸಾಕಷ್ಟು ಅನುಮಾನ!:ಮನೆಯಲ್ಲಿ ಹುತ್ತ ಬೆಳೆದು ಕೊಂಡಿತ್ತು. ಅದನ್ನು ತೆರವುಗೊಳಿಸಲು ಅಗೆದಿರುವುದಾಗಿ ಮನೆಯವರು ಒಂದು ಕಡೆ ಹೇಳಿಕೆ ನೀಡಿದ್ದಾರೆ. ಮತ್ತೊಂದು ಕಡೆ ಗಂಡನಿಗೆ ಆರೋಗ್ಯ ಸರಿಯಿರಲಿಲ್ಲ. ಅವರಿಗೆ ಯಾರೋ ಮಾಟ ಮಾಡಿಸಿ ಇಲ್ಲಿ ಅಡಗಿಸಿಟ್ಟಿದ್ದಾರೆ ಎಂಬ ಕಾರಣಕ್ಕೆ ಆಗೆದಿದ್ದೇವೆ ಎಂಬ ಗೊಂದಲದ ಹೇಳಿಕೆ ನೀಡಿದ್ದಾರೆ. ಈ ಭಿನ್ನ ಹೇಳಿಕೆಗಳು ಅನುಮಾನಗಳಿಗೆ ಎಡೆಮಾಡಿಕೊಟ್ಟಿವೆ.
ಸಹಾಯವಾಣಿ ಕರೆ ಆಧರಿಸಿ ಕಾರ್ಯಾಚರಣೆ ನಡೆಸಲಾಗಿದ್ದು ಮಗುವನ್ನು ರಕ್ಷಣೆ ಮಾಡಿ ದೇವನಹಳ್ಳಿಯ ಶಿಶುಮಂದಿರದಲ್ಲಿ ಆಶ್ರಯ ಕಲ್ಪಿಸಲಾಗಿದೆ. ಕಲ್ಯಾಣ ಸಮಿತಿ ಎದುರು ಮಗುವನ್ನು ಹಾಜರುಪಡಿಸಿ ಅವರ ಆದೇಶದಂತೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಸೋಮವಾರ ಸಮಿತಿ ಆದೇಶ ಬರಲಿದ್ದು ಠಾಣೆಯಲ್ಲಿ ಪ್ರಕರಣ ದಾಖಲಾಗಲಿದ್ದು, ಮುಂದಿನ ತನಿಖೆ ನಡೆಯಲಿದೆ ಎಂದು ಅನಿತಾಲಕ್ಷ್ಮೀ, ಜಿಲ್ಲಾ ಮಕ್ಕಳ ಕಲ್ಯಾಣಾಧಿಕಾರಿ, ಬೆಂ.ಗ್ರಾಮಾಂತರ ಹೇಳಿದರು.
ಮನೆಯ ತಳಮಹಡಿಯಲ್ಲಿ ದೊಡ್ಡದಾದ ಗುಂಡಿ ತೆಗೆಯಲಾಗಿದೆ. ವಿಚಾರಣೆ ವೇಳೆ ದಂಪತಿ ಗೊಂದಲದ ಹೇಳಿಕೆಗಳನ್ನು ನೀಡಿದ್ದಾರೆ. ಇವೆಲ್ಲವೂ ಬಗ್ಗೆ ಮಕ್ಕಳ ಕಲ್ಯಾಣ ಸಮಿತಿಗೆ ವರದಿ ಮಾಡಲಾಗುತ್ತದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮಕ್ಕಳ ಸಹಾಯವಾಣಿ ಹಾಗೂ ಪೊಲೀಸರ ಸಹಕಾರದೊಂದಿಗೆ ಯಶಸ್ವಿಯಾಗಿ ಕಾರ್ಯಾಚರಣೆ ಮಾಡಲಾಗಿದೆ ಎಂದು ಶ್ರೀಧರ್, ಮಕ್ಕಳ ರಕ್ಷಣಾಧಿಕಾರಿ ಬೆಂ.ಗ್ರಾ ಹೇಳಿದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…