ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಆಯವ್ಯಯ ಲೆಕ್ಕಾಚಾರದ ಮೂಲಪಾಠವೇ ಗೊತ್ತಿಲ್ಲ- ಅವರನ್ನು ತಕ್ಷಣ ಕೇಂದ್ರ ಸಂಪುಟದಿಂದ ಕೈಬಿಡಬೇಕು- ಸಿಎಂ ಸಿದ್ದರಾಮಯ್ಯ ಹೇಳಿಕೆ

ಆಯವ್ಯಯದ ಲೆಕ್ಕಾಚಾರದ ಮೂಲಪಾಠವೇ ಗೊತ್ತಿಲ್ಲದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತೇನೆ. ಇಂಥವರ ಕೈಯಲ್ಲಿ ಹಣಕಾಸು ಖಾತೆ ನೀಡಿರುವುದು ಅತ್ಯಂತ ಅಪಾಯಕಾರಿ ನಿರ್ಧಾರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಭಾನುವಾರದ ಪತ್ರಿಕಾಗೋಷ್ಠಿಯಲ್ಲಿ ನರೇಂದ್ರ ಮೋದಿ ಸರ್ಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯವನ್ನು ಮರೆಮಾಚುವ ಹತಾಶ ಪ್ರಯತ್ನ ಮಾಡಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ತಾವೇ ಹೆಣೆದ ಬಲೆಯಲ್ಲಿ ಸಿಕ್ಕಿ ಹಾಕಿಕೊಡಿರುವುದು ದುರಂತ. ಸಚಿವರ ಗೊಂದಲಮಯ ಹೇಳಿಕೆಗಳ ಸಿಕ್ಕುಗಳನ್ನೆಲ್ಲ ಬಿಡಿಸುತ್ತಾ ಹೋದರೆ ಕೊನೆಗೂ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನೀಡಿರುವುದು ಚೊಂಬು ಮಾತ್ರ ಎನ್ನುವುದು ಸಾಬೀತಾಗುತ್ತದೆ ಎಂದರು.

ನಿರ್ಮಲಾ ಸೀತಾರಾಮನ್ ಅವರ ಪ್ರಕಾರ ಹಿಂದಿನ ಯುಪಿಎ ಸರ್ಕಾರ (2004-2014) ಹತ್ತು ವರ್ಷಗಳ ಅವಧಿಯಲ್ಲಿ ಕರ್ನಾಟಕಕ್ಕೆ ನೀಡಿರುವ ಅನುದಾನ ರೂ.60,779 ಕೋಟಿ. ಎನ್‌ಡಿಎ ಸರ್ಕಾರ (2014-2024) ಹತ್ತು ವರ್ಷಗಳ ಅವಧಿಯಲ್ಲಿ ನೀಡಿದ್ದ ಹಣ ರೂ.2,36,955 ಕೋಟಿ ಎಂದು ಸಚಿವೆ ಆರೋಪಿಸಿದ್ದಾರೆ. ಆದರೆ ಹತ್ತು ವರ್ಷಗಳ ಅವಧಿಯಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ ಎಷ್ಟು ಪಟ್ಟು ಹೆಚ್ಚಾಗಿದೆ ಎನ್ನುವುದನ್ನು ಅವರು ಮರೆತಿದ್ದಾರೆ. ಇದು ಅವರ ಅಜ್ಞಾನವೋ, ಇಲ್ಲವೇ ಜನತೆಯ ದಾರಿ ತಪ್ಪಿಸುವ ಹುನ್ನಾರವೋ? ಎಂಬುದನ್ನು ಅವರೇ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.

2013-14ರ ಕೇಂದ್ರ ಸರ್ಕಾರದ ಬಜೆಟ್ ರೂ.16,06 ಲಕ್ಷ ಕೋಟಿ. ಆಗ ಕರ್ನಾಟಕಕ್ಕೆ ಅನುದಾನದ ರೂಪದಲ್ಲಿ ರೂ. 16,428 ಕೋಟಿ ಮತ್ತು ತೆರಿಗೆ ಹಂಚಿಕೆಯಲ್ಲಿ ರೂ.15,005 ಕೋಟಿ ಹೀಗೆ ಒಟ್ಟು ರೂ.31,483 ಕೋಟಿ ನೀಡಲಾಗಿತ್ತು. ಈ ನೆರವು ಒಟ್ಟು ಬಜೆಟ್ ನ ಶೇಕಡಾ 1.9ರಷ್ಟಾಗುತ್ತದೆ ಎಂದರು.

2024-25ರ ಅವಧಿಯ ಕೇಂದ್ರ ಸರ್ಕಾರದ ಬಜೆಟ್ ಗಾತ್ರ ರೂ.48.02 ಲಕ್ಷ ಕೋಟಿಯಾಗಿದೆ. ಈ ಅವಧಿಯಲ್ಲಿ ನಮಗೆ ಕೇಂದ್ರ ಅನುದಾನದ ರೂಪದಲ್ಲಿ ರೂ.15,229 ಕೋಟಿ ಮತ್ತು ತೆರಿಗೆ ಹಂಚಿಕೆಯಲ್ಲಿ ರೂ.44.485 ಕೋಟಿ ನೀಡಲಾಗುತ್ತದೆ. ಇದು ಒಟ್ಟು ಬಜೆಟ್ ಗಾತ್ರದ ಶೇಕಡಾ 1.2 ರಷ್ಟಾಗುತ್ತದೆ. 2013-14ರ ಪ್ರಮಾಣದಲ್ಲಿ (ಶೇಕಡಾ 1.9)ಯೇ ಅನುದಾನ ಮತ್ತು ತೆರಿಗೆ ಹಂಚಿಕೆಯ ಹಣವನ್ನು 2024-25ರ ಅವಧಿಯಲ್ಲಿಯೂ ಕರ್ನಾಟಕಕ್ಕೆ ನೀಡಿದ್ದರೆ ಕೇಂದ್ರ ಸರ್ಕಾರದ ನೀಡುವ ಹಣದ ಮೊತ್ತ ರೂ.91,580 ಕೋಟಿಗಳಾಗುತ್ತಿತ್ತು. ಅಂದರೆ ನರೇಂದ್ರ ಮೋದಿ ಸರ್ಕಾರ ಮಾಡಿರುವ ಅನ್ಯಾಯದಿಂದಾಗಿ ಕಳೆದ ಒಂದು ವರ್ಷದ ಅವಧಿಯಲ್ಲಿ ಕರ್ನಾಟಕ 31,866 ಕೋಟಿ ರೂಪಾಯಿ ಕಳೆದುಕೊಂಡಿದೆ ಎಂದರು.

ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸುಳ್ಳಿನ ದಾರಿಯಲ್ಲಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಬರುವ ತೆರಿಗೆ ಹಂಚಿಕೆಯಲ್ಲಿ ವೃದ್ಧಿಯಾಗಿದೆ ಎನ್ನುವ ದಾರಿ ತಪ್ಪಿಸುವ ಹೇಳಿಕೆ ನೀಡಿದ್ದಾರೆ. ಅವರ ಪ್ರಕಾರ ಯುಪಿಎ ಸರ್ಕಾರದ ಕಾಲದಲ್ಲಿ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದ ಪಾಲು ರೂ.81,791 ಕೋಟಿ ಮಾತ್ರ. 2014-24ರ ಅವಧಿಯ ಎನ್‌ಡಿ.ಎ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಪಡೆದಿರುವುದು  ರೂ.2.9 ಲಕ್ಷ ಕೋಟಿ ಎಂದು ಹೇಳಿದರು.

ಹದಿನಾಲ್ಕನೇ ಹಣಕಾಸು ಆಯೋಗ ಕರ್ನಾಟಕದ ತೆರಿಗೆ ಪಾಲು ಶೇ 4.72 ಎಂದು ನಿಗದಿಪಡಿಸಿತ್ತು, ಈಗಿನ 15ನೇ ಹಣಕಾಸು ಆಯೋಗ ಈ ಪಾಲನ್ನು ಕಡಿಮೆಗೊಳಿಸಿ ಶೇ 3.64ಕ್ಕೆ ಇಳಿಸಿತು. ಇದರಿಂದ ಕಳೆದ ಐದು ವರ್ಷಗಳಲ್ಲಿ ತೆರಿಗೆ ಪಾಲಿನಲ್ಲಿ ಅಂದಾಜು ರೂ.62,098 ಕೋಟಿಯನ್ನು ಕರ್ನಾಟಕ ಕಳೆದುಕೊಂಡಿದೆ. ಇದನ್ನು ನಿರ್ಮಲಾ ಸೀತಾರಾಮನ್ ಜಾಣತನದಿಂದ ಮರೆಮಾಚಲು ಪ್ರಯತ್ನಿಸಿದ್ದಾರೆ ಎಂದರು.

ಜಿಎಸ್‌ಟಿ ಸಂಗ್ರಹದಲ್ಲಿ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿ ರಾಜ್ಯ ಇದೆ. ಇನ್ನು ಜಿಎಸ್‌ಟಿ ಸಂಗ್ರಹದ ಬೆಳೆವಣಿಗೆ ದರವನ್ನು ಗಮನಿಸಿದರೆ ಶೇ.17ರ ಸಾಧನೆಯ ಮೂಲಕ ದೇಶದಲ್ಲೇ ಮೊದಲ ಸ್ಥಾನದಲ್ಲಿ ಕರ್ನಾಟಕವಿದೆ. ವಿಪರ್ಯಾಸವೆಂದರೆ ಈ ಪ್ರಮಾಣದಲ್ಲಿ ಜಿಎಸ್‌ಟಿ ಹಣವನ್ನು ಕೇಂದ್ರಕ್ಕೆ ಸಂಗ್ರಹಿಸಿ ನೀಡಿದರೂ ಇದರಿಂದ ರಾಜ್ಯಕ್ಕೆ ಮರಳಿ ದೊರೆಯುತ್ತಿರುವುದು ಶೇ.52 ಪಾಲು ಮಾತ್ರ. ಜಿಎಸ್‌ಟಿಯ ಅವೈಜ್ಞಾನಿಕ ಅನುಷ್ಠಾನದಿಂದಾಗಿ ಕರ್ನಾಟಕವು 2017-18ರಿಂದ 2023-24ರ ವರೆಗೆ ಸುಮಾರು ರೂ. 59,274 ಕೋಟಿ ಹಣವನ್ನು ಕಳೆದುಕೊಂಡಿದೆ ಎಂದು ಹೇಳಿದರು.

2023-24ರ ಅವಧಿಯಲ್ಲಿ ಕೇಂದ್ರವು ರಾಜ್ಯದಿಂದ ಕನಿಷ್ಠ ರೂ. 4.30 ಲಕ್ಷ ಕೋಟಿಗೂ ಹೆಚ್ಚು ಸಂಪನ್ಮೂಲವನ್ನು ತೆರಿಗೆ, ಸೆಸ್‌, ಸರ್‌ಚಾರ್ಜ್‌ ಮೂಲಕ ಸಂಗ್ರಹಿಸಿದೆ. ಆದರೆ, ಇದಕ್ಕೆ ಪ್ರತಿಯಾಗಿ ರೂ.50 ರಿಂದ 53 ಸಾವಿರ ಕೋಟಿ ಮಾತ್ರ ಕರ್ನಾಟಕಕ್ಕೆ ನೀಡಿದೆ. ನಾವು ನೂರು ರೂ. ಸಂಗ್ರಹಿಸಿ ಕೊಟ್ಟರೆ ನಮಗೆ ಮರಳಿ ದೊರೆಯುವುದು 12-13 ರೂಪಾಯಿ ಮಾತ್ರ. ಇದರಲ್ಲಿ ತೆರಿಗೆ ಪಾಲು ₹37,000 ಕೋಟಿ ಮತ್ತು ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ನೀಡಿದ ಪಾಲಿನ ಹಣ ₹13,005 ಕೋಟಿ ಎಂದರು.

ಕಳೆದ ಆರು ವರ್ಷಗಳ ಅವಧಿಯಲ್ಲಿ ಕೇಂದ್ರ ಸರ್ಕಾರದ ಬಜೆಟ್‌ ಸರಿಸುಮಾರು ದುಪ್ಪಟ್ಟಾಗಿದೆ. 2018-19ರಲ್ಲಿ ಕೇಂದ್ರ ಬಜೆಟ್‌ ಗಾತ್ರ ರೂ. 24,42,213 ಕೋಟಿ ಇತ್ತು. ಆಗ ಕೇಂದ್ರದಿಂದ ರಾಜ್ಯಕ್ಕೆ ದೊರೆಯುತ್ತಿದ್ದ ತೆರಿಗೆ ಪಾಲು ರೂ.35,895 ಕೋಟಿ ಹಾಗೂ ರೂ.16,082 ಕೋಟಿ ಅನುದಾನ ಸೇರಿ ಒಟ್ಟು ರೂ.46,288 ಕೋಟಿ ಲಭ್ಯವಾಗಿತ್ತು. ಆದರೆ, 2023-24ರಲ್ಲಿ ಕೇಂದ್ರದ ಬಜೆಟ್‌ ಗಾತ್ರ ರೂ.45,03,097 ಕೋಟಿಗೆ ಏರಿಕೆಯಾಗಿದೆ. ವಿಪರ್ಯಾಸವೆಂದರೆ, ಕರ್ನಾಟಕಕ್ಕೆ ಕೇಂದ್ರದಿಂದ ತೆರಿಗೆ ಪಾಲು ಹಾಗೂ ಅನುದಾನಗಳೆರಡೂ ಸೇರಿ ಸಿಕ್ಕಿರುವುದು ರೂ.50,257 ಕೋಟಿ ಮಾತ್ರ. ಅಂದರೆ ಐದು ವರ್ಷದ ಅವಧಿಯಲ್ಲಿ ಬಜೆಟ್‌ ದುಪ್ಪಟ್ಟಾದರೂ ರಾಜ್ಯಕ್ಕೆ ದೊರೆಯುತ್ತಿರುವ ಪಾಲಿನಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಪ್ರಸಕ್ತ ಬಜೆಟ್‌ ಗಾತ್ರದ ಹೋಲಿಕೆಯಲ್ಲಿ ಕರ್ನಾಟಕಕ್ಕೆ ವಾರ್ಷಿಕ ಕನಿಷ್ಠ ರೂ.1 ಲಕ್ಷ ಕೋಟಿಯಷ್ಟು ಹಣ ತೆರಿಗೆಯ ಪಾಲು ಹಾಗೂ ಅನುದಾನದ ಮುಖೇನ ದೊರೆಯಬೇಕಿತ್ತು, ಆದರೆ ದೊರೆತಿಲ್ಲ ಎಂದು ತಿಳಿಸಿದರು.

ಕರ್ನಾಟಕಕ್ಕೆ ಈ ಪರಿಯ ದೊಡ್ಡ ಮಟ್ಟದ ಅನ್ಯಾಯ ಆಗಿರುವುದು ಮನವರಿಕೆಯಾದ ನಂತರವೇ ಹದಿನೈದನೇ ಹಣಕಾಸು ಆಯೋಗ ಕರ್ನಾಟಕಕ್ಕೆ ವಿಶೇಷ ಅನುದಾನದ ರೂಪದಲ್ಲಿ ₹5,495 ಕೋಟಿ ನೀಡಬೇಕೆಂದು ಶಿಫಾರಸು ಮಾಡಿತ್ತು. ಕನ್ನಡಿಗರ ಜನಪ್ರತಿನಿಧಿಯಾಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೇ ಈ ಶಿಫಾರಸನ್ನು ನಿರಾಕರಿಸಿರುವ ಕಾರಣ ಆ ದುಡ್ಡು ಕೂಡಾ ಬರಲಿಲ್ಲ ಎಂದರು.

ಕೇಂದ್ರ ಸರ್ಕಾರದ ಈ ತಾರತಮ್ಯ ನೀತಿ, ಮಲತಾಯಿ ಧೋರಣೆಯಿಂದಾಗಿ ಕರ್ನಾಟಕವು 2017-18ರಿಂದ ಈವರೆಗೆ ತನಗೆ ಸೇರಬೇಕಾದ ನ್ಯಾಯಯುತ ಪಾಲಾದ ರೂ. 1,87,867 ಕೋಟಿ ಹಣದಿಂದ ವಂಚಿತವಾಗಿದೆ. ಅಂದರೆ, ಕರ್ನಾಟಕದ ಪರಿಷ್ಕೃತ ಆಯವ್ಯಯದ ಗಾತ್ರ 3.24 ಲಕ್ಷ ಕೋಟಿಯ ಹೋಲಿಕೆಯಲ್ಲಿ ಅದರ ಅರ್ಧಕ್ಕಿಂತಲೂ ಹೆಚ್ಚು ಹಣ, ನಿಖರವಾಗಿ ಹೇಳಬೇಕೆಂದರೆ ಪ್ರಸಕ್ತ ಸಾಲಿನ ಬಜೆಟ್‌ನ‌ ಶೇ.57ರಷ್ಟು ಗಾತ್ರದ ಹಣ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯಕ್ಕೆ ನಷ್ಟವಾಗಿದೆ ಎಂದು ಮಾಹಿತಿ‌ ನೀಡಿದರು.

ಇದಲ್ಲದೆ, ಹದಿನೈದನೇ ಹಣಕಾಸು ಆಯೋಗವು ಬೆಂಗಳೂರಿನ ಫೆರಿಫೆರಲ್‌ ರಿಂಗ್‌ ರಸ್ತೆಗೆ ರೂ.3,000 ಕೋಟಿ ಮತ್ತು ಕೆರೆಗಳು ಸೇರಿದಂತೆ ಬೆಂಗಳೂರು ಜಲಮೂಲ ಅಭಿವೃದ್ಧಿಗೆ ರೂ. 3000 ನೀಡಲು ಶಿಫಾರಸ್ಸು ಮಾಡಿತ್ತು. ಆದರೆ, ಈ ಶಿಫಾರಸ್ಸುಗಳನ್ನು ತಿರಸ್ಕರಿಸಿದ ವಿತ್ತ ಸಚಿವರು ರಾಜ್ಯಕ್ಕೆ ಸುಮಾರು ರೂ.11,495 ಕೋಟಿ ದ್ರೋಹ ಮಾಡಿದ್ದಾರೆ ಎಂದರು.

ನರೇಂದ್ರ ಮೋದಿಯವರು ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೂಡಿಕೊಂಡು ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ದೇಶದ ವಿರೋಧಪಕ್ಷಗಳ ಸರ್ಕಾರ ಇರುವ ಪ್ರತಿಯೊಂದು ರಾಜ್ಯಗಳಿಗೆ ತೆರಿಗೆ ಮತ್ತು ಅನುದಾನದ ಹಂಚಿಕೆಯಲ್ಲಿ ಅನ್ಯಾಯ ಮಾಡಿದ್ದಾರೆ ಎಂದು ತಿಳಿಸಿದರು.

ಆದರೆ ದುರಂತವೆಂದರೆ ನಿರ್ಮಲಾ ಸೀತಾರಾಮನ್ ಅವರು ಉಂಡ ಮನೆಗೆ ಎರಡು ಬಗೆದಿದ್ದಾರೆ. ತಮ್ಮನ್ನು ರಾಜ್ಯಸಭೆಗೆ ಆರಿಸಿ ಕಳಿಸಿದ ಕರ್ನಾಟಕಕ್ಕೆ ಅನ್ಯಾಯ ಮಾಡಲು ಹೇಸದ ನಿರ್ಮಲಾ ಸೀತಾರಾಮನ್ ಅವರಿಗೆ ರಾಜ್ಯದ ಹಣಕಾಸು ವ್ಯವಸ್ಥೆ ಬಗ್ಗೆ ಮಾತನಾಡುವ ಯಾವ ನೈತಿಕ ಅಧಿಕಾರ ಇದೆ?‌ಎಂದು ಪ್ರಶ್ನಿಸಿದರು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

10 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

12 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 days ago